Literature: ಕನ್ನಡ ಸಣ್ಣಕಥೆ ಲೋಕದ ಹುಲುಸಾದ ಬೆಳೆ! ಲಕ್ಷ ರೂ.ಗೆ ಬಂದು ನಿಂತ ಬಹುಮಾನದ ಮೊತ್ತ!! - Vistara News

ಕಲೆ/ಸಾಹಿತ್ಯ

Literature: ಕನ್ನಡ ಸಣ್ಣಕಥೆ ಲೋಕದ ಹುಲುಸಾದ ಬೆಳೆ! ಲಕ್ಷ ರೂ.ಗೆ ಬಂದು ನಿಂತ ಬಹುಮಾನದ ಮೊತ್ತ!!

ವಿಸ್ತಾರ ನ್ಯೂಸ್‌ ನಿಂದ ಆಯೋಜಿಸಲಾಗಿರುವ ಭಾರಿ ಮೊತ್ತದ ಬಹುಮಾನವುಳ್ಳ ಯುಗಾದಿ ಕಥಾ ಸ್ಪರ್ಧೆ- 2023ಕ್ಕೆ ಸಿಕ್ಕಿರುವ ಸ್ಪಂದನ ಅಭೂತಪೂರ್ವ. ಈ ಹಿನ್ನೆಲೆಯಲ್ಲಿ ಕನ್ನಡದಲ್ಲಿ ಸಣ್ಣಕಥೆಗಳ ಸ್ಪರ್ಧೆಯ ಪರಂಪರೆ ಕುರಿತ ‘ಸಾಧ್ಯವಾದಷ್ಟು’ ಸಮಗ್ರ ನೋಟ ಇಲ್ಲಿದೆ.

VISTARANEWS.COM


on

short story
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

: ಹರೀಶ್ ಕೇರ, ಬೆಂಗಳೂರು

ಮಾಸ್ತಿ ವೆಂಕಟೇಶ ಅಯ್ಯಂಗಾರರಿಗೆ ʼಕನ್ನಡದ ಸಣ್ಣಕಥೆಗಳ ಜನಕʼ ಎಂಬ ಹೆಗ್ಗಳಿಕೆಯನ್ನು ನೀಡುವ ಬಗ್ಗೆ ಸಾಹಿತ್ಯ ವಲಯದಲ್ಲಿ ಸಣ್ಣ ತಕರಾರು ಇದೆ. ಕನ್ನಡದ ಮೊದಲ ಸಣ್ಣಕಥೆ ಬರೆದವರು ಪಂಜೆ ಮಂಗೇಶರಾಯರು (ನನ್ನ ಚಿಕ್ಕತಾಯಿ- 1900- ಸುವಾಸಿನಿ ಪತ್ರಿಕೆಯಲ್ಲಿ). ಇದೇ ಅವಧಿಯಲ್ಲಿ ಕೆರೂರು ವಾಸುದೇವಾಚಾರ್ಯರು, ಬಾಗಲೋಡಿ ದೇವರಾಯ ಮುಂತಾದವರೂ ಬರೆದಿದ್ದಾರೆ. ಆದರೆ ಕನ್ನಡದ ಸಣ್ಣಕಥೆಗೊಂದು ಸ್ವರೂಪ ನೀಡಿ, ಅದನ್ನೇ ತಮ್ಮ ಮಾಧ್ಯಮವಾಗಿ ಮಾಡಿಕೊಂಡು ಜನಪ್ರಿಯಗೊಳಿಸಿದವರು ಮಾಸ್ತಿ ಅನ್ನುವ ಬಗ್ಗೆ ಯಾರ ತಕರಾರೂ ಇಲ್ಲ. ಮಾಸ್ತಿಯವರು ನಡೆಸಿದ ʼಜೀವನʼ ಮಾಸಪತ್ರಿಕೆಯಲ್ಲಿ ಕಥೆಗಳನ್ನು ತರಿಸಿ ಛಾಪಿಸುತ್ತಿದ್ದರು. ಆದರೆ ಕನ್ನಡದ ಸಣ್ಣಕಥೆಗಳ ಸ್ಪರ್ಧೆ ಮೊದಲು ಮಾಡಿದವರು ಯಾರು ಎಂಬ ಬಗ್ಗೆ ಎಲ್ಲಿಯೂ ಯಾವ ಉಲ್ಲೇಖವೂ ಇಲ್ಲ.

1960ರ ದಶಕದಿಂದ ಕನ್ನಡದ ಸಣ್ಣಕಥೆಗಳ ಸ್ಪರ್ಧೆ ಆರಂಭವಾಗಿರಬಹುದು. ಸೆಂಟ್ರಲ್‌ ಕಾಲೇಜು ಕನ್ನಡ ಸಂಘದಿಂದ 1915ರ ಸುಮಾರಿಗೆ ನಡೆಸಲ್ಪಟ್ಟ ಕವನ ಸ್ಪರ್ಧೆಯೇ ಕನ್ನಡದ ಸಾಹಿತ್ಯದ ಮೊದಲ ಸ್ಪರ್ಧೆ ಎನ್ನಬಹುದು ಎಂದು ಗುರುತಿಸುತ್ತಾರೆ ಕವಿ ಡಿ.ವಿ. ಪ್ರಹ್ಲಾದ್.‌ ಇವರು ಬಹುಕಾಲ ʼಸಂಚಯʼ ಎಂಬ ಸಣ್ಣ ಸಾಹಿತ್ಯ ಪತ್ರಿಕೆ ನಡೆಸಿದವರು ಹಾಗೂ ಕವನ- ಲೇಖನ ಸ್ಪರ್ಧೆಗಳನ್ನೂ ನಡೆಸಿದವರು. ಕನ್ನಡದ ಮೊದಲ ಸಾಹಿತ್ಯ ಪತ್ರಿಕೆ ವಾಗ್ಭೂಷಣ- 1896ರಲ್ಲಿ ಆಲೂರು ವೆಂಕಟರಾಯರಿಂದ ಶುರುವಾಯಿತು. ಅವರು ಕವನ- ಕತೆಗಳನ್ನು ಪ್ರಕಟಿಸಲು ಆರಂಭಿಸಿದರು. ಬಹುಶಃ ಅನಕೃ ಅವರು ಕತೆಗಳಿಗಾಗಿಯೇ 1933ರಲ್ಲಿ ಆರಂಭಿಸಿದ ʼಕತೆಗಾರʼ ಪತ್ರಿಕೆ ಆರಂಭಿಸಿರಬಹುದು. ಈ ಬಗ್ಗೆ ಹೆಚ್ಚಿನ ಅಧ್ಯಯನ ಅಗತ್ಯವಿದೆ ಎನ್ನುತ್ತಾರೆ ಪ್ರಹ್ಲಾದ್.

ಕಥಾ ಸ್ಪರ್ಧೆಗಳು ಮತ್ತು ಕನ್ನಡ ಪತ್ರಿಕೋದ್ಯಮಕ್ಕೆ ಅವಿನಾಭಾವ ಇತಿಹಾಸ. ಬಹುತೇಕ ಎಲ್ಲ ಪ್ರಮುಖ ದಿನಪತ್ರಿಕೆಗಳು, ನಿಯತಕಾಲಿಕೆಗಳು ಸಣ್ಣಕಥಾಸ್ಪರ್ಧೆಯನ್ನು ನಡೆಸುತ್ತ ಬಂದಿವೆ. ಸಾಮಾನ್ಯವಾಗಿ ಇವು ದೀಪಾವಳಿ ಅಥವಾ ಯುಗಾದಿ ಸಂದರ್ಭದಲ್ಲಿ ನಡೆಯುವುದು ವಾಡಿಕೆ. ದೀಪಾವಳಿ ಮತ್ತು ಯುಗಾದಿ ಸಂದರ್ಭದಲ್ಲಿ ವಿಶೇಷಾಂಕಗಳನ್ನು ರೂಪಿಸಲಾಗುತ್ತದೆ. ಸಾಮಾನ್ಯವಾಗಿ ಮೊದಲ ಮೂರು ಬಹುಮಾನ ಪಡೆದ ಕಥೆಗಳು ಈ ವಿಶೇಷಾಂಕದಲ್ಲಿ ಪ್ರಕಟವಾಗುತ್ತವೆ. ಮೆಚ್ಚುಗೆ ಪಡೆದ ಕಥೆಗಳು ನಂತರದ ದಿನಗಳಲ್ಲಿ ಪ್ರಕಟವಾಗುತ್ತ ಹೋಗುತ್ತವೆ. ಇದು ವಾಡಿಕೆಯಾಗಿ ನಡೆದುಬಂದಿದೆ. ಕೆಲವು ಪತ್ರಿಕೆಗಳು ಸಂಕ್ರಾಂತಿಗೆ, ಜನವರಿ ಒಂದರಂದೂ ವಿಶೇಷಾಂಕ ತರುವುದುಂಟು. ಆದರೆ ವಿಶೇಷಾಂಕ ಹೊರತರದ ಹಾಗೂ ಸ್ಪರ್ಧೆ ನಡೆಸದ ಪತ್ರಿಕೆಗಳೇ ಇಲ್ಲ ಎನ್ನಬಹುದೇನೋ. ಹೀಗೆ ಪತ್ರಿಕೆಗಳ ವಿಶೇಷಾಂಕಗಳೂ, ಸಣ್ಣಕಥೆ ಸ್ಪರ್ಧೆಗಳೂ ಕನ್ನಡದ ಓದುಗರ ಮನಸ್ಸಿನ ಭಾಗವೇ ಆಗಿಹೋಗಿವೆ. ಕೆಲವೊಮ್ಮೆ ಸಣ್ಣಕಥೆಯ ಬದಲು ಲಲಿತಪ್ರಬಂಧ, ನಗೆಬರಹ, ಪ್ರೇಮಪತ್ರ ಇತ್ಯಾದಿ ಸ್ಪರ್ಧೆಗಳೂ ನಡೆದುದುಂಟು. ಆದರೆ ಇವು ಅಪರೂಪ.

1957ರಿಂದಲೇ ಪ್ರಜಾವಾಣಿ ಕಥಾ ಸ್ಪರ್ಧೆ…

ಪ್ರಜಾವಾಣಿ ಪತ್ರಿಕೆ 1957ರಷ್ಟು ಹಿಂದಿನಿಂದಲೇ ಸಣ್ಣಕಥಾ ಸ್ಪರ್ಧೆಯನ್ನು ಏರ್ಪಡಿಸಿ ಬಹುಮಾನಿತ ಕತೆಗಳನ್ನು ದೀಪಾವಳಿ ವಿಶೇಷಾಂಕದಲ್ಲಿ ಪ್ರಕಟಿಸುತ್ತಿದೆ. ಇವತ್ತಿನವರೆಗೂ ನಿರಂತರವಾಗಿ ಮುನ್ನಡೆಸಿದೆ. ಈ ಪತ್ರಿಕೆಯ ಕಥಾಸ್ಪರ್ಧೆಯ ಮೂಲಕ ಬೆಳಕಿಗೆ ಬಂದು ಸಾಹಿತ್ಯದಲ್ಲಿ ದೊಡ್ಡ ಹೆಸರು ಮಾಡಿದ ಅನೇಕರು ಇದ್ದಾರೆ. ಕಳೆದ ಅರವತ್ತು ವರ್ಷಗಳ ಅವಧಿಯಲ್ಲಿ ಪ್ರಜಾವಾಣಿಯ ದೀಪಾವಳಿ ಕಥಾಸ್ಪರ್ಧೆಯಲ್ಲಿ ಗೆದ್ದ ಎಲ್ಲ ಕಥೆಗಳನ್ನು ಪುಸ್ತಕ ರೂಪದಲ್ಲಿ ಪ್ರಕಟಿಸುವ ಪ್ರಯತ್ನವನ್ನು ಪ್ರಜಾವಾಣಿಯ ಸಂಪಾದಕ ಬಳಗ ಮಾಡಿದೆ. ಒಟ್ಟು ಮೂರು ಸಂಪುಟಗಳ ಈ ಯೋಜನೆಯಲ್ಲಿ ಮೊದಲ ಪುಸ್ತಕ ʼಹೊನ್ನ ಕಣಜʼ ಎಂಬ ಹೆಸರಿನಿಂದ ಪ್ರಕಟವಾಗಿದೆ. ಇದರಲ್ಲಿ 1957ರಿಂದ 2016ರ ಅವಧಿಯಲ್ಲಿ ಪ್ರಕಟವಾದ 50 ಕಥೆಗಳಿವೆ. ಪೂರ್ಣಚಂದ್ರ ತೇಜಸ್ವಿ, ಲಂಕೇಶ್, ರಾಮಚಂದ್ರ ಶರ್ಮ, ಭಾರತೀಸುತ, ಶ್ರೀಕೃಷ್ಣ ಆಲನಹಳ್ಳಿ, ವೈದೇಹಿ, ಜಯಂತ ಕಾಯ್ಕಿಣಿ, ವಿವೇಕ ಶಾನಭಾಗ, ಕೆ.ಟಿ.ಗಟ್ಟಿ, ಎಸ್.ದಿವಾಕರ್ ಮುಂತಾದ ಘಟಾನುಘಟಿಗಳು ಇದರಲ್ಲಿರುವುದು ವಿಶೇಷ. ಇದೊಂದು ಅಧ್ಯಯನ ಗ್ರಂಥವೂ ಹೌದು.

1990ರಲ್ಲಿ 10 ಸಾವಿರ ಬಹುಮಾನ ಕೊಟ್ಟಿದ್ದ ತರಂಗ…

ಬಹುಮಾನದ ಮೊತ್ತವನ್ನು 1990ರಲ್ಲಿ ʼತರಂಗʼ ವಾರಪತ್ರಿಕೆ 10 ಸಾವಿರ ರೂ.ಗಳಿಗೆ ಏರಿಸಿತು. ಇದು ಆ ಕಾಲದ ಬಹುದೊಡ್ಡ ಮೊತ್ತ. ಹಾಗಾಗಿ ಸಾಹಿತಿಗಳ ವಲಯದಲ್ಲಿ ಸಂಚಲನ ಸೃಷ್ಟಿಸಿತ್ತು. ಮಾಸ್ತಿ ಜನ್ಮ ಶತಾಬ್ದಿ ಸಂದರ್ಭದಲ್ಲಿ ತರಂಗ ಏರ್ಪಡಿಸಿದ ಕಥಾ ಸ್ಪರ್ಧೆಯಲ್ಲಿ ಮೊದಲ ಬಹುಮಾನ 10 ಸಾವಿರ, ಎರಡನೇ ಬಹುಮಾನ 7,500 ರೂ., ಮೂರನೇ ಬಹುಮಾನ 5000 ರೂ. ಇಡಲಾಗಿತ್ತು. ಬಹುಮಾನಗಳನ್ನು ಕ್ರಮವಾಗಿ ರವಿ ಬೆಳಗೆರೆ (ವಂಧ್ಯಾ), ಎಂ.ಎಸ್ ವೇದಾ (ಕುರುಕ್ಷೇತ್ರವೂ ಕುಂಯನೆಂಬ ಬಾಲನ ಕತ್ತಲ ಲೋಕವೂ) ಗೆದ್ದುಕೊಂಡಿದ್ದರು.

ಇದನ್ನೂ ಓದಿ: Vistara Kathaspardhe: ಇದು ಪ್ಯಾನ್‌ ಇಂಡಿಯಾ ಸ್ಪರ್ಧೆಯಾಗಲಿ: ವಿಸ್ತಾರ ನ್ಯೂಸ್‌ ಕಥಾಸ್ಪರ್ಧೆಗೆ ಸಾಹಿತ್ಯಲೋಕ ಮೆಚ್ಚುಗೆ

ಹಲವು ಪತ್ರಿಕೆಗಳಿಂದ ಸ್ಪರ್ಧೆ…

ಪ್ರಜಾವಾಣಿಯಂತೆಯೇ ಸಂಯುಕ್ತ ಕರ್ನಾಟಕ, ಕನ್ನಡಪ್ರಭ, ವಿಜಯ ಕರ್ನಾಟಕ, ವಿಜಯವಾಣಿ, ಉದಯವಾಣಿ ಮುಂತಾದ ದಿನಪತ್ರಿಕೆಗಳೂ, ತರಂಗ, ಸುಧಾ ಮುಂತಾದ ವಾರಪತ್ರಿಕೆಗಳೂ, ಮಯೂರ, ತುಷಾರ, ಉತ್ಥಾನ, ಕಸ್ತೂರಿ ಮುಂತಾದ ಮಾಸಪತ್ರಿಕೆಗಳೂ ಸ್ಪರ್ಧೆಗಳನ್ನು ನಡೆಸಿವೆ. ಸಂಚಯ, ಸಂಕ್ರಮಣ ಮುಂತಾದ ಸಣ್ಣ ಸಾಹಿತ್ಯ ಪತ್ರಿಕೆಗಳೂ ಸ್ಪರ್ಧೆಗಳನ್ನು ನಡೆಸಿದವು. ಚಿ. ಶ್ರೀನಿವಾಸರಾಜು ಮುಂತಾದವರು ಕ್ರೈಸ್ಟ್‌ ಕಾಲೇಜು ಕನ್ನಡ ಸಂಘ ಇತ್ಯಾದಿ ಸಂಘಟನೆಗಳ ಮೂಲಕವೂ ರಾಜ್ಯ ಮಟ್ಟದ ಅಂತರ್ ಕಾಲೇಜು ಸಾಹಿತ್ಯ ಸ್ಪರ್ಧೆ ನಡೆಸಿದ್ದಾರೆ. ಈ ಮೂಲಕ ನೂರಾರು ವಿದ್ಯಾರ್ಥಿ ಬರಹಗಾರರನ್ನು ಬೆಳಕಿಗೆ ತಂದಿದ್ದಾರೆ. ಇವೆಲ್ಲವೂ ಬಹುಮಾನದ ಗಾತ್ರದಲ್ಲಿ ಅಲ್ಲದೆ ಹೋದರೂ ಸಾಹಿತ್ಯವಲಯದಲ್ಲಿ ಪ್ರತಿಷ್ಠಿತವಾಗಿದ್ದವು. ಚಿ. ಶ್ರೀನಿವಾಸರಾಜು ಅವರು ವಿದ್ಯಾರ್ಥಿ ಬರಹಗಾರರಿಗೆ ಬಹುಮಾನವಾಗಿ ಚೀಲಗಟ್ಟಲೆ ಪುಸ್ತಕ ಕೊಟ್ಟು ಕಳುಹಿಸುತ್ತಿದ್ದರು.

ಪಿ. ಲಂಕೇಶ್‌ ಅವರು ʼಲಂಕೇಶ್‌ ಪತ್ರಿಕೆʼ ಮೂಲಕ ಒಂದೇ ಒಂದು ಬಾರಿ ಕಥಾಸ್ಪರ್ಧೆ ನಡೆಸಿದ್ದರು ಎಂಬ ಕುತೂಹಲಕಾರಿ ಮಾಹಿತಿಯನ್ನು ಕಥೆಗಾರ ಕೇಶವ ಮಳಗಿ ಹಂಚಿಕೊಳ್ಳುತ್ತಾರೆ. 1987ರಲ್ಲಿ ಅವರು ನಡೆಸಿದ ಕಥಾಸ್ಪರ್ಧೆಯಲ್ಲಿ ಸ್ವತಃ ಕೇಶವ ಮಳಗಿ ಮತ್ತಿತರರು ಬಹುಮಾನ ಪಡೆದಿದ್ದರು.

ಬಹುಮಾನ ಮೊತ್ತ 25 ಸಾವಿರಕ್ಕೆ ಏರಿಸಿದ ವಿಜಯ ಕರ್ನಾಟಕ

ಸುಮಾರು 10,000ದ ಆಸುಪಾಸಿನಲ್ಲಿದ್ದ ಕಥಾಸ್ಪರ್ಧೆಯ ಮೊದಲ ಬಹುಮಾನದ ಮೊತ್ತಕ್ಕೆ ಮೊದಲ ಬಾರಿಗೆ ದೊಡ್ಡ ಮೊತ್ತದ ಶಾಕ್‌ ಕೊಟ್ಟದ್ದು ವಿಜಯ ಕರ್ನಾಟಕ. ಸ್ಪರ್ಧೆಯಲ್ಲಿ ಬಹುಮಾನ ಪಡೆದ ಕತೆಗಳನ್ನು ಆಯಾ ವರ್ಷವೇ ಪುಸ್ತಕವಾಗಿ ಪ್ರಕಟಿಸುವ ಪರಂಪರೆ ಆರಂಭಿಸಿದ್ದೂ ವಿಜಯ ಕರ್ನಾಟಕ ಮತ್ತು ಅದರ ಜತೆಗೆ ಸಹಯೋಗ ನೀಡಿದ ಅಂಕಿತ ಪ್ರಕಾಶನ. 2002ರಲ್ಲಿ ನಡೆಸಿದ ದೀಪಾವಳಿ ಕಥಾಸ್ಪರ್ಧೆಯಲ್ಲಿ 25,000 ರೂ.ಗಳ ದೊಡ್ಡ ಮೊತ್ತದ ಮೊದಲ ಬಹುಮಾನ ಇಡಲಾಯಿತು. ಆಗಿನ ಕಾಲಕ್ಕೆ ಅದೇ ಗರಿಷ್ಠ ಮೊತ್ತ. ಕಥೆಗಾರ್ತಿ ಸುಮಂಗಲಾ ಆ ವರ್ಷ ಮೊದಲ ಬಹುಮಾನ ಗಳಿಸಿದರು. ರಘುನಾಥ ಚ.ಹ., ಮೊಗಳ್ಳಿ ಗಣೇಶ ಮುಂತಾದವರು ಬಹುಮಾನಿತರ ಸಾಲಿನಲ್ಲಿದ್ದರು. ಈ ಕಥೆಗಳು ʼಚೌಕಟ್ಟಿನಿಂದ ಹೊರಬಂದ ಚಿತ್ರʼ ಎಂಬ ಹೆಸರಿನಲ್ಲಿ ಪುಸ್ತಕವಾಗಿ ಪ್ರಕಟವಾಯಿತು. ಮುಂದೆ ಪ್ರತಿವರ್ಷ ಹೀಗೆ ಸ್ಪರ್ಧೆ ಹಾಗೂ ಅದನ್ನು ಪುಸ್ತಕವಾಗಿ ಪ್ರಕಟಿಸುವುದನ್ನು ವಿಜಯ ಕರ್ನಾಟಕ ರೂಢಿಸಿಕೊಂಡಿದೆ. ಬಹುಮಾನ ಪ್ರಾಯೋಜಕರು ಬದಲಾಗುತ್ತ ಬಂದಿದ್ದಾರೆ.

ಇದನ್ನೂ ಓದಿ: Vistara Kathaspardhe : ವಿಸ್ತಾರ ನ್ಯೂಸ್‌ನಿಂದ ಯುಗಾದಿ-2023 ಕಥಾ ಸ್ಪರ್ಧೆ; 1 ಲಕ್ಷ ರೂ. ಬಹುಮಾನ!

ಇತ್ತೀಚಿನ ದಿನಗಳಲ್ಲಿ ಮುದ್ರಣ ಮಾಧ್ಯಮಗಳ ಜತೆಗೆ ಸಾಹಿತ್ಯ ವೆಬ್‌ಸೈಟ್‌ಗಳೂ ಕಥಾ ಸ್ಪರ್ಧೆಗಳನ್ನು ನಡೆಸತೊಡಗಿವೆ. ಸಾಕಷ್ಟು ಬಹುಮಾನದ ಹಣವನ್ನೂ ನೀಡಲಾಗುತ್ತಿದೆ. ಇವುಗಳ ಪಾಲಿಗೆ ಹೊಸ ಸೇರ್ಪಡೆ ವಿಸ್ತಾರ ನ್ಯೂಸ್.‌ ಇದು ಕನ್ನಡ ಕಥಾಲೋಕದಲ್ಲಿ ಟಿವಿ ಮಾಧ್ಯಮವೊಂದು ನಡೆಸುತ್ತಿರುವ ಮೊತ್ತ ಮೊದಲ ಕಥಾಸ್ಪರ್ಧೆ ಎಂದೂ ದಾಖಲಾಗಿದೆ. ಹೀಗೆಯೇ ಕಥಾಸ್ಪರ್ಧೆ ನಡೆಸುವವರ ಜತೆ ಪ್ರಕಾಶಕರು ಕೈ ಸೇರಿಸಿ ಬಹುಮಾನದ ಮೊತ್ತವನ್ನು ಪ್ರಾಯೋಜಿಸುವ ರೂಢಿಯೂ ಹೆಚ್ಚಿದೆ.

ಈ ಸ್ಪರ್ಧೆಯ ವೈಖರಿಯನ್ನು ಕತೆಗಾರ ವಸುಧೇಂದ್ರ ಇನ್ನೂ ಒಂದು ಹೆಜ್ಜೆ ಮುಂದಕ್ಕೆ ಒಯ್ದರು. ʼಛಂದ ಪುಸ್ತಕʼದ ಮೂಲಕ ಕತೆ ಸಂಕಲನಗಳನ್ನೇ ಆಹ್ವಾನಿಸಿ, ಸ್ಪರ್ಧೆ ನಡೆಸಿ, ಗೆದ್ದ ಕೃತಿಯನ್ನು ಪ್ರಕಟಿಸಿ ಅದಕ್ಕೆ ಮೌಲಿಕ ಬಹುಮಾನಗಳನ್ನು ಕೊಟ್ಟರು.

50 ಸಾವಿರ ರೂ. ಬಹುಮಾನ ಇಟ್ಟಿದ್ದ ಬುಕ್ ಬ್ರಹ್ಮ

2022ರಲ್ಲಿ ಬುಕ್‌ಬ್ರಹ್ಮ ಪೋರ್ಟಲ್‌, 50,000 ರೂ. ಮೊದಲ ಬಹುಮಾನ ಮೊತ್ತದ ಸಣ್ಣಕಥೆ ಸ್ಪರ್ಧೆಯನ್ನು ಇಟ್ಟು ಇನ್ನೊಂದು ಸುತ್ತಿನ ಮೆಗಾ ಕಥಾ ಸ್ಪರ್ಧೆಗಳಿಗೆ ನಾಂದಿ ಹಾಡಿತು. ಈ ಸ್ಪರ್ಧೆಯಲ್ಲಿ ಪೂರ್ಣಿಮಾ ಮಾಳಗಿಮನಿ ಅವರ ʼವಿನ್ನರ್‌ ವಿನ್ನರ್‌ ಚಿಕನ್‌ ಡಿನ್ನರ್‌ʼ ಕಥೆ ಮೊದಲ ಬಹುಮಾನ ಗೆದ್ದಿತು. ಎರಡನೆಯ ಹಾಗೂ ಮೂರನೇ ಬಹುಮಾನಗಳು ಕ್ರಮವಾಗಿ ಬಸವಣ್ಣೆಪ್ಪ ಕಂಬಾರ ಹಾಗೂ ಸಂದೀಪ ನಾಯಕರ ಪಾಲಾದವು. ಇದೀಗ ಬುಕ್‌ಬ್ರಹ್ಮ ಒಂದು ಲಕ್ಷ ರೂಪಾಯಿ ಮೊದಲ ಬಹುಮಾನದ ಕಾದಂಬರಿ ಸ್ಪರ್ಧೆಯನ್ನೂ ಘೋಷಿಸಿದೆ. ಜತೆಗೆ 50 ಸಾವಿರ ಮೊತ್ತದ ಕಥಾ ಸ್ಪರ್ಧೆಯೂ ಇದೆ.

ವಿಸ್ತಾರ ನ್ಯೂಸ್ ಈಗ ಕಥಾ ಸ್ಪರ್ಧೆಗೆ ಒಟ್ಟು 1 ಲಕ್ಷ ರೂ. ಬಹುಮಾನ ಘೋಷಿಸಿದೆ. ಮೊದಲ ಬಹುಮಾನ 55 ಸಾವಿರ ರೂ. ಈವರೆಗಿನ ಗರಿಷ್ಠ ಮೊತ್ತವಾಗಿದೆ.

ಆಯ್ಕೆಯೂ ಕುತೂಹಲಕರ…

ಕಥೆ ಸ್ಪರ್ಧೆಯಲ್ಲಿ ಗೆಲ್ಲುವವರು, ಸ್ಪರ್ಧೆಯ ತೀರ್ಪುಗಾರರ ಆಯ್ಕೆ ಕೂಡ ಕುತೂಹಲಕಾರಿಯಾಗಿರುತ್ತದೆ ಎಂಬುದನ್ನು ಗಮನಿಸಬಹುದು. ಪ್ರಜಾವಾಣಿ- ಕನ್ನಡಪ್ರಭಗಳಲ್ಲಿ ಮೊದಮೊದಲ ಕಥೆ ಸ್ಪರ್ಧೆಗಳಲ್ಲಿ ಗೆದ್ದುಕೊಂಡವರು ನಂತರ ಕನ್ನಡ ಸಾಹಿತ್ಯದಲ್ಲಿ ಶ್ರೇಷ್ಠ ಸಾಹಿತಿಗಳಾಗಿ ಮಿಂಚಿದ್ದು, ಅಂಥ ಸ್ಪರ್ಧೆಗಳ ತೀರ್ಪುಗಾರರಾಗಿ ಇಂದು ಮನ್ನಣೆ ಪಡೆಯುತ್ತಿದ್ದಾರೆ. ಅಮರೇಶ ನುಗಡೋಣಿ, ವಸುಧೇಂದ್ರ, ಸುನಂದಾ ಕಡಮೆ, ಕೇಶವ ಮಳಗಿ ಮುಂತಾದವರನ್ನು ಇದರಲ್ಲಿ ಗುರುತಿಸಬಹುದು. ವಿಮರ್ಶಕರಾಗಿಯೇ ಗುರುತಿಸಲ್ಪಟ್ಟಿರುವ ಎಚ್‌ ಎಸ್‌ ರಾಘವೇಂದ್ರ ರಾವ್‌, ನರಹಳ್ಳಿ ಬಾಲಸುಬ್ರಹ್ಮಣ್ಯ, ಎಂ.ಎಸ್‌ ಆಶಾದೇವಿ ಮುಂತಾದವರೂ ತೀರ್ಪುಗಾರರಾಗಿದ್ದಾರೆ.

ಯಾವುದೇ ರೀತಿಯಲ್ಲಿ, ಯಾವುದೇ ಮಾಧ್ಯಮದಲ್ಲಿ ಕಥಾಸ್ಪರ್ಧೆ ನಡೆಯಲಿ; ಅದು ಕನ್ನಡ ಕಥಾಲೋಕಕ್ಕೆ ಭರಪೂರ ಕೊಡುಗೆಯನ್ನಂತೂ ನೀಡುತ್ತ ಬಂದಿದೆ. ಕಥೆಗಳ ಗುಣಮಟ್ಟ, ಸಂಖ್ಯೆ, ಕಥೆಗಾರರ ಆಗಮನ ಹೆಚ್ಚಿದೆ. ಮುಂದಿನ ದಿನಗಳಲ್ಲಿ ಇದು ಇನ್ನಷ್ಟು ವೃದ್ಧಿಸಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
1 Comment

1 Comment

  1. 'ಕೊಂಕು' ತಿಮ್ಮ

    6 March 2023, 12:49 PM at 12:49 pm

    ಸಾಹಿತ್ಯ, ಕ್ರೀಡೆ ಅಲ್ಲ. ಯಾರು ಹೆಚ್ಚು ಓಡುತ್ತಾರೆ ಎಂದು ವೈಜ್ಞಾನಿಕವಾಗಿ, ವಸ್ತುನಿಷ್ಠವಾಗಿ ನಿರ್ಧರಿಸಬಹುದು. ಆದರೆ ಪೂಚಂತೇ ಮತ್ತು ಯಶವಂತ ಚಿತ್ತಾಲ- ಇಬ್ಬರಲ್ಲಿ ಯಾರು ಶ್ರೇಷ್ಠರು ಎಂದು ಸ್ಪರ್ಧೆ ಏರ್ಪಡಿಸಿ, ಕೆಲವು ತೀರ್ಪುಗಾರರ ಕೈಯಲ್ಲಿ ಇತ್ಯರ್ಥಗೊಳಿಸುವುದು ಸಮರ್ಪಕವಲ್ಲ. ಒಂದು ಮಾನದಂಡಗಳ ಪ್ರಕಾರ , ಪೂಚಂತೇ ಮೊದಲ ಬಹುಮಾನಕ್ಕೆ ಅರ್ಹರು ಹಾಗೇನೇ ಇನ್ನೊಂದು ಮಾನದಂಡಗಳ ಪ್ರಕಾರ ಯಶವಂತ ಚಿತ್ತಾಲರು. ಮಾತ್ರವಲ್ಲ, ಇನ್ನೊಂದು ತೀರ್ಪುಗಾರರ ತಂಡ ಇನ್ನೊಂದು ಪಟ್ಟಿಯನ್ನು ತಯಾರು ಮಾಡುವ ಸಾಧ್ಯತೆ ಇದೆ ಎಂಬುದು ಕೂಡಾ ಕಟುಸತ್ಯ. ಇನ್ನು, ಸ್ಪರ್ಧೆಯಿಂದ ಹೊರಗುಳಿದವರು ಕೂಡಾ ಎಲ್ಲೋ ಇರಬಹುದು ‘ಕಾಂತಾರ’ದ ಕಥೆಗಾರರು ಯಾವ ಸ್ಪರ್ಧೆಯಲ್ಲೂ ಭಾಗವಹಿಸಲಿಲ್ಲ ಅನ್ನುವುದನ್ನು ಕೂಡಾ, ಈ ಸ್ಪರ್ಧೆಗಳ ಸಂದರ್ಭದಲ್ಲಿ ನೆನೆಯಬೇಕು. ಸ್ಪರ್ಧೆ ಇರಲಿ. ಆದರೆ ಅದುವೇ ಸರ್ವಸ್ವವಲ್ಲ. ಅಂತಿಮವೂ ಅಲ್ಲ.

Leave a Reply

Your email address will not be published. Required fields are marked *

ಅಂಕಣ

ರಾಜಮಾರ್ಗ ಅಂಕಣ: ವಾಲ್ಮೀಕಿ ರಾಮಾಯಣ vs ಹನುಮಾನ್ ರಾಮಾಯಣ

ರಾಜಮಾರ್ಗ ಅಂಕಣ: ನಾವು ಮಾಡುವ ಎಲ್ಲಾ ಕೆಲಸಗಳ ಹಿಂದೆ ಒಂದಲ್ಲಾ ಒಂದು ಸ್ವಾರ್ಥ ಇರುತ್ತದೆ. ಕೆಲವರಿಗೆ ದುಡ್ಡಿನ ದಾಹ. ಕೆಲವರಿಗೆ ಕೀರ್ತಿಯ ಮೋಹ. ಇನ್ನೂ ಕೆಲವರಿಗೆ ಅಧಿಕಾರದ ಆಸೆ. ಇನ್ನೂ ಕೆಲವರಿಗೆ ಜನಪ್ರಿಯತೆಯ ಲೋಲುಪತೆ. ಅವುಗಳನ್ನು ಬಿಟ್ಟರೆ ನಾವೂ ಹನುಮಂತನ ಎತ್ತರಕ್ಕೆ ಏರಬಹುದು.

VISTARANEWS.COM


on

Koo

ಈ ಕಥೆಯಲ್ಲಿ ಅದ್ಭುತ ಸಂದೇಶ ಇದೆ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಈ ಕಥೆಗೆ ಮೂಲ ಯಾವುದು ಎಂದು ಕೇಳಬೇಡಿ. ಆದರೆ ಅದರಲ್ಲಿ ಅದ್ಭುತ ಸಂದೇಶ ಇರುವ ಕಾರಣ ಅದನ್ನು ಇಲ್ಲಿ ಬರೆಯುತ್ತಿದ್ದೇನೆ. ಇದು ಯಾವುದೋ ಒಂದು ವ್ಯಾಟ್ಸಪ್ ಗುಂಪಿನಲ್ಲಿ ಬಂದ ಲೇಖನ ಆಗಿದೆ.

ಹನುಮಂತನೂ ಒಂದು ರಾಮಾಯಣ ಬರೆದಿದ್ದ!

ವಾಲ್ಮೀಕಿ ರಾಮಾಯಣ ಬರೆದು ಮುಗಿಸಿದಾಗ ಅದನ್ನು ಓದಿದ ನಾರದನಿಗೆ ಅದು ಖುಷಿ ಕೊಡಲಿಲ್ಲ. ಆತ ಹೇಳಿದ್ದೇನೆಂದರೆ – ಇದು ಚೆನ್ನಾಗಿದೆ. ಆದರೆ ಹನುಮಂತ ಒಂದು ರಾಮಾಯಣ ಬರೆದಿದ್ದಾನೆ. ಅದಿನ್ನೂ ಚೆನ್ನಾಗಿದೆ!

ಈ ಮಾತು ಕೇಳದೆ ವಾಲ್ಮೀಕಿಗೆ ಸಮಾಧಾನ ಆಗಲಿಲ್ಲ. ಆತನು ತಕ್ಷಣ ನಾರದನನ್ನು ಕರೆದುಕೊಂಡು ಹನುಮಂತನನ್ನು ಹುಡುಕಿಕೊಂಡು ಹೊರಟನು. ಅಲ್ಲಿ ಹನುಮಂತನು ಧ್ಯಾನಮಗ್ನನಾಗಿ ಕುಳಿತು ಏಳು ಅಗಲವಾದ ಬಾಳೆಲೆಯ ಮೇಲೆ ಇಡೀ ರಾಮಾಯಣದ ಕಥೆಯನ್ನು ಚಂದವಾಗಿ ಬರೆದಿದ್ದನು. ಅದನ್ನು ಓದಿ ವಾಲ್ಮೀಕಿ ಜೋರಾಗಿ ಅಳಲು ಆರಂಭ ಮಾಡಿದನು. ಹನುಮಂತ “ಮಹರ್ಷಿ, ಯಾಕೆ ಅಳುತ್ತಿದ್ದೀರಿ? ನನ್ನ ರಾಮಾಯಣ ಚೆನ್ನಾಗಿಲ್ಲವೇ?” ಎಂದನು.

ಅದಕ್ಕೆ ವಾಲ್ಮೀಕಿ “ಹನುಮಾನ್, ನಿನ್ನ ರಾಮಾಯಣ ರಮ್ಯಾದ್ಭುತ ಆಗಿದೆ. ನಿನ್ನ ರಾಮಾಯಣ ಓದಿದ ನಂತರ ನನ್ನ ರಾಮಾಯಣ ಯಾರೂ ಓದುವುದಿಲ್ಲ!’ ಎಂದು ಮತ್ತೆ ಅಳಲು ಆರಂಭ ಮಾಡಿದನು. ಈ ಮಾತನ್ನು ಕೇಳಿದ ಹನುಮಾನ್ ತಾನು ರಾಮಾಯಣ ಬರೆದಿದ್ದ ಬಾಳೆಲೆಗಳನ್ನು ಅರ್ಧ ಕ್ಷಣದಲ್ಲಿ ಹರಿದು ಹಾಕಿದನು! ಅವನು ವಾಲ್ಮೀಕಿಗೆ ಹೇಳಿದ ಮಾತು ‘ಮಹರ್ಷಿ, ನೀವಿನ್ನು ಆತಂಕ ಮಾಡಬೇಡಿ. ಇನ್ನು ನನ್ನ ರಾಮಾಯಣ ಯಾರೂ ಓದುವುದಿಲ್ಲ!’

hanuman

ಹನುಮಾನ್ ಹೇಳಿದ ಜೀವನ ಸಂದೇಶ

‘ವಾಲ್ಮೀಕಿ ಮಹರ್ಷಿ. ನೀವು ರಾಮಾಯಣ ಬರೆದ ಉದ್ದೇಶ ನಿಮ್ಮನ್ನು ಜಗತ್ತು ನೆನಪಿಟ್ಟುಕೊಳ್ಳಬೇಕು ಎಂದು. ನನಗೆ ಆ ರೀತಿಯ ಆಸೆಗಳು ಇಲ್ಲ. ನಾನು ರಾಮಾಯಣ ಬರೆದ ಉದ್ದೇಶ ನನಗೆ ರಾಮ ನೆನಪಿದ್ದರೆ ಸಾಕು ಎಂದು! ರಾಮನ ಹೆಸರು ರಾಮನಿಗಿಂತ ದೊಡ್ಡದು. ರಾಮ ದೇವರು ನನ್ನ ಹೃದಯದಲ್ಲಿ ಸ್ಥಿರವಾಗಿದ್ದಾನೆ. ನನಗೆ ಇನ್ನು ಈ ರಾಮಾಯಣದ ಅಗತ್ಯ ಇಲ್ಲ!’

ಈಗ ವಾಲ್ಮೀಕಿ ಇನ್ನೂ ಜೋರಾಗಿ ಅಳಲು ತೊಡಗಿದನು. ಅವನ ಅಹಂಕಾರದ ಪೊರೆಯು ಕಳಚಿ ಹೋಗಿತ್ತು. ಆತನು ಒಂದಕ್ಷರವೂ ಮಾತಾಡದೆ ಹನುಮಂತನ ಪಾದಸ್ಪರ್ಶ ಮಾಡಿ ಹಿಂದೆ ಹೋದನು.

ಭರತ ವಾಕ್ಯ

ನಾವು ಮಾಡುವ ಎಲ್ಲಾ ಕೆಲಸಗಳ ಹಿಂದೆ ಒಂದಲ್ಲಾ ಒಂದು ಸ್ವಾರ್ಥ ಇರುತ್ತದೆ. ಕೆಲವರಿಗೆ ದುಡ್ಡಿನ ದಾಹ. ಕೆಲವರಿಗೆ ಕೀರ್ತಿಯ ಮೋಹ. ಇನ್ನೂ ಕೆಲವರಿಗೆ ಅಧಿಕಾರದ ಆಸೆ. ಇನ್ನೂ ಕೆಲವರಿಗೆ ಜನಪ್ರಿಯತೆಯ ಲೋಲುಪತೆ. ಅವುಗಳನ್ನು ಬಿಟ್ಟರೆ ನಾವೂ ಹನುಮಂತನ ಎತ್ತರಕ್ಕೆ ಏರಬಹುದು. ಏನಂತೀರಿ?

ಇದನ್ನೂ ಓದಿ: ರಾಜಮಾರ್ಗ ಅಂಕಣ: ದೇಶದ ಯುವಜನತೆಯ ಹೃದಯದ ಬಡಿತ ಅರ್ಜಿತ್ ಸಿಂಗ್, ನಿಮಗೆ ಹ್ಯಾಪಿ ಬರ್ತ್‌ಡೇ!

Continue Reading

ಅಂಕಣ

ರಾಜಮಾರ್ಗ ಅಂಕಣ: ದೇಶದ ಯುವಜನತೆಯ ಹೃದಯದ ಬಡಿತ ಅರ್ಜಿತ್ ಸಿಂಗ್, ನಿಮಗೆ ಹ್ಯಾಪಿ ಬರ್ತ್‌ಡೇ!

ರಾಜಮಾರ್ಗ ಅಂಕಣ (Rajamarga column): ಅರ್ಜಿತ್ ಸಿಂಗ್‌ (Arijit Singh) ಇಂದು ಜಗತ್ತಿನ ಅತ್ಯಂತ ಜನಪ್ರಿಯ ಗಾಯಕರಲ್ಲಿ ಮೂರನೇ ಸ್ಥಾನವನ್ನು, ಏಷಿಯಾದಲ್ಲಿ ಮೊದಲ ಸ್ಥಾನವನ್ನು ಪಡೆದಿದ್ದಾರೆ ಅಂದರೆ ಆತನ ಪ್ರತಿಭೆ ಮತ್ತು ಸಾಮರ್ಥ್ಯದ ಬಗ್ಗೆ ಅಭಿಮಾನ ಮೂಡುತ್ತದೆ.

VISTARANEWS.COM


on

arijit singh rajamarga column 2
Koo

ದ ಮ್ಯೂಸಿಕಲ್ ಲೆಜೆಂಡ್, ಜೇನು ದನಿಯ ಸರದಾರ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ (Rajamaraga Column): ಏಪ್ರಿಲ್ 25 ಬಂತು ಅಂದರೆ ಅದು ದೇಶದ ಯುವ ಸಂಗೀತ ಪ್ರೇಮಿಗಳಿಗೆ ಬಹಳ ದೊಡ್ಡ ಹಬ್ಬ. ಏಕೆಂದರೆ ಅದು ಅವರ ಹೃದಯದ ಬಡಿತವೇ ಆಗಿರುವ ಅರ್ಜಿತ್ ಸಿಂಗ್‌ (Arijit singh)) ಹುಟ್ಟಿದ ಹಬ್ಬ (Birthday)!

ಆತನ ವ್ಯಕ್ತಿತ್ವ, ಆತನ ಹಾಡುಗಳು, ಆತನ ಸ್ವರ ವೈವಿಧ್ಯ ಎಲ್ಲವೂ ಆತನ ಕೋಟಿ ಕೋಟಿ ಅಭಿಮಾನಿಗಳಿಗೆ ಹುಚ್ಚು ಹಿಡಿಸಿ ಬಿಟ್ಟಿವೆ. ಅದರಿಂದಾಗಿ ಇಂದು ಆತನಿಗೆ ದೇಶದಲ್ಲಿ ಸ್ಪರ್ಧಿಗಳೇ ಇಲ್ಲ ಎನ್ನುವುದನ್ನು ಅವನ ಸ್ಪರ್ಧಿಗಳೇ ಒಪ್ಪಿಕೊಂಡು ಬಿಟ್ಟಿದ್ದಾರೆ! ನಾನು ಇಂದು ಯಾವ ಕಾಲೇಜಿಗೆ ಹೋದರೂ ಅರ್ಜಿತ್ ಧ್ವನಿಯನ್ನು ಅನುಕರಣೆ ಮಾಡಿ ಹಾಡಲು ತೀವ್ರ ಪ್ರಯತ್ನ ಮಾಡುವ ಯುವಕ, ಯುವತಿಯರು ಇದ್ದಾರೆ. 2015ರಿಂದ ಆತನ ಜನಪ್ರಿಯತೆಯ ಗ್ರಾಫ್ ಕೆಳಗೆ ಬಂದದ್ದೇ ಇಲ್ಲ. ಅರ್ಜಿತ್ ಸಿಂಗ್‌ (Arijit Singh) ಇಂದು ಜಗತ್ತಿನ ಅತ್ಯಂತ ಜನಪ್ರಿಯ ಗಾಯಕರಲ್ಲಿ ಮೂರನೇ ಸ್ಥಾನವನ್ನು, ಏಷಿಯಾದಲ್ಲಿ ಮೊದಲ ಸ್ಥಾನವನ್ನು ಪಡೆದಿದ್ದಾರೆ ಅಂದರೆ ಆತನ ಪ್ರತಿಭೆ ಮತ್ತು ಸಾಮರ್ಥ್ಯದ ಬಗ್ಗೆ ಅಭಿಮಾನ ಮೂಡುತ್ತದೆ.

ಆತನದ್ದು ಬಂಗಾಳದ ಸಂಗೀತದ ಹಿನ್ನೆಲೆಯ ಕುಟುಂಬ

ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ಜಿಲ್ಲೆಯ ಒಂದು ಸಣ್ಣ ಹಳ್ಳಿಯಿಂದ ಬಂದವರು ಅರ್ಜಿತ್. ಅವನ ಅಜ್ಜಿ, ಅವನ ಅತ್ತೆ ಎಲ್ಲರೂ ಚೆನ್ನಾಗಿ ಹಾಡುತ್ತಿದ್ದರು. ಸಹಜವಾಗಿ ಹುಡುಗನಲ್ಲಿ ಸಂಗೀತದ ಆಸಕ್ತಿ ಮೂಡಿತ್ತು. ಒಂಬತ್ತನೇ ವರ್ಷಕ್ಕೆ ರಾಜೇಂದ್ರ ಪ್ರಸಾದ್ ಹಜಾರಿ ಎಂಬ ಶಾಸ್ತ್ರೀಯ ಸಂಗೀತದ ಗುರುವಿನಿಂದ ಸಂಗೀತದ ಕಲಿಕೆ ಆರಂಭವಾಯಿತು. ಬಂಗಾಳದಲ್ಲಿ ರಬೀಂದ್ರ ಸಂಗೀತದ ಪ್ರಭಾವದಿಂದ ಯಾರೂ ಹೊರಬರಲು ಸಾಧ್ಯವಿಲ್ಲ. ಅದರ ಜೊತೆಗೆ ವಿಶ್ವದ ಶ್ರೇಷ್ಠ ಸಂಗೀತಗಾರರಾದ ಮೊಜಾರ್ಟ್ ಮತ್ತು ಬೀತೊವೆನ್ ಅವರ ಹಾಡುಗಳನ್ನು ಕೇಳುತ್ತಾ ಅರ್ಜಿತ್ ಬೆಳೆದರು. ಅದರ ಜೊತೆಗೆ ಕಿಶೋರ್ ಕುಮಾರ್, ಮನ್ನಾಡೆ, ಹೇಮಂತ್ ಕುಮಾರ್ ಅವರ ಹಾಡುಗಳನ್ನು ಕೇಳುತ್ತಾ ಆರ್ಜಿತ್ ತನ್ನದೇ ಸಿಗ್ನೇಚರ್ ಧ್ವನಿಯನ್ನು ಸಂಪಾದನೆ ಮಾಡಿಕೊಂಡರು. ಸೂಫಿ ಹಾಡುಗಳು, ಗಜಲ್, ಪಾಪ್ ಹಾಡುಗಳು, ಶಾಸ್ತ್ರೀಯ ಹಾಡುಗಳು, ಭಜನ್, ಜಾನಪದ ಹಾಡುಗಳು….ಹೀಗೆ ಎಲ್ಲ ವಿಧವಾದ ಹಾಡುಗಳನ್ನು ಅದ್ಭುತವಾಗಿ ಹಾಡಲು ಕಲಿತರು.

ರಿಯಾಲಿಟಿ ಶೋದಲ್ಲಿ ಸೋಲು!

ಅರ್ಜಿತ್ ತನ್ನ 18ನೆಯ ವಯಸ್ಸಿನಲ್ಲಿ FAME GURUKUL ಎಂಬ ಟಿವಿ ರಿಯಾಲಿಟಿ ಶೋದಲ್ಲಿ ಭಾಗವಹಿಸಿದ್ದರು. ಚೆಂದವಾಗಿ ಹಾಡಿದರು ಕೂಡ. ಆದರೆ ಆಡಿಯೆನ್ಸ್ ಪೋಲ್ ಇದ್ದ ಕಾರಣ ಅದರಲ್ಲಿ ಸೋತರು. ಆದರೆ ಆತನ ಧ್ವನಿಯ ಮಾಧುರ್ಯವನ್ನು ಗುರುತಿಸಿದ ನಿರ್ಮಾಪಕ ಸಂಜಯ್ ಲೀಲಾ ಬನ್ಸಾಲಿ ಅವರು ತನ್ನ ಮುಂದಿನ ಸಿನೆಮಾ ಸಾವರಿಯಾದಲ್ಲಿ ಒಂದು ಹಾಡನ್ನು ಆತನಿಂದ ಹಾಡಿಸಿದರು.

ಆದರೆ ಆ ಹಾಡು ಸಿನೆಮಾ ಎಡಿಟ್ ಆಗುವಾಗ ಬಿಟ್ಟು ಹೋಯಿತು! ಮುಂದೆ TIPS ಸಂಗೀತ ಕಂಪೆನಿ ಆತನೊಂದಿಗೆ ಒಪ್ಪಂದ ಮಾಡಿಕೊಂಡು ಹಲವು ಆಲ್ಬಂ ಸಾಂಗ್ಸ್ ರೆಕಾರ್ಡ್ ಮಾಡಿಕೊಂಡಿತು. ಆದರೆ ಅದ್ಯಾವುದೂ ಬಿಡುಗಡೆ ಆಗಲಿಲ್ಲ! ಆತನಲ್ಲಿ ಅಪ್ಪಟ ಪ್ರತಿಭೆ ಇದ್ದರೂ ದುರದೃಷ್ಟವು ಆತನಿಗಿಂತ ಮುಂದೆ ಇತ್ತು! ಆದರೆ ಈ ಸೋಲುಗಳ ನಡುವೆ ಅರ್ಜಿತ್ ಸಂಗೀತವನ್ನು ಬಿಟ್ಟು ಹೋಗಿಲ್ಲ ಅನ್ನೋದು ಅದ್ಭುತ!

ಮುಂದೆ ಇನ್ನೊಂದು ಟಿವಿ ರಿಯಾಲಿಟಿ ಶೋ (10ಕೆ 10ಲೆ ಗಯೇ ದಿಲ್)ನಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಗೆದ್ದಾಗ ಆತನ ಬದುಕಿನಲ್ಲಿ ದೊಡ್ಡ ತಿರುವು ಉಂಟಾಯಿತು. ಆಗ ದೊರೆತ ಹತ್ತು ಲಕ್ಷ ರೂಪಾಯಿ ಬಹುಮಾನದ ಮೊತ್ತವನ್ನು ತಂದು ಮುಂಬೈಯಲ್ಲಿ ಒಂದು ಸ್ಟುಡಿಯೋ ಸ್ಥಾಪನೆ ಮಾಡಿದರು. ಒಂದು ಪುಟ್ಟ ಬಾಡಿಗೆ ಮನೆಯಲ್ಲಿ ವಾಸ, ಒಂದು ಹೊತ್ತಿನ ಊಟವೂ ಕಷ್ಟ ಆಗಿದ್ದ ದಿನಗಳು ಅವು! ಅರ್ಜಿತ್ ಒಂದು ದೊಡ್ಡ ಬ್ರೇಕ್ ಥ್ರೂ ಕಾಯುತ್ತ ಕೂತಿದ್ದರು. ಈ ಅವಧಿಯಲ್ಲಿ ನೂರಾರು ಜಿಂಗಲ್, ಜಾಹೀರಾತುಗಳ ಸಂಗೀತವನ್ನು ಕಂಪೋಸ್ ಮಾಡಿ ಸ್ವತಃ ಹಾಡಿದರು.

arijit singh rajamarga column 2

2011ರಲ್ಲಿ ಅರ್ಜಿತ್ ಭಾಗ್ಯದ ಬಾಗಿಲು ತೆರೆಯಿತು!

ಆ ವರ್ಷ ಬಿಡುಗಡೆ ಆದ ಮರ್ಡರ್ 2 ಸಿನೆಮಾದ ‘ಫೀರ್ ಮೊಹಬ್ಬತೆ ‘ ಹಾಡು ಸೂಪರ್ ಹಿಟ್ ಆಯಿತು. ಬಾಲಿವುಡ್ ಆತನ ಟಿಪಿಕಲ್ ಧ್ವನಿಗೆ ಮಾರುಹೋಯಿತು. ಮುಂದೆ ರಬಟಾ ( ಏಜೆಂಟ್ ವಿನೋದ್), ಉಸ್ಕಾ ಹೀ ಬನಾನಾ (ಎವಿಲ್ ರಿರ್ಟರ್ನ್) ಲಾಲ್ ಇಷ್ಕ್ ಮತ್ತು ಗೋಲಿಯೋನ್ ಕಿ ರಾಸ ಲೀಲಾ (ರಾಮ್ ಲೀಲಾ) ಮೊದಲಾದ ಹಾಡುಗಳು ಭಾರೀ ಹಿಟ್ ಆದವು. ಮನವಾ ಲಾಗೇ ಮತ್ತು ಮಸ್ತ್ ಮಗನ್ ಹಾಡುಗಳು ಇಡೀ ಬಾಲಿವುಡ್ ಇಂಡಸ್ಟ್ರಿಯಲ್ಲಿ ಸಂಚಲನ ಮೂಡಿಸಿದವು. ಪದ್ಮಾವತ್ ಸಿನೆಮಾದ ‘ಬಿನ್ ತೆ ದಿಲ್ ‘ ಹಾಡಿಗೆ ರಾಷ್ಟ್ರಪ್ರಶಸ್ತಿಯು ಒಲಿದು ಬಂತು. 7 ಫಿಲಂಫೇರ್ ಪ್ರಶಸ್ತಿಗಳು ಬಂದವು. ಹಿಂದೀ, ತೆಲುಗು, ತಮಿಳು, ಬಂಗಾಳಿ ಸಿನೆಮಾಗಳಲ್ಲಿ ಅರ್ಜಿತ್ ಅವರಿಗೆ ಭಾರೀ ಡಿಮಾಂಡ್ ಕ್ರಿಯೇಟ್ ಆಯಿತು. ಭಾರೀ ದೊಡ್ಡ ಫ್ಯಾನ್ ಬೇಸ್ ಡೆವಲಪ್ ಆಯಿತು. ಇಂದು ಅರ್ಜಿತ್ ತನ್ನ ಸಂಗೀತದ ಪ್ರತಿಭೆಯಿಂದ ಭಾರೀ ಎತ್ತರಕ್ಕೆ ಬೆಳೆದಿದ್ದಾರೆ.

ಜವಾನ್, ಡುಮ್ಕಿ, ಅನಿಮಲ್ ಮೊದಲಾದ ಇತ್ತೀಚಿನ ಸೂಪರ್ ಹಿಟ್ ಸಿನಿಮಾಗಳಲ್ಲಿ ಆರ್ಜಿತ್ ಹಾಡಿದ ಹಾಡುಗಳು ಇವೆ. ಆತ ಹಾಡಿದ ಎಲ್ಲ ಹಾಡುಗಳೂ ಸೂಪರ್ ಹಿಟ್ ಆಗಿವೆ.

ಸ್ಟುಡಿಯೋ ಹಾಡುಗಳು ಮತ್ತು ಸ್ಟೇಜ್ ಕಾರ್ಯಕ್ರಮಗಳು

ಹಿನ್ನೆಲೆ ಹಾಡುಗಳು ಮತ್ತು ಆಲ್ಬಂ ಹಾಡುಗಳನ್ನು ಸ್ಟುಡಿಯೋ ಒಳಗೆ ಹಾಡುವ ಟ್ಯಾಲೆಂಟ್ ಒಂದೆಡೆ. ಸ್ಟೇಜ್ ಮೇಲೆ ಲಕ್ಷಾಂತರ ಮಂದಿ ಹುಚ್ಚು ಅಭಿಮಾನಿಗಳ ಮುಂದೆ ಗಿಟಾರ್ ಹಿಡಿದುಕೊಂಡು ಹಾಡುವ ಟ್ಯಾಲೆಂಟ್ ಇನ್ನೊಂದೆಡೆ. ಆರ್ಜಿತ್ ಎರಡೂ ಕಡೆಯಲ್ಲಿ ಗೆದ್ದಿದ್ದಾರೆ. ದೇಶ ವಿದೇಶಗಳ ನೂರಾರು ವೇದಿಕೆಗಳಲ್ಲಿ ಅವರ ಲೈವ್ ಸ್ಟೇಜ್ ಶೋಗಳಿಗೆ ಅಭಿಮಾನಿಗಳು ಕಿಕ್ಕಿರಿದು ಸೇರುತ್ತಾರೆ. ಆರ್ಜಿತ್ ಮತ್ತು ಶ್ರೇಯಾ ಘೋಷಾಲ್ ಸಂಗೀತದ ಶೋಗಳಿಗೆ ಇಂದು ಭಾರೀ ಡಿಮಾಂಡ್ ಇದೆ!

ಲೆಟ್ ದೇರ್ ಬಿ ಲೈಟ್ ಎಂಬ NGO ಸ್ಥಾಪನೆ ಮಾಡಿ ಆರ್ಜಿತ್ ತನ್ನ ಸಂಪಾದನೆಯ ಬಹು ದೊಡ್ಡ ಭಾಗವನ್ನು ಚಾರಿಟಿ ಉದ್ದೇಶಕ್ಕೆ ಖರ್ಚು ಮಾಡುತ್ತಿರುವುದು ನಿಜಕ್ಕೂ ಅಭಿನಂದನೀಯ. ಆರ್ಜಿತ್ ಇಂದು ಭಾರತದ ನಂಬರ್ ಒನ್ ಹಿನ್ನೆಲೆ ಗಾಯಕ ಎಂದು ಸೋನು ನಿಗಮ್ ಸಾಕಷ್ಟು ವೇದಿಕೆಯಲ್ಲಿ ಹೇಳಿದ್ದಾರೆ. ಅವರಿಬ್ಬರೂ ಒಳ್ಳೆಯ ಗೆಳೆಯರು ಎಂದು ಕೂಡ ಸಾಬೀತಾಗಿದೆ.

ಅಂತಹ ಅನನ್ಯ ಪ್ರತಿಭೆ, ಜೇನು ದನಿಯ ಸರದಾರ ಅರ್ಜಿತ್ ಸಿಂಗ್ ಅವರಿಗೆ ಇಂದು ನೆನಪಲ್ಲಿ ಹುಟ್ಟುಹಬ್ಬದ ಶುಭಾಶಯ ಹೇಳಿ ಆಯ್ತಾ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ವಿಶ್ವವಿಜೇತನಾಗುವ ತವಕದಲ್ಲಿರುವ ಚೆಸ್ ಆಟಗಾರ ದೊಮ್ಮರಾಜು ಗುಕೇಶ್

Continue Reading

ಪ್ರಮುಖ ಸುದ್ದಿ

Rajkumar Birthday: ಸೋತಾಗ ಧೈರ್ಯ ತುಂಬುವ ಅಣ್ಣಾವ್ರ 7 ಹಾಡುಗಳು!

ವರನಟ, ಗಾನಗಂಧರ್ವ ಡಾ.ರಾಜ್‌ಕುಮಾರ್‌ ಅವರು ಕನ್ನಡಿಗರಿಗೆ ಸದಾ ಕಾಲ ಸ್ಫೂರ್ತಿ ನೀಡುವಂಥ ನೂರಾರು ಹಾಡುಗಳನ್ನು ಕೊಟ್ಟು ಹೋಗಿದ್ದಾರೆ. ಅವುಗಳಲ್ಲಿ ಬೆಸ್ಟ್‌ ಅನಿಸುವ 7 ಹಾಡುಗಳು ಇಲ್ಲಿವೆ. ಇದು ಡಾ.ರಾಜ್‌ ಬರ್ತ್‌ಡೇ ವಿಶೇಷ.

VISTARANEWS.COM


on

Koo

1. ಯಾರೇ ಕೂಗಾಡಲಿ ಊರೇ ಹೋರಾಡಲಿ

ʼಸಂಪತ್ತಿಗೆ ಸವಾಲ್‌ʼ ಚಿತ್ರದಲ್ಲಿ ಅಣ್ಣಾವ್ರು ಎಮ್ಮೆಯ ಮೇಲೆ ಕುಳಿತು ಹಾಡುತ್ತಾ ಸಾಗುವ ಈ ದೃಶ್ಯ ಕನ್ನಡ ಚಲನಚಿತ್ರ ರಂಗದ ಐಕಾನಿಕ್‌ ಅನಿಸುವ ಹಾಡು. ʼಬಿಸಿಲು ಮಳೆಗೆ ಬಿರುಗಾಳಿ ಚಳಿಗೆ ನೀ ಅಳುಕದೆ ಮುಂದೆ ಸಾಗುವೆʼ ಎಂದು ಎಮ್ಮೆಯ ನೆಮ್ಮದಿಯ ಸೂತ್ರವನ್ನು ಮನುಷ್ಯನಿಗೆ ಅನ್ವಯಿಸಿ, ಪ್ರಾಣಿಗಳ ಗುಣಗಳಿಂದ ಮನುಷ್ಯರು ಕಲಿಯಬೇಕಾದ್ದನ್ನು ಉದಾಹರಿಸಿ ಹಾಡಿದ್ದಾರೆ.

2. ನಗುತನಗುತ ಬಾಳು ನೀನು ನೂರು ವರುಷ
ʼಪರಶುರಾಮ್‌ʼ ಫಿಲಂನ ʼನಗುತಾ ನಗುತಾ ಬಾಳು ನೀನು ನೂರು ವರುಷʼ ಹಾಡು ಕನ್ನಡದ ಎರಡು ಬೆಲೆಬಾಳುವ ಮುತ್ತುಗಳನ್ನು ಒಳಗೊಂಡ ಮಾಣಿಕ್ಯ. ಇದರಲ್ಲಿ ವರನಟ ರಾಜ್‌ ಅವರು ಮುದ್ದು ಬಾಲನಟ ಪುನೀತ್‌ ರಾಜ್‌ಕುಮಾರ್‌ಗೆ ಬರ್ತ್‌ಡೇ ಕೇಕ್‌ ತಿನ್ನಿಸುತ್ತಾ ಹಾಡುತ್ತಾರೆ. ʼದೇವರು ತಂದ ಸೃಷ್ಟಿಯ ಅಂದ ಎಲ್ಲರು ನಗಲೆಂದೇʼ ಎಂಬಂಥ ಅರ್ಥಪೂರ್ಣವಾದ ಸಾಲುಗಳನ್ನು ಇದು ಒಳಗೊಂಡಿದೆ.

3. ಬಾನಿಗೊಂದು ಎಲ್ಲೆ ಎಲ್ಲಿದೆ
ʼಬೆಳದಿಂಗಳಾಗಿ ಬಾʼ ಚಲನಚಿತ್ರದಲ್ಲಿ ನಾಯಕಿ ಆರತಿ ಅವರಿಗೆ ಡಾ.ರಾಜ್‌ ಬುದ್ಧಿವಾದ ಹೇಳುವ ಹಾಡು ಇದು. ಚಿಕ್ಕಮಗಳೂರಿನ ಹಸಿರು ಸಿರಿಯ ನಡುವೆ ಕಾರು ಚಲಾಯಿಸುತ್ತಾ ʼಆಸೆಯೆಂಬ ಬಿಸಿಲು ಕುದುರೆ ಏಕೆ ಏರುವೆʼ ʼಹೂವೂ ಮುಳ್ಳೂ ಎರಡೂ ಉಂಟು ನಮ್ಮ ಬಾಳಲಿʼ ಎಂದು ಹಾಡುತ್ತಾ ಸಾಗುವ ಈ ದೃಶ್ಯ ಮನಮೋಹಕವಾಗಿದೆ.

4. ಬಾಳುವಂಥ ಹೂವೆ ಬಾಡುವಾಸೆ ಏಕೆ?
ʼಆಕಸ್ಮಿಕʼ ಚಲನಚಿತ್ರದಲ್ಲಿ ಅಣ್ಣಾವ್ರು ನಾಯಕಿ ಮಾಧವಿಗೆ ಬುದ್ಧಿ ಹೇಳುವ ಹಾಡು ʼಬಾಳುವಂಥ ಹೂವೆ ಬಾಡುವಾಸೆ ಏಕೆ?ʼ ʼಯಾರಿಗಿಲ್ಲ ನೋವು, ಯಾರಿಗಿಲ್ಲ ಸಾವು, ವ್ಯರ್ಥವ್ಯಸನದಿಂದ ಸಿಹಿಯು ಕೂಡ ಬೇವುʼ ʼಮೂಕ ಮುಗ್ಧ ದೇಹವ ಹಿಂಸಿಸುವುದು ಹೇಯʼ ʼಸಣ್ಣ ಬಿರುಕು ಸಾಲದೇ ತುಂಬು ದೋಣಿ ತಳ ಸೇರಲು?ʼ ಎಂಬಂಥ ಸಾರ್ವಕಾಲಿಕವಾದ ನೀತಿಮುತ್ತುಗಳನ್ನು ಹೇಳುತ್ತಾರೆ.

5. ಜಗವೇ ಒಂದು ರಣರಂಗ ಧೈರ್ಯ ಇರಲಿ ನಿನ್ನ ಸಂಗ
ಶಿವರಾಜ್‌ ಕುಮಾರ್‌ ಅವರು ನಟಿಸಿರುವ ʼರಣರಂಗʼ ಚಿತ್ರಕ್ಕೆ ಡಾ.ರಾಜ್‌ ಅವರು ಹಾಡಿರುವ ಹಾಡು ಇದು. ಇದರ ಬೀಟ್‌ ಹಾಗೂ ಒಕ್ಕಣೆಗಳು ಎಂಥವನನ್ನೂ ಹೋರಾಡಲು ಪ್ರಚೋದಿಸುವಂತಿವೆ. ಹಿಡಿಯೋ ಆತ್ಮಬಲದಸ್ತ್ರ, ಅದುವೇ ಜಯದ ಮಹಾ ಮಂತ್ರ, ನಿನ್ನ ದಾರಿಯಲ್ಲಿ ಎಲ್ಲೂ ಸೋಲೇ ಇಲ್ಲ, ಬಾಳ ಯುದ್ಧದಲ್ಲಿ ನಿನ್ನ ಗೆಲ್ಲೋರಿಲ್ಲ, ಛಲವೇ ಬಲವು ಮುಂದೆ ನುಗ್ಗಿ ನುಗ್ಗಿ ಬಾʼ ಎಂದು ಧೈರ್ಯ ತುಂಬುತ್ತಾರೆ ಇದರಲ್ಲಿ.

6. ನಾನಿರುವುದೆ ನಿಮಗಾಗಿ ನಾಡಿರುವುದೆ ನಮಗಾಗಿ
ಕನ್ನಡ ನಾಡಿನ ಮೊದಲ ಸಾಮ್ರಾಟ ಕದಂಬರ ಮಯೂರವರ್ಮನಾಗಿ ʼಮಯೂರʼ ಫಿಲಂನಲ್ಲಿ ನಟಿಸಿದ ರಾಜ್‌, ʼನಾನಿರುವುದೆ ನಿಮಗಾಗಿ, ನಾಡಿರುವುದೆ ನಮಗಾಗಿ, ಕಣ್ಣೀರೇಕೆ, ಬಿಸಿಯುಸಿರೇಕೆ, ಬಾಳುವಿರೆಲ್ಲ ಹಾಯಾಗಿʼ, “ಒಂದೇ ನಾಡಿನ ಮಕ್ಕಳು ನಾವು ಸೋದರರಂತೆ ನಾವೆಲ್ಲಾʼʼ ಎಂದು ಧೈರ್ಯ ಹೇಳಿದ್ದು ಒಂದು ಕಾಲದ ನಾಡಿನ ಜನತೆಯಲ್ಲಿ ಧೈರ್ಯವನ್ನು ತುಂಬುವ ನಾಯಕ ಗುಣವನ್ನು ಸ್ಪಷ್ಟವಾಗಿ ಚಿತ್ರಿಸಿತು.

7. ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು
ʼಜೀವನಚೈತ್ರʼ ಚಿತ್ರದಲ್ಲಿ ಹಳದಿ ಪೇಟ ಕಟ್ಟಿಕೊಂಡು ಜಟಕಾ ಬಂಡಿಯನ್ನು ಹೊಡೆಯುತ್ತಾ ಅಣ್ಣಾವ್ರು ಸಾಗುವ ಈ ಹಾಡು ಐತಿಹಾಸಿಕ, ಕನ್ನಡ ಹೋರಾಟಕ್ಕೆ ಸದಾ ಸ್ಫೂರ್ತಿ ತುಂಬುವ ಒಂದು ಹಾಡು. ʼʼಕಲಿಯೋಕೆ ಕೋಟಿ ಭಾಷೆ, ಆಡೋಕೆ ಒಂದೇ ಭಾಷೆ, ಕನ್ನಡ, ಕಸ್ತೂರಿ ಕನ್ನಡʼ ಎಂದು ಅವರು ಸಾರಿದ್ದು ಇಂದೂ ಮುಂದೂ ಕನ್ನಡ ನಾಡಿನ ಆತ್ಮಗೀತೆಯಂತೆ ಇದ್ದೇ ಇರುತ್ತದೆ, ನಮಗೆ ಸ್ಫೂರ್ತಿ ತುಂಬುವಂತಿದೆ.

ಇದನ್ನೂ ಓದಿ: Dr.Rajkumar Memory: ಪ್ಯಾನ್‌ ಇಂಡಿಯಾ ಫಿಲಂಗಳ ಕಾಲದಲ್ಲಿ ಅಣ್ಣಾವ್ರ ಚಿತ್ರ ನೋಡೋಕೆ 8 ಕಾರಣಗಳು

Continue Reading

ಅಂಕಣ

ದಶಮುಖ ಅಂಕಣ: ಮರುಳಿಗೆ ಅರಳುವ ಅರ್ಥಗಳನ್ನು ಹುಡುಕುತ್ತಾ…

ದಶಮುಖ ಅಂಕಣ: ಹುಚ್ಚು ಎನ್ನುವುದನ್ನು ಯಾವುದಕ್ಕೆಲ್ಲ ಸಂವಾದಿಯಾಗಿ ಬಳಸಬಹುದು? ಇತರರ ಖುಷಿಯನ್ನು ಬಯಸುವವರು ಹುಚ್ಚರೋ ಅಥವಾ ಇತರರ ಖರ್ಚಲ್ಲಿ ಖುಷಿ ಪಡುವವರೋ? ಇದಕ್ಕೆಲ್ಲ ಸಂವೇದನೆಗಳಿಗೆ ತಕ್ಕಂತೆ ಉತ್ತರ ಹುಡುಕುವುದೋ ಕಾಲಕ್ಕೆ ತಕ್ಕಂತೆಯೋ?

VISTARANEWS.COM


on

dashamukha column madness
Koo

ಈ ಅಂಕಣವನ್ನು ಇಲ್ಲಿ ಆಲಿಸಿ:

dashamukha column logo

ದಶಮುಖ ಅಂಕಣ: ʻಹುಚ್ಚುʼ (madness) ಎಂಬ ಶಬ್ದ ಕಿವಿಗೆ ಬೀಳುತ್ತಿದ್ದಂತೆ ನೆನಪಾಗುವ ಚಿತ್ರಗಳ ಬಗ್ಗೆ ಹೆಚ್ಚು ಹೇಳುವುದು ಬೇಡವಲ್ಲ. ಯಾವುದೇ ದೇಶ, ಭಾಷೆ, ಸಂಸ್ಕೃತಿಗಳಲ್ಲಿ ನೋಡಿದರೂ ʻಹುಚ್ಚಿಗೆʼ ಹೆಚ್ಚಿಗೆ ಅರ್ಥಗಳಿಲ್ಲ… ಅದೊಂದೇ ಅರ್ಥ! ಹಾಗಾಗಿಯೇ ʻಅದೊಂಥರಾ ಹುಚ್ಚು, ಅವನಿಗೊಂದು ಹುಚ್ಚುʼ ಎಂಬಿತ್ಯಾದಿ ಮಾತುಗಳ ಬೆನ್ನಿಗೇ ʻಅಲ್ಲೇನೋ ಒಂದು ಅತಿರೇಕವಿದೆʼ ಎಂಬ ಭಾವ ಬಂದುಬಿಡುತ್ತದೆ. ಅದಕ್ಕಾಗಿಯೇ ʻಹುಚ್ಚು ಸಾಹಸ, ಹುಚ್ಚು ಪ್ರೀತಿʼ ಮುಂತಾದ ಪ್ರಯೋಗಗಳನ್ನು ಮಾಡುತ್ತಾ, ಬೈಯ್ಯುವುದಕ್ಕೆ, ವ್ಯಂಗ್ಯಕ್ಕೆ, ಕುಹಕಕ್ಕೆ, ಟೀಕೆಗೆ, ತಮಾಷೆಗೆ… ಅಥವಾ ಇಂಥದ್ದೇ ಋಣಾತ್ಮಕ ಎನ್ನಬಹುದಾದ ಛಾಯೆಗಳಲ್ಲಿ ಈ ಶಬ್ದವನ್ನು ಬಳಸುತ್ತೇವೆ. ನಿಜಕ್ಕೂ ಈ ಶಬ್ದವನ್ನು ಯಾವುದಕ್ಕೆಲ್ಲ ಸಂವಾದಿಯಾಗಿ ಬಳಸಬಹುದು? ಬದುಕಿನಲ್ಲಿ ಪ್ರೀತಿ, ಸೌಖ್ಯ, ಖುಷಿಯನ್ನು ಅರಸುವವರಿಗೂ ಇದನ್ನು ಬಳಸಬಹುದೇ? ಸಾಹಿತ್ಯ-ಸಿನೆಮಾಗಳಲ್ಲಿ ಕಾಣುವ ಪ್ರೀತಿ, ಪ್ರೇಮಗಳಿಗೆ ಹುಚ್ಚನ್ನು ಪರ್ಯಾಯವಾಗಿ ಬಳಸುವುದು ಹೊಸದೇನಲ್ಲ. ಆದರೆ ಇಲ್ಲೀಗ ಅಂಥ ಹರೆಯದ ಪ್ರೀತಿಯ ಬಗ್ಗೆಯಲ್ಲ ಹೇಳುತ್ತಿರುವುದು. ಇತರರ ಸೌಖ್ಯದಲ್ಲಿ ತಮ್ಮ ಸ್ವಾಸ್ಥ್ಯವನ್ನು ಅರಸುವವರಿಗೂ ಈ ಶಬ್ದ ಸಲ್ಲುತ್ತದೆಯೇ?

ಇತ್ತೀಚೆಗೆ ಭೇಟಿ ಮಾಡಿದ ಒಂದಿಬ್ಬರು ವ್ಯಕ್ತಿಗಳು ಇಂಥದ್ದೊಂದು ಮಂಥನವನ್ನು ಹುಟ್ಟು ಹಾಕಿದ್ದು ಹೌದು. ಎಲ್ಲರಿಗಿಂತ ಭಿನ್ನವಾದ ಬದುಕನ್ನು ಆಯ್ದುಕೊಳ್ಳುವವರು, ತಮ್ಮ ಜೀವನದ ರೀತಿ-ನೀತಿಗಳನ್ನು ಅಥವಾ ಧ್ಯೇಯ-ಆದರ್ಶಗಳನ್ನು ʻಹುಚ್ಚುʼ ಎನ್ನುವಷ್ಟು ಪ್ರೀತಿಸದಿದ್ದರೆ, ಖುಷಿಯಿಂದ ಬದುಕುವುದು ಸಾಧ್ಯವೇ? ಎಷ್ಟೇ ಸುಭಿಕ್ಷವಾದ ಬದುಕನ್ನೂ ಹಳಿಯುತ್ತಲೇ ಬದುಕುವ ಇಂದಿನ ದಿನಗಳಲ್ಲಿ, ಇರುವ ಬದುಕಲ್ಲಿ ಸುಭಿಕ್ಷವನ್ನು ಸೃಷ್ಟಿಸುವ ಅವರನ್ನು ಹುಚ್ಚರೆಂದರೆ ಅತಿರೇಕವಾದೀತೇ? ಬದುಕನ್ನು ಕೊರಗಿನಲ್ಲೇ ಕಳೆಯುವುದು ಹುಚ್ಚೋ ಅಥವಾ ಇತರರ ಕೊರಗನ್ನು ಕಳೆಯುವುದು ಹುಚ್ಚೋ?

ಹೀಗೆನ್ನುವಾಗ ಅನಂತ್‌ ಸರ್‌ ನೆನಪಾಗುತ್ತಾರೆ. ಬದುಕಲ್ಲಿ ವಿದ್ಯೆ ದೊರೆಯದ ಮಕ್ಕಳನ್ನು ಶಿಕ್ಷಣದ ಹಾದಿಗೆ ಹಚ್ಚಿ, ನೆಲೆ ಕಾಣಿಸುವ ಅವರ ಸಾಹಸವನ್ನು ವರ್ಣಿಸುವುದಕ್ಕೆ ಬೇರೆ ಪದಗಳಿಗೆ ಸಾಧ್ಯವಿಲ್ಲ. ಮನೆ ಇದ್ದೂ ಇಲ್ಲದಂತಾದವರು, ಮನೆಯೇ ಇಲ್ಲದವರು, ಪಾಲಕರು ಇಲ್ಲದವರು, ಪಾಲಕರು ಯಾಕಾದರೂ ಇದ್ದಾರೋ ಎನ್ನುವಂಥ ಹಲವು ನಮೂನೆಯ ವಾತಾವರಣದಿಂದ ಬಂದ ಮಕ್ಕಳಿಗೆ ಊಟ, ವಸತಿಯ ಜೊತೆಗೆ ವಿದ್ಯೆ ನೀಡುವುದನ್ನೇ ಧ್ಯೇಯವಾಗಿಸಿಕೊಂಡವರು. ಹತ್ತು-ಹನ್ನೆರಡು ವರ್ಷಗಳವರೆಗೆ ಶಾಲೆಯ ಮುಖವನ್ನೂ ಕಾಣದವರು, ಎಂದೊ ಶಾಲೆಗೆ ಹೋಗಿ ನಡುವಲ್ಲೇ ಕಳೆದುಹೋದವರು- ಇಂಥ ನೂರಾರು ಮುಖಗಳಲ್ಲಿ ನಗು ಅರಳಿಸುವುದಕ್ಕೆ ಇರಬೇಕಾದ ಅದಮ್ಯ ಪ್ರೀತಿಯೂ ಒಂದು ಬಗೆಯ ಹುಚ್ಚೇ ತಾನೇ? ಹಾಗಿಲ್ಲದಿದ್ದರೆ, ಇಂಥ ಸಾಹಸಿಗಳು ಲೋಕದಲ್ಲಿ ನಮಗೆ ವಿರಳವಾಗಿ ಕಾಣುವುದೇಕೆ?

ಆರೇಳು ವರ್ಷದವರನ್ನು ಒಂದನೇ ಕ್ಲಾಸಿಗೆ ಕೂರಿಸುವಲ್ಲಿ ಅಷ್ಟೇನು ಸಮಸ್ಯೆಯಾಗಲಿಕ್ಕಿಲ್ಲ. ವರ್ಷದ ಆಧಾರದ ಮೇಲೆಯೇ ತಾನೆ ನಮ್ಮ ಶಿಕ್ಷಣ ವ್ಯವಸ್ಥೆ ರೂಪುಗೊಂಡಿರುವುದು. ಆದರೆ ಹದಿಹರೆಯಕ್ಕೆ ಕಾಲಿಟ್ಟವರು ಇನ್ನೂ ಶಾಲೆಯ ಮೆಟ್ಟಿಲನ್ನೇ ಹತ್ತದಿರುವಾಗ ಅವರನ್ನೂ ಒಂದನೇ ಕ್ಲಾಸಿಗೆ ಕೂರಿಸುವುದು ಹೇಗೆ? ʻಹಾಗಾಗಿಯೇ ದೈಹಿಕ ವಯಸ್ಸಿನ ಆಧಾರದ ಮೇಲಲ್ಲದೆ, ಮಕ್ಕಳ ಬೌದ್ಧಿಕ ವಯಸ್ಸಿಗೆ ಅನುಗುಣವಾಗಿ ಕಲಿಯುವ ಗುಂಪುಗಳನ್ನಾಗಿ ವಿಂಗಡಿಸಿಕೊಳ್ಳುತ್ತೇವೆ. ಹಾಗೆಯೇ ಅವರ ಕಲಿಕೆ ಮುಂದುವರಿಯುತ್ತದೆʼ ಎನ್ನುವುದು ಅನಂತ್‌ ಸರ್‌ ಹೇಳುವ ಮಾತು. ದೂರದ ಅಸ್ಸಾಂ, ಬಿಹಾರಗಳಿಂದ ಬಂದ ಮಕ್ಕಳಿಗೆ ಶಾಲೆಯ ಕಲ್ಪನೆಯೂ ಇಲ್ಲದಿರುವಾದ, ಇವರ ಭಾಷೆ ಅವರಿಗೆ-ಅವರ ಭಾಷೆ ಇವರಿಗೆ ತಿಳಿಯದಿರುವಾಗ, ವಿದ್ಯೆಯ ಶ್ರೀಕಾರ ಆಗುವುದು ಹೇಗೆ? ʻಇದೊಂಥರಾ ಹುಚ್ಚು. ಇದೂ ಆಗತ್ತೆʼ ಎನ್ನುವಾಗಿನ ಇವರ ಮುಖದ ನಗುವನ್ನು ಏನೆಂದು ಅರ್ಥ ಮಾಡಿಕೊಳ್ಳುವುದು?

ಈ ಚೌಕಟ್ಟಿನಾಚೆಯ ಮನೆಯಲ್ಲಿ ಕಲಿತು ಹೊರಬಿದ್ದು, ದುಡಿದು ಸಂಪಾದಿಸಿ ಬದುಕುತ್ತಿರುವ ತಮ್ಮ ಮಕ್ಕಳ ಬಗ್ಗೆ ಹೇಳುವಾಗ ಅವರ ಮುಖದ ನಗುವಿಗಿರುವ ಅರ್ಥದ ಅರಿವಾಗುತ್ತದೆ ನಮಗೆ. ಹುಚ್ಚಿಗೂ ಎಷ್ಟೊಂದು ಸುಂದರ, ಸಲ್ಲಕ್ಷಣಗಳಿವೆ ಎಂಬುದನ್ನು ತಿಳಿಯುವುದಕ್ಕೆ ಅದೊಂದು ನಗು ಸಾಕು. ಕೊರಗಿ ಕಳೆಯುವುದಕ್ಕಿಂತ, ಹೀಗೆ ಕೊರಗು ಕಳೆಯುವ ಹುಚ್ಚು ಒಳ್ಳೆಯದಲ್ಲವೇ? ನಮಗಿರುವ ಹುಚ್ಚು ಯಾವುದು ಎಂದು ಎಂದಾದರೂ ಯೋಚಿಸಿದ್ದೇವೆಯೇ?

ಈ ಎಲ್ಲ ಮಾತಿನ ನಡುವೆ ಪ್ರದೀಪ ಎನ್ನುವ ಆ ವ್ಯಕ್ತಿ ನೆನಪಾಗುತ್ತಾನೆ. ಕಪ್ಪು ಬಣ್ಣದ ಸಾಧಾರಣ ಮೈಕಟ್ಟಿನ ಆತ ಪುಟ್ಟ ದ್ವೀಪ ರಾಷ್ಟ್ರವೊಂದರ ನಿವಾಸಿ. ಅರಳಿದಂತಿರುವ ಕನ್ನಡಿಗಣ್ಣು, ಅವನದ್ದೇ ಆದ ವಿಶಿಷ್ಟ ಲಯದ ಇಂಗ್ಲಿಷ್‌ ಭಾಷೆಯ ಆತ ನಮಗೆ ಪರಿಚಯವಾಗಿದ್ದು ಪ್ರವಾಸವೊಂದರ ಭಾಗವಾಗಿ. ಅಲೆಯುವ ಹುಚ್ಚಿರುವ ಜನ ಲೋಕದಲ್ಲಿ ಎಷ್ಟೋ ಮಂದಿ ಇದ್ದಾರೆ. ಆದರೆ ಜೊತೆಗೆ ತಿರುಗಾಡುವವರ ಸೌಖ್ಯವೇ ತನಗೆ ಪ್ರೀತಿ ಎನ್ನುವವರೂ ಇದ್ದಾರೆಂಬುದು ತಿಳಿದಿದ್ದು ಆಗಲೇ. ಈತ ವೃತ್ತಿಯಲ್ಲಿ ಪ್ರವಾಸಿ ಗೈಡ್‌. ನಮ್ಮ ಯಾವುದೇ ಪ್ರವಾಸಿ ತಾಣಗಳಿಗೆ ಹೋದರೆ ಅಲ್ಲಿ ʻಗೈಡ್‌ ಬೇಕೆ?ʼ ಎಂದು ಮುತ್ತಿಗೆ ಹಾಕುವ ಗುಂಪಿನಲ್ಲಿ ಆತನೂ ಇರಬಹುದಾಗಿದ್ದವ. ಆದರೆ ತಮಗೆ ತಿಳಿದಷ್ಟನ್ನು ತೋಚಿದಂತೆ ಒದರಿ, ಬಂದವರಿಂದ ದುಡ್ಡು ಕಿತ್ತು ಕಳಿಸುವ ಗೈಡ್‌ಗಳ ಸಾಲಿನಿಂದ ಗಾವುದಗಟ್ಟಲೆ ದೂರದಲ್ಲಿ ಇರುವವ ಈತ.

ʻತಿರುಗಾಡಿದಷ್ಟೇ, ತಿರುಗಾಡಿಸುವುದೂ ನನಗಿಷ್ಟʼ ಎನ್ನುವ ಈತ, ತನ್ನ ಕಾರು ಓಡುವ ಪ್ರತಿಯೊಂದು ರಸ್ತೆಯ ಪರಿಚಯವನ್ನೂ ಮಾಡಿಕೊಡಬಲ್ಲ. ಯಾವ ಊರಿನ ಮಳೆ-ಬೆಳೆ ಹೇಗೆ ಎಂಬುದರಿಂದ ಹಿಡಿದು ಅಲ್ಲಿನ ಡೆಮಗ್ರಾಫಿಕ್‌ ವಿಶ್ಲೇಷಣೆಯನ್ನೂ ನೀಡಬಲ್ಲ. ʻಈ ಭಾಗದಲ್ಲಿ ತುಂಬಾ ಎಮ್ಮೆ ಸಾಕುತ್ತಾರೆ. ಮಣ್ಣಿನ ಗಡಿಗೆಯಲ್ಲಿ ಹಾಲು ಹೆಪ್ಪಾಕಿ, ಮೊಸರು ಮಾರುತ್ತಾರೆ. ಅದನ್ನೊಮ್ಮೆ ತಿನ್ನದಿದ್ದರೆ ಈ ರಸ್ತೆಯಲ್ಲಿ ಪ್ರಯಾಣ ಮಾಡಿದ್ದೇ ವ್ಯರ್ಥʼ ಎಂದು ಸರಕ್ಕನೆ ಗಾಡಿ ನಿಲ್ಲಿಸಿ, ಎರಡು ಪುಟ್ಟ ಗಡಿಗೆಗಳನ್ನು ಹಿಡಿದು ತರುತ್ತಾನೆ. ʻಇಷ್ಟು ದೂರ ಬಂದವರು ಈ ಸಿಹಿ ತಿನ್ನದಿದ್ದರೆ, ನಿಮ್ಮ ತಿರುಗಾಟವೇ ಅಪೂರ್ಣʼ ಎನ್ನುತ್ತಾ ಯಾವುದೋ ಸಿಹಿ ಎದುರಿಗಿಡುತ್ತಾನೆ. ʻಇಲ್ಲಿ ಭರಪೂರ ತರಕಾರಿ ಬೆಳೆಯುತ್ತಾರೆ. ಇದರಲ್ಲೊಂದು ಸಲಾಡ್‌ ಮಾಡುತ್ತೇನೆ ನೋಡಿ, ತಿನ್ನುವುದಕ್ಕೆ ಪುಣ್ಯ ಬೇಕುʼ ಎಂದು ಉಪಚಾರ ಮಾಡುತ್ತಾನೆ. ಇಂಥ ಯಾವುದನ್ನೂ ಮಾಡಬೇಕಾದ ಅಗತ್ಯ ಆತನಿಗಿಲ್ಲ. ನಮ್ಮ ಜಾಗಕ್ಕೆ ಕರೆದೊಯ್ದರೆ ಅವನ ಕೆಲಸ ಮುಗಿಯಿತು; ಅವನ ದುಡ್ಡು ಅವನ ಕೈ ಸೇರುತ್ತದೆ. ʻತಿರುಗಾಡುವುದು, ತಿರುಗಾಡಿಸುವುದು ನಂಗೊಂಥರಾ ಹುಚ್ಚು. ಹೊಸ ಜನರೊಂದಿಗೆ ನಂಟು ಬೆಸೆಯುವುದು, ಅವರನ್ನು ಖುಷಿಯಾಗಿಡುವುದು ನಂಗಿಷ್ಟʼ ಎನ್ನುತ್ತಾ ಹಿಂದಿ ನಟ ದೇವಾನಂದ್‌ ರೀತಿಯಲ್ಲಿ ನಗೆ ಬೀರುತ್ತಾನೆ.

ಇದನ್ನೂ ಓದಿ: ದಶಮುಖ ಅಂಕಣ: ಮೌನವೆಂಬ ಭಾವಸೇತು

ಗುರಿ ತಲುಪುವುದಕ್ಕಿಂತ ಖುಷಿ ನೀಡುವುದು ಗಮ್ಯದೆಡೆಗಿನ ದಾರಿಗಳಲ್ಲವೇ? ಯಾವುದೇ ದಾರಿಯಲ್ಲಿ ಎದುರಾಗುವ ಊರೊಂದರ ಹೆಸರಿನ ಹಿಂದಿನ ಗಮ್ಮತ್ತು ತಿಳಿಸುವುದು, ಯಾವುದೋ ದೇಶದಿಂದ ಬರುವ ಚಿತ್ರವಿಚಿತ್ರ ಅಲೆಮಾರಿಗಳ ಜಾಯಮಾನ ವಿಸ್ತರಿಸುವುದು- ಇವೆಲ್ಲ ತನ್ನ ಪ್ರಯಾಣಿಕರ ದಾರಿಯನ್ನು ಬೋರಾಗದಂತೆ ಕಳೆಯುವ ಮತ್ತು ಅವರೊಂದಿಗೆ ನಂಟು ಬೆಸೆಯುವ ಆತನ ಉದ್ದೇಶಕ್ಕೆ ಒದಗುವಂಥವು. ವಿಹಾರಕ್ಕೆ, ವಿರಾಮಕ್ಕೆ, ಅಧ್ಯಯನಕ್ಕೆ ಮುಂತಾದ ಹಲವು ಕಾರಣಗಳನ್ನು ಹೊತ್ತು ಬರುವ ಜನರ ಕಥೆಗಳು ಆತನ ಸಂಚಿಯಲ್ಲಿವೆ. ಎಲ್ಲರಿಗೂ ಅವರವರ ಉದ್ದೇಶ ಈಡೇರುವಂತೆ ಶ್ರಮಿಸುವುದು ತನಗೆ ಪ್ರಿಯವಾದ ಸಂಗತಿ ಎನ್ನುವ ಇಂಥವರು ಜೊತೆಗಿದ್ದರೆ, ಅಲ್ಲಾವುದ್ದೀನನ ಮಾಂತ್ರಿಕ ಚಾಪೆಯ ಮೇಲೆ ತೇಲಿದಂತೆ ದಾರಿ ಸಾಗುತ್ತದೆ. ಇಂಥವರನ್ನು ನೋಡಿದಾಗ, ಇನ್ನೊಬ್ಬರ ಸೌಖ್ಯದಲ್ಲಿ ತಮ್ಮ ಸ್ವಾಸ್ಥ್ಯವನ್ನು ಅರಸುವ ಸ್ವಭಾವದ ಬಗ್ಗೆ ಬೇರೆ ಶಬ್ದಗಳು ನೆನಪಾಗುತ್ತಿಲ್ಲ.

ಹಣ, ಸಂಪತ್ತು, ಖ್ಯಾತಿ, ಅಧಿಕಾರಗಳ ಹುಚ್ಚು ಅಂಟಿಸಿಕೊಂಡವರು ನಮ್ಮೆದುರಿಗೆ ಮೆರವಣಿಗೆ ಹೊರಟಿದ್ದಾರೆ ಈಗ. ಚುನಾವಣೆಯ ಕಣದಲ್ಲಿಳಿದು ಅಧಿಕಾರ ದಕ್ಕಿಸಿಕೊಳ್ಳಲು, ದಕ್ಕದಿದ್ದರೆ ಯಾವ ಮಟ್ಟಕ್ಕೂ ಇಳಿಯುವಷ್ಟು ಹುಚ್ಚರಾಗಿದ್ದಾರೆ ಇಂದು. ಯಾರಿಗಾಗಿ ತಾವು ಆಯ್ಕೆಯಾಗುತ್ತಿದ್ದೇವೆಯೋ ಅವರ ಸೌಖ್ಯವನ್ನು ಗಮನಿಸುವುದೇ ಮರುಳು ಎನಿಸುತ್ತಿದೆ ಅಭ್ಯರ್ಥಿಗಳಿಗೆ. ಇಂಥವುಗಳನ್ನು ನೋಡಿದಾಗ ಮತ್ತದೇ ಪ್ರಶ್ನೆಗಳು ಮೂಡುತ್ತವೆ. ಹುಚ್ಚು ಎನ್ನುವುದನ್ನು ಯಾವುದಕ್ಕೆಲ್ಲ ಸಂವಾದಿಯಾಗಿ ಬಳಸಬಹುದು? ಇತರರ ಖುಷಿಯನ್ನು ಬಯಸುವವರು ಹುಚ್ಚರೋ ಅಥವಾ ಇತರರ ಖರ್ಚಲ್ಲಿ ಖುಷಿ ಪಡುವವರೋ? ಇದಕ್ಕೆಲ್ಲ ಸಂವೇದನೆಗಳಿಗೆ ತಕ್ಕಂತೆ ಉತ್ತರ ಹುಡುಕುವುದೋ ಕಾಲಕ್ಕೆ ತಕ್ಕಂತೆಯೋ? ಹುಚ್ಚಿಗೆ ಹೆಚ್ಚಿಗೆ ಅರ್ಥಗಳಿಲ್ಲವೆಂದು ಈಗಲೂ ಹೇಳಬಹುದೇ?

ಇದನ್ನೂ ಓದಿ: ದಶಮುಖ ಅಂಕಣ: “ಮಧುಮಾಸವೆ ಅಡಿ ಇಡುತಿದೆ ಹೊಸವರ್ಷದ ಬೆಳಗೆ”

Continue Reading
Advertisement
Gurucharan Singh soon to get married faced financial crunch
ಸಿನಿಮಾ19 mins ago

Gurucharan Singh: ನಿಗೂಢವಾಗಿ ನಾಪತ್ತೆಯಾದ ಈ ನಟನಿಗೆ ಶೀಘ್ರದಲ್ಲೇ ಮದುವೆ!

IPL 2024
ಪ್ರಮುಖ ಸುದ್ದಿ25 mins ago

IPL 2024 : ಡೇವಿಡ್ ವಾರ್ನರ್ ಅವರೊಂದಿಗೆ ‘ಈ’ ಅದ್ಭುತ ಐಪಿಎಲ್ ದಾಖಲೆಯನ್ನು ಸರಿಗಟ್ಟಿದ ಕೊಹ್ಲಿ

War 2 A galaxy of stars descended at a Mumbai restaurant on Sunday evening
ಸ್ಯಾಂಡಲ್ ವುಡ್40 mins ago

War 2 Movie: `ವಾರ್‌2′, `ಬ್ರಹ್ಮಾಸ್ತ್ರ’ ತಂಡಕ್ಕೆ ಸ್ಪೆಷಲ್‌ ಡಿನ್ನರ್‌ ಪಾರ್ಟಿ ಆಯೋಜಿಸಿದ ಅಯಾನ್ ಮುಖರ್ಜಿ !

hd revanna prajwal revanna
ಪ್ರಮುಖ ಸುದ್ದಿ48 mins ago

Hasan Pen Drive Case: ಎಲ್ಲೂ ಕಾಣದ ಪ್ರಜ್ವಲ್‌, ಇಂದು ಎಚ್‌ಡಿ ರೇವಣ್ಣ ಹೈಕೋರ್ಟ್‌ ಮೊರೆ

ವಿದೇಶ58 mins ago

Stab wound: ಗರ್ಲ್‌ಫ್ರೆಂಡ್‌ನ ಚುಚ್ಚಿ ಕೊಲ್ಲೋ ಮುನ್ನ ಗೂಗಲ್‌ ಸರ್ಚ್‌ ಮಾಡಿದ್ದ ಹಂತಕ!

Actress Haripriya Vasishta Simha Buys A Swanky New SUV Car
ಸ್ಯಾಂಡಲ್ ವುಡ್1 hour ago

Actress Haripriya: ಐಷಾರಾಮಿ ಕಾರು ಖರೀದಿಸಿದ ʻಸಿಂಹಪ್ರಿಯಾʼ! ಬೆಲೆ ಎಷ್ಟು?

Kane Williamson
ಕ್ರೀಡೆ2 hours ago

Kane Williamson : ನ್ಯೂಜಿಲ್ಯಾಂಡ್ ವಿಶ್ವ ಕಪ್​ ತಂಡಕ್ಕೆಕೇನ್​ ವಿಲಿಯಮ್ಸನ್​ ನಾಯಕ

PM Narendra Modi
ಕರ್ನಾಟಕ2 hours ago

PM Narendra Modi: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಅಬ್ಬರದ ಪ್ರಚಾರಕ್ಕೆ ಸಿದ್ಧತೆ

PM Not OBC Said by Rahul Gandhi and BJP hits back to him
ಪ್ರಮುಖ ಸುದ್ದಿ2 hours ago

PM Narendra Modi: ಸಂಪತ್ತು ಮರುಹಂಚಿಕೆಯ ರಾಹುಲ್ ಗಾಂಧಿ ಐಡಿಯಾ ನಗರ ನಕ್ಸಲ್ ಚಿಂತನೆ: ಪಿಎಂ ಮೋದಿ

ವೈರಲ್ ನ್ಯೂಸ್2 hours ago

Viral Video: ನಾಲ್ಕನೇ ಮಹಡಿಯಿಂದ ವಿಂಡೋ ಪೋರ್ಚ್‌ ಮೇಲೆ ಬಿದ್ದ ಮಗು; ವಿಡಿಯೋ ವೈರಲ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 29 2024
ಭವಿಷ್ಯ5 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202418 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 202420 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 202422 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 202422 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ1 day ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ2 days ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

ಟ್ರೆಂಡಿಂಗ್‌