Site icon Vistara News

Self Harming : ಕೈ ಹಾಗೂ ಕತ್ತು ಕೊಯ್ದುಕೊಂಡು ನೇಣಿಗೆ ಶರಣಾದ ಯುವಕ

Anekal Boy Death

ಆನೇಕಲ್/ಮಂಡ್ಯ: ಕೈ ಹಾಗೂ ಕತ್ತುಕೊಯ್ದು ಕೊಂಡು ನೇಣು ಬಿಗಿದಿರುವ ಸ್ಥಿತಿಯಲ್ಲಿ ಯುವಕನ ಮೃತದೇಹವು (Self Harming) ಪತ್ತೆಯಾಗಿದೆ. ಇದು ಹಲವು ಅನುಮಾನಗಳನ್ನು ಹುಟ್ಟು ಹಾಕಿದೆ. ಬೆಂಗಳೂರು ಹೊರವಲಯದ ಆನೇಕಲ್ ಪಟ್ಟಣದ ಥಳಿರಸ್ತೆಯಲ್ಲಿ ಘಟನೆ ನಡೆದಿದೆ. ವಿನಯ್ ಕುಮಾರ್ (24) ಮೃತ ದುರ್ದೈವಿ.

ವಿನಯ್‌ ಸರ್ಜಾಪುರ ಸಮೀಪದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಮೊದಲಿಗೆ ಕತ್ತರಿಯಲ್ಲಿ ಕೈ ಮತ್ತು ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ತದನಂತರ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಭಾನುವಾರ (ಜ.21) ಬೆಳಗ್ಗೆ 8 ಗಂಟೆ ಸುಮಾರಿಗೆ ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೂ ಮುನ್ನ ಮೊಬೈಲ್ ಸಿಮ್ ತೆಗೆದು ಬಿಸಾಡಿದ್ದಾನೆ. ಮೊಬೈಲ್ ಪೂರ್ತಿ ರೀಸ್ಟಾರ್ಟ್ ಮಾಡಿದ್ದಾನೆ. ಯಾವುದೋ ಬಲವಾದ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ಇದೆ. ವಿನಯ್‌ಗೆ ಹೆದರಿಸಿ ಯಾರಾದರೂ ಬ್ಲ್ಯಾಕ್‌ ಮೇಲ್ ಮಾಡಿದ್ದರಾ? ಇದರಿಂದ ಭಯಪಟ್ಟು ಆತ್ಮಹತ್ಯೆಗೆ ಶರಣಾದ್ನಾ ಎಂಬ ಪ್ರಶ್ನೆ ಉದ್ಭವಿಸಿದೆ.

ಸದ್ಯ ಆನೇಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆನೇಕಲ್ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ಮೃತದೇಹವನ್ನು ರವಾನೆ ಮಾಡಿದ್ದಾರೆ. ಜತೆಗೆ ಯುವಕನ ಮೊಬೈಲ್ ವಶಕ್ಕೆ ಪಡೆದು ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Medical Negligence : ಗರ್ಭಕೋಶ ಶಸ್ತ್ರಚಿಕಿತ್ಸೆಗೆಂದು ಆಸ್ಪತ್ರೆ ಸೇರಿದಳು; ವೈದ್ಯರ ನಿರ್ಲಕ್ಷ್ಯಕ್ಕೆ ಸ್ಮಶಾನದ ಪಾಲಾದಳು

ಗಂಡನ ಕಿರುಕುಳಕ್ಕೆ ಬೇಸತ್ತು ನೇಣು ಬಿಗಿದುಕೊಂಡಳು

ಕೌಟುಂಬಿಕ ಕಲಹಕ್ಕೆ ಬೇಸತ್ತ ಮಹಿಳೆಯೊಬ್ಬಳು ನೇಣು ಬಿಗಿದುಕೊಂಡು ಮೃತಪಟ್ಟಿರುವ ಘಟನೆ ಮಂಡ್ಯದ ನೆಹರುನಗರ ಪೂರ್ವ ಬಡಾವಣೆಯಲ್ಲಿ ನಡೆದಿದೆ. ಪದ್ಮ.ವಿ (36) ಮೃತ ದುರ್ದೈವಿ.

ಪದ್ಮ ರಾಮನಗರ ತಾಲೂಕಿನ ಅಂಕನಹಳ್ಳಿ ಗ್ರಾಮದವಳು. ಮಂಡ್ಯದ ಸಿದ್ದರಾಜು ಎಂಬಾತನನ್ನು ಪ್ರೀತಿಸಿ ಪದ್ಮ ಮದುವೆ ಆಗಿದ್ದಳು. ಸಿದ್ದರಾಜು ಬಣ್ಣ ಬಳಿಯುವ ಕೆಲಸ ಮಾಡುತ್ತಿದ್ದ. 13 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿ ಜೀವನ ನಡೆಸುತ್ತಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದರು. ಇತ್ತೀಚೆಗೆ ಸಿದ್ದರಾಜು ಹಣಕ್ಕಾಗಿ ನಿತ್ಯ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಹೀಗಾಗಿ ಇದರಿಂದ ನೊಂದ ಪದ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾಳೆ. ಮಂಡ್ಯ ಪೂರ್ವ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version