Site icon Vistara News

Ram Mandir : ಅರುಣ್ ಯೋಗಿರಾಜ್​ ಕೆತ್ತಿದ ರಾಮನ ಮೂರ್ತಿಯೇ ಆಯ್ಕೆಯಾಗಿದ್ದು ಯಾಕೆ? ಇಲ್ಲಿದೆ ವಿವರ

Arun Yogiraj

ಬೆಂಗಳೂರು: ಮೈಸೂರಿನ ಪ್ರಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್​​ (Arun Yogiraj) ಅವರು ಕೆತ್ತಿರುವ ಬಾಲರಾಮನ (Ram lalla Statue) ವಿಗ್ರಹ ಜನವರಿ 22ರಂದು ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ (Ayodhya Ramajanmabhumi) ಪ್ರತಿಷ್ಠಾಪನೆಗೊಳ್ಳಲಿರುವುದು ಕರುನಾಡಿನ ಪಾಲಿಗೆ ಅತ್ಯಂತ ಸಂಭ್ರಮದ ಸುದ್ದಿಯಾಗಿದೆ. ಹಲವು ಸ್ಪರ್ಧಿಗಳನ್ನು ಮೀರಿಸಿ ತಮ್ಮದೇ ಕೆತ್ತನೆಯನ್ನು ಮಂದಿರದ ಟ್ರಸ್ಟ್​ ಆಯ್ಕೆ ಮಾಡಿಕೊಳ್ಳುವಂತೆ ಮಾಡುವುದರ ಹಿಂದೆ ಅವರ ಕೈಚಳಕವಿದೆ. ಅದಕ್ಕಿಂತ ಮಿಗಿಲಾಗಿ ಕನ್ನಡಿಗ ಶಿಲ್ಪಿ ಅರುಣ್​ ಅವರಿಗೆ ಇರುವ ರಾಮನ ಮೇಲಿನ . ಭಕ್ತಿ, ಶ್ರದ್ಧೆಯೇ ಕಾರಣ. ಅದೇ ಕಾರಣಕ್ಕೆ ಕೋಟ್ಯಂತರ ರಾಮಭಕ್ತರ ಕನಸಿನ ರಾಮಮಂದಿರದಲ್ಲಿ ಅವರು ಕೆತ್ತಿರುವ ವಿಗ್ರಹಕ್ಕೆ ಪ್ರಾಣ ಪ್ರತಿಷ್ಠೆ ಆಗಲಿದೆ. ಆದರೆ, ಈ ವಿಗ್ರಹ ಆಯ್ಕೆಯಾಗುವುದಕ್ಕೆ ಅವಷ್ಟೇ ಕಾರಣವಲ್ಲ. ತೀರ್ಪುಗಾರರು ಅಂತಿಮಗೊಳಿಸುವ ಮೊದಲು ಇನ್ನಷ್ಟು ಸಂಗತಿಗಳನ್ನು ನೋಡಿ ಮೆಚ್ಚಿದ್ದಾರೆ. ಅವುಗಳೇನೆಂಬುದನ್ನು ನೋಡೋಣ.

ರಾಮಲಲ್ಲಾನ ಮೂರ್ತಿ ಕೆತ್ತನೆಗಾಗಿ ಸಹಸ್ರ​ ಸಂಖ್ಯೆಯ ಶಿಲ್ಪಿಗಳ ನಡುವಿನ ತುರುಸಿನ ಸ್ಪರ್ಧೆ ನಡೆದಿತ್ತು. ಇದು ಒಂದು ವರ್ಷದ ಹಿಂದಿನ ಪ್ರಕ್ರಿಯೆ. ಇಲ್ಲಿ ಆಯ್ಕೆಗೊಂಡ ಅಂತಿಮ ಮೂವರಲ್ಲಿ ಒಬ್ಬರಾಗಿದ್ದಾರೆ ಅರುಣ್​. ಆ ಮೂವರಲ್ಲಿಯೂ ಅರುಣ್​ ಅವರ ಭಾವಕ್ಕೆ ಹಾಗೂ ಕಲ್ಪನೆಗೆ ಮನ್ನಣೆ ದೊರಕಿದೆ ಎಂಬುದೇ ವಿಶೇಷ. ಬೆಂಗಳೂರಿನ ಜಿ.ಎಲ್.ಭಟ್ ಮತ್ತು ರಾಜಸ್ಥಾನದ ಸತ್ಯನಾರಾಯಣ ಪಾಂಡೆ ಆಯ್ಕೆಯಾಗಿದ್ದ ಇನ್ನಿಬ್ಬರು ಮಹಾನ್ ಶಿಲ್ಪಿಗಳು. ಎಲ್ಲರೂ ಒಬ್ಬರಿಗಿಂತ ಒಬ್ಬರು ಮಹಾನ್​ ಶಿಲ್ಪಿಗಳು. ಆದರೆ ಉಳಿದಿಬ್ಬರು ರಚಿಸಿದ ಮೂರ್ತಿಗಿಂತಲೂ ಅರುಣ್ ಅವರ ಕೆತ್ತನೆಗೆ ಪ್ರಾಶಸ್ತ್ಯ ಸಿಕ್ಕಿದೆ.

ಅರುಣ್ ಅವರು ರಚನೆ ಆಯ್ಕೆಯಾಗಲು ಮೊದಲ ಕಾರಣವೇ ವಿಗ್ರಹ ಮುಖದಲ್ಲಿನ ತೇಜಸ್ಸು. ಅದರಲ್ಲಿ ಹೆಚ್ಚು ದೈವಿಕ ಭಾವವಿದೆ ಎಂಬುದನ್ನು ತೀರ್ಪುಗಾರರು ಮನಗಂಡಿದ್ದಾರೆ. ಪ್ರಾಣಪ್ರತಿಷ್ಠೆ ಆಗಲಿರುವ ವಿಗ್ರಹವು ಬಾಲ ರಾಮನಾಗಿದೆ ಎಂಬುದು ಇಲ್ಲಿ ಗಮನಾರ್ಹ. ಅಂತೆಯೇ ಅರುಣ್ ಅವರ ಕೆತ್ತನೆಯ ವಿಗ್ರಹದಲ್ಲಿ ಮುಗ್ಧ ಮಗುವಿನ ಸುಂದರ ನೋಟವಿದೆ. ಬಾಲ ರಾಮದೇವರು ಸಾಕ್ಷಾತ್ ಮಂದೆ ನಿಂತಿರುವಂತೆ ಕಾಣುವ ಮೂರ್ತಿಯನ್ನು ಅವರು ಕೆತ್ತಿದ್ದಾರೆ. ಅಲ್ಲದೆ ಹೆಚ್ಚು ನೈಜತೆಯಿಂದ ಕೂಡಿದೆ.

ಅರುಣ್​ ಅವರು ಕೆತ್ತಿರುವ ಐದು ವರ್ಷದ ಬಾಲ ರಾಮನ ಮೂರ್ತಿಯ ಕೈಯಲ್ಲಿ ಧನಸ್ಸು ಹಾಗೂ ಬಾಣವಿದೆ. ರಾಮನ ಮೂರ್ತಿಯು 51 ಇಂಚು ಎತ್ತರವಿದ್ದರೆ ಪ್ರಭಾವಳಿ ಸೇರಿದಂತೆ ಒಟ್ಟು ವಿಗ್ರಹ 8 ಅಡಿ ಎತ್ತರ ಹಾಗೂ ಮೂರುವರೆ ಅಡಿ ಅಗಲವಿದೆ. ಇದು ತೇಜಸ್ಸಿನಿಂದ ಕಂಗೊಳಿಸುತ್ತಿದೆ. ಒಟ್ಟಾರೆಯಾಗಿ ಕೋಟ್ಯಂತರ ರಾಮಭಕ್ತರ ಪೂಜೆಗೆ ಅರ್ಹವಾಗಿದೆ ಎಂದು ತೀರ್ಪುಗಾರರು ಅದನ್ನೇ ಆಯ್ಕೆ ಮಾಡಿದ್ದಾರೆ.

ಇದನ್ನೂ ಓದಿ : Ram Mandir: ರಾಮ ಮಂದಿರಕ್ಕೆ ಕನ್ನಡಿಗ ಯೋಗಿರಾಜ್ ಕೆತ್ತನೆಯ ರಾಮಲಲ್ಲಾ ವಿಗ್ರಹ ಆಯ್ಕೆ

ಕರುನಾಡಿನ ಕಲ್ಲು

ರಾಮಲಲ್ಲಾ ವಿಗ್ರಹಕ್ಕೆ ಚಾಮರಾಜನಗರ ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಬುಜ್ಜೆಗೌಡನಪುರ ಗ್ರಾಮದ ಕೃಷ್ಣ ಶಿಲೆ ಬಳಕೆ ಮಾಡಲಾಗಿದೆ. ಕೃಷ್ಣ ಶಿಲೆ ಅತ್ಯಂತ ಶಕ್ತಿಶಾಲಿಯಾಗಿದ್ದು ಆಸಿಡ್‌ ಹಾಕಿದರೂ ಏನೂ ಆಗುವುದಿಲ್ಲ. ಇದಕ್ಕೆ ಬೆಂಕಿ ತಗುಲುವುದಿಲ್ಲ, ತುಕ್ಕು ಹಿಡಿಯುವುದಿಲ್ಲ. ಮಳೆ, ಗಾಳಿ, ಬಿಸಿಲನ್ನೂ ತಡೆದುಕೊಳ್ಳುವ ಶಕ್ತಿಯ ಕಲ್ಲು ಇದು. ಹಿಂದೆ ಶಂಕರಾಚಾರ್ಯರ ಮೂರ್ತಿಯನ್ನು ಮಾಡಿದ ಎಚ್.ಡಿ.ಕೋಟೆಯ ಕೃಷ್ಣ ಶಿಲೆಯಲ್ಲೇ ಇದನ್ನು ರಚಿಸಲಾಗಿದೆ.

ಎಂಬಿಎ ಪದವೀಧರ ಅರುಣ್​

ಶಿಲ್ಪಿ ಅರುಣ್​ ಯೋಗಿರಾಜ್ ಅವರು ಎಂಬಿಎ ಪದವೀಧರ. ಶಿಲ್ಪಕಲೆಯೇ ಅವರ ಕುಲಕಸುಬು. ಅವರ ಕುಟುಂಬದ ಐದನೇ ತಲೆಮಾರಿನ ಶಿಲ್ಪಿ. ಅವರು 2008ರಿಂದ ಇಲ್ಲಿಯವರೆಗೆ 1000ಕ್ಕೂ ಹೆಚ್ಚು ವಿಗ್ರಹಗಳನ್ನು ಕೆತ್ತನೆ ಮಾಡಿದ್ದಾರೆ.

Exit mobile version