Site icon Vistara News

108 Ambulance: 108 ಸಿಬ್ಬಂದಿಗೆ ಸರ್ಕಾರದಿಂದ ವೇತನ ಬಾಕಿ ಉಳಿಸಿಕೊಂಡಿಲ್ಲ: ದಿನೇಶ್ ಗುಂಡೂರಾವ್

108 Ambulance

ಬೆಂಗಳೂರು: 108 ಆರೋಗ್ಯ ಕವಚದ ಆಂಬ್ಯುಲೆನ್ಸ್ ಚಾಲಕರಿಗೆ ಸರ್ಕಾರದ ಕಡೆಯಿಂದ ಯಾವುದೇ ವೇತನ ಬಾಕಿ ಉಳಿಸಿಕೊಂಡಿಲ್ಲ. ಅಂಬ್ಯುಲೆನ್ಸ್ ಚಾಲಕರಿಗೆ ನ್ಯಾಯಯುತವಾಗಿ ಸಿಗಬೇಕಾದ ವೇತನವನ್ನು ಸರ್ಕಾರ ನೀಡುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಚಿವರು, ಸರ್ಕಾರದಲ್ಲಿ ಯಾವುದೇ ಹಣಕಾಸಿನ ತೊಂದರೆ ಇಲ್ಲ. 108 ಅಂಬ್ಯುಲೆನ್ಸ್ ಯೋಜನೆ ಸುಗಮವಾಗಿ ನಡೆಸಲು ಆರ್ಥಿಕ ವರ್ಷ 2023-24ನೇ ಸಾಲಿನಲ್ಲಿ ಆರ್ಥಿಕ ಇಲಾಖೆಯಿಂದ ಆರೋಗ್ಯ ಇಲಾಖೆಗೆ ರೂ. 210.33 ಕೋಟಿಗಳ ಅನುದಾನವನ್ನು ಆಯವ್ಯಯದಲ್ಲಿ ಅನುಮೋದನೆಯಾಗಿದ್ದು, ಸದರಿ ಅನುದಾನದಲ್ಲಿ ಸೇವಾದಾರರೊಂದಿಗೆ ಮಾಡಿಕೊಂಡಿರುವ ಒಡಂಬಡಿಕೆಯನ್ವಯ ನಿಗದಿಯಾದ ರೂ. 162.40 ಕೋಟಿಗಳ ಪೂರ್ಣ ಅನುದಾನವನ್ನು ಸೇವಾದಾರರಿಗೆ ಬಿಡುಗಡೆಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

2024-25 ನೇ ಸಾಲಿನಲ್ಲಿ 108-ಆರೋಗ್ಯ ಕವಚ ಯೋಜನೆಗೆ ಆರ್ಥಿಕ ಇಲಾಖೆಯಿಂದ ಆರೋಗ್ಯ ಇಲಾಖೆಗೆ ರೂ. 260.33 ಕೋಟಿಗಳ ಅನುದಾನವನ್ನು ಆಯವ್ಯಯದಲ್ಲಿ ಅನುಮೋದನೆಯಾಗಿದ್ದು ಸೇವಾದಾರರೊಂದಿಗೆ ಮಾಡಿಕೊಂಡಿರುವ ಒಡಂಬಡಿಕೆಯನ್ವಯ ವಾರ್ಷಿಕ ರೂ. 162.40 ಕೋಟಿಗಳ ಅನುದಾನವನ್ನು ಬಿಡುಗಡೆಗೊಳಿಸಬೇಕಾಗಿರುತ್ತದೆ. ಆರೋಗ್ಯ ಇಲಾಖೆ ಹಾಗೂ ಇ.ಎಂ.ಆರ್‌.ಐ ಗ್ರೀನ್‌ ಹೆಲ್ತ್‌ ಸಂಸ್ಥೆಯವರೊಂದಿಗೆ ಮಾಡಿಕೊಂಡಿರುವ ಒಡಂಬಡಿಕೆಯನ್ವಯ 711 ಆಂಬ್ಯುಲೆನ್ಸ್‌ಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಿ ಸೇವೆ ಒದಗಿಸಿದ್ದಲ್ಲಿ ಪ್ರತಿ ತ್ರೈಮಾಸಿಕಕ್ಕೆ ರೂ. 40.60 ಕೋಟಿಗಳಂತೆ ವಾರ್ಷಿಕ ರೂ. 162.40 ಕೋಟಿಗಳ ಅನುದಾನವು ಬಿಡುಗಡೆಗೊಳಿಸಲಾಗುವುದು ಹೇಳಿದ್ದಾರೆ.

ಇದನ್ನೂ ಓದಿ | Prajwal Revanna Case: ‌ಪ್ರಜ್ವಲ್‌ ಪೆನ್‌ಡ್ರೈವ್‌ ಕೇಸ್‌; ಮಹತ್ವದ ಫರ್ಮಾನು ಹೊರಡಿಸಿದ ಎಚ್‌.ಡಿ. ದೇವೇಗೌಡ!

ವಿಪಕ್ಷಗಳ ನಾಯಕರು ಅನಗತ್ಯವಾಗಿ ಗ್ಯಾರಂಟಿ ಯೋಜನೆಯಿಂದ ಹಣಕಾಸಿನ ತೊಂದರೆಯಾಗಿದೆ ಎಂದು 108 ಆರೋಗ್ಯ ಕವಚ ಯೋಜನೆಗೆ ತಳುಕು ಹಾಕುವುದರಲ್ಲಿ ಯಾವುದೇ ಹುರುಳಿಲ್ಲ ಎಂದು‌ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ 108 ವ್ಯವಸ್ಥೆಯಲ್ಲಿ ಒಂದಿಷ್ಟು ಲೋಪದೋಷಗಳು ಆಗಿರುವುದು ನಿಜ. 108 ಸಿಬ್ಬಂದಿಗಳಿಗೆ ಕನಿಷ್ಠ ವೇತನದ ಜಾರಿಗೊಳಿಸಿದ್ದಲ್ಲದೇ ಸರ್ಕಾರದ ಅನುಮತಿ ಇಲ್ಲದೇ ನಿಯಮಬಾಹಿರವಾಗಿ ಶೇ.45 ರಷ್ಟು ವೇತನ ಹೆಚ್ಚಳ ಮಾಡಲಾಗಿತ್ತು. ಇದೀಗ 108 ಸಿಬ್ಬಂದಿಗಳು ಶೇ 45 ರಷ್ಟು ವೇತನ ಹೆಚ್ಚಳ ಮಾಡಿರುವುದನ್ನ ಕಡಿತಗೊಳಿಸದಂತೆ ಬೇಡಿಕೆ ಇಡುತ್ತಿದ್ದಾರೆ.

ನಮ್ಮ ಸರ್ಕಾರ ನಿಯಮಾನುಸಾರ ಕನಿಷ್ಠ ವೇತನ ನೀಡಲು ಬದ್ಧವಾಗಿದ್ದು, ಅದರಂತೆ ಅನುದಾನವನ್ನು ನೀಡುತ್ತಾ ಬಂದಿದೆ. ಪ್ರತಿಯೊಬ್ಬ ಆಂಬ್ಯುಲೆನ್ಸ್ ಚಾಲಕರಿಗೆ 35 ಸಾವಿರಕ್ಕೂ ಹೆಚ್ವು ವೇತನ ದೊರೆಯುತ್ತಿದೆ. ಇದರ ಮೇಲೂ ಮೂಲ ವೇತನದಲ್ಲಿ ಶೇ 45 ರಷ್ಟು ಹೆಚ್ಚಳ ಮಾಡುವ ಬಗ್ಗೆ ಸಿಬ್ಬಂದಿಗಳು ಬೇಡಿಕೆ ಇಟ್ಟಿದ್ದು, ನಿಯಮಬಾಹಿರವಾಗಿ ಈ ಕ್ರಮ ಕೈಗೊಳ್ಳಲು ಸದ್ಯದ ಪರಿಸ್ಥಿತಿಯಲ್ಲಿ ಸಾಧ್ಯವಿಲ್ಲ. ಈ ಬಗ್ಗೆ 108 ಸಿಬ್ಬಂದಿಯನ್ನು ಕರೆದು ಚರ್ಚಿಸಿ ಮನವರಿಕೆ ಮಾಡಿಕೊಡಲಾಗಿದೆ. ಅಲ್ಲದೇ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಬದಲಾವಣೆ ಮಾಡಲು ಅವಕಾಶವಿಲ್ಲ ಎಂದು ಸಿಬ್ಬಂದಿಗಳಿಗೆ ತಿಳಿಸಲಾಗಿದೆ. ನ್ಯಾಯಯುತವಾಗ ಕನಿಷ್ಢ ವೇತನ ಸರ್ಕಾರ ನೀಡುತ್ತಿದ್ದು, ಸರ್ಕಾರದಲ್ಲಿ ಯಾವುದೇ ಹಣಕಾಸಿನ ಕೊರತೆಯಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.

ಅಲ್ಲದೇ ಜಿವಿಕೆ ಇಎಂಆರ್ ಸಂಸ್ಥೆ ಹಾಗೂ ಚಾಲಕರ ನಡುವಿನ ವೇತನ ಪಾವತಿ ಸಮಸ್ಯೆಗಳ ಬಗ್ಗೆಯೂ ಸಂಸ್ಥೆಯವರೊಂದಿಗೆ ಇಲಾಖೆ ಆಯುಕ್ತರು ಚರ್ಚಿಸಿ, ವೇತನ ಬಾಕಿ ಉಳಿಸಿಕೊಳ್ಳದಂತೆ ಆದೇಶಿಸಿದ್ದಾರೆ. ಇದಕ್ಕೂ ಮೀರಿ 108 ಆಂಬ್ಯುಲೆನ್ಸ್ ಸಿಬ್ಬಂದಿ ಮುಷ್ಕರಕ್ಕೆ ಮುಂದಾದರೆ ಪರ್ಯಾಯ ವ್ಯವಸ್ಥೆಗೆ ಸರ್ಕಾರ ಸಿದ್ಧವಿದೆ. 108 ಆಂಬ್ಯುಲೆನ್ಸ್ ಸೇವೆಯನ್ನು ನಿಲ್ಲಿಸಲು ಸಾಧ್ಯವಿಲ್ಲ. ಅನಿವಾರ್ಯವಾಗಿ ಸರ್ಕಾರ ಪರ್ಯಾಯ ವ್ಯವಸ್ಥೆಗೆ ಮುಂದಾಗಬೇಕಾಗಲಿದೆ. ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ | Prajwal Revanna Case: ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೊ ಇದ್ದರೆ ಡಿಲೀಟ್‌ ಮಾಡಿ, ಇಲ್ಲದಿದ್ದರೆ ಕ್ರಮ: SIT ಮುಖ್ಯಸ್ಥರ ಖಡಕ್‌ ವಾರ್ನಿಂಗ್

ಹಿಂದಿನ ಸರ್ಕಾರವಿದ್ದ ವೇಳೆ ವ್ಯವಸ್ಥೆಯಲ್ಲಾದ ಲೋಪವನ್ನು ನಮ್ಮ ಸರ್ಕಾರ ಸರಿಪಡಿಸುತ್ತಿದೆ. ಟೆಂಡರ್‌ಗಳನ್ನು ಕರೆಯದೇ ಜಿವಿಕೆ ಇಎಂಆರ್ ಸಂಸ್ಥೆಯೊಂದಿಗೆ ಒಡಂಬಡಿಕೆಯ ಮೂಲಕವೇ 108 ವ್ಯವಸ್ಥೆಯನ್ನು ಮುಂದುವರಿಸಿಕೊಂಡು ಬರಲಾಗಿದೆ. ನಮ್ಮ ಸರ್ಕಾರ ಬಂದ ಬಳಿಕ ನಿಯಮನುಸಾರ ಟೆಂಡರ್ ಕರೆಯಲು ಕ್ರಮ ಕೈಗೊಳ್ಳುತ್ತಿದೆ. ವ್ಯವಸ್ಥೆಯಲ್ಲಾದ‌ ಲೋಪಗಳನ್ನು ಸರಿಪಡಿಸುತ್ತಿರುವಾಗ ಸಿಬ್ಬಂದಿ ಸಹಕರಿಸಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದ್ದಾರೆ.

Exit mobile version