Site icon Vistara News

KRS Dam: ಕಾವೇರಿ ನದಿಗೆ ಹೆಚ್ಚುವರಿ ನೀರು ಬಿಡುಗಡೆ; ತಮಿಳುನಾಡು ಸರ್ಕಾರದ ಒತ್ತಡಕ್ಕೆ ಮಣಿಯಿತೇ ರಾಜ್ಯ ಸರ್ಕಾರ?

KRS Dam at Mandya

ಮಂಡ್ಯ: ತನ್ನ ಪಾಲಿನ ಕಾವೇರಿ ನೀರು ಬಿಡುಗಡೆ ಮಾಡುವಂತೆ ತಮಿಳುನಾಡು ಸರ್ಕಾರ, ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಬೆನ್ನಲ್ಲೇ ಕೆಆರ್‌ಎಸ್ ಜಲಾಶಯದಿಂದ (KRS Dam) ಕಾವೇರಿ ನದಿಗೆ ಹೆಚ್ಚುವರಿ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದ ತಮಿಳುನಾಡು ಸರ್ಕಾರದ ಒತ್ತಡಕ್ಕೆ ರಾಜ್ಯ ಸರ್ಕಾರ ಮಣಿಯಿತೇ ಎಂಬ ಪ್ರಶ್ನೆ ಉದ್ಭವಿಸಿದೆ.

ಕೆಆರ್‌ಎಸ್‌ ಜಲಾಶಯದ ಮೂಲಕ ತಮಿಳುನಾಡಿಗೆ ಬೆಳಗ್ಗೆ 5243 ಕ್ಯೂಸೆಕ್‌ ಕಾವೇರಿ ನೀರು ಬಿಡಲಾಗುತ್ತಿತ್ತು. ಸಂಜೆ ವೇಳೆಗೆ 9273 ಕ್ಯೂಸೆಕ್‌ ನೀರು ಬಿಡುಗಡೆ ಮಾಡಲಾಗಿದೆ. ಹೀಗಾಗಿ 4 ಸಾವಿರ ಕ್ಯೂಸೆಕ್‌ ಹೆಚ್ಚುವರಿ ನೀರು ಬಿಡುಗಡೆ ಮಾಡಿರುವುದು ಕಂಡುಬಂದಿದೆ.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ ಜಲಾಶಯದ ಗರಿಷ್ಠ ಮಟ್ಟ 124.80 ಅಡಿ ಇದ್ದು, ಸದ್ಯ ಜಲಾಶಯದ ನೀರಿನ ಮಟ್ಟ 112.07 ಅಡಿ ಇದೆ. ಟಿಎಂಸಿ ಲೆಕ್ಕದಲ್ಲಿ 49.452 ಸಾಮರ್ಥ್ಯವಿದ್ದು, ಸದ್ಯ 33.853 ಟಿಎಂಸಿ ನೀರು ಸಂಗ್ರಹವಾಗಿದೆ.

ಇದನ್ನೂ ಓದಿ | Cauvery water Dispute : ರಾಜ್ಯದ ಹಿತ ಕಾಯಲು ಏನು ಮಾಡಬೇಕು? : ಸಿಎಂಗೆ ಸಲಹೆ ನೀಡಿದ ಬೊಮ್ಮಾಯಿ

ಕಾವೇರಿಗಾಗಿ ಮತ್ತೆ ಕ್ಯಾತೆ ತೆಗೆದ ತಮಿಳುನಾಡು; ಸುಪ್ರೀಂ ಕೋರ್ಟ್‌ಗೆ ಅರ್ಜಿ

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ (Cauvery Water Dispute) ತಮಿಳುನಾಡು ಮತ್ತೆ ಕ್ಯಾತೆ ತೆಗೆದಿದೆ. ಎರಡು ರಾಜ್ಯಗಳ ನಡುವಿನ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರ, ಸುಪ್ರೀಂ ಕೋರ್ಟ್‌ಗೆ ಹೊಸ ಅರ್ಜಿ ಸಲ್ಲಿಸಿದ್ದು, ನಮ್ಮ ಪಾಲಿಗೆ ಬರಬೇಕಿದ್ದ ಕಾವೇರಿ ನೀರನ್ನು ಕರ್ನಾಟಕ ಸರ್ಕಾರ ಬಿಡುತ್ತಿಲ್ಲ ಎಂದು ಆರೋಪಿಸಿದೆ.

ಆ.11ರಂದು ದೆಹಲಿಯಲ್ಲಿ ನಡೆದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ನದಿ ನೀರು ಬಿಡುಗಡೆ ಬಗ್ಗೆ ತಮಿಳುನಾಡು ಅಧಿಕಾರಿಗಳು ಅಸಮಾಧಾನ ಹೊರಹಾಕಿದ್ದರು. ಇದರ ಬೆನ್ನಲ್ಲೇ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಹೊಸ ಅರ್ಜಿ ಸಲ್ಲಿಸಿದೆ. ಈ ಹಿಂದಿನ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ನೀರು ಬಿಡುವಂತೆ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ತಮಿಳುನಾಡು ಸರ್ಕಾರ 113 ಪುಟಗಳ ವಿವರವಾದ ಅರ್ಜಿ ಸಲ್ಲಿಕೆ ಮಾಡಿದೆ.

ಕಾವೇರಿ ನದಿ ನೀರಿನ ಹಂಚಿಕೆ ಸಮಸ್ಯೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಪ್ರಧಾನಿಗೆ ಬರೆದ ಪತ್ರ ಸೇರಿದಂತೆ ಎಲ್ಲ ವಿವರಗಳನ್ನು ತಮಿಳುನಾಡು ಸರ್ಕಾರ ತನ್ನ ಅರ್ಜಿಯಲ್ಲಿ ಉಲ್ಲೇಖ ಮಾಡಿದೆ. ಜೂನ್ ಮತ್ತು ಜುಲೈ ತಿಂಗಳಲ್ಲಿ ತಮಿಳುನಾಡಿಗೆ ನೀರಿನ ಕೊರತೆಯಾಗಿದೆ. ಕೊರತೆಯಾಗಿರುವ 28.8 ಟಿಎಂಸಿ ನೀರನ್ನು ಕರ್ನಾಟಕ ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು. ಪ್ರಸ್ತುತ ಆಗಸ್ಟ್ ತಿಂಗಳ ಪೂರ್ತಿ ನೀರು ಬಿಡಲು ಸೂಚಿಸಬೇಕು. ಈ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಕೂಡ ಕೇಂದ್ರ ಜಲ ಆಯೋಗವನ್ನು ಪ್ರತಿವಾದಿಯಾಗಿ ಸೇರಿಸಬೇಕು ಎಂದು ತಮಿಳುನಾಡು ಸರ್ಕಾರ ಮನವಿ ಮಾಡಿದೆ.

ಕಾವೇರಿ ನೀರು ನಿಯಂತ್ರಣ ಸಮಿತಿಯು ಆಗಸ್ಟ್ 22 ರವರೆಗೆ 15 ದಿನಗಳ ಕಾಲ 15,000 ಕ್ಯೂಸೆಕ್ ಬಿಡುಗಡೆ ಮಾಡಲು ನಿರ್ಧರಿಸಿತ್ತು. ಇದಕ್ಕೆ ಶುಕ್ರವಾರ ನಡೆದಿದ್ದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ರಾಜ್ಯದ ಅಧಿಕಾರಿಗಳು ಅಸಮ್ಮತಿ ಸೂಚಿಸಿದ್ದರು. ಆಗಸ್ಟ್ 22 ರವರೆಗೆ ತಮಿಳುನಾಡಿಗೆ ಕೇವಲ 8,000 ಕ್ಯೂಸೆಕ್‌ಗಳನ್ನು ಮಾತ್ರ ಬಿಡುಗಡೆ ಮಾಡಬಹುದಷ್ಟೇ ಎಂದು ಕರ್ನಾಟಕ ಸರ್ಕಾರ ತಿಳಿಸಿತ್ತು. ಇದು ತಮಿಳುನಾಡಿನ ಅಸಮಾಧಾನಕ್ಕೆ ಕಾರಣವಾಗಿದೆ.

ಇದನ್ನೂ ಓದಿ | Karnataka Politics : ಡಿಕೆಶಿ ಕೈಯಲ್ಲಿ ಕಮಿಷನ್‌ ಬಾಂಬ್! ಆಪರೇಷನ್‌ ಹಸ್ತದ ಸುಳಿವು ಕೊಟ್ಟರಾ ಡಿಸಿಎಂ?

ತಮಿಳುನಾಡಿನ ವಾದವೇನು?

ನೀರು ಬಿಡದ ಕಾರಣ ರಾಜ್ಯದಲ್ಲಿ ಬೆಳೆ ಹಾನಿಯಾಗಿದೆ. ಕಾವೇರಿ ನದಿ ಪಾತ್ರದಲ್ಲಿ ಬೆಳೆಗಳು ಒಣಗುತ್ತಿವೆ. ಹೀಗಾಗಿ ತಮ್ಮ ಪಾಲಿನ ನೀರು ಬಿಡುಗಡೆಗ ಮಾಡಬೇಕು ಎಂದು ಕರ್ನಾಟಕವನ್ನು ತಮಿಳುನಾಡು ಒತ್ತಾಯಿಸಿದೆ. ಆದರೆ, ರಾಜ್ಯದಲ್ಲಿ ಪ್ರಸಕ್ತ ವರ್ಷದಲ್ಲಿ ವಾಡಿಕೆಯಷ್ಟು ಮಳೆಯಾಗಿಲ್ಲ. ಇದರಿಂದ ರಾಜ್ಯದ ಜಲಾಶಯಗಳು ಭರ್ತಿಯಾಗಿಲ್ಲ. ಇದರಿಂದ ನೀರು ಬಿಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಸರ್ಕಾರ ತಿಳಿಸಿದೆ.

Exit mobile version