Site icon Vistara News

Road Accident : ಟ್ರ್ಯಾಕ್ಟರ್‌ ಟೇಲರ್‌ ಪಲ್ಟಿ; ನಾಲ್ವರು ಮಹಿಳೆಯರು ದಾರುಣ ಸಾವು

Road Accident in Kagawada Chikodi

ಚಿಕ್ಕೋಡಿ: ಕಬ್ಬು ಸಾಗಾಟ ಮಾಡುತ್ತಿದ್ದ ಟ್ರ್ಯಾಕ್ಟರ್‌ ಟೇಲರ್ ಪಲ್ಟಿಯಾಗಿದೆ. ಪರಿಣಾಮ ಟ್ರ್ಯಾಕ್ಟರ್‌ ಅಡಿ ಸಿಲುಕಿ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದು, ಮತ್ತೊಬ್ಬರು ಮಾರ್ಗ ಮಧ್ಯೆ ಅಸುನೀಗಿದ್ದಾರೆ. ಬೆಳಗಾವಿಯ ಕಾಗವಾಡ ತಾಲೂಕಿನ ಶೇಡಬಾಳ ಗ್ರಾಮದಲ್ಲಿ ಈ ಅಪಘಾತ (Road Accident) ಸಂಭವಿಸಿದೆ.

ಮಾಲಾಬಾಯಿ ರವಸಾಬ್ ಐನಾಪುರೇ (61), ಚಂಪಾ ಲಕ್ಕಪ್ಪ ತಳಕಟ್ಟಿ (50), ಭಾರತಿ ವಡ್ರಾಳೇ (40) ಹಾಗೂ ಶೇಕೂ ನರಸಾಯಿ (45) ಮೃತ ದುರ್ದೈವಿಗಳು. ನಾಲ್ವರು ಮಹಿಳೆಯರು ಕೃಷಿ ಕೆಲಸವನ್ನು ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದರು. ಶೇಡಬಾಳ ಗ್ರಾಮದ ಸಮೀಪ ಜಮಖಂಡಿ ಮೀರಜ್ ರಸ್ತೆಯಲ್ಲಿ ಬರುವಾಗ ಟ್ರ್ಯಾಕ್ಟರ್ ಟೇಲರ್ ಚಕ್ರ ಕಟ್ಟಾಗಿ, ಇವರ ಮೇಲೆ ಬಿದ್ದಿದೆ. ಪರಿಣಾಮ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕಾಗವಾಡ ಶಾಸಕ ರಾಜು ಕಾಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮೃತರ ಕುಟುಂಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಕಾಗವಾಡ ಪೊಲೀಸರು ಸ್ಥಳಕ್ಕಾಗಮಿಸಿ ನಾಲ್ವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಿದ್ದಾರೆ. ಇನ್ನು ಅಪಘಾತದಿಂದಾಗಿ ಕಿ.ಮೀ ಗಟ್ಟಲೆ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಇದನ್ನೂ ಓದಿ: Taxi Fare revises : ಟ್ಯಾಕ್ಸಿ ಕಂಪನಿಗಳ ಕಳ್ಳಾಟಕ್ಕೆ ಮೂಗುದಾರ; ಏಕರೂಪ ದರ ನಿಗದಿ ಮಾಡಿದ ಸರ್ಕಾರ

ಜೀಪ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಬೆಳಗಾವಿ: ಖಾನಾಪುರ ತಾಲೂಕಿನ ಗುರಲಗುಂಜಿ ರಸ್ತೆಯಲ್ಲಿ ಜೀಪ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ (Road Accident) ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ರಾಮಲಿಂಗ್ ಮುತ್ಗೇಕರ್ (20) ಹನುಮಂತ ಪಾಟೀಲ್ (20) ಮೃತ ಯುವಕರು ಎಂದು ಗುರುತಿಸಲಾಗಿದೆ. ನಂದಿಹಾಳ ಗ್ರಾಮಕ್ಕೆ ಸೈನಿಕ ತರಬೇತಿ ಪಡೆಯಲು ಈ ಯುವಕರು ತೆರಳುತ್ತಿದ್ದರು ಎಂದು ತಿಳಿದು ಬಂದಿದೆ. ಮೃತ ಯುವಕರಿಬ್ಬರೂ ಬೇಕ್ವಾಡ ಗ್ರಾಮದ ನಿವಾಸಿಗಳಾಗಿದ್ದಾರೆ.

ಸ್ಥಳಕ್ಕೆ ಶಾಸಕ ವಿಠ್ಠಲ್ ಹಲಗೇಕರ್ ಹಾಗೂ ಖಾನಾಪುರ ಪೊಲೀಸರು ಭೇಟಿ ನೀಡಿದ್ದಾರೆ. ಖಾನಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Baby Theft : ಕಂಡವರ ಮಗು ಕದ್ದು ಭಿಕ್ಷಾಟನೆಗೆ ಬಳಸಿಕೊಂಡ ಮಹಿಳೆಗೆ 4 ವರ್ಷ ಜೈಲು ಶಿಕ್ಷೆ

ಹಾಸನ, ಮಂಡ್ಯ, ಕೋಲಾರದಲ್ಲಿ ಪ್ರತ್ಯೇಕ ಅಪಘಾತ; ನಾಲ್ವರ ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ

ಹಾಸನ/ಮಂಡ್ಯ/ಕೋಲಾರ: ರಾಜ್ಯದ ಹಾಸನ, ಮಂಡ್ಯ, ಕೋಲಾರದಲ್ಲಿ ಸಂಭವಿಸಿದ ಪ್ರತ್ಯೇಕ ರಸ್ತೆ ಅಪಘಾತಗಳಿಂದ (Road Accident) ನಾಲ್ವರು ಮೃತಪಟ್ಟಿದ್ದು, ಸುಮಾರು 15ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ.

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಬಾಗೆ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್‌ವೊಂದು ಶಾಲೆಯ ಕಾಂಪೌಂಡ್‌ ಹಾಗೂ ಪಕ್ಕದಲ್ಲೇ ಇದ್ದ ಮನೆಗೆ ಡಿಕ್ಕಿ ಹೊಡೆದಿದ್ದು, ಬಸ್‌ನಲ್ಲಿದ್ದ ಓರ್ವ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ವೇಳೆ ಹತ್ತಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಗಾಯಗಳಾಗಿವೆ. ಅವರಲ್ಲಿ ಮೂವರು ಪ್ರಯಾಣಿಕರ ಪರಿಸ್ಥಿತಿ ಗಂಭೀರವಾಗಿದೆ.

ಚನ್ನರಾಯಪಟ್ಟಣ ತಾಲೂಕಿನ ಉದಯಪುರ ಗ್ರಾಮದ ಅಮೃತ್‌ರಾಜ್ (34) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಬಸ್‌ನ ಆ್ಯಕ್ಸಲ್ ತುಂಡಾಗಿ ರಸ್ತೆ ಪಕ್ಕದ ಜಮೀನಿಗೆ ನುಗ್ಗಿದ್ದು, ಮೊದಲು ಮನೆಗೆ ಡಿಕ್ಕಿ ಹೊಡೆದಿದೆ. ಆದರೂ ನಿಯಂತ್ರಣಕ್ಕೆ ಸಿಗದೇ ಇದ್ದಿದ್ದರಿಂದ ಪಕ್ಕದಲ್ಲೇ ಇದ್ದ ಜೆಎಸ್ಎಸ್ ಶಾಲೆಯ ಕಾಂಪೌಂಡ್ ಡಿಕ್ಕಿ ಹೊಡೆದು ನಿಂತಿದೆ. ಈ ವೇಳೆ ಪ್ರಯಾಣಿಕರೊಬ್ಬರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.

Road accident in Hassan Mandya and Kolar Four killed over 15 injured

ಗಾಯಾಳುಗಳಿಗೆ ಸಕಲೇಶಪುರದ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಂಭೀರವಾಗಿ ಗಾಯಗೊಂಡಿರುವವರನ್ನು ಹಾಸನ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಬೆಂಗಳೂರಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಇದಾಗಿದೆ.

ಜಮೀನಿನಲ್ಲಿದ್ದ ವಾಸದ ಮನೆಗೆ ಸಾರಿಗೆ ಬಸ್ ಡಿಕ್ಕಿ ಹೊಡೆದಿದ್ದರಿಂದ ಮನೆ ಜಖಂ ಆಗಿದೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಕಲೇಶಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಸ್ಥಳದಲ್ಲೇ ಮೂವರು ಯುವಕರ ಸಾವು

ಮಂಡ್ಯ: ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಅಕ್ಕಿ ಹೆಬ್ಬಾಳು ಬಳಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿದ್ದು, ಸ್ಥಳದಲ್ಲೇ ಮೂವರು ಯುವಕರು ಮೃತಪಟ್ಟಿದ್ದಾರೆ. ಅನಿಕೇತನ್ 30, ಪವನ್ 32 ಹಾಗೂ ಚಿರಂಜೀವಿ 32 ಮೃತಪಟ್ಟವರು. ತಡರಾತ್ರಿ ಕಾರಿನಲ್ಲಿ ವೇಗವಾಗಿ ಚಲಿಸುವಾಗ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಅಕ್ಕಿ ಹೆಬ್ಬಾಳು ಗ್ರಾಮದ ಹೇಮಾವತಿ ಬ್ರಿಡ್ಜ್ ಬಳಿ ವಿದ್ಯುತ್ ಕಂಬಕ್ಕೆ ಕಾರು ಗುದ್ದಿದೆ. ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟರೆ, ಮತ್ತೊಬ್ಬನಿಗೆ ಗಂಭೀರ ಗಾಯಗಳಾಗಿವೆ. ಕೆ.ಆರ್. ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶ್ರೀನಿವಾಸಪುರ ಬಳಿ ಟೆಂಪೋ ಪಲ್ಟಿ; 10ಕ್ಕೂ ಹೆಚ್ಚು ಕೂಲಿ ಕಾರ್ಮಿಕರಿಗೆ ಗಾಯ

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಪನಸ ಮಾಕಲಹಳ್ಳಿ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಅಡ್ಡಲಾಗಿ ಟೆಂಪೋ ವಾಹನ ಬಿದ್ದಿದ್ದು, ಟೆಂಪೋದಲ್ಲಿದ್ದ ಕಾಂಕ್ರಿಟ್ ಕೆಲಸ ಮಾಡುವ 10ಕ್ಕೂ ಹೆಚ್ಚು ಕೂಲಿ ಕಾರ್ಮಿಕರಿಗೆ ಗಾಯಗಳಾಗಿವೆ.

Road accident in Hassan Mandya and Kolar Four killed over 15 injured

ಶ್ರೀನಿವಾಸಪುರದಿಂದ ಕೋಲಾರ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆ ಇದಾಗಿದ್ದು, ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ಟ್ರಾಫಿಕ್ ಸಮಸ್ಯೆಯಾಗಿ ಕೆಲ ಕಾಲ ವಾಹನ ಸವಾರರು ಪರದಾಡುವಂತಾಗಿದೆ. ಗಾಯಾಳುಗಳಿಗೆ ಶ್ರೀನಿವಾಸಪುರ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಸುಗುಟೂರಿನಿಂದ ಶ್ರೀನಿವಾಸಪುರ ಪಟ್ಟಣಕ್ಕೆ ಈ ಕೂಲಿ ಕಾರ್ಮಿಕರು ಕೆಲಸಕ್ಕೆ ಬರುತ್ತಿದ್ದರು ಎಂದು ಹೇಳಲಾಗಿದೆ. ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version