Site icon Vistara News

BY Vijayendra : ಮುಂದಿನ ಎಲ್ಲ ಚುನಾವಣೆಯಲ್ಲಿ ಭರ್ಜರಿ ಗೆಲುವಿಗೆ ಪಣ; ಬಿವೈ ವಿಜಯೇಂದ್ರ

BY Vijayendra Senior leadres meet

ಬೆಂಗಳೂರು: ಲೋಕಸಭಾ ಚುನಾವಣೆಯೂ (Parliament Election 2024) ಸೇರಿದಂತೆ ರಾಜ್ಯದಲ್ಲಿ ಮುಂಬರುವ ಎಲ್ಲ ಚುನಾವಣೆಗಳಲ್ಲಿ ಅಭೂತಪೂರ್ವ ಗೆಲುವು ಸಾಧಿಸಲು ಶ್ರಮಿಸುವ ಅಗತ್ಯವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (BY Vijayendra) ಅವರು ಹೇಳಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಬಿಜೆಪಿ ರಾಜ್ಯ ಪ್ರಮುಖರ ವಿಶೇಷ ಸಭೆಯ (BJP Senior leaders Meeting) ನೇತೃತ್ವ ವಹಿಸಿ ಅವರು ಮಾತನಾಡಿದರು.

ಲೋಕಸಭೆ ಸೇರಿದಂತೆ ಎಲ್ಲ ಚುನಾವಣೆಗಳಲ್ಲಿ ಅಭೂತಪೂರ್ವ ಗೆಲುವು ಸಾಧಿಸಲು ಹಿರಿಯರ ಮಾರ್ಗದರ್ಶನ ಅತ್ಯಗತ್ಯ. ಹಾಗಾಗಿ ಎಲ್ಲರ ಸಹಕಾರ, ಮಾರ್ಗದರ್ಶನ ಬೇಕಿದೆ. ವೇದಿಕೆ ಮೇಲಿರುವ ಮತ್ತು ಸಭೆಯಲ್ಲಿ ಭಾಗವಹಿಸಿದ ಎಲ್ಲ ಹಿರಿಯರು ಪಕ್ಷದ ಭವಿಷ್ಯದ ದೃಷ್ಟಿಯಿಂದ ಮತ್ತು ಪಕ್ಷಕ್ಕೆ ಶಕ್ತಿ ತುಂಬಲು ಮಾರ್ಗದರ್ಶನ, ಸಲಹೆ, ಸೂಚನೆಗಳನ್ನು ಮುಕ್ತವಾಗಿ ಕೊಡಬೇಕು ಎಂದು ಬಿವೈ ವಿಜಯೇಂದ್ರ ವಿನಂತಿಸಿದರು.

ಪಕ್ಷವು ಕರ್ನಾಟಕದಲ್ಲಿ ಇಷ್ಟು ಎತ್ತರಕ್ಕೆ ಬೆಳೆದು ನಿಲ್ಲಲು ಬಿ.ಎಸ್. ಯಡಿಯೂರಪ್ಪನವರು, ಸದಾನಂದಗೌಡರು, ಈಶ್ವರಪ್ಪನವರು, ಸಿ.ಟಿ.ರವಿಯವರು, ಬಸವರಾಜ ಬೊಮ್ಮಾಯಿಯವರು ಸೇರಿ ಅನೇಕ ಹಿರಿಯರು ಕಾರಣಕರ್ತರಾಗಿದ್ದಾರೆ. ಅಂಥ ಎಲ್ಲ ಹಿರಿಯರು ಇಲ್ಲಿದ್ದಾರೆ. ಎಲ್ಲರ ಪರಿಶ್ರಮ ಪಕ್ಷದ ಬೆಳವಣಿಗೆಗೆ ಕಾರಣವಾಗಿದೆ ಎಂದು ವಿಜಯೇಂದ್ರ ವಿಶ್ಲೇಷಿಸಿದರು.

ಬಿಜೆಪಿಯ ಬೃಹದಾದ ಕಟ್ಟಡ ಮಾತ್ರ ನಮಗೆ ಕಾಣುತ್ತದೆ. ಆದರೆ, ಕಟ್ಟಡದ ಅಡಿಪಾಯ ನಮಗೆ ಗೋಚರಿಸುವುದಿಲ್ಲ. ಬಿಜೆಪಿಗೆ ಸುಭದ್ರ ಬುನಾದಿ ಹಾಕಿದ ಹಿರಿಯರು ನನಗೆ ಈ ಜವಾಬ್ದಾರಿಯನ್ನು ನೀಡಿದ್ದಾರೆ. ಅವರೆಲ್ಲರೂ ಪಕ್ಷವನ್ನು ಮುನ್ನಡೆಸಲು ಮಾರ್ಗದರ್ಶನ ಮಾಡಬೇಕೆಂದು ವಿಜಯೇಂದ್ರ ಅವರು ಮನವಿ ಮಾಡಿದರು.

ಪಕ್ಷದ ರಾಷ್ಟ್ರದ ಹಿರಿಯರ ಆಶೀರ್ವಾದದಿಂದ ಈ ಜವಾಬ್ದಾರಿ ನನ್ನ ಹೆಗಲ ಮೇಲಿದೆ. ಎಲ್ಲ ಹಿರಿಯರ ಮಾರ್ಗದರ್ಶನ ಮತ್ತು ಯುವಕರ ಸಹಕಾರದಿಂದ ಮುಂಬರುವ ಲೋಕಸಭಾ ಚುನಾವಣೆಯನ್ನು ಗುರಿಯಾಗಿ ಇಟ್ಟುಕೊಳ್ಳೋಣ. ಲೋಕಸಭೆ ಚುನಾವಣೆ ಮಾತ್ರವಲ್ಲದೆ, ನಂತರ ಬರುವ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ವಿಧಾನ ಪರಿಷತ್ ಸೇರಿ ಎಲ್ಲ ಚುನಾವಣೆಗಳಲ್ಲಿ ಕೂಡ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಲೇಬೇಕಿದೆ ಎಂದು ತಿಳಿಸಿದರು. ಈ ಗುರಿ ತಲುಪಲು ಹಿರಿಯರ ಮಾರ್ಗದರ್ಶನ ಅತ್ಯಗತ್ಯ ಎಂದು ನುಡಿದರು.

ಇದನ್ನೂ ಓದಿ: BY Vijayendra : ವಿರೋಧಿಗಳನ್ನು ಹಗುರವಾಗಿ ಪರಿಗಣಿಸಬೇಡಿ; ವಿಜಯೇಂದ್ರ ಎಚ್ಚರಿಕೆ ನುಡಿ

ಈ ಸಭೆಯಲ್ಲಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯದ ಮಾಜಿಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಡಿ.ವಿ. ಸದಾನಂದಗೌಡ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮತ್ತಿತರ ಪ್ರಮುಖರು ಭಾಗವಹಿಸಿದ್ದರು.

Exit mobile version