Site icon Vistara News

HD Kumaraswamy : ಕಾಂಗ್ರೆಸ್‌ನಿಂದ ಕುಕ್ಕರ್‌, ಹಣ ಹಂಚಿಕೆ; ದಾಖಲೆ ಕೊಟ್ರೂ ಕ್ರಮವಿಲ್ಲ; HDK ಆಕ್ರೋಶ

HD Kumaraswamy Cooker and Money

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ (Bengaluru Rural Constituency) ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಿಂದ (Congress Candidate) ಚುನಾವಣಾ ಅಕ್ರಮಗಳು (Electoral Malpractice) ಅವ್ಯಾಹತವಾಗಿ ನಡೆಯುತ್ತಿದೆ. ಕುಕ್ಕರ್‌ ಮತ್ತು ಹಣ ಹಂಚಿಕೆ (Cooker and Money Distribution) ಮಾಡಲಾಗುತ್ತಿದೆ. ಕೂಡಲೇ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಎಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು ಕೇಂದ್ರ ಚುನಾವಣಾ ಆಯೋಗವನ್ನು (Election Commission) ಒತ್ತಾಯ ಮಾಡಿದರು.

ಬೆಂಗಳೂರಿನಲ್ಲಿ ಮಂಗಳವಾರ ತುರ್ತು ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು; ಪಾರದರ್ಶಕ ಚುನಾವಣೆ ನಡೆಸುವ ಸಲುವಾಗಿ ಕೂಡಲೇ ಈ ಕ್ಷೇತ್ರದಲ್ಲಿ ಅರೆಸೇನಾ ಪಡೆ ತುಕಡಿಗಳನ್ನು ನಿಯೋಜಿಸಬೇಕು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರನ್ನು ಆಗ್ರಹಪಡಿಸಿದರು.

ಅಲ್ಲದೆ; ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ನಡೆಸುತ್ತಿರುವ ಅಕ್ರಮಗಳಿಗೆ ಮೌನ ಸಹಕಾರ ನೀಡುತ್ತಿರುವ ಈ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಅವರನ್ನು ತಕ್ಷಣವೇ ವರ್ಗಾವಣೆ ಮಾಡಬೇಕು ಎಂದು ಆಯೋಗವನ್ನು ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು.

ಕೇಂದ್ರ ಚುನಾವಣಾ ಆಯೋಗ ಏನು ಮಾಡುತ್ತಿದೆ?

ಕರ್ನಾಟಕದಲ್ಲಿ ಚುನಾವಣೆ ಆಯೋಗ ಇದೆಯಾ? ಕೇಂದ್ರ ಆಯೋಗ ಏನು ಮಾಡುತ್ತಿದೆ? ಚುನಾವಣೆ ಘೋಷಣೆಯಾದ ನಂತರ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಏನು ನಡೆಯುತ್ತಿದೆ ಎನ್ನುವುದು ಆಯೋಗಕ್ಕೆ ಗೊತ್ತಿಲ್ಲವೇ? ಆಯೋಗದ ಸಿಬ್ಬಂದಿ ಏನು ಮಾಡುತ್ತಿದ್ದಾರೆ? ಭಾನುವಾರ ರಾತ್ರಿ ಈ ಕ್ಷೇತ್ರದಲ್ಲಿ ಏನು ನಡೆದಿದೆ ಎನ್ನುವುದನ್ನು ನೀವು ನೋಡಬೇಕು ಎಂದು ಆಯೋಗವನ್ನು ಒತ್ತಾಯ ಮಾಡಿದ ಕುಮಾರಸ್ವಾಮಿ ಅವರು; ಕಾಂಗ್ರೆಸ್‌ಅಭ್ಯರ್ಥಿ ಮತದಾರರಿಗೆ ಹಂಚಲು ಇರಿಸಲಾಗಿದ್ದ ಕುಕ್ಕರ್‌ʼಗಳ ಲೋಡ್‌ ಇದ್ದ ಲಾರಿಗಳ ಚಿತ್ರಗಳು, ವಿಡಿಯೋಗಳನ್ನು ಮಾಧ್ಯಮಗೋಷ್ಠಿಯಲ್ಲಿ ಬಿಡುಗಡೆ ಮಾಡಿದರು.

100 ನಿಮಿಷದಲ್ಲಿ ಕ್ರಮ ಎಂದಿರಿ, ಇಲ್ಲಿ 48 ಗಂಟೆ ಆಗಿದೆ!

ಚುನಾವಣಾ ದಿನಾಂಕ ಘೋಷಣೆಯಾದ ದಿನದಿಂದ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಚುನಾವಣಾ ಅಕ್ರಮಗಳು ಮಿತಿಮೀರಿವೆ. ಕುಕ್ಕರ್ ಮತ್ತು ಹಣವನ್ನು ಅವ್ಯಾಹತವಾಗಿ ಹಂಚಲಾಗುತ್ತಿದೆ. ಮರಳವಾಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯು ಮತದಾರರಿಗೆ ಹಂಚಲು ಇರಿಸಿದ್ದ ಕುಕ್ಕರ್ʼಗಳನ್ನು ಲೋಡ್ ಮಾಡಲಾಗಿದ್ದ ಎರಡು ಲಾರಿಗಳನ್ನು ಜೆಡಿಎಸ್ ಕಾರ್ಯಕರ್ತರು ಹಿಡಿದಿದ್ದಾರೆ. ಮಾಧ್ಯಮಗಳು ಕೂಡ ಅದನ್ನು ತೋರಿಸಿ ವರದಿ ಮಾಡಿವೆ. ದೇಶದಲ್ಲಿ ಇಂಥ ಅಕ್ರಮ ಎಲ್ಲೇ ನಡೆದರೂ ಅದರ ವಿಡಿಯೋ ಅಥವಾ ಫೋಟೋ ತೆಗೆದು ಕಳಿಸಿದರೆ ಕೇವಲ ನೂರು ನಿಮಿಷದಲ್ಲಿ ಕ್ರಮ ಜರುಗಿಸಲಾಗುತ್ತದೆ ಎಂದು ಮುಖ್ಯ ಚುನಾವಣಾ ಆಯುಕ್ತರು ತಮ್ಮ ಮೂರು ಗಂಟೆ ಮಾಧ್ಯಮಗೋಷ್ಠಿಯಲ್ಲಿ ಹೇಳಿದ್ದರು.

ಈ ಅಕ್ರಮದ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿ 48 ಗಂಟೆ ಕಳೆದಿದೆ. ಇನ್ನೂ ಕ್ರಮ ಆಗಿಲ್ಲ ಯಾಕೆ? ಎಂದು ಕುಮಾರಸ್ವಾಮಿ ಅವರು ಆಯೋಗವನ್ನು ಪ್ರಶ್ನಿಸಿದರು. ಅಲ್ಲದೆ; ಕುಕ್ಕರ್ ಹಂಚಿಕೆಯ ದಾಖಲೆಯ ವಿಡಿಯೋ, ಫೋಟೋಗಳನ್ನು ಮಾಧ್ಯಮಗೋಷ್ಠಿಯಲ್ಲಿ ಪ್ರದರ್ಶಿಸಿದರು ಅವರು.

ಇದನ್ನೂ ಓದಿ : Nikhil Kumaraswamy: ಎಚ್‌ಡಿಕೆ ಆರೋಗ್ಯ ನೆನೆದು ಮಂಡ್ಯ ಸಭೆಯಲ್ಲಿ ನಿಖಿಲ್ ಕುಮಾರಸ್ವಾಮಿ ಭಾವುಕ

ತಹಸೀಲ್ದಾರ್‌ಗೆ ಹೇಳಿದರೆ ಹೌದಾ, ಗಮನಕ್ಕೆ ಬಂದಿಲ್ಲ ಅಂತಾರೆ!

ಈ ಬಗ್ಗೆ ತಹಸೀಲ್ದಾರ್ ಅವರಿಗೆ ದೂರು ಕೊಟ್ಟರೆ ಹೌದಾ..? ನನ್ನ ಗಮನಕ್ಕೆ ಬಂದೇ ಇಲ್ಲ ಎನ್ನುತ್ತಾರೆ. ವಾಣಿಜ್ಯ ತೆರಿಗೆ ಇಲಾಖೆಗೆ ಮಾಹಿತಿ ಕೊಟ್ಟರೆ ಜಿಲ್ಲಾಧಿಕಾರಿಗೆ ತಿಳಿಸುತ್ತೇವೆ ಎನ್ನುತ್ತಾರೆ. ಜಿಲ್ಲಾಧಿಕಾರಿ ಅವರನ್ನು ಪ್ರಶ್ನಿಸಿದರೆ ನಮ್ಮ ಗಮನಕ್ಕೆ ಬಂದಿಲ್ಲ, ಪರಿಶೀಲನೆ ನಡೆಸುತ್ತೇವೆ ಎಂದು ಹಾರಿಕೆಯ ಉತ್ತರ ಕೊಡುತ್ತಾರೆ. ಚುನಾವಣೆ ಎಂದರೆ ಇದೇನಾ? ಈ ಅಕ್ರಮಗಳಿಗೆ ಕಡಿವಾಣ ಹಾಕಲು ಕೂಡಲೇ ಆಯೋಗವು ಕ್ಷೇತ್ರದಲ್ಲಿ ಅರೆಸೇನಾ ಪಡೆಯನ್ನು ನಿಯೋಜಿಸಬೇಕು ಎಂದು ಅವರು ಆಗ್ರಹಿಸಿದರು.

ಮಾಧ್ಯಮಗಳ ಮೂಲಕ ಆಯೋಗಕ್ಕೆ ಮನವಿ ಒತ್ತಾಯ ಮಾಡುವುದಷ್ಟೇ ಅಲ್ಲ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಚುನಾವಣಾ ‌ಆಕ್ರಮಗಳ ಕುರಿತು ದಾಖಲೆ ಸಮೇತ ಚುನಾವಣಾ ಆಯೋಗಕ್ಕೆ ದೂರು ಕೊಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿಗಳು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ನಿಮ್ಮವರನ್ನು ಚಡ್ಡಿಯಲ್ಲಿ ಕೂರಿಸಿದ್ದು ಮರೆತಿದ್ದೀರಾ?: ಡಿ.ಕೆ.ಶಿಗೆ ಪ್ರಶ್ನೆ

ಚುನಾವಣೆ ನಡೆಸುವುದು ಹೇಗೆ ಎನ್ನುವುದು ನನಗೂ ಗೊತ್ತಿದೆ ಮಿಸ್ಟರ್‌ ಡಿ.ಕೆ.ಶಿವಕುಮಾರ್. 2002ರ ಚುನಾವಣೆಯನ್ನು ನಿಮಗೆ ನೆನಪು ಮಾಡಿಕೊಡುತ್ತೇನೆ. ಮೈಸೂರು, ಶಿಡ್ಲಘಟ್ಟ, ದೇವನಹಳ್ಳಿ ಕಡೆಯಿಂದ ನೀವು ಜನರನ್ನು ಕರೆದುಕೊಂಡು ಬಂದು ಕಳ್ಳ ವೋಟು ಹಾಕಿಸಿದ್ದು ಮರೆತಿದ್ದೀರಾ? ಕಳ್ಳ ಮತ ಹಾಕಿಸಲು ಕರೆದುಕೊಂಡು ಬಂದಾಗ ರಾಜರಾಜೇಶ್ವರಿ ನಗರದ ಹೆಬ್ಬಾಗಿಲಲ್ಲಿ ನಾನು ನಿಮ್ಮವರನ್ನು ಚಡ್ಡಿಯಲ್ಲಿ ಕೂರಿಸಿದ್ದನ್ನು ಮರೆಯಬೇಡಿ. ನನಗೆ ಚುನಾವಣೆ ಮಾಡುವುದು ಬರುವುದಿಲ್ಲ ಎಂದುಕೊಳ್ಳಬೇಡಿ. ಫೀಲ್ಡಿಗೆ ಇಳಿದರೆ ನಿಮಗಿಂತ ಚೆನ್ನಾಗಿ ಚುನಾವಣೆ ಮಾಡಬಲ್ಲೆ. ಆಗ ನೀವು ಅಧಿಕಾರದಲ್ಲಿ ಇದ್ದಿರಿ. ದೇವೇಗೌಡರನ್ನು ಸೋಲಿಸಲು ಪ್ತಯತ್ನ ಮಾಡಿದಿರಿ. ಆಸ್ಪತ್ರೆಯಿಂದ ನಾನು ವಾಪಸ್‌ ಬರ್ತಿನಿ, ಅದುವರೆಗೂ ನಿಮ್ಮ ಆಟ ನಡೆಯಲಿ ನೋಡೋಣ ಎಂದ ಕುಮಾರಸ್ವಾಮಿ ಅವರು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ನೇರವಾಗಿಯೇ ಟಾಂಗ್‌ ಕೊಟ್ಟರು.

ನಿಮಗೆ ನಾಚಿಕೆ ಆಗಬೇಕು. ಐದು ಗ್ಯಾರಂಟಿ ಕೊಟ್ಟಿದ್ದೇವೆ ಎಂದು ದಿನವೂ ಹೇಳಿದ್ದೇ ಹೇಳಿದ್ದು. ಮಿಸ್ಟರ್ ಸಿದ್ದರಾಮಯ್ಯ.. ನಿಮ್ಮ ಎರಡು ಸಾವಿರ ರೂಪಾಯಿ ಸಾಮಾನ್ಯ ಜನರ ಜೀವ ಉಳಿಸುತ್ತಿದೆ ಎಂದಾದರೆ ಈಗ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕುಕ್ಕರ್ʼಗಳನ್ನು ಯಾಕೆ ಹಂಚಿಕೆ ಮಾಡುತ್ತಿದ್ದೀರಿ? ನಿಮ್ಮ ಪಕ್ಷಕ್ಕೆ, ನಿಮಗೆ ನಾಚಿಕೆ ಎನ್ನುವುದು ಏನಾದರೂ ಇದೆಯಾ? ಎಂದು ಮಾಜಿ ಮುಖ್ಯಮಂತ್ರಿಗಳು ತೀವ್ರ ಪ್ರಹಾರ ನಡೆಸಿದರು.

ಬೆಂಕಿ ಹಚ್ಚಲು ಕಾರ್ಯಕರ್ತರಿಗೆ ಕರೆ ಕೊಡಬೇಕಾದೀತು

ಚುನಾವಣಾ ಆಯೋಗಕ್ಕೆ ನನ್ನ ನೇರ ಆಗ್ರಹ ಇಷ್ಟೇ. ಕೂಡಲೇ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ನಡೆತಯುತ್ತಿರುವ ಅಕ್ರಮಗಳಿಗೆ ಕಡಿವಾಣ ಹಾಕಬೇಕು. ತಪ್ಪಿದರೆ ನಾನೇ ಕಾರ್ಯಕರ್ತರರಿಗೆ ಕರೆ ಕೊಡಬೇಕಾಗುತ್ತದೆ. ಕುಕ್ಕರ್ ಎಲ್ಲೆಲ್ಲಿ ಅಡಗಿಸಿಟ್ಟಿದ್ದಾರೆ ಎಂಬುದನ್ನು ಪತ್ತೆ ಹಚ್ಚಿ ಅಲ್ಲಿಗೆ ಹೋಗಿ ಬೆಂಕಿ ಹಚ್ಚಿ ಅಂತ ನಮ್ಮ ಕಾರ್ಯಕರ್ತರಿಗೆ ಕರೆ ಕೋಡಬೇಕಾಗುತ್ತದೆ. ಆಮೇಲೆ ಕಾರ್ಯಕರ್ತರ ಮೇಲೆ ಈ ಅಧಿಕಾರಿಗಳು ಕೇಸ್‌ ದಾಖಲಿಸಲಿ ನೋಡೋಣ ಎಂದು ಎಚ್ಚರಿಕೆ ನೀಡಿದರು ಕುಮಾರಸ್ವಾಮಿ ಅವರು.

ಮಂಡ್ಯ ಕ್ಷೇತ್ರದಲ್ಲಿ ಕೂಡ ಒಂದು ಕೋಟಿ ರೂಪಾಯಿ ಸೀಜ್ ಆಗಿದೆ. ಈ ಹಣ ಅಡಿಕೆ ವ್ಯಾಪಾರದ್ದು ಎಂದು ಹೇಳಿಕೊಂಡಿದ್ದಾರೆ. ನಮ್ಮ ಮಂಡ್ಯ ಜಿಲ್ಲೆಯಲ್ಲಿ ಅಷ್ಟು ಹಣ ದುಡಿಯುವ ಅಡಿಕೆ ವ್ಯಾಪಾರಿಗಳಿದ್ದಾರಾ? ಎಂದು ನನಗೆ ಅಚ್ಚರಿ ಉಂಟಾಯಿತು. ಇದು ಕೂಡ ಕಾಂಗ್ರೆಸ್‌ಅಭ್ಯರ್ಥಿ ಹಣವೇ ಆಗಿದೆ. ಅಲ್ಲಿಯೂ ಕಾಂಗ್ರೆಸ್‌ಪಕ್ಷ ಹಣದ ಹೊಳೆಯನ್ನೇ ಹರಿಸುತ್ತಿದೆ ಎಂದು ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಬಂಡೆಪ್ಪ ಕಾಶೆಂಪೂರ್‌, ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್‌ಕುಮಾರಸ್ವಾಮಿ, ಹಿರಿಯ ಮುಖಂಡರಾದ ಗೊಟ್ಟಿಗೆರೆ ಮಂಜುನಾಥ್‌, ಎ.ಪಿ.ರಂಗನಾಥ್‌ಸೇರಿದಂತೆ ಪಕ್ಷದ ಹಲವಾರು ನಾಯಕರು ಹಾಜರಿದ್ದರು.

Exit mobile version