Site icon Vistara News

Gruhalakshmi scheme : ಇನ್ನು ಗೃಹಿಣಿಯರಿಗೆ ಹಣ ನೀಡುವ ಮುನ್ನ ಚಾಮುಂಡಿಗೆ ಕಾಣಿಕೆ ಅರ್ಪಣೆ

Gruhalakshmi Chamundeshwari devi

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆಯಡಿ (Gruhalakshmi scheme) ಪ್ರತಿ ತಿಂಗಳು ಮನೆಯ ಯಜಮಾನಿಗೆ 2000 ರೂ. ನೀಡಲಾಗುತ್ತಿದೆ. ಇದನ್ನು ಫಲಾನುಭವಿಗಳ ಖಾತೆಗೆ ನೇರ ಜಮಾ ಮಾಡಲಾಗುತ್ತಿದೆ. ಇನ್ನು ಮುಂದೆ ಫಲಾನುಭವಿಗಳ ಖಾತೆಗೆ ಜಮಾ ಮಾಡುವ ಮುನ್ನ 2000 ರೂ.ಯನ್ನು ಮೊದಲು ಚಾಮುಂಡೇಶ್ವರಿಯ (Chamundeshwari Devi) ಹುಂಡಿಗೆ ಕಾಣಿಕೆಯಾಗಿ ಸಮರ್ಪಣೆ ಮಾಡಿ ಬಳಿಕ ಫಲಾನುಭವಿಗಳ ಖಾತೆಗೆ ಹಾಕಲು ನಿರ್ಧರಿಸಲಾಗಿದೆ.

ನಾಡದೇವತೆ ಎಂದೇ ಅಭಿದಾನ ಹೊಂದಿರುವ ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ದೇವಿಗೆ ಹರಕೆಯ ರೂಪದಲ್ಲಿ 2000 ರೂ. ಸಲ್ಲಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ (DK Shivakumar) ಅವರು ಯೋಜನೆಯನ್ನು ಆರಂಭಿಸಿದ್ದರು. ಇದೀಗ ಪ್ರತಿ ತಿಂಗಳು ಕೂಡಾ ದೇವಿಗೆ ಕಾಣಿಕೆ ಸಲ್ಲಿಸಬೇಕು ಎಂಬ ಸಲಹೆಯನ್ನು ಡಿಸಿಎಂ ಡಿ.ಕೆ. ಶಿವಕುಮಾರ್‌ ಒಪ್ಪಿದ್ದಾರೆ. ಸದ್ಯವೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ಇದನ್ನು ಪ್ರಕಟಿಸಲಿದ್ದಾರೆ ಎಂದು ತಿಳಿದುಬಂದಿದೆ.

ಈ ಹೊಸ ಯೋಚನೆ ಹೊಳೆದಿದ್ದು, ಚಾಮುಂಡೇಶ್ವರಿಗೆ ಕಾಣಿಕೆ ಸಲ್ಲಿಸಿದ ಬಳಿಕ ಪ್ರತಿ ತಿಂಗಳು ಗೃಹಿಣಿಯರ ಖಾತೆಗೆ ಹಣ ಹಾಕಬಹುದು ಎಂಬ ಸಲಹೆ ನೀಡಿದ್ದು ಕಾಂಗ್ರೆಸ್‌ ಮೇಲ್ಮನೆ ಸದಸ್ಯರಾಗಿರುವ ದಿನೇಶ್‌ ಗೂಳಿಗೌಡ (MLC Dinesh Gooligowda) ಅವರು. ಅವರು ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರಿಗೆ ಈ ಸಂಬಂಧ ಒಂದು ಪತ್ರವನ್ನು ಬರೆದಿದ್ದರು. ಅವರ ಸಲಹೆಗೆ ಸಕಾರಾತ್ಮಕ ಸ್ಪಂದನೆ ನೀಡಿದ ಡಿ.ಕೆ. ಶಿವಕುಮಾರ್‌ ಅವರು ಈ ಬಗ್ಗೆ ಸೂಕ್ತ ಕ್ರಮಕ್ಕೆ ಸೂಚಿಸಿದ್ದಾರೆ.

ಇದನ್ನೂ ಓದಿ: Gruha Lakshmi Scheme: ಗೃಹಲಕ್ಷ್ಮಿ ಯೋಜನೆಯ ಹಣ ಇನ್ನೂ ಎಷ್ಟು ಮಂದಿಗೆ ಸಿಕ್ಕಿಲ್ಲ, ಕಾರಣವೇನು?

ಹಾಗಿದ್ದರೆ ದಿನೇಶ್‌ ಗೂಳಿ ಗೌಡ ಅವರು ಬರೆದ ಪತ್ರದಲ್ಲಿ ಏನಿತ್ತು?

ರಾಜ್ಯ ಕಾಂಗ್ರೆಸ್ ಸರ್ಕಾರದ ಜಾರಿಗೆ ತಂದ ಗೃಹಲಕ್ಷ್ಮೀ ಯೋಜನೆ ಜನರಿಗೆ ಅತ್ಯಂತ ಉಪಕಾರಿಯಾಗಿದೆ. ಚುನಾವಣೆಗೂ ಪೂರ್ವ ಕಾಂಗ್ರೆಸ್ ಪಕ್ಷದ ವತಿಯಿಂದ ಮೈಸೂರಿನ ನಾಡದೇವತೆ ತಾಯಿ ಚಾಮುಂಡೇಶ್ವರಿ ಸನ್ನಿಧಿಗೆ ತೆರಳಿ ಪಕ್ಷದ ಐದು ಗ್ಯಾರಂಟಿಗಳ ಕಾರ್ಡ್ ಅನ್ನು ಇಟ್ಟು ದೇವಿಯ ಬಳಿ, ಶಕ್ತಿ ಕೊಡು ಎಂದು ಕೋರಿಕೆಯನ್ನಿಡಲಾಗಿತ್ತು. ಆ ಸಂದರ್ಭದಲ್ಲಿ ಹರಕೆಯನ್ನು ನಾಡದೇವತೆ ಬಳಿ ಮಾಡಿಕೊಳ್ಳಲಾಗಿತ್ತು. ಪಕ್ಷ ಅಧಿಕಾರಕ್ಕೆ ಬಂದರೆ, ಗ್ಯಾರಂಟಿ ಈಡೇರಿಸುವ ವಾಗ್ದಾನವನ್ನೂ ಮಾಡಲಾಗಿತ್ತು ಎಂದಿದ್ದರು.

ನಂತರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನ ಅಭೂತಪೂರ್ವ ಬೆಂಬಲವನ್ನು ವ್ಯಕ್ತಪಡಿಸಿದ್ದರು. ಪರಿಣಾಮ 135 ಸ್ಥಾನಗಳೊಂದಿಗೆ ಸಂಪೂರ್ಣ ಬಹುಮತವನ್ನು ಪಡೆದು ಈಗ ಜನಪರ ಜನಪ್ರಿಯ ಆಡಳಿತವನ್ನು ನೀಡುತ್ತಿದೆ. ಇದಕ್ಕೆ ಕಾರಣವಾಗಿರುವ, ಆಶೀರ್ವಾದ ನೀಡಿ ಹರಸಿರುವ ಜಗನ್ಮಾತೆ ಚಾಮುಂಡೇಶ್ವರಿಗೆ ಮೈಸೂರಿನಲ್ಲಿ ಪೂಜೆ ಸಲ್ಲಿಸಿ ಆಗಸ್ಟ್ 30ರಂದು ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗಿತ್ತು. ಈ ಮೂಲಕ ನಮ್ಮ ಸರ್ಕಾರ ನುಡಿದಂತೆ ನಡೆದಿದೆ ಎಂದು ಋಜುವಾತುಪಡಿಸಲಾಗಿತ್ತು.

ಅಂದು ಹರಕೆಯನ್ನು ತೀರಿಸಲು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಮಹಿಳಾ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್‌ ಅವರ ಮೂಲಕ ಲಕ್ಷ್ಮಿ ವಿಶೇಷ ಪೂಜೆ ಸಲ್ಲಿಸಲಾಗಿತ್ತು. ಮಾತ್ರವಲ್ಲ ಗೃಹ ಲಕ್ಷ್ಮಿಯರಿಗೆ ನೀಡುವ 2 ಸಾವಿರ ರೂ.ಗಳನ್ನು ದೇವಿಗೆ ಸಲ್ಲಿಸಲಾಗಿತ್ತು.

ಈಗ ಪ್ರತಿ ತಿಂಗಳು 2 ಸಾವಿರ ರೂ.ಗಳನ್ನು ರಾಜ್ಯದ 1.2 ಕೋಟಿಗೂ ಅಧಿಕ ಕುಟುಂಬಗಳಿಗೆ ಜಮಾ ಮಾಡಲಾಗುತ್ತಿದೆ. ಆ ಹಣದಿಂದ ಸಾಕಷ್ಟು ಬಡ ಕುಟುಂಬಗಳ ಜೀವನ ಮಟ್ಟ ಸುಧಾರಣೆಗೊಂಡಿದೆ. ಅಲ್ಲದೆ, ನಮ್ಮ ಸರ್ಕಾರದ ಹಾಗೂ ತಮ್ಮಗಳ ಬಗ್ಗೆ ಶುಭ ಹಾರೈಕೆಯನ್ನು ಮಾಡುತ್ತಲೇ ಇದ್ದಾರೆ.

ಈಗ ಪ್ರತಿ ತಿಂಗಳು ಮನೆಯ ಯಜಮಾನಿಯರ ಖಾತೆಗೆ ನಿಖರವಾಗಿ ತಲಾ 2 ಸಾವಿರ ರೂ. ಹಣ ಜಮಾ ಆಗುತ್ತಿರುವುದು ಖುಷಿಯ ವಿಚಾರವಾಗಿದೆ. ಅದೇ ರೀತಿ ಪ್ರತಿ ತಿಂಗಳ ಕಂತನ್ನು ಯಜಮಾನಿಯರಿಗೆ ಪಾವತಿಸುವ ಮೊದಲು ನಾಡದೇವಿ ಚಾಮುಂಡೇಶ್ವರಿಯ ಸನ್ನಧಿಗೂ ಸಲ್ಲಿಸಬೇಕು. ಆ ಮೂಲಕ ಮೊದಲ ಹಣ ನಾಡದೇವತೆಗೆ ಸಲ್ಲಿಕೆಯಾಗಿ ಬಳಿಕ ಉಳಿದವರಿಗೆ ಪಾವತಿಯಾಗುವಂತೆ ವ್ಯವಸ್ಥೆ ಮಾಡಬಹುದು.
– ಎಂದು ದಿನೇಶ್‌ ಗೂಳಿಗೌಡ ಅವರು ಪತ್ರದಲ್ಲಿ ಬರೆದಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version