Site icon Vistara News

FSL Report: ‘ಪಾಕಿಸ್ತಾನ ಜಿಂದಾಬಾದ್’ ಕೇಸ್‌; FSL ವರದಿ ಬಹಿರಂಗಕ್ಕೆ ಬಿಜೆಪಿ ನಿಯೋಗ ಮನವಿ

Pakistan Zindabad case BJP delegation demands disclosure of FSL report

ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಕುರಿತ ಎಫ್‍ಎಸ್‍ಎಲ್ ವರದಿಯನ್ನು (FSL Report) ಕೂಡಲೇ ಬಹಿರಂಗ ಮಾಡುವಂತೆ ಬಿಜೆಪಿ (BJP Karnataka) ನಿಯೋಗವು ಐಜಿಪಿಗೆ ಮನವಿ ಸಲ್ಲಿಸಿದೆ.

ಶಾಸಕ ಎಲ್.ಎ. ರವಿಸುಬ್ರಹ್ಮಣ್ಯ, ಸಿ.ಕೆ. ರಾಮಮೂರ್ತಿ, ಉದಯ ಬಿ. ಗರುಡಾಚಾರ್ ಮತ್ತು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ ಅವರನ್ನೊಳಗೊಂಡ ನಿಯೋಗವು ಸೋಮವಾರ ನೃಪತುಂಗ ರಸ್ತೆಯಲ್ಲಿರುವ ಇನ್‍ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ (ಐಜಿಪಿ) ಕಚೇರಿಗೆ ಭೇಟಿ ನೀಡಿ ಮನವಿ ಸಲ್ಲಿಸಿತು.

ಇದೇ ಫೆಬ್ರವರಿ 27ರಂದು ವಿಧಾನಸೌಧದ ಕಾರಿಡಾರ್‌ನಲ್ಲಿ ರಾಜ್ಯಸಭಾ ಸಂಸದ ಸೈಯದ್ ನಾಸಿರ್ ಹುಸೇನ್ ಬೆಂಬಲಿಗರು ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ್ದರು. ನಂತರ ಗೃಹ ಸಚಿವ ಡಾ. ಪರಮೇಶ್ವರ್ ಅವರು ಎಫ್‍ಎಸ್‍ಎಲ್ ವರದಿಯನ್ನು ಶೀಘ್ರವೇ ಬಹಿರಂಗ ಮಾಡುವ ಭರವಸೆ ನೀಡಿದ್ದರು. ಘಟನೆ ನಡೆದು ಒಂದು ವಾರ ಕಳೆದರೂ ಎಫ್‍ಎಸ್‍ಎಲ್ ವರದಿಯ ಮಾಹಿತಿ ಇಲ್ಲ ಎಂದು ರಾಜ್ಯ ಸರ್ಕಾರ ಹೇಳುತ್ತಿದೆ. ಇದು ಖಂಡನೀಯ ಎಂದು ಬಿಜೆಪಿ ಹೇಳಿದೆ.

ವಿಳಂಬ ಮಾಡಿದರೆ ಸಮಾಜಘಾತಕರಿಗೆ ಬಲ ನೀಡಿದಂತೆ

ಸತ್ಯ ತಿಳಿಸಲು ವಿಳಂಬವೇಕೆ? ವಾಸ್ತವ ಸಂಗತಿ ಮರೆಮಾಚಲು ಮತ್ತು ತನಿಖೆಯ ದಿಕ್ಕನ್ನು ಹಳಿ ತಪ್ಪಿಸಲು ನಿಮ್ಮ ಮೇಲೆ ಯಾವುದಾದರೂ ಒತ್ತಡವಿದೆಯೇ ಎಂದು ಪ್ರಶ್ನಿಸಲಾಗಿದೆ. ಇಂತಹ ವಿಳಂಬದಿಂದ ಮುಂದಿನ ದಿನಗಳಲ್ಲಿ ಈ ರೀತಿ ದೇಶವಿರೋಧಿ ಮತ್ತು ಸಮಾಜಘಾತುಕ ಕೆಲಸ ಮಾಡುವ ಜನರಿಗೆ ಮತ್ತಷ್ಟು ಬಲ ಬಂದಂತಾಗುತ್ತದೆ ಎಂದು ಮನವಿಯಲ್ಲಿ ಆತಂಕ ವ್ಯಕ್ತಪಡಿಸಲಾಗಿದೆ.

ಇದನ್ನೂ ಓದಿ: Kyasanur Forest Disease: ಕರ್ನಾಟಕದಲ್ಲಿ ಕೆಎಫ್‌ಡಿಗೆ 6 ಬಲಿ! ಕಾಯಿಲೆ ಲಕ್ಷಣಗಳೇನು? ಪಾರಾಗುವುದು ಹೇಗೆ?

ಎಫ್‍ಎಸ್‍ಎಲ್ ವರದಿ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅನೇಕ ಪೋಸ್ಟ್‌ಗಳಿವೆ. ಆದ್ದರಿಂದ ಈ ತನಿಖೆಯ ವಾಸ್ತವಾಂಶವನ್ನು ತಿಳಿಯಲು ಬಯಸುತ್ತೇವೆ. ರಾಜ್ಯದ ಜವಾಬ್ದಾರಿಯುತ ವಿಪಕ್ಷವಾಗಿ, ನಾವು ಈ ಪತ್ರಕ್ಕೆ ನಿಮ್ಮಿಂದ ಪ್ರಾಮಾಣಿಕ ಮತ್ತು ತ್ವರಿತ ಪ್ರತ್ಯುತ್ತರದ ನಿರೀಕ್ಷೆಯಲ್ಲಿದ್ದೇವೆ ಎಂದು ಮನವಿ ಪತ್ರದಲ್ಲಿ ಬಿಜೆಪಿ ಹೇಳಿದೆ.

ರಾಷ್ಟ್ರ ದ್ರೋಹಿಗಳ ರಕ್ಷಣೆಯೇ ಆದ್ಯತೆಯೇ; ಸಿಎಂ ಸಿದ್ದರಾಮಯ್ಯಗೆ ಬಿ.ವೈ. ವಿಜಯೇಂದ್ರ ಪ್ರಶ್ನೆ

ರಾಜ್ಯಸಭಾ ಚುನಾವಣೆಯ (Rajyasabha Election) ಫಲಿತಾಂಶ ಪ್ರಕಟವಾದ ಫೆ. 27ರಂದು ಕಾಂಗ್ರೆಸ್‌ನ ವಿಜಯೀ ಅಭ್ಯರ್ಥಿ ನಾಸಿರ್‌ ಹುಸೇನ್‌ (Nasir Husein) ಅವರ ವಿಜಯೋತ್ಸವದ ಸಂದರ್ಭದಲ್ಲಿ ವಿಧಾನಸೌಧದ (Vidhana Soudha) ಒಳಗೇ ಪಾಕಿಸ್ತಾನ್‌ ಜಿಂದಾಬಾದ್‌ (Pakistan Zindabad) ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ (BJP Karnataka) ಎಫ್‌ಎಸ್‌ಎಲ್‌ ವರದಿಯನ್ನು (FSL Report) ಬಿಡುಗಡೆ ಮಾಡಿದೆ. ಇದರ ಬೆನ್ನಲ್ಲೇ ಈಗ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಟ್ವೀಟ್‌ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಬಿ.ವೈ. ವಿಜಯೇಂದ್ರ ಟ್ವೀಟ್‌ನಲ್ಲೇನಿದೆ?

“ಮಾನ್ಯ ಸಿಎಂ ಸಿದ್ದರಾಮಯ್ಯನವರೇ,
ರಾಜ್ಯ ಹಾಗೂ ಜನರ ಹಿತಾಸಕ್ತಿಯೇ ನಮ್ಮ ಮೊದಲ ಆದ್ಯತೆ, ದೇಶ ದ್ರೋಹಿ ಉಗ್ರರು ಹಾಗೂ ಪಾತಕಿಗಳಿಗೆ ಕರ್ನಾಟಕ ನೆಲೆಯಾಗಬಾರದೆಂಬುದಷ್ಟೇ ನಮ್ಮ ಪ್ರಾಮಾಣಿಕ ಕಾಳಜಿ, ಪ್ರಜಾಪ್ರಭುತ್ವದ ಹೃದಯ ಮಂದಿರ ವಿಧಾನಸೌಧಕ್ಕೆ ಧಾವಿಸಿ ಬಂದು ಪೋಲಿಸರ ಎದುರೇ ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಕೂಗುವಷ್ಟರ ಮಟ್ಟಿಗೆ ವಿದ್ರೋಹಿಗಳು ಧೈರ್ಯತೋರುತ್ತಾರೆ, ಇದರ ಬೆನ್ನಲೇ ರಾಜಧಾನಿಯಲ್ಲಿ ಬಾಂಬ್ ಸ್ಫೋಟವಾಗುತ್ತದೆ ಎಂದರೆ ಈ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಲ್ಲಿ ಅಡಗಿ ಕುಳಿತಿದೆ? ಎಂಬುದು ಬಹುದೊಡ್ಡ ಪ್ರಶ್ನೆಯಾಗಿ ರಾಜ್ಯದ ಜನರನ್ನು ಕಾಡುತ್ತಿದೆ.

ಜನರು ಆತಂಕದ ನೆರಳಿನಲ್ಲಿ ಬದುಕುವ ಸ್ಥಿತಿ ಬಂದೊದಗಿದೆ. ವರದಿ ತಲುಪಿದರೂ ಏಕೆ ಸುಳ್ಳು ಹೇಳುತ್ತಿದ್ದೀರಿ? ಇದು ನಿಮ್ಮ ರಾಷ್ಟ್ರ ಬದ್ಧತೆಯನ್ನು ಪ್ರಶ್ನೆ ಮಾಡುವಂತಾಗಿದೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಭೂಗತ ಶಕ್ತಿಗಳಿಗೆ ಸ್ವಾತಂತ್ರ್ಯ ದೊರೆತ ವಾತಾವರಣವು ನಿರ್ಮಾಣವಾಗಿದೆ. ಜನರು ಆತಂಕದ ನೆರಳಿನಲ್ಲಿ ಬದುಕುವ ಸ್ಥಿತಿ ಬಂದೊದಗಿದೆ.

ಪಾಕಿಸ್ತಾನ್ ಜಿಂದಾಬಾದ್ ಘೋಷಣೆ

‘ಬೆಂದ ಮನೆಯಲ್ಲಿ ಗಳ ಇರಿಯುವ’ ರಾಜಕಾರಣ ಮಾಡುವ ದುರ್ಗತಿ ಬಿಜೆಪಿಗೆ ಬಂದಿಲ್ಲ ವಿಧಾನಸೌಧದಲ್ಲೇ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೇಳಿಬಂದರೆ ನಾವು ಕೈಕಟ್ಟಿ ಕೂರಬೇಕೇ? ಈ ಸಂಬಂಧ ಮಾಧ್ಯಮಗಳ ವರದಿ ನೀವು ನಂಬಲ್ಲಿಲ್ಲ, ಪ್ರತ್ಯಕ್ಷದರ್ಶಿಗಳ ಹೇಳಿಕೆ ಆಲಿಸಲಿಲ್ಲ, ರಾಷ್ಟ್ರ ಹಿತಾಸಕ್ತಿಯ ಈ ಗಂಭೀರ ಪ್ರಕರಣದ ಬಗ್ಗೆ ತಾತ್ಸಾರ ತೋರುತ್ತಿರುವುದರ ನಿಮ್ಮ ವರ್ತನೆ ರಾಷ್ಟ್ರ ದ್ರೋಹಿಗಳನ್ನು ರಕ್ಷಿಸಲು ಆದ್ಯತೆ ನೀಡುತ್ತಿರುವಂತಿದೆ.

ಇದನ್ನೂ ಓದಿ: FSL Report : ಸರ್ಕಾರಿ FSL ವರದಿ ಬಂದಿಲ್ಲ, ಖಾಸಗಿ ವರದಿ ಒಪ್ಪಲ್ಲ; ಬಿಜೆಪಿಗೆ ಪರಮೇಶ್ವರ್‌ ತಿರುಗೇಟು

ನಿಮ್ಮ ರಾಷ್ಟ್ರ ಬದ್ಧತೆಯನ್ನು ಪ್ರಶ್ನಿಸುವಂತಾಗಿದೆ

ಖಾಸಗಿ ಎಫ್‌ಎಸ್‌ಎಲ್ ವರದಿ ಈಗಾಗಲೇ ಈ ಕುರಿತು ಧೃಡೀಕರಣ ನೀಡಿಯಾಗಿದೆ, ಸರ್ಕಾರಿ ವರದಿ ಕೂಡ ನಿಮ್ಮ ಕೈ ಸೇರಿದೆ ಆದಾಗ್ಯೂ ವರದಿ ಇನ್ನೂ ತಲುಪಿಲ್ಲ ಎಂಬ ಹಸೀ ಸುಳ್ಳು ಹೇಳುತ್ತಿರುವ ನಿಮ್ಮ ನಡೆ, ನಿಮ್ಮ ರಾಷ್ಟ್ರ ಬದ್ಧತೆಯನ್ನು ಪ್ರಶ್ನಿಸುವಂತಾಗಿದೆ” ಎಂದು ವಿಜಯೇಂದ್ರ ಕುಟುಕಿದರು.

Exit mobile version