Site icon Vistara News

ತಿಳಿಗೇಡಿ ಯುವಕನಿಂದ ಪಠ್ಯಪುಸ್ತಕ ಪರಿಷ್ಕರಣೆ ಎಂದ ಸಿದ್ದರಾಮಯ್ಯ

siddaramaiah

ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆ ವಿವಾದಕ್ಕೆ ಸಂಬಂಧಿಸಿದಂತೆ ಪರಿಶೀಲಿಸಲು ಹಿರಿಯ ತಜ್ಞರ ನೇತೃತ್ವದ ಸಮಿತಿ ರಚಿಸಬೇಕು ಎಂದು ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ವಿಧಾನ ಸಭೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ತಿಳೀಗೇಡಿ ಯುವಕನ ಮೂಲಕ ಪಠ್ಯಪುಸ್ತಕ ಪರಿಷ್ಕರಣೆ ಮಾಡಿಸಲಾಗಿದೆ ಎಂದು ಪರಿಷ್ಕರಣೆ ಸಮಿತಿ ಅಧ್ಯಕ್ಷ ರೋಹಿತ್‌ ಚಕ್ರತೀರ್ಥ ಕುರಿತು ಟೀಕಿಸಿದ್ದಾರೆ.

ಪಠ್ಯಪುಸ್ತಕ ಪರಿಷ್ಕರಣೆ ಬಗ್ಗೆ ಆಕ್ಷೇಪಗಳ ಕೇಳಿ ಬರುತ್ತಿರವೆ. ಈ ಹಿನ್ನೆಲೆಯಲ್ಲಿ ಪರಿಷ್ಕೃತ ಪಠ್ಯದ ಮುದ್ರಣವನ್ನು ತಕ್ಷಣ ತಡೆಹಿಡಿದು ರಾಜ್ಯದ ಶಿಕ್ಷಣ ತಜ್ಞರು, ಸಾಹಿತಿಗಳು ಮತ್ತು ಚಿಂತಕರ ಜೊತೆ ಸಮಾಲೋಚನೆ ನಡೆಸಬೇಕು. ಹಾಗೂ ಮುಂದಿನ ಕ್ರಮಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳನ್ನು ಆಗ್ರಹಪಡಿಸುತ್ತೇನೆ.

ಇದನ್ನೂ ಓದಿ: ಆರ್‌ಎಸ್‌ಎಸ್‌ ವಿರೋಧಿಗಳು ತುಂಡಾಸುರರು ಎಂದು ಬಣ್ಣಿಸಿದ ವಸಂತಕುಮಾರ್‌

ಈ ಬಗ್ಗೆ ಮುಖ್ಯಮಂತ್ರಿಗಳೇ ಖುದ್ದಾಗಿ ಸ್ಪಷ್ಟೀಕರಣ ನೀಡಬೇಕು. ಅನಗತ್ಯ ಊಹಾಪೋಹ ಮತ್ತು ಸಂಘರ್ಷಕ್ಕೆ ಅವಕಾಶ ನೀಡಬಾರದು. ಪಠ್ಯಪುಸ್ತಕ ಪರಿಷ್ಕರಣೆಯ ವಿವಾದದಿಂದಾಗಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕ ತಲೆ ತಗ್ಗಿಸುವಂತಾಗಿದೆ. ಕರ್ನಾಟಕದಲ್ಲಿ ಹಿರಿಯ ಸಾಹಿತಿಗಳು, ಚಿಂತಕರು ಮತ್ತು ಶಿಕ್ಷಣ ತಜ್ಞರಿರುವಾಗ ಸಂಘ ಪರಿವಾರಕ್ಕೆ ಸೇರಿದ ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ ಮಾಡಿಸಿರುವುದು ರಾಜ್ಯದ ಜನತೆಗೆ ಮಾಡಿರುವ ಅವಮಾನ.

ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ನೀಡಿರುವ ಕರಡನ್ನು ತಕ್ಷಣ ವಾಪಸು ಪಡೆದು ಸಮಿತಿಯನ್ನು ಬರ್ಖಾಸ್ತುಗೊಳಿಸಬೇಕು ಮತ್ತು ನಾಡಿನ ಚಿಂತಕರು ಮತ್ತು ಶಿಕ್ಷಣ ತಜ್ಞರ ಜತೆ ಸಮಾಲೋಚನೆ ನಡೆಸಿ ಹೊಸ ಸಮಿತಿಯನ್ನು ರಚಿಸಬೇಕು ಎಂದು ಮುಖ್ಯಮಂತ್ರಿಗಳನ್ನು ಒತ್ತಾಯಿಸುತ್ತೇನೆ.

ಧರ್ಮವನ್ನು ರಾಜಕೀಯ ದುರುದ್ದೇಶಕ್ಕೆ ಬಳಸಿ ಅದಕ್ಕೆ ಇರುವ ಪಾವಿತ್ರ್ಯವನ್ನು ಹಾಳುಗೆಡಹಿದ ಬಿಜೆಪಿ ಈಗ ಎಳೆಯ ಮಕ್ಕಳ ಬುದ್ದಿಕೆಡಿಸುವ ಮೂಲಕ ಶಿಕ್ಷಣ ಕ್ಷೇತ್ರವನ್ನು ರಾಜಕೀಯದ ಅಖಾಡ ಮಾಡಲು ಹೊರಟಿರುವುದು ಖಂಡನೀಯ. ನಾಡಿನ ಪ್ರಜ್ಞಾವಂತರೆಲ್ಲರೂ ಇದರ ವಿರುದ್ಧ ದನಿ ಎತ್ತಬೇಕಾಗಿದೆ.

ರಾಜಕೀಯ ಪಕ್ಷಗಳಿಗೆ ತಮಗೆ ಸರಿಕಂಡ ವ್ಯಕ್ತಿಗಳನ್ನು ಆರಾಧಿಸುವ, ಅವರ ಚಿಂತನೆಗಳನ್ನು ಪ್ರಚಾರಮಾಡುವ ಅಧಿಕಾರವಿದೆ. ಆದರೆ ಶಿಕ್ಷಣ ಕ್ಷೇತ್ರವನ್ನು ಸ್ವಾರ್ಥ ರಾಜಕೀಯದ ರಾಡಿಯಿಂದ ಮಲಿನಗೊಳಿಸಬಾರದು.

ಬುದ್ದ, ಬಸವಣ್ಣ, ಅಂಬೇಡ್ಕರ್, ನಾರಾಯಣಗುರು ಎಲ್ಲರೂ ಜಾತಿ, ಧರ್ಮ, ಪಕ್ಷ, ಪಂಥಗಳನ್ನು ಮೀರಿದ ಚೇತನಗಳು. ಇವರನ್ನು ಸ್ವಾರ್ಥ ರಾಜಕೀಯಕ್ಕೆ ದುರ್ಬಳಕೆ ಮಾಡಬಾರದು. ರಾಜಕೀಯ ದುರುದ್ದೇಶದಿಂದ ಮಾಡುವ ಈ ರೀತಿಯ ಅವಮಾನವನ್ನು ಸಹಿಸಲಾಗದು.

ಹೆಡಗೇವಾರ್, ಗೋಳ್ವಲ್ಕರ್‌, ಗೋಡ್ಸೆ ಮೊದಲಾದವರನ್ನು ತಮ್ಮ ಪಕ್ಷದ ವೇದಿಕೆಯಲ್ಲಿ ಮೆರೆದಾಡಿಸಲಿ. ಇವರ ಚಿತ್ರಗಳನ್ನೇ ಪ್ರದರ್ಶಿಸಿ ಚುನಾವಣೆಗಳಲ್ಲಿ ಮತಕೇಳಲಿ. ಪ್ರಜ್ಞಾವಂತ ಜನರು ತಪ್ಪು-ಸರಿಗಳನ್ನು ನಿರ್ಧರಿಸುತ್ತಾರೆ. ಶಿಕ್ಷಣ ಕ್ಷೇತ್ರವನ್ನು ರಾಜಕೀಯ ಸ್ವಾರ್ಥಕ್ಕಾಗಿ ಬಲಿಕೊಡಬೇಡಿ ಎಂದಿದ್ದಾರೆ.

ಇದನ್ನೂ ಓದಿ | Narayana Guru: 10ನೇ ತರಗತಿ ಪುಸ್ತಕದಿಂದ ನಾರಾಯಣಗುರು ಪಾಠವೂ ಕಟ್!

Exit mobile version