Site icon Vistara News

BJP Karnataka | 50 ಲಕ್ಷ ಮನೆಗಳ ಮೇಲೆ ಹಾರಾಡಲಿದೆ ಬಿಜೆಪಿ ಧ್ವಜ; ಹೊಸ ವರ್ಷಕ್ಕೆ ‘ಬೂತ್ ವಿಜಯ ಅಭಿಯಾನ’

Ladakh BJP Flags

Ladakh BJP Leader Expelled After Son Elopes With Buddhist Woman

ಬೆಳಗಾವಿ: ರಾಜ್ಯ ಬಿಜೆಪಿ (BJP Karnataka) ವತಿಯಿಂದ ಜನವರಿ 2 ರಿಂದ ಜನವರಿ 12ರ ವರೆಗೆ ‘ಬೂತ್ ವಿಜಯ ಅಭಿಯಾನ’ವನ್ನು ಆಯೋಜಿಸಲಾಗಿದ್ದು, ರಾಜ್ಯದ ಸುಮಾರು 50 ಲಕ್ಷ ಮನೆಗಳ ಮೇಲೆ ಬಿಜೆಪಿ ಧ್ವಜ ಹಾರಾಡಲಿದೆ.

ಬೆಳಗಾವಿ ಸುವರ್ಣ ಸೌಧದ ಬಿಜೆಪಿ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, 58,156 ಬೂತ್‍ಗಳು, 11,642 ಶಕ್ತಿ ಕೇಂದ್ರಗಳು, 1,445 ಮಹಾ ಶಕ್ತಿ ಕೇಂದ್ರಗಳು, 312 ಮಂಡಲಗಳು, 39 ಸಂಘಟನಾತ್ಮಕ ಜಿಲ್ಲೆಗಳಲ್ಲಿ ಈ ಅಭಿಯಾನ ನಡೆಯಲಿದೆ. ರಾಜ್ಯ, ಜಿಲ್ಲಾ, ತಾಲ್ಲೂಕು ಮಾತ್ರವಲ್ಲದೆ ಎಲ್ಲ ಘಟಕಗಳು, ಕಾರ್ಯಕರ್ತರು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವಿವರಿಸಿದರು.

ರಾಜ್ಯದಲ್ಲಿರುವ ಪಕ್ಷದ ಕಾರ್ಯಕರ್ತರ ಹಾಗೂ ಮತದಾರರ 50 ಲಕ್ಷ ಮನೆಗಳಲ್ಲಿ ಬಿಜೆಪಿ ಧ್ವಜ ಹಾರಿಸುವ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಯುವ ಅರ್ಹ ಮತದಾರರನ್ನು ಮತಪಟ್ಟಿಯಲ್ಲಿ ಸೇರಿಸಲಾಗುವುದು, ಪ್ರತಿ ಬೂತ್‍ಗಳಲ್ಲಿ ಶೇ .100 ಮತದಾನ ಆಗುವ ರೀತಿಯಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸಲಾಗುತ್ತದೆ. 20 ಲಕ್ಷ ಕಾರ್ಯಕರ್ತರು ಈ ಅಭಿಯಾನದಲ್ಲಿ ಭಾಗವಹಿಸುವರು ಎಂದರು.

ಪ್ರಧಾನಿಯವರ “ಮನ್ ಕೀ ಬಾತ್” ವೆಬ್ ಲಿಂಕನ್ನು 60 ಸಾವಿರ ಗುಂಪುಗಳು ಡೌನ್‍ಲೋಡ್ ಮಾಡಿಸುವಂತೆ ಪ್ರೇರೇಪಿಸಿ ಕಾರ್ಯಾನುಷ್ಠಾನ ಮಾಡಲಾಗುವುದು ಎಂದ ಕೋಟ ಶ್ರೀನಿವಾಸ ಪೂಜಾರಿ, ಪ್ರತಿ ಬೂತ್‍ನಲ್ಲಿ ಮತದಾರರಿಗೆ ಜಾಗೃತಿ ಮೂಡಿಸುವ ಸಭೆಯನ್ನು ಮಾಡಲಿದ್ದೇವೆ ಎಂದು ತಿಳಿಸಿದರು.

ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‍ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಎಲ್ಲ ಸಚಿವರು, ಬಿಜೆಪಿಯ ಎಲ್ಲ ಶಾಸಕರು, ವಿಧಾನಪರಿಷತ್ ಸದಸ್ಯರು ಹಾಗೂ ರಾಜ್ಯ, ಜಿಲ್ಲೆ, ಮಂಡಲ ಪದಾಧಿಕಾರಿಗಳು ಅಭಿಯಾನದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲಿದ್ದಾರೆ ಎಂದು ಹೇಳಿದರು.

ಈ ಅಭಿಯಾನದ ಯಶಸ್ಸಿಗಾಗಿ ರಾಜ್ಯ ಮಟ್ಟದ ಸಮಿತಿ ರಚಿಸಲಾಗಿದೆ. ಸಂಚಾಲಕರಾಗಿ ಕೋಟ ಶ್ರೀನಿವಾಸ ಪೂಜಾರಿ, ಸಹ ಸಂಚಾಲಕರಾಗಿ ಮಹೇಶ್ ಟೆಂಗಿನಕಾಯಿ, ಸದಸ್ಯರಾಗಿ ಹೇಮಲತಾ ನಾಯಕ್, ಅರುಣ್ ಶಹಾಪುರ, ರಾಜೇಂದ್ರ ಮೈಸೂರು, ಕೇಶವ ಪ್ರಸಾದ್ ಅವರನ್ನು ನೇಮಿಸಲಾಗಿದೆ.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಮಾತನಾಡಿ, ಬಿಜೆಪಿ ಕೇವಲ ಚುನಾವಣೆ ಬಂದಾಗ ಸಕ್ರಿಯವಾಗುವ ಪಕ್ಷವಲ್ಲ; ಅದು ನಿರಂತರ ಚಟುವಟಿಕೆಯಿಂದ ಕೂಡಿರುವ ಪಕ್ಷ. ಕಳೆದ 2 ಚುನಾವಣೆಗಳಿಂದ ಪೇಜ್ ಪ್ರಮುಖ್ ನಿಯೋಜಿಸಿ ಕಾರ್ಯ ಮಾಡಿದ್ದು, ಈ ಬಾರಿ ಅದಕ್ಕೆ ಹೆಚ್ಚಿನ ಒತ್ತು ಕೊಡುತ್ತಿದ್ದೇವೆ. ಬಹುದೊಡ್ಡ ಅಭಿಯಾನ ಇದಾಗಲಿದೆ ಎಂದು ವಿವರಿಸಿದರು.

ವಿಧಾನ ಪರಿಷತ್ ಸದಸ್ಯ ಕೇಶವಪ್ರಸಾದ್, ರಾಜ್ಯ ವಕ್ತಾರ ಮತ್ತು ಶಾಸಕ ಪಿ.ರಾಜೀವ್, ಶಾಸಕ ಸಂಜೀವ ಮಠಂದೂರು, ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ್ ಅವರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

ಇದನ್ನೂ ಓದಿ | Karnataka Election | ಆಪರೇಷನ್‌ಗೆ ಇಳಿಯಲಿದ್ದಾರೆ ಅಮಿತ್‌ ಶಾ; ಡಿಸೆಂಬರ್‌ 30ರಂದು ಯಾರ‍್ಯಾರು ಬರಲಿದ್ದಾರೆ ಪಕ್ಷಕ್ಕೆ?

Exit mobile version