Site icon Vistara News

ಪ್ರಚಾರಕ್ಕಾಗಷ್ಟೇ ಬಿಜೆಪಿಯಿಂದ ಮತಾಂತರ ನಿಷೇಧ ಕಾಯ್ದೆ, ರಾಜ್ಯದಲ್ಲಿ ಎಲ್ಲಿ ಮತಾಂತರ ನಡೆಯುತ್ತಿದೆ?; ಡಿಕೆಶಿ ಪ್ರಶ್ನೆ

DK Shivakumar

ಮೈಸೂರು: ವಿಧಾನ ಪರಿಷತ್‌ನಲ್ಲಿ ಮತಾಂತರ ನಿಷೇಧ ಕಾಯ್ದೆ ಮಂಡನೆಗೆ ಬಿಜೆಪಿ ಮುಂದಾಗಿದೆ. ಆದರೆ, ರಾಜ್ಯದಲ್ಲಿ ಎಲ್ಲಿ ಮತಾಂತರ ನಡೆಯುತ್ತಿದೆ? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರಶ್ನೆ ಮಾಡಿದ್ದಾರೆ.

ಇದನ್ನೆಲ್ಲ ಬಿಜೆಪಿ ತನ್ನ ಪ್ರಚಾರಕ್ಕಾಗಿ ಮಾಡುತ್ತಿದೆ. ಇದರಿಂದ ಯಾವುದೇ ಪ್ರಯೋಜನವಿಲ್ಲ. ಅಲ್ಪಸಂಖ್ಯಾತರಿಗೆ ಭಯ ಹುಟ್ಟಿಸಲು ಕಾಯ್ದೆ ಮಂಡಿಸಲಾಗುತ್ತಿದೆಯೇ ವಿನಃ ಬೇರೇನೂ ಇಲ್ಲ. ಭಾವನಾತ್ಮಕ ವಿಚಾರವನ್ನು ಕೆರಳಿಸುವ ದೃಷ್ಟಿಯಿಂದ ಬಿಜೆಪಿ ಮಂಡನೆ ಮಾಡುತ್ತಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.

ಕಾಯ್ದೆಯು ಈ ಹಿಂದೆಯೇ ಇತ್ತು. ಆದರೆ, ಈಗ ದೇಶ, ರಾಜ್ಯ ವಿಭಜನೆ ಮಾಡಲು ಬಿಜೆಪಿ ಮುಂದಾಗಿದೆ. ಜಾತಿ ಧರ್ಮವನ್ನು ಒಡೆಯಲು ಹುನ್ನಾರ ಮಾಡುತ್ತಿದೆ. ಹಿಂದು ಧರ್ಮದ ಓಲೈಕೆ ಹಾಗೂ ಹೈ ಕಮಾಂಡ್ ಮೆಚ್ಚಿಸಲು ಮಂಡನೆ ಮಾಡಲಾಗುತ್ತಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

ಇದನ್ನೂ ಓದಿ | KPCC president Election | ನನ್ನ ಸ್ಪರ್ಧೆ ಬಗ್ಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುವೆ; ಡಿ.ಕೆ.ಶಿವಕುಮಾರ್‌

ನನ್ನ ಅವಧಿ ದಾಖಲೆ ತರುವಂತೆ ಅಧಿಕಾರಿಗಳಿಗೆ ಬೆದರಿಕೆ
ರಾಜ್ಯ ಸರ್ಕಾರ ಈಗ ಅಧಿಕಾರಿಗಳನ್ನು ಹೆದರಿಸುವ ಕಾರ್ಯಕ್ಕೆ ಕೈ ಹಾಕಿದೆ. ನನ್ನ ಅವಧಿಯಲ್ಲಿ ಆದ ಕೆಲಸಗಳ ದಾಖಲೆ ತರುವಂತೆ ಇಂಧನ ಇಲಾಖೆ ಅಧಿಕಾರಿಗಳಿಗೆ ತಾಕೀತು ಮಾಡುತ್ತಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಗಂಭೀರ ಆರೋಪ ಮಾಡಿದರು.

ಈ‌ ಬಗ್ಗೆ ಕೆಲವು ಅಧಿಕಾರಿಗಳು ನನಗೆ ಕರೆ ಮಾಡಿದ್ದರು. ನನ್ನ ಅವಧಿಯಲ್ಲಿನ ದಾಖಲೆ‌ ತರುವಂತೆ ಒತ್ತಡ ಹಾಕಲಾಗುತ್ತಿದೆ. ನಾನು ಎಲ್ಲ ದಾಖಲೆಗಳ‌ನ್ನೂ ಕೊಡಿ ಎಂದು ಹೇಳಿದ್ದೇನೆ. ತಪ್ಪು ಮಾಡಿದ್ದರೆ ನಾವೇ ಹಗ್ಗವನ್ನೂ ಕಳುಹಿಸಿ ಕೊಡುತ್ತೇವೆ. ಇದರ ಮೂಲಕ ಕಾಂಗ್ರೆಸ್ ಮತ್ತು ನನ್ನನ್ನು ಹೆದರಿಸಲು ಬಿಜೆಪಿ ಮುಂದಾಗಿದೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದರು.

ನಾನು ಯಾವುದಕ್ಕೂ ಹೆದರುವವನಲ್ಲ. ಏನು ಬೇಕಾದರೂ ತನಿಖೆ ಮಾಡಿಕೊಳ್ಳಲಿ. ಚಡ್ಡಿ, ಪ್ಯಾಂಟು, ಹಾಸಿಗೆ, ಮೊಟ್ಟೆ ಇತ್ಯಾದಿಗಳು ಸೇರಿದಂತೆ ಎಲ್ಲವನ್ನೂ ತನಿಖೆ ಮಾಡಲಿ. ನಾನು ಎಲ್ಲದಕ್ಕೂ ಸಿದ್ಧನಾಗಿದ್ದೇನೆ. ಮೂರು ವರ್ಷ ಬೇಕಿತ್ತಾ ತನಿಖೆ ಆರಂಭಿಸಲು? ಗುದ್ದಲಿ, ಹಾರೆ ತೆಗೆದುಕೊಂಡು, ಬುಲ್ಡೋಜರ್‌ನಲ್ಲಿ ಅಗೆಯಲಿ, ಬೋರ್ ತೆಗೆಸಲಿ, ನಮಗೇನೂ ಸಮಸ್ಯೆ ಇಲ್ಲ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

ಇದನ್ನೂ ಓದಿ | D. K. Shivakumar : ಕಲಾಪವನ್ನು ಸಿದ್ದರಾಮಯ್ಯ ನೋಡ್ಕೊಂತಾರೆ

Exit mobile version