Site icon Vistara News

Border Dispute | ಮಹಾರಾಷ್ಟ್ರದ ನಾಸಿಕ್‌ ನಗರದಲ್ಲಿ ಕರ್ಣಾಟಕ ಬ್ಯಾಂಕ್ ಫಲಕಕ್ಕೆ ಮಸಿ ಬಳಿದ ಕಿಡಿಗೇಡಿಗಳು

Karnataka Bank @ Nasik

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ನಾಸಿಕ್‌ ನಗರದಲ್ಲಿರುವ ಕರ್ಣಾಟಕ ಬ್ಯಾಂಕಿನ ಬೋರ್ಡ್‌ಗೆ ಕಪ್ಪು ಮಸಿ ಬಳಿಯಲಾಗಿದೆ. ಸ್ವರಾಜ್ಯ ಸಂಘಟನಾ ಎಂಬ ಸಂಘಟನೆಯ ಕಾರ್ಯಕರ್ತರು ಈ ಕೃತ್ಯ ಎಸಗಿದ್ದು, ಕರ್ನಾಟಕದ ವಿರುದ್ಧ ಘೋಷಣೆಗಳನ್ನು ಕೂಗಿದ ಘಟನೆ ನಡೆದಿದೆ. ಕರ್ನಾಟಕದ ವಿರುದ್ಧ ಶರದ್ ಪವಾರ್ ನೇತೃತ್ವದ ಎನ್‌ಸಿಪಿ ತನ್ನ ಪ್ರತಿಭಟನೆಯನ್ನು ಮುಂದುವರಿಸಿದೆ.

ಮತ್ತೊಂದೆಡೆ, ಮಹಾರಾಷ್ಟ್ರ ನೋಂದಣಿ ವಾಹನಗಳನ್ನು ಬೆಳಗಾವಿಯ ಗಡಿಯಲ್ಲಿ ತಡೆ ಹಿಡಿಯುತ್ತಿರುವ ಘಟನೆಗಳು ಮುಂದುವರಿದಿವೆ. ಏತನ್ಮಧ್ಯೆ, ಮಹಾರಾಷ್ಟ್ರ ಸರ್ಕಾರವು ಕರ್ನಾಟಕಕ್ಕೆ ಬಸ್ ಸೇವೆಯನ್ನು ಪುನರಾರಂಭಿಸಿದೆ. ಕೊಲ್ಹಾಪುರದಿಂದ ಬೆಳಗಾವಿಗೆ ಬಸ್ ಸೇವೆ ಶುರು ಮಾಡಲಾಗಿದೆ. ಆದರೆ, ಮುಂಜಾಗ್ರತಾ ಕ್ರಮವಾಗಿ ಕರ್ನಾಟಕ ಸರ್ಕಾರವು ಮಹಾರಾಷ್ಟ್ರಕ್ಕೆ ಬಸ್ ಸೇವೆಯನ್ನು ಆರಂಭಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಖಾಸಗಿ ಬಸ್‌ಗಳಿಗೆ ಯಾವುದೇ ನಿರ್ಬಂಧಗಳನ್ನು ಹೇರಿಲ್ಲ.

ನಿನ್ನೆಯಷ್ಟೇ ಎನ್‌ಸಿಪಿ ನಾಯಕ ಶರದ್ ಪವಾರ್, ಮರಾಠಿಗರ ತಾಳ್ಮೆಯನ್ನು ಪರೀಕ್ಷಿಸಬೇಡಿ ಎಂದು ನೇರವಾಗಿ ಕರ್ನಾಟಕಕ್ಕೆ ಸರ್ಕಾರಕ್ಕೆ ವಾರ್ನಿಂಗ್ ಮಾಡಿದ್ದರು. ಅಲ್ಲದೇ, ಈ ವಿವಾದಕ್ಕೆ ಸಂಬಂಧಿಸಿದಂತೆ ಗಟ್ಟಿ ನಿರ್ಣಯವನ್ನು ಕೈಗೊಳ್ಳುವ ಸಮಯ ಎದುರಾಗಿದ್ದು, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಯಾವುದೇ ನಿರ್ಧಾರ ಕೈಗೊಳ್ಳುವ ಮುನ್ನ ಎಲ್ಲ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಹೇಳಿದ್ದರು.

ಇದನ್ನೂ ಓದಿ | Border dispute |‌ ಗಡಿ ವಿವಾದವನ್ನು ಅನಗತ್ಯವಾಗಿ ಉದ್ರೇಕಿಸಿದರೆ ಅಪಾಯ: ಫಡ್ನವಿಸ್‌ಗೆ ಬುದ್ಧಿವಾದ ಹೇಳಿದ ಬೊಮ್ಮಾಯಿ

Exit mobile version