Site icon Vistara News

BTS-2022 | ಬೆಂಗಳೂರಿನಲ್ಲಿ ನ.16ರಿಂದ ಬಿಟಿಎಸ್‌-25; 5ಜಿ ಸೇರಿ ಅತ್ಯಾಧುನಿಕ ತಂತ್ರಜ್ಞಾನಗಳ ಕುರಿತು ಚರ್ಚೆ

BTS-2022

ನವದೆಹಲಿ: ಪ್ರತಿಷ್ಠಿತ ಬೆಂಗಳೂರು ತಂತ್ರಜ್ಞಾನ ಸಮಾವೇಶದ (BTS-2022) 25ನೇ ವರ್ಷದ ರಜತ ಮಹೋತ್ಸವ ಶೃಂಗಸಭೆಯು ನ.16ರಿಂದ 18ರವರೆಗೆ ನಡೆಯಲಿದ್ದು, ಈ ಬಾರಿ 5ಜಿ ತಂತ್ರಜ್ಞಾನ ಸೇರಿ ಹೈಬ್ರಿಡ್ ಕ್ಲೌಡ್‌, ಎಡ್ಜ್ ಕಂಪ್ಯೂಟಿಂಗ್, ಫಿನ್‌ಟೆಕ್‌, ಜಿನೋಮಿಕ್ಸ್‌ 2.0 ಮುಂತಾದ ಅತ್ಯಾಧುನಿಕ ತಂತ್ರಜ್ಞಾನಗಳ ಕುರಿತು ಮತ್ತು ಈ ಕ್ಷೇತ್ರದಲ್ಲಿ ಆಗಬೇಕಾದ ಹೂಡಿಕೆಯ ಬಗ್ಗೆ ಪ್ರಧಾನವಾಗಿ ಗಮನ ಹರಿಸಲಾಗುವುದು ಎಂದು ಐಟಿ ಮತ್ತು ಬಿಟಿ ಸಚಿವ ಡಾ.ಸಿ. ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ಬಿಟಿಎಸ್‌-25ಕ್ಕೆ ಪೂರ್ವಭಾವಿಯಾಗಿ ಮಂಗಳವಾರ ನವದೆಹಲಿಯಲ್ಲಿ ಏರ್ಪಡಿಸಿದ್ದ ರೋಡ್‌ಶೋ ಮತ್ತು ಉದ್ಯಮಿಗಳೊಂದಿಗಿನ ವಿಚಾರ ವಿನಿಮಯ ಕಾರ್ಯಕ್ರಮದಲ್ಲಿ ಮಾತನಾಡಿ, ಬೆಂಗಳೂರು ತಂತ್ರಜ್ಞಾನ ಸಮಾವೇಶವು ಈ ಬಾರಿ ಬೆಂಗಳೂರು ಅರಮನೆ ಆವರಣದಲ್ಲಿ ನಡೆಯಲಿದೆ. ಇಲ್ಲಿ ಭವಿಷ್ಯದ ಸಂಚಾರ ವ್ಯವಸ್ಥೆ, ಜೀನ್‌ ಎಡಿಟಿಂಗ್, ಬಯೋಫಾರ್ಮಾ, ಕ್ಲೀನ್‌ ಟೆಕ್ನಾಲಜಿ, ಏರೋಸ್ಪೇಸ್‌ ಮತ್ತು ಇಎಸ್‌ಜಿ ವಲಯ ಕುರಿತು ಪರಿಣತರು ಮತ್ತು ಉದ್ಯಮಿಗಳು ಚರ್ಚಿಸಲಿದ್ದಾರೆ ಎಂದು ವಿವರಿಸಿದರು.

ಇದನ್ನೂ ಓದಿ | ನ.11ರಂದು ಕೆಂಪೇಗೌಡ ಪ್ರತಿಮೆ ಲೋಕಾರ್ಪಣೆ; ಆದಿಚುಂಚನಗಿರಿ ಶ್ರೀಗಳ ಜತೆ ಸಚಿವ ಅಶ್ವತ್ಥನಾರಾಯಣ ಚರ್ಚೆ

ಆಧುನಿಕ ತಂತ್ರಜ್ಞಾನ ಧಾರೆಗಳ ಸಂಶೋಧನಾ ಕೇಂದ್ರಗಳು ರಾಜ್ಯದಲ್ಲಿ ನೆಲೆಯೂರಬೇಕೆನ್ನುವುದು ಸರ್ಕಾರದ ಸಂಕಲ್ಪವಾಗಿದೆ. ಸಮಕಾಲೀನ ಉದ್ದಿಮೆಗಳಿಗೆ ನಾವು ತೆರೆದುಕೊಂಡಿದ್ದು, ಇದಕ್ಕಾಗಿ ಜಗತ್ತಿನ ಪ್ರಮುಖ ಆವಿಷ್ಕಾರ ತಾಣಗಳೊಂದಿಗೆ ಜಾಗತಿಕ ನಾವೀನ್ಯತಾ ಸಹಭಾಗಿತ್ವ ಉಪಕ್ರಮದಡಿ ಒಡಂಬಡಿಕೆಗಳನ್ನು ಮಾಡಿಕೊಳ್ಳಲು ಉತ್ಸುಕವಾಗಿದ್ದೇವೆ ಎಂದು ತಿಳಿಸಿದರು.

ಕರ್ನಾಟಕದ ಆರ್ಥಿಕ ಬೆಳವಣಿಗೆಗೆ ಐಟಿ-ಬಿಟಿ ವಲಯದ ಕೊಡುಗೆ ಮುಂಬರುವ ದಿನಗಳಲ್ಲಿ ಮತ್ತಷ್ಟು ಹೆಚ್ಚಲಿದೆ. ಜತೆಗೆ ಎನ್ಇಪಿ ಅನುಷ್ಠಾನದಿಂದ ಸಂಶೋಧನೆಯ ಹೆಬ್ಬಾಗಿಲು ತೆರೆದಿದೆ. ಈಗ ಉದ್ಯಮಗಳು ಶೈಕ್ಷಣಿಕ ವ್ಯವಸ್ಥೆಯ ಅವಿಭಾಜ್ಯ ಅಂಗವಾಗಿವೆ. ಇದು ರಾಜ್ಯದಲ್ಲಿ ಔದ್ಯಮಿಕ ಪ್ರಗತಿಗೆ ನಿರ್ಣಾಯಕ ಶಕ್ತಿಯಾಗಲಿದ್ದು, ಕೌಶಲಪೂರ್ಣ ಮಾನವ ಸಂಪನ್ಮೂಲವನ್ನು ಸಜ್ಜುಗೊಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯವು ನವೋದ್ಯಮ, ಐಟಿ, ಅನಿಮೇಷನ್- ವಿಡಿಯೋ ಗೇಮ್ಸ್-ಕಾಮಿಕ್ಸ್ (ಎವಿಜಿಸಿ), ಜೈವಿಕ ತಂತ್ರಜ್ಞಾನ ಮತ್ತು ಎಲೆಕ್ಟ್ರಾನಿಕ್ಸ್ ಸಿಸ್ಟಂ ಡಿಸೈನ್ ಮತ್ತು ಮ್ಯಾನುಫ್ಯಾಕ್ಚರಿಂಗ್ (ಇಎಸ್‌ಡಿಎಂ) ಮುಂತಾದ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಸಮರ್ಪಕ ನೀತಿಗಳನ್ನು ರೂಪಿಸಿದ ಮೊಟ್ಟಮೊದಲ ರಾಜ್ಯವೆನ್ನುವ ಹಿರಿಮೆ ಹೊಂದಿದೆ ಎಂದು ಸಚಿವರು ನುಡಿದರು.

ಕಳೆದ ಆರ್ಥಿಕ ವರ್ಷದಲ್ಲಿ ದೇಶಕ್ಕೆ 83 ಶತಕೋಟಿ ಡಾಲರ್‌ಗಿಂತಲೂ ಹೆಚ್ಚು ನೇರ ವಿದೇಶಿ ಹೂಡಿಕೆ ಹರಿದುಬಂದಿದೆ. ಇದರಲ್ಲಿ ಶೇ.38ರಷ್ಟು ಬಂಡವಾಳವನ್ನು ಸೆಳೆಯುವಲ್ಲಿ ರಾಜ್ಯವು ಯಶಸ್ವಿಯಾಗಿದೆ. ಜತೆಗೆ ದೇಶದಲ್ಲಿರುವ ಜಾಗತಿಕ ಸಾಮರ್ಥ್ಯ ಕೇಂದ್ರಗಳ (ಜಿಸಿಸಿ) ಪೈಕಿ ಶೇ.40ರಷ್ಟು ಕರ್ನಾಟಕದಲ್ಲೇ ನೆಲೆಯೂರಿವೆ. 2025ರ ಹೊತ್ತಿಗೆ ದೇಶದ ಆರ್ಥಿಕತೆಗೆ ರಾಜ್ಯವು 1 ಟ್ರಿಲಿಯನ್ ಡಾಲರ್ ಕೊಡುಗೆ ನೀಡುವ ಗುರಿ ಇಟ್ಟುಕೊಂಡಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಐಟಿ-ಬಿಟಿ ಇಲಾಖೆಯ ಹೆಚ್ಚುವರಿ ಪ್ರಧಾನ ಕಾರ್ಯದರ್ಶಿ ಇ.ವಿ. ರಮಣ ರೆಡ್ಡಿ, ಇಲಾಖೆಯ ನಿರ್ದೇಶಕಿ ಮೀನಾ ನಾಗರಾಜ್ ಅವರು ರಾಜ್ಯದಲ್ಲಿನ ಅವಕಾಶಗಳ ಬಗ್ಗೆ ಬೆಳಕು ಚೆಲ್ಲಿದರು. ಎಸ್‌ಟಿಪಿಐ ಮಹಾನಿರ್ದೇಶಕ ಅರವಿಂದ್‌ ಕುಮಾರ್, ಎಸ್‌ಟಿಪಿಐ ಬೆಂಗಳೂರಿನ ನಿರ್ದೇಶಕ ಶೈಲೇಂದ್ರ ಕುಮಾರ್‌ ತ್ಯಾಗಿ, ಎಂಎಂ ಆಕ್ಟಿವ್ ಮುಖ್ಯಸ್ಥ ಜಗದೀಶ ಪಟ್ಟಣ್ಕರ್ ಮಾತನಾಡಿದರು. 25ಕ್ಕೂ ಹೆಚ್ಚು ಪ್ರಮುಖ ಕಂಪನಿಗಳ ಉನ್ನತ ಮಟ್ಟದ ಪ್ರತಿನಿಧಿಗಳು ಪಾಲ್ಗೊಂಡಿದ್ದರು.

ಇದನ್ನೂ ಓದಿ | ಕಾಂಗ್ರೆಸ್ ಭ್ರಷ್ಟಾಚಾರದ ಸಮಗ್ರ ದಾಖಲೆ ರಾಹುಲ್ ಗಾಂಧಿಗೆ ರವಾನೆ: ಸಿಎಂ ಬಸವರಾಜ ಬೊಮ್ಮಾಯಿ

Exit mobile version