Site icon Vistara News

BY Vijayendra : ಬೂತ್‌ ಮಟ್ಟದಿಂದಲೇ ಕಾರ್ಯಾಚರಣೆ ಶುರು; ಸ್ಪಷ್ಟ ಸಂದೇಶ ರವಾನಿಸಿದ ವಿಜಯೇಂದ್ರ

BY Vijayendra with Shashindra in Gandhinagara

ಬೆಂಗಳೂರು: ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ (BJP State President) ನೇಮಕಗೊಂಡಿರುವ ಬಿ.ವೈ ವಿಜಯೇಂದ್ರ (BY Vijayendra) ಅವರು ಬೂತ್‌ ಅಧ್ಯಕ್ಷರ ಮನೆಗೆ ಭೇಟಿ ನೀಡುವ ಮೂಲಕ ಅಧ್ಯಕ್ಷ ಸ್ಥಾನದ ಕಾರ್ಯಭಾರವನ್ನು ಆರಂಭ ಮಾಡಿದ್ದಾರೆ. ಈ ಮೂಲಕ ತನ್ನ ಕೆಲಸ ಬೂತ್‌ ಮಟ್ಟದಿಂದಲೇ ಶುರುವಾಗುತ್ತದೆ (Work Starts from Booth level) ಎಂಬ ಸಂದೇಶವನ್ನು ರವಾನಿಸಿದ್ದಾರೆ. ಜತೆಗೆ ಬೂತ್‌ ಮಟ್ಟದ ಕಾರ್ಯಕರ್ತರೇ ಪಕ್ಷದ ನಿಜವಾದ ಆಸ್ತಿ ಎಂದೂ ತಮ್ಮ ನಡೆಯ ಮೂಲಕ ಸ್ಪಷ್ಟಪಡಿಸಿದ್ದಾರೆ.

ಪಕ್ಷದ ರಾಜ್ಯಾಧ್ಯಕ್ಷರಾಗಿ ಶನಿವಾರ ಬೆಳಗ್ಗಿನಿಂದಲೇ ಕೆಲಸ ಶುರು ಮಾಡಿದ ಅವರು ಮೊದಲು ಭೇಟಿಯಾಗಿದ್ದೇ ಗಾಂಧಿನಗರ ಬೂತ್ 40ರ ಅಧ್ಯಕ್ಷ ಶಶೀಂದ್ರ (Booth President Shasheendra) ಅವರ ಮನೆಗೆ. ಬಿಜೆಪಿ ಯಾವತ್ತಿದ್ದರೂ ಕೇಡರ್‌ ಬೇಸ್ಡ್‌ ಪಾರ್ಟಿ (Cadre based party). ಕಾರ್ಯಕರ್ತರೇ ಅದರ ನಿಜವಾದ ಆಸ್ತಿ ಎಂದು ಆಗಾಗ ಹೇಳಲಾಗುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡೇ ವಿಜಯೇಂದ್ರ ಅವರು ತಮ್ಮ ಕಾರ್ಯಾಚರಣೆ ಶುರು ಮಾಡಿದ್ದಾರೆ. ದೊಡ್ಡ ನಾಯಕರನ್ನು ಭೇಟಿ ಮಾಡುವ ಮೊದಲು ಸಾಮಾನ್ಯ ಕಾರ್ಯಕರ್ತರನ್ನು ಭೇಟಿ ಮಾಡಿ ತಮ್ಮ ಮುಂದಿನ ನಡೆಯೇನು ಎನ್ನುವುದನ್ನು ಸ್ಪಷ್ಟಪಡಿಸಿದ್ದಾರೆ.

ಬೂತ್ ಅಧ್ಯಕ್ಷರು ಪಕ್ಷದ ಜೀವಾಳ ಎಂದ ಬಿ.ವೈ.ವಿಜಯೇಂದ್ರ

ರಾಜ್ಯದ ಪ್ರತಿಯೊಂದು ಬೂತ್ ಅಧ್ಯಕ್ಷರು ಕೂಡ ಪಕ್ಷದ ಜೀವಾಳ. ಪಕ್ಷದ ಎಲ್ಲ ಬೂತ್‍ಗಳನ್ನು ಬಲಪಡಿಸಲು ಆದ್ಯತೆ ನೀಡುತ್ತೇನೆ ಎಂದು ಶಶೀಂದ್ರ ಅವರ ಮನೆಗೆ ಭೇಟಿ ನೀಡಿದ ಬಳಿಕ ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.

ಬೂತ್‌ ಅಧ್ಯಕ್ಷ ಶಶೀಂದ್ರ ಅವರಿಗೆ ಹೂವಿನ ಗುಚ್ಛದ ಗೌರವ

ಗಾಂಧಿ ನಗರ ಬೂತ್ 40ರ ಅಧ್ಯಕ್ಷ ಶಶೀಂದ್ರ ಅವರ ಮನೆಗೆ ಭೇಟಿ ಕೊಟ್ಟಿದ್ದೇನೆ. ದೀಪಾವಳಿ ಶುಭಾಶಯ ಕೋರಿದ್ದೇನೆ. ರಾಜ್ಯದಲ್ಲಿ 58,282 ಬೂತ್‍ಗಳು ಇವೆ. ಎಲ್ಲ ಬೂತ್‍ಗಳಲ್ಲಿ ಪಕ್ಷದ ಸಂಘಟನೆ ಬಲಪಡಿಸಲಾಗುವುದು ಎಂದು ತಿಳಿಸಿದರು.

ಶಶೀಂದ್ರ ಅವರ ಜತೆ ಚಹಾ ಸೇವನೆ ಮಾಡಿದ ವಿಜಯೇಂದ್ರ

ಎಲ್ಲರೂ ಬೂತ್‌ ಮಟ್ಟದಿಂದಲೇ ಬಂದವರು

ಪ್ರತಿ ಬೂತ್ ಪ್ರಮುಖ ಮತ್ತು ಪಕ್ಷದ ಜೀವಾಳ ಎಂಬುದು ಹಿಂದಿನ ರಾಷ್ಟ್ರೀಯ ಅಧ್ಯಕ್ಷರು ಮತ್ತು ಇಂದಿನ ಕೇಂದ್ರ ಗೃಹ ಸಚಿವರು ಆದ ಅಮಿತ್ ಶಾ, ಇಂದಿನ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರ ಕಲ್ಪನೆ ಮತ್ತು ಚಿಂತನೆಯಾಗಿದೆ. ಅವರ ಚಿಂತನೆಯಂತೆ ಬೂತ್ ಅಧ್ಯಕ್ಷರ ಮನೆಗೆ ಭೇಟಿ ಕೊಡುವ ಮೂಲಕ ಕಾರ್ಯಾರಂಭ ಮಾಡಿದ್ದೇನೆ. ಇಡೀ ರಾಜ್ಯದಲ್ಲಿರುವ ಎಲ್ಲ 58 ಸಾವಿರಕ್ಕೂ ಹೆಚ್ಚು ಬೂತ್‍ಗಳಲ್ಲಿ ಪಕ್ಷದ ಸಂಘಟನೆಯನ್ನು ಬಲಪಡಿಸಲು ಹೆಜ್ಜೆ ಇಡುವುದಾಗಿ ತಿಳಿಸಿದರು.

ʻʻಪಕ್ಷದ ರಾಷ್ಟ್ರೀಯ ನಾಯಕರು ಬೂತ್ ಅಧ್ಯಕ್ಷರಾಗಿ ಈ ಮಟ್ಟಕ್ಕೆ ಬೆಳೆದುಬಂದಿದ್ದಾರೆ. ಬಿಜೆಪಿ, ರಾಷ್ಟ್ರೀಯ ಅಧ್ಯಕ್ಷರಂತೆ ಬೂತ್ ಅಧ್ಯಕ್ಷರನ್ನೂ ಗೌರವದಿಂದ ಕಾಣುತ್ತದೆ. ಇದೇ ಬಿಜೆಪಿಯ ವಿಶೇಷತೆʼʼ ಎಂದು ತಿಳಿಸಿದರು.

ಶಶೀಂದ್ರ ಅವರ ಕುಟುಂಬದ ಜತೆ ವಿಜಯೇಂದ್ರ

ಲೋಕಸಭಾ ಚುನಾವಣೆಯಲ್ಲಿ ಉತ್ತರ ಕೊಡ್ತೇವೆ

ʻʻʻಬಿಜೆಪಿ ಕಾರ್ಯಕರ್ತರು ಹೋರಾಟದಿಂದ ಹಿಂದೆ ಸರಿದ ಉದಾಹರಣೆಗಳಿಲ್ಲ. ನಮ್ಮ ಕಾರ್ಯಕರ್ತರ ರಕ್ತದ ಕಣಕಣದಲ್ಲೂ ಹೋರಾಟದ ಗುಣವಿದೆ. ಕಾಂಗ್ರೆಸ್ ಅಬ್ಬರವನ್ನು ಮೀರಿ ನಮ್ಮ ಪಕ್ಷದ ಕಾರ್ಯಕರ್ತರು ಸಂಘಟನೆ ಮಾಡುತ್ತಾರೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ತಕ್ಕ ಉತ್ತರ ಕೊಡಲಿದ್ದೇವೆʼʼ ಎಂದು ವಿಶ್ವಾಸದಿಂದ ನುಡಿದರು. ಈ ಸಂದರ್ಭದಲ್ಲಿ ಸಂಸದ ಪಿ.ಸಿ.ಮೋಹನ್, ಜಿಲ್ಲಾಧ್ಯಕ್ಷ ಮಂಜುನಾಥ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಇದ್ದರು.

ಇದನ್ನೂ ಓದಿ: BY Vijayendra : ರಾಜ್ಯ ಬಿಜೆಪಿಗೆ ಇನ್ನು ಬಿ ವೈ ವಿಜಯೇಂದ್ರ ಸಾರಥ್ಯ; ಆಯ್ಕೆಗೆ 10 ಕಾರಣಗಳು

ಕೇಶವ ಕೃಪಾಗೆ ಭೇಟಿ: ಶ್ರೀರಾಮ, ಭಾರತ ಮಾತೆಗೆ ವಂದನೆ

ಬಿಜೆಪಿ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಆರ್‌ಎಸ್‌ಎಸ್‌ ಕಚೇರಿಯಾಗಿರುವ ಕೇಶವಕೃಪಾಕ್ಕೆ ಭೇಟಿ ನೀಡಿದ್ದಾರೆ. ಅಲ್ಲಿ ಆರೆಸ್ಸೆಸ್‌ ಹಿರಿಯ ಮುಖಂಡ ಮುಕುಂದ್ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಆರೆಸ್ಸೆಸ್‌ ಕಚೇರಿಯಲ್ಲಿ ಅವರು ಶ್ರೀರಾಮಚಂದ್ರ ಹಾಗೂ ಭಾರತಮಾತೆ ಭಾವಚಿತ್ರಕ್ಕೆ ವಿಜಯೇಂದ್ರ ನಮಸ್ಕರಿಸಿದರು.

Exit mobile version