ಬೆಂಗಳೂರು: ಕರ್ನಾಟಕ ಬಿಜೆಪಿ ಘಟಕದ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ (BY Vijayendra) ಅವರು ಬುಧವಾರ (ನವೆಂಬರ್ 15) ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಇಂದು ಬೆಳಗ್ಗೆ 10 ಗಂಟೆಗೆ ಬಿ.ವೈ.ವಿಜಯೇಂದ್ರ ಅವರು ಪದಗ್ರಹಣ (Karnataka BJP President) ಮಾಡಲಿದ್ದು, ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ (BJP Office) ಸಕಲ ಸಿದ್ಧತೆ ಕೈಗೊಳ್ಳಲಾಗಿದೆ.
ಖುದ್ದು ಕರೆ ಮಾಡಿ ನಾಯಕರಿಗೆ ವಿಜಯೇಂದ್ರ ಆಹ್ವಾನ
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಹುಮ್ಮಸ್ಸಿನಲ್ಲಿರುವ ಬಿ.ವೈ.ವಿಜಯೇಂದ್ರ ಅವರು ಪಕ್ಷದ ನಾಯಕರಿಗೆ ಖುದ್ದು ಕರೆ ಮಾಡಿ ಆಹ್ವಾನ ನೀಡಿದ್ದಾರೆ. ರಾಜ್ಯ ಬಿಜೆಪಿ ನಾಯಕರು, ಕೇಂದ್ರ ಸಚಿವರು ಸೇರಿ ಹಲವರಿಗೆ ವಿಜಯೇಂದ್ರ ಅವರೇ ಕರೆ ಮಾಡಿ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ವಿಧಾನ ಪರಿಷತ್ ಸದಸ್ಯರು, ಬಿಜೆಪಿ ಮುಖಂಡರು, ಕಾರ್ಯಕರ್ತರು ಸೇರಿ ಅಪಾರ ಸಂಖ್ಯೆಯ ಜನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಇದನ್ನೂ ಓದಿ: BJP State President: ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಇಂದು ಪದಗ್ರಹಣ; ಹೋಮ-ಹವನ ಶುರು
ವಿಜಯೇಂದ್ರ ಅವರ ಪದಗ್ರಹಣ ಸಮಾರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಬೆಳಗ್ಗೆ 6.30ರಿಂದಲೇ ಹೋಮ-ಹವನ ಶುರುವಾಗಿವೆ. ಗಣಪತಿ ಹೋಮ, ದುರ್ಗ ಹೋಮಕ್ಕೆ ಸಕಲ ಸಿದ್ಧತೆ ಕೈಗೊಳ್ಳಲಾಗುತ್ತಿದೆ. ಇದಾದ ಬಳಿಕ ಬಳಿಕ ಬಿಜೆಪಿ ಕಚೇರಿಯಲ್ಲಿ ವಿಜಯೇಂದ್ರ ಅವರಿಗೆ ಬಿಜೆಪಿ ಧ್ವಜವನ್ನು ನಳಿನ್ ಕುಮಾರ್ ಕಟೀಲ್ ಅವರು ಹಸ್ತಾಂತರ ಮಾಡಲಿದ್ದಾರೆ. ಬಿಜೆಪಿ ಕಚೇರಿಗೆ ಅರ್ಚಕರು 108 ಕಳಸಗಳನ್ನು ತಂದು ಪೂಜೆ ಆರಂಭಿಸಿದ್ದಾರೆ. ಬಿಜೆಪಿ ಕಚೇರಿಯನ್ನು ಮದುವಣಗಿತ್ತಿಯಂತೆ ಸಿಂಗರಿಸಲಾಗಿದೆ. ಮಹಿಳೆಯರು ಕಚೇರಿ ಎದುರು ರಂಗೋಲಿ ಹಾಕಿದ್ದು, ಅಭಿಮಾನಿಗಳು ಈಗಾಗಲೇ ಬಿಜೆಪಿ ಕಚೇರಿಯತ್ತ ಆಗಮಿಸುತ್ತಿದ್ದಾರೆ.
ಎ.ಕೆ ಸುಬ್ಬಯ್ಯ ಅವರು 1980ರಲ್ಲಿ ಮೊದಲ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದರು. ಬಳಿಕ ಬಿ.ಬಿ ಶಿವಪ್ಪ (BB Shivappa), ಬಿ.ಎಸ್. ಯಡಿಯೂರಪ್ಪ (BS Yediyurappa), ಕೆ.ಎಸ್. ಈಶ್ವರಪ್ಪ (KS Eshwarappa) ಸೇರಿದಂತೆ ಹಲವರು ರಾಜ್ಯಾಧ್ಯಕ್ಷರಾಗಿ ಬಿಜೆಪಿಗೆ ದುಡಿದಿದ್ದಾರೆ. 1988ರಲ್ಲಿ ಮೊದಲ ಬಾರಿಗೆ ಬಿ.ಎಸ್. ಯಡಿಯೂರಪ್ಪ ರಾಜ್ಯಾಧ್ಯಕ್ಷರಾಗಿದ್ದರು. ಅವರು ಒಟ್ಟು ಮೂರು ಬಾರಿ ರಾಜ್ಯಾಧ್ಯಕ್ಷರಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿದ್ದರು. ಹೀಗಾಗಿ ರಾಜ್ಯ ಬಿಜೆಪಿಯಲ್ಲಿ ಅತಿ ಹೆಚ್ಚು ಬಾರಿ ರಾಜ್ಯಾಧ್ಯಕ್ಷರಾಗಿರುವ ಖ್ಯಾತಿಯನ್ನು ಸಹ ಅವರು ಹೊಂದಿದ್ದಾರೆ.
ಈ ಸಂಗತಿ ಕುರಿತು ನಿಮ್ಮ ಅಭಿಪ್ರಾಯವೇನು? ಕಾಮೆಂಟ್ ಮೂಲಕ ತಿಳಿಸಿ