Site icon Vistara News

Cauvery Dispute: 2-3 ದಿನದಲ್ಲಿ ಕೆಆರ್‌ಎಸ್ ಡ್ಯಾಂ ಭರ್ತಿ; ಕೆರೆಗಳನ್ನು ತುಂಬಿಸಲು ಕ್ರಮ ಎಂದ ಡಿಕೆಶಿ

Cauvery Dispute

ಬೆಂಗಳೂರು: “ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ವರುಣ ದೇವನ ಕೃಪೆಯಿಂದ ಕಾವೇರಿ ನೀರು ಹಂಚಿಕೆ (Cauvery Dispute) ವಿಚಾರದಲ್ಲಿ ಕೋರ್ಟ್ ಆದೇಶ ಪಾಲನೆ ಹಾಗೂ ರಾಜ್ಯದ ರೈತರ ಹಿತ ರಕ್ಷಣೆ ಸಾಧ್ಯವಾಗುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಕೆಪಿಸಿಸಿ ಕಚೇರಿಯ ಭಾರತ ಜೋಡೋ ಸಭಾಂಗಣ ಆವರಣದಲ್ಲಿ ಮಾತನಾಡಿದ ಅವರು, “ಇನ್ನೆರಡು ಮೂರು ದಿನಗಳಲ್ಲಿ ಕೆಆರ್‌ಎಸ್ ಅಣೆಕಟ್ಟು ತುಂಬಲಿದ್ದು, ತಮಿಳುನಾಡಿನ ಪಾಲಿನ ನೀರನ್ನು ಹರಿಸಬಹುದಾದ ಸೂಚನೆಗಳು ಸಿಗುತ್ತಿವೆ. ಇದರ ಜತೆಗೆ ನಮ್ಮ ರೈತರ ಹಿತಕಾಯಲು ಕೆರೆ ತುಂಬಿಸುವ ಕಾರ್ಯಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಕಾಲುವೆಗಳಿಗೆ ನೀರು ಹರಿಸಲಾಗುತ್ತಿದೆ. ಭತ್ತ ನಾಟಿ ಮಾಡುವ ಮುನ್ನ ಸ್ವಲ್ಪ ತಾಳ್ಮೆ ವಹಿಸಬೇಕು. ನೀರು ಎಷ್ಟು ಪ್ರಮಾಣದಲ್ಲಿ ಬರಲಿದೆ ಎಂಬುದು ಇನ್ನು ತಿಳಿದಿಲ್ಲ. ಹೀಗಾಗಿ ಕೃಷಿ ಇಲಾಖೆಯವರ ಜತೆ ಚರ್ಚೆ ಮಾಡಿ ತೀರ್ಮಾನ ಮಾಡಲಾಗುವುದು ಎಂದು ಹೇಳಿದರು.

ನಾವು ಮುಂಜಾಗ್ರತೆಯಿಂದ ರಂಗನತಿಟ್ಟು ಸೇರಿ ಇತರೆಡೆ ದೋಣಿ ವಿಹಾರ ಸ್ಥಗಿತಗೊಳಿಸಿದ್ದು, ಹೊಳೆಗಳ ಅಕ್ಕಪಕ್ಕದ ಪ್ರದೇಶಗಳಲ್ಲಿ ರೆಡ್ ಅಲರ್ಟ್ ಘೋಷಿಸಿದ್ದೇವೆ. ಕರಾವಳಿ ಭಾಗದಲ್ಲಿ ಕೇರಳ ಮೂಲದ ಚಾಲಕ ವಾಹನ ಸಮೇತ, ಗುಡ್ಡ ಕುಸಿತಕ್ಕೆ ಸಿಲುಕಿದ್ದಾನೆ. ಮಳೆ ಮುಂದುವರಿದಿರುವ ಕಾರಣ ತೆರವು ಕಾರ್ಯಕ್ಕೆ ಅಡ್ಡಿಯುಂಟಾಗಿದೆ. ನಾವು ನಮ್ಮ ಪ್ರಯತ್ನ ಮಾಡುತ್ತಿದ್ದೇವೆ. ನಮ್ಮ ಸಚಿವರು ಶಾಸಕರು, ನಾಯಕರು ಸ್ಥಳದಲ್ಲಿದ್ದು, ಅವರ ಕರ್ತವ್ಯ ನಿಭಾಯಿಸುತ್ತಿದ್ದಾರೆ” ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ | DK Shivakumar: ನಮ್ಮ ಅಧಿಕಾರಿಗಳು ಬಹಳ ಖದೀಮರಿದ್ದಾರೆ, ಡಿ ಗ್ರೇಡ್ ಕ್ಲರ್ಕ್‌ಗಳೆಲ್ಲಾ ಅಧೀಕ್ಷಕ, ಎಂಡಿಗಳಾಗಿದ್ದಾರೆ ಎಂದ ಡಿಕೆಶಿ

ಕುಮಾರಸ್ವಾಮಿ ಭೇಟಿಗೆ ಆಕ್ಷೇಪವಿಲ್ಲ

ಮಳೆ ಹಾನಿಯಾಗಿರುವ ಅಂಕೋಲಾ ಸೇರಿ ಇತರ ಕಡೆಗಳಿಗೆ ಕುಮಾರಸ್ವಾಮಿ ಭೇಟಿ ಬಗ್ಗೆ ಪ್ರತಿಕ್ರಿಯಿಸಿ, “ಅವರು ಯಾವ ಫೀಲ್ಡಿಗೆ ಇಳಿದಿದ್ದಾರೆ? ಸಿಆರ್‌ಪಿಎಫ್ ಪಡೆ ಕರೆಸಿ, ತೆರವು ಕಾರ್ಯಕ್ಕೆ ನೆರವಾಗಿದ್ದರೆ, ಫೀಲ್ಡಿಗೆ ಇಳಿದಿದ್ದಾರೆ ಎಂದು ಹೇಳಬಹುದಿತ್ತು. ಅನಾಹುತ ನಡೆದ ಒಂದೇ ತಾಸಿನಲ್ಲಿ ನಮ್ಮ ಸಚಿವರನ್ನು ಸ್ಥಳಕ್ಕೆ ಕಳುಹಿಸಿದ್ದೇವೆ. ನಮ್ಮ ಸಚಿವರಾದ ಮಂಕಾಳ ವೈದ್ಯ, ಕೃಷ್ಣ ಭೈರೇಗೌಡರು ಸ್ಥಳಕ್ಕೆ ಹೋಗಿ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಂಡಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದ್ದಾರೆ. ರಾಜ್ಯ ಸರ್ಕಾರ ತನ್ನ ಜವಾಬ್ದಾರಿ ಸಮರ್ಥವಾಗಿ ನಿಭಾಯಿಸುತ್ತಿದೆ. ಕುಮಾರಸ್ವಾಮಿ ಅವರು ಭೇಟಿ ನೀಡಿದ್ದಾರೆ. ಅವರು ಭೇಟಿ ನೀಡಿರುವುದಕ್ಕೆ ನಮ್ಮ ಆಕ್ಷೇಪವಿಲ್ಲ. ಈ ವಿಚಾರದಲ್ಲಿ ಈಗ ರಾಜಕಾರಣ ಮಾಡುವುದು ಬೇಡ. ಮೊದಲು ಜನರ ರಕ್ಷಣೆ ಮಾಡೋಣ” ಎಂದರು.

ನಿಗಮಗಳಲ್ಲಿ ಖದೀಮರು ಸೇರಿಕೊಂಡಿದ್ದಾರೆ

ನಿಗಮಗಳಲ್ಲಿ ಪಾರದರ್ಶಕತೆ ತರಲು ಮುಂದಾಗಿದ್ದು, ಸರ್ಕಾರ ಎಲ್ಲಾ ನಿಗಮಗಳ ಹಣ ಹಿಂಪಡೆಯುತ್ತಿರುವ ಬಗ್ಗೆ ಕೇಳಿದಾಗ, “ನಾವು ನಮ್ಮ ಅಧ್ಯಕ್ಷರುಗಳಿಗೆ ಈ ವಿಚಾರವಾಗಿ ಹೇಳಿದ್ದೆವು. ನಿಗಮಗಳಲ್ಲಿ ಕೆಲವು ಖದೀಮರು (ಅಧಿಕಾರಿಗಳು) ಸೇರಿಕೊಂಡಿದ್ದಾರೆ. ಬಿಜೆಪಿ ಆಡಳಿತದಲ್ಲೂ ತಿಂದು ಈಗಲೂ ಸೇರಿಕೊಂಡಿದ್ದಾರೆ. ಬಿಜೆಪಿ ಅವಧಿಯಲ್ಲಿ 300 ಕೋಟಿಗೂ ಹೆಚ್ಚು ಅಕ್ರಮ ನಡೆದಿದೆ. ಅದೇ ಅಧಿಕಾರಿಗಳು ಈಗ ಇದ್ದು, ಡಿ ವರ್ಗದ ನೌಕರರನ್ನು ಎಂಡಿ ಮಾಡಿದ್ದಾರೆ. ಅಂತಹ ಪ್ರಕರಣಗಳನ್ನು ಪರಿಶೀಲನೆ ಮಾಡಲಾಗುವುದು. ಹೀಗಾಗಿ ಆರ್ಥಿಕ ಇಲಾಖೆ ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಮುಂದಾಗಿದೆ” ಎಂದರು.

ಇದನ್ನೂ ಓದಿ | CM Siddaramaiah: ಜಾತಿ ವ್ಯವಸ್ಥೆ ದೇವರ ಸೃಷ್ಟಿಯಲ್ಲ, ಸ್ವಾರ್ಥಿ ಮನುಷ್ಯರ ಸೃಷ್ಟಿ: ಸಿಎಂ

ಜಿಲ್ಲಾ, ಬ್ಲಾಕ್ ಅಧ್ಯಕ್ಷರ ಜತೆ ಚರ್ಚೆ

ಕಾಂಗ್ರೆಸ್ ಪಕ್ಷದ ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಸಭೆ ಬಗ್ಗೆ ಕೇಳಿದಾಗ, “ಬ್ಲಾಕ್ ಮಟ್ಟದಲ್ಲಿ ಪಕ್ಷವನ್ನು ಪುನರ್ ರಚನೆ ಮಾಡಬೇಕಿದೆ. ಹೀಗಿರುವ ಅಧ್ಯಕ್ಷರುಗಳು ಬಹಳ ವರ್ಷಗಳಿಂದ ಪಕ್ಷಕ್ಕೆ ದುಡಿದಿದ್ದಾರೆ. ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕಿದೆ. ಕೆಲವರಿಗೆ ಬಡ್ತಿ ನೀಡಬೇಕು. ಮತ್ತೆ ಕೆಲವರಿಗೆ ಜವಾಬ್ದಾರಿ ನೀಡಬೇಕಿದೆ. ಜಿಲ್ಲಾ ಪಂಚಾಯ್ತಿ, ತಾಲೂಕು ಪಂಚಾಯ್ತಿ ಚುನಾವಣೆಗೆ ನ್ಯಾಯಾಲಯ ಯಾವಾಗ ಬೇಕಾದರೂ ಸೂಚನೆ ನೀಡಬಹುದು. ಅವುಗಳಿಗೆ ತಯಾರಿ ಮಾಡಿಕೊಳ್ಳಬೇಕು. ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ. ಈ ಎಲ್ಲಾ ವಿಚಾರಗಳನ್ನು ಚರ್ಚೆ ಮಾಡಿ, ಮಾರ್ಗದರ್ಶನ ನೀಡಲು ಇಂದು ಜಿಲ್ಲಾ ಹಾಗೂ ಬ್ಲಾಕ್ ಮಟ್ಟದ ಅಧ್ಯಕ್ಷರ ಸಭೆ ಕರೆದಿದ್ದೇವೆ” ಎಂದು ತಿಳಿಸಿದರು.

ನಿಷ್ಕ್ರಿಯರಾಗಿರುವವರ ಬದಲಾವಣೆ ಖಚಿತ

ಕಾರ್ಯೋನ್ಮುಖರಾಗದವರ ಬದಲಾವಣೆ ಮಾಡುವ ಬಗ್ಗೆ ಕೇಳಿದಾಗ, “ಯಾರು ಕಾರ್ಯೋನ್ಮುಖರಾಗಿಲ್ಲ ಅಂತಹವರನ್ನು ಖಂಡಿತವಾಗಿ ಬದಲಾಯಿಸಲಾಗುವುದು. ಇತ್ತೀಚೆಗೆ ನಡೆದ ಸಿಎಲ್ ಪಿ ಸಭೆಯಲ್ಲೂ ನಾನು ಈ ವಿಚಾರ ಹೇಳಿದ್ದೇನೆ. ಕಾಂಗ್ರೆಸ್ ಕಚೇರಿ ಕಡ್ಡಾಯವಾಗಿ ಇರಬೇಕು. ಶಾಸಕರ ಮನೆಯಲ್ಲಿ ಪಕ್ಷದ ಸಭೆ ಮಾಡುವಂತಿಲ್ಲ. ಮನೆಯಲ್ಲಿ ಕಾರ್ಯಕರ್ತರನ್ನು ಭೇಟಿ ಮಾಡಲಿ. ಆದರೆ ಪಕ್ಷದ ಸಭೆಗಳು ಪಕ್ಷದ ಕಚೇರಿಯಲ್ಲೇ ಆಗಬೇಕು. ಇನ್ನು ಅಧಿವೇಶನದ ಬಳಿಕ ಇಬ್ಬರು ಮಂತ್ರಿಗಳು ಬಂದು ಕಾಂಗ್ರೆಸ್ ಪಕ್ಷದಲ್ಲಿ ಕಾರ್ಯಕರ್ತರನ್ನು ಭೇಟಿ ಮಾಡಲಿದ್ದಾರೆ” ಎಂದರು.

ಸಮಿತಿಗಳ ನಾಮನಿರ್ದೇಶನದಲ್ಲಿ ಕಾರ್ಯಕರ್ತರಿಗೆ ಆದ್ಯತೆ

ಸಭೆ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಶಿವಕುಮಾರ್ ಅವರು, “ಎಲ್ಲಾ ಕಡೆಗಳಲ್ಲಿ ಸಮಿತಿಗಳ ರಚನೆಗೆ ಸೂಚನೆ ನೀಡಲಾಗಿದೆ. ವಿವಿಧ ಸರ್ಕಾರಿ ಸಮಿತಿಗಳಲ್ಲಿ ನಾಮನಿರ್ದೇಶನ ವಿಚಾರದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಮಾತ್ರ ಅವಕಾಶ ನೀಡಲಾಗುವುದು ಹಾಗೂ ಸಾಮಾಜಿಕ ನ್ಯಾಯದ ಮಾನದಂಡ ಆಧಾರದ ಮೇಲೆ ಮಾಡಲಾಗುವುದು” ಎಂದು ತಿಳಿಸಿದರು.

ನಿಗಮ ಮಂಡಳಿ ನೇಮಕ ಸಂಬಂಧ ಪರಮೇಶ್ವರ್ ಅವರ ನೇತೃತ್ವದ ಸಮಿತಿ ಬಗ್ಗೆ ಕೇಳಿದಾಗ, “ನಿಗಮ ಮಂಡಳಿ ನೇಮಕ ವಿಚಾರವಾಗಿ ಪರಮೇಶ್ವರ್ ಅವರ ನೇತೃತ್ವದಲ್ಲಿ ದೊಡ್ಡ ಸಮಿತಿ ರಚಿಸಲಾಗಿದೆ. ನಮ್ಮ ಬಳಿ 7-8 ಸಾವಿರ ಅರ್ಜಿಗಳು ಬಂದಿವೆ. ಅರ್ಜಿಗಳು ಬಾರದಿದ್ದರೂ ಹಳ್ಳಿಗಳಲ್ಲಿ ಬಲಿಷ್ಠವಾಗಿರುವ ಕಾರ್ಯಕರ್ತರನ್ನು ಗಮನಿಸಬೇಕು ಎಂದು ನಿರ್ದೇಶನ ನೀಡಿದ್ದೇವೆ” ಎಂದು ತಿಳಿಸಿದರು.

ಇದನ್ನೂ ಓದಿ | CM Siddaramaiah: ಬಿಜೆಪಿ ತನ್ನ ಅವಧಿಯ ಹಗರಣಗಳನ್ನು ಮುಚ್ಚಿ ಹಾಕಿದೆ: ಸಿಎಂ ಸಿದ್ದರಾಮಯ್ಯ

ಶಿರೂರಿಗೆ ಭೇಟಿ ನೀಡಲು ಸರ್ಕಾರ ಅಡ್ಡಿಪಡಿಸಿದೆ ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ, “ಅವರು ಪ್ರಚಾರ ಪಡೆಯಲು ಏನು ಬೇಕೋ ಅದನ್ನು ಮಾಡುತ್ತಾರೆ” ಎಂದರು.

Exit mobile version