Site icon Vistara News

Cauvery Water Dispute: ತಮಿಳುನಾಡಿಗೆ ನೀರು; CWMAಗೆ ಮೇಲ್ಮನವಿ ಸಲ್ಲಿಸಲು ಸರ್ಕಾರ ನಿರ್ಧಾರ, ಜು.14ಕ್ಕೆ ಸರ್ವಪಕ್ಷ ಸಭೆ

ಬೆಂಗಳೂರು: ತಮಿಳುನಾಡಿಗೆ ಪ್ರತಿ ದಿನ 1 ಟಿಎಂಸಿ ನೀರು (Cauvery Water Dispute) ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯ (CWRC) ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ (CWMA) ಮೇಲ್ಮನವಿ ಸಲ್ಲಿಸಲಾಗುವುದು ಹಾಗೂ ರಾಜ್ಯದ ಮುಂದಿನ ನಡೆ ಏನು ಎಂಬ ಕುರಿತು ಜುಲೈ 14 ರಂದು ಸರ್ವಪಕ್ಷ ಸಭೆ ನಡೆಸಿ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಈ ಕುರಿತು ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಈ ಬಾರಿ ವಾಡಿಕೆ ಮಳೆ ಆಗುವುದೆಂಬ ಹವಾಮಾನ ಮುನ್ಸೂಚನೆ ಇದ್ದರೂ ಈ ವರೆಗೆ ಶೇ. 28 ರಷ್ಟು ಒಳಹರಿವಿನ ಕೊರತೆ ಇದೆ. ಇದನ್ನು CWRC ಸ್ಪಷ್ಟವಾಗಿ ನಮ್ಮ ನಿಲುವನ್ನು ಹೇಳಿದ್ದೆವು. ಜೊತೆಗೆ ಜುಲೈ ಅಂತ್ಯದವರೆಗೆ ಯಾವುದೇ ತೀರ್ಮಾನ ಮಾಡದಂತೆ ಮನವಿ ಮಾಡಿದ್ದೆವು. ಆದರೂ CWRC ಅವರು ಜುಲೈ 12 ರಿಂದ ಪ್ರತಿ ದಿನ ಒಂದು ಟಿಎಂಸಿ ನೀರು ಬಿಡುಗಡೆ ಮಾಡುವಂತೆ ತಿಳಿಸಿದ್ದಾರೆ. ಸರ್ಕಾರ ಈ ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಮೇಲ್ಮನವಿ ಸಲ್ಲಿಸಬೇಕೆಂಬ ಅಭಿಪ್ರಾಯ ಇಂದಿನ ಸಭೆಯಲ್ಲಿ ವ್ಯಕ್ತವಾಯಿತು ಎಂದರು.

ಜುಲೈ 14 ರಂದು ಸಂಜೆ 4 ಗಂಟೆಗೆ ಸರ್ವಪಕ್ಷ ಸಭೆ ನಡೆಸಲು ತೀರ್ಮಾನಿಸಲಾಯಿತು. ಕರ್ನಾಟಕದ ನೀರಿನ ವಿಚಾರದಲ್ಲಿ ಎಲ್ಲ ಪಕ್ಷದವರೂ ಒಟ್ಟಾಗಿದ್ದೇವೆ. ಆದ್ದರಿಂದ ಸರ್ವಪಕ್ಷ ಸಭೆ ನಡೆಸಲಾಗುವುದು ಎಂದರು.

ಕೇಂದ್ರ ಮಂತ್ರಿಗಳು, ಕಾವೇರಿ ಭಾಗದ ಲೋಕಸಭೆ, ರಾಜ್ಯಸಭೆ ಸದಸ್ಯರು ಮತ್ತು ಶಾಸಕರನ್ನು ಸಹ ಸಭೆಗೆ ಆಹ್ವಾನಿಸಲಾಗುವುದು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸರ್ಕಾರದ ಮುಂದಿನ ಹೆಜ್ಜೆಯನ್ನು ತೀರ್ಮಾನಿಸಲಾಗುವುದು ಎಂದರು.

ಬಿಳಿಗುಂಡ್ಲುವಿನಲ್ಲಿ ಅಳತೆ ಮಾಡುವಾಗ, ಕಬಿನಿ ಅಣೆಕಟ್ಟಿನ ಒಳಹರಿವಿನಷ್ಟು ಕ್ಯೂಸೆಕ್ಸ್‌ನಷ್ಟು ನೀರನ್ನು ತಮಿಳು ನಾಡಿಗೆ ಬಿಡಲಾಗುತ್ತಿದೆ ಎಂದು ಅವರು ತಿಳಿಸಿದರು.

ಕಾವೇರಿ ಜಲಾನಯನ ಪ್ರದೇಶದ ಎಲ್ಲಾ 4 ಜಲಾಶಯಗಳಲ್ಲಿ ಒಟ್ಟು ಕೇವಲ 60 ಟಿಎoಸಿ ನೀರು ಲಭ್ಯವಿದೆ. ಕೃಷಿ ಚಟುವಟಿಕೆಗಳಿಗೂ ನಾವು ನೀರು ಒದಗಿಸಬೇಕಾಗಿದೆ. ಮಳೆ ಕೊರತೆಯನ್ನು ಗಮನದಲ್ಲಿರಿಸಿ ಜುಲೈ ಅoತ್ಯದವರೆಗೆ ಕಾಯಲು ಮನವಿ ಮಾಡಿದ್ದೇವೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಇದನ್ನೂ ಓದಿ | Emergency: ತುರ್ತು ಪರಿಸ್ಥಿತಿ ಕರಾಳ ನೆನಪು; ಜೂನ್‌ 25ಅನ್ನು ‘ಸಂವಿಧಾನ ಹತ್ಯಾ ದಿವಸ’ ಎಂದು ಘೋಷಿಸಿದ ಕೇಂದ್ರ

ತಮಿಳುನಾಡಿಗೆ ನಿತ್ಯ 1 ಟಿಎಂಸಿ ಕಾವೇರಿ ನೀರು ಬಿಡಲು ಕರ್ನಾಟಕಕ್ಕೆ ಸೂಚನೆ

ಬೆಂಗಳೂರು: ಕಾವೇರಿ ನೀರು ನಿಯಂತ್ರಣ ಸಮಿತಿ (CWRC- Cauvery water regulation commitee) ತಮಿಳುನಾಡಿಗೆ (Tamil Nadu) ಪ್ರತಿದಿನ 1 ಟಿಎಂಸಿ (TMC) ಅಡಿ ನೀರು ಬಿಡಲು ಕರ್ನಾಟಕಕ್ಕೆ (Karnataka) ಸೂಚಿಸಿದೆ. ಕಾವೇರಿ ಬಿಕ್ಕಟ್ಟು (Cauvery Dispute) ಮತ್ತೆ ತಲೆದೋರಿರುವ ಹಿನ್ನೆಲೆಯಲ್ಲಿ ಇಂದು ರಾಜ್ಯ ಜಲ‌ ಸಂಪನ್ಮೂಲ ಇಲಾಖೆಯ ತುರ್ತು ಸಭೆ ಕರೆಯಲಾಗಿತ್ತು.

ತಮಿಳುನಾಡಿಗೆ ಜುಲೈ 31ರವರೆಗೆ ಬಿಳಿಗುಂಡ್ಲು ಜಲಾಶಯದಿಂದ ಪ್ರತಿ ದಿನ 1 ಟಿಎಂಸಿ ಅಡಿ (11,500 ಕ್ಯೂಸೆಕ್) ನೀರನ್ನು ಹರಿಸುವಂತೆ ಕಾವೇರಿ ಜಲ ನಿರ್ವಹಣಾ ಸಮಿತಿ (ಸಿಡಬ್ಲ್ಯುಆರ್‌ಸಿ) ಗುರುವಾರ ಕರ್ನಾಟಕ ಸರಕಾರಕ್ಕೆ ಸೂಚಿಸಿತ್ತು. ಆದರೆ ಕರ್ನಾಟಕ ಇದಕ್ಕೆ ಅಸಮ್ಮತಿ ವ್ಯಕ್ತಪಡಿಸಿದ್ದು, ತನ್ನ ಜಲಾಶಯಗಳಲ್ಲಿ ನೀರಿನ ಹರಿವಿನ ಕೊರತೆಯಿರುವುದರಿಂದ, ಈ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳುವುದನ್ನು ಜುಲೈ 25ರವರೆಗೆ ಮುಂದೂಡುವಂತೆ ಸಿಡಬ್ಲ್ಯುಸಿಯನ್ನು ಕೋರಿದೆ.

ಗುರುವಾರ ದಿಲ್ಲಿಯಲ್ಲಿ ಸಭೆ ನಡೆಸಿದ ಸಿಡಬ್ಲ್ಯುಆರ್‌ಸಿ, ಜುಲೈ 12ರಿಂದ ಜುಲೈ 31ರವರೆಗೆ ಬಿಳಿಗುಂಡ್ಲುವಿನಲ್ಲಿ ಸಂಚಿತ ನೀರಿನ ಹರಿವು 1 ಟಿಎಂಸಿ ಅಡಿ ಇರುವಂತೆ ಕರ್ನಾಟಕವು ಖಾತರಿಪಡಿಸಬೇಕು ಎಂದಿದೆ. ಕಳೆದ ಸಾಲಿನಲ್ಲಿ ಕರ್ನಾಟಕವು ಸರಿಯಾಗಿ ನೀರು ಹರಿಸಿಲ್ಲ. ಆದರೆ ಈ ಬಾರಿ ಮುಂಗಾರು ಸಾಮಾನ್ಯವಾಗಿದೆ. ಕಾವೇರಿ ಕಣಿವೆಯ ಅಣೆಕಟ್ಟುಗಳಲ್ಲಿ ಸಾಕಷ್ಟು ನೀರು ಸಂಗ್ರಹವಾಗಿದೆ. ಕಾವೇರಿ ಕಣಿವೆಯ ಅಣೆಕಟ್ಟುಗಳಲ್ಲಿ ಸಾಕಷ್ಟು ನೀರು ಸಂಗ್ರಹವಾಗಿದೆ. ಹೀಗಾಗಿ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚಿಸಬೇಕೆಂದು ತಮಿಳುನಾಡಿನ ಅಧಿಕಾರಿಗಳು ಸಿಡಬ್ಲ್ಯುಆರ್‌ಸಿಯನ್ನು ಆಗ್ರಹಿಸಿದ್ದರು.

ಇದಕ್ಕೆ ಪ್ರತಿಯಾಗಿ ಕರ್ನಾಟಕ ಕೂಡಾ, ರಾಜ್ಯದಲ್ಲಿ ಮುಂಗಾರು ಸಾಮಾನ್ಯವಾಗಿ ಆಗಿಲ್ಲ. ಶೇ.28ರಷ್ಟು ಮಳೆಯ ಕೊರತೆಯಿದೆ. ಆದುದರಿಂದ ನೀರು ಬಿಡಲು ಸಾಧ್ಯವಿಲ್ಲವೆಂದು ವಾದಿಸಿತ್ತು. ಎರಡೂ ರಾಜ್ಯಗಳ ವಾದ ಅಲಿಸಿದ ಸಿಡಬ್ಲ್ಯುಆರ್‌ಸಿ ತಮಿಳುನಾಡಿಗೆ ಜುಲೈ 31ರವರೆಗೆ ಪ್ರತಿ ದಿನ 1 ಟಿಎಂಸಿ ಅಡಿ ನೀರು ಬಿಡುಗಡೆಗೊಳಿಸಲು ಕರ್ನಾಟಕಕ್ಕೆ ಸೂಚಿಸಿತು.

2024ರ ಜೂನ್ 1ರಿಂದ 2024ರ ಜುಲೈ 9ರವರೆಗೆ ಕರ್ನಾಟಕದ ನಾಲ್ಕು ಜಲಾಶಯಗಳಲ್ಲಿನ ಒಟ್ಟಾರೆ ಹರಿವು 41.651 ಟಿಎಂಸಿಯಾಗಿದ್ದು, ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈ ಬಾರಿ 28.71 ಶೇಕಡದಷ್ಟು ಕೊರತೆಯಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಅವರ ಕಚೇರಿಯು ಗುರುವಾರ ಬಿಡುಗಡೆಗೊಳಿಸಿದ ಟಿಪ್ಪಣಿಯೊಂದು ತಿಳಿಸಿದೆ.

ಇದನ್ನೂ ಓದಿ | KEA : ಜು.13,14ಕ್ಕೆ ವಿವಿಧ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ; ಅಕ್ರಮ ತಡೆಯಲು ಮೊದಲ ಬಾರಿಗೆ ವೆಬ್ ಕಾಸ್ಟಿಂಗ್

ಕರ್ನಾಟಕದ ನಾಲ್ಕು ಜಲಾಶಯಗಳಲ್ಲಿ ಪ್ರಸಕ್ತ 58.66 ಟಿಎಂಸಿ ಅಡಿ ನೀರಿನ ಸಂಗ್ರಹವಿದೆ. ಮೆಟ್ಟೂರಿನಿಂದ 4.905 ಟಿಎಂಸಿ ಅಡಿ ಹಾಗೂ ಭವಾನಿಯಿಂದ 0.618 ಟಿಎಂಸಿ ನೀರನ್ನು ಬಿಡುಗಡೆ ಮಾಡಲಾಗಿದೆ. ತಮಿಳುನಾಡಿನ ಮೂರು ಜಲಾಶಯಗಳಲ್ಲಿ ಒಟ್ಟಾರೆ 24.705 ಟಿಎಂಸಿ ಅಡಿ ನೀರಿನ ಸಂಗ್ರಹವಿದೆ ಎಂದು ಕರ್ನಾಟಕ ತಿಳಿಸಿದೆ.

Exit mobile version