Site icon Vistara News

ಜಿ-20 ಶೃಂಗದ 10 ಅಧ್ಯಕ್ಷೀಯ ಸಭೆಗಳು ಬೆಂಗಳೂರಿನಲ್ಲಿ: ಡಿಸೆಂಬರ್‌ನಿಂದ ಆರಂಭ

ಸಿಎಂ ಬೊಮ್ಮಾಯಿ

ಬೆಂಗಳೂರು: ಡಿಸೆಂಬರ್‌ನಲ್ಲಿ ಭಾರತದ ವಿವಿಧೆಡೆ ನಡೆಯುವ ಜಿ-20 ಅಧ್ಯಕ್ಷೀಯ ಸಭೆಗಳಲ್ಲಿ 10 ಸಭೆಗಳನ್ನು ಬೆಂಗಳೂರಿನಲ್ಲಿ ಆಯೋಜನೆ ಮಾಡಲಾಗುತ್ತಿದೆ. ಇದೇ ಮೊದಲ ಬಾರಿಗೆ ಪ್ರತಿಷ್ಠಿತ ಸಭೆಯ ಅಧ್ಯಕ್ಷತೆಯನ್ನು ಭಾರತ ನಿರ್ವಹಿಸುತ್ತಿದ್ದು, ಈ ಕುರಿತು ಮಾಜಿ ವಿದೇಶಾಂಗ ಕಾರ್ಯದರ್ಶಿ ಹಾಗೂ ಜಿ-20 ಮುಖ್ಯ ಸಂಯೋಜಕ ಹರ್ಷ್‌ವರ್ಧನ್ ಶ್ರಿಂಗ್ಲಾ ಅವರು ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಚರ್ಚಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶ್ರಿಂಗ್ಲಾ, ಜಿ-20 ದೇಶಗಳು ವಿಶ್ವದ ಆರ್ಥಿಕತೆ ಮತ್ತು ಅಭಿವೃದ್ಧಿಗೆ ಗಣನೀಯ ಕೊಡುಗೆ ನೀಡುತ್ತಿವೆ. ಇದೀಗ ಮೊದಲ ಬಾರಿಗೆ ಭಾರತಕ್ಕೆ ಅಧ್ಯಕ್ಷತೆಯ ಅವಕಾಶ ಲಭಿಸಿದೆ. ಈ ಅವಧಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಪೇಕ್ಷೆಯಂತೆ ದೇಶದಾದ್ಯಂತ ಜಿ-20 ಸಭೆಗಳನ್ನು ಆಯೋಜಿಸಲು ಉದ್ದೇಶಿಸಿದೆ. ಅಂತೆಯೇ ಕರ್ನಾಟಕದಲ್ಲಿಯೂ ಸುಮಾರು 10 ಸಭೆಗಳನ್ನು ಆಯೋಜಿಸುವ ಚಿಂತನೆಯಿದೆ. ಇದಕ್ಕೆ ರಾಜ್ಯ ಸರ್ಕಾರದ ಸಹಕಾರ ಹಾಗೂ ಸಲಹೆ ಅಗತ್ಯ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಈ ಎಲ್ಲ ರಾಷ್ಟ್ರಗಳೊಂದಿಗೆ ಕರ್ನಾಟಕ ಒಂದಲ್ಲ ಒಂದು ರೀತಿಯಿಂದ ನಂಟು ಹೊಂದಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಈ ಸಭೆಗಳನ್ನು ಆಯೋಜಿಸುವುದು ಅತ್ಯಂತ ಸೂಕ್ತ. ರಾಜ್ಯದಲ್ಲಿ ಜಿ-20 ರಾಷ್ಟ್ರಗಳ ಸಭೆಗಳನ್ನು ಆಯೋಜಿಸಲು ಎಲ್ಲ ರೀತಿಯ ಸಹಕಾರ ನೀಡಲಾಗುವುದು. ಜಿ-20 ಅಧ್ಯಕ್ಷತೆ ದೊರಕಿರುವುದು ಅತ್ಯಂತ ಹೆಮ್ಮೆಯ ವಿಷಯವಾಗಿದ್ದು, ಮಾನ್ಯ ಪ್ರಧಾನಿಯವರು ಪೂರ್ವ ಹಾಗೂ ಪಾಶ್ಚಿಮಾತ್ಯ ದೇಶಗಳಲ್ಲಿ ಭಾರತಕ್ಕೆ ವಿಶೇಷ ಸ್ಥಾನ ದೊರೆಯುವಂತೆ ಮಾಡಿದ್ದಾರೆ ಎಂದು ಶ್ಲಾಘಿಸಿದರು.

ರಾಜ್ಯದಲ್ಲಿ ಆಯೋಜಿಸುವ ಸಭೆಗಳಲ್ಲಿ ರಾಜ್ಯದ ಆರ್ಥಿಕತೆ, ಔದ್ಯಮಿಕ ವಾತಾವರಣವನ್ನು ಜಿ-20 ದೇಶಗಳಿಗೆ ಮನವರಿಕೆ ಮಾಡುವಂತೆ ಸಲಹೆ ನೀಡಿದರು. ತಂತ್ರಜ್ಞಾನ ಆಧಾರಿತ ಉದ್ಯಮಗಳಿಗೆ ಹೆಸರುವಾಸಿಯಾದ ರಾಜ್ಯವು ಅತಿ ಹೆಚ್ಚು ಸ್ಟಾರ್ಟಪ್‌ಗಳನ್ನು ಹೊಂದಿದೆ. ಅತಿ ಹೆಚ್ಚು ಯುನಿಕಾರ್ನ್, ಡೆಕಾಕಾರ್ನ್‌ಗಳನ್ನು ಹೊಂದಿರುವ ರಾಜ್ಯ ಕರ್ನಾಟಕ. ಇದರೊಂದಿಗೆ ಮುಂದಿನ ದಿನಗಳಲ್ಲಿ ರಾಜ್ಯವು ಗ್ರೀನ್ ಹೈಡ್ರೋಜನ್ ಉತ್ಪಾದನೆ, ಸೆಮಿಕಂಡಕ್ಟರ್ ಉತ್ಪಾದನಾ ಕೇಂದ್ರವಾಗಿ ಹೊರಹೊಮ್ಮಲಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ | ಬದಲಾವಣೆಯ ಸಂಘರ್ಷವನ್ನು ಪ್ರಾರಂಭಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ

Exit mobile version