Site icon Vistara News

Dasara Elephant Arjuna: ಅರ್ಜುನನ ನಿಧನಕ್ಕೆ ಸಿಎಂ, ಡಿಸಿಎಂ, ನಟ ದರ್ಶನ್ ಸೇರಿ ಗಣ್ಯರ ಸಂತಾಪ

Dasara Elephant Arjuna

ಬೆಂಗಳೂರು: ಕಾಡಾನೆಗಳ ಸೆರೆ ಕಾರ್ಯಾಚರಣೆ ವೇಳೆ ಒಂಟಿ ಸಲಗದ ವಿರುದ್ಧ ಹೋರಾಡಿ ಮೃತಪಟ್ಟ ದಸರಾ ಆನೆ ಅರ್ಜುನನ (Dasara Elephant Arjuna) ನಿಧನಕ್ಕೆ ರಾಜಕೀಯ ನಾಯಕರು, ಚಿತ್ರರಂಗದ ಕಲಾವಿದರು ಸೇರಿ ಗಣ್ಯರು ಕಂಬನಿ ಮಿಡಿದಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌, ಮಾಜಿ ಸಿಎಂಗಳಾದ ಎಚ್‌.ಡಿ. ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ, ಅರಣ್ಯ ಸಚಿವ ಈಶ್ವರ್‌ ಖಂಡ್ರೆ, ನಟ ದರ್ಶನ್‌ ಮತ್ತಿತರರು ಸಂತಾಪ ಸೂಚಿಸಿದ್ದಾರೆ.

ಮೈಸೂರು ದಸರಾದಲ್ಲಿ ಎಂಟು ಬಾರಿ ಅಂಬಾರಿ ಹೊತ್ತಿದ್ದ ಸಾಕಾನೆ ಅರ್ಜುನ (Dasara Elephant Arjuna) ಕಾಡಾನೆಗಳ ಸೆರೆ ಕಾರ್ಯಾಚರಣೆ ವೇಳೆ ಸಕಲೇಶಪುರ ತಾಲೂಕಿನ‌ ಯಸಳೂರು ವಲಯದ ಬಾಳೆಕೆರೆ ಅರಣ್ಯದಲ್ಲಿ ಮೃತಪಟ್ಟಿದೆ. ಒಂಟಿ ಸಲಗ ದಾಳಿ ಮಾಡಿದ್ದರಿಂದ ಗಂಭೀರವಾಗಿ ಗಾಯಗೊಂಡು ಅರ್ಜುನ (Dasara Elephant Arjuna) ಕೊನೆಯುಸಿರೆಳೆದಿದೆ. ಹೀಗಾಗಿ ಜನರ ಪ್ರೀತಿಪಾತ್ರವಾಗಿದ್ದ ದಸರಾ ಆನೆಯ ಸೇವೆಯನ್ನು ಗಣ್ಯರು ಸ್ಮರಿಸಿದ್ದಾರೆ.

‘ಅರ್ಜುನ’ ಇನ್ನಿಲ್ಲ ಎಂಬ ಸುದ್ದಿ ಕೇಳಿ ನೋವಾಯಿತು ಎಂದ ಸಿಎಂ

ಐತಿಹಾಸಿಕ ಮೈಸೂರು ದಸರಾದ ಕೇಂದ್ರ ಬಿಂದುವಾದ ಜಂಬೂಸವಾರಿಯನ್ನು ಎಂಟು ವರ್ಷಗಳ ಕಾಲ ಅತ್ಯಂತ ಯಶಸ್ವಿಯಾಗಿ ನಡೆಸಿಕೊಟ್ಟು ಜನರ ಪ್ರೀತಿಪಾತ್ರವಾಗಿದ್ದ ಆನೆ ‘ಅರ್ಜುನ’ ಇನ್ನಿಲ್ಲ ಎಂಬ ಸುದ್ದಿ ಕೇಳಿ ನೋವಾಯಿತು. ಬರೋಬ್ಬರಿ 750 ಕೆ.ಜಿ ತೂಕದ ಚಿನ್ನದ ಅಂಬಾರಿ ಹೊತ್ತು, ಅತ್ಯಂತ ಸಂಯಮದಿಂದ ಮೆರವಣಿಗೆಯಲ್ಲಿ ಸಾಗುವ ಮೂಲಕ ತಾಯಿ ಚಾಮುಂಡೇಶ್ವರಿಯ ಸೇವೆಗೈದಿದ್ದ ಅರ್ಜುನ ಕಾಡಾನೆ ಜೊತೆಗಿನ ಕಾದಾಟದಲ್ಲಿ ಮೃತಪಟ್ಟಿದೆ. ಲಕ್ಷಾಂತರ ಜನರ ನಡುವೆ ಗಾಂಭೀರ್ಯದಿಂದ ಸಾಗುತ್ತಿದ್ದ ಅರ್ಜುನನ ನಡಿಗೆ ನನ್ನಂತಹ ಕೋಟ್ಯಂತರ ಕನ್ನಡಿಗರ ಮನದಲ್ಲಿ ಶಾಶ್ವತವಾಗಿ ಇರಲಿದೆ.‌

ಇದನ್ನೂ ಓದಿ | Dasara Elephant Arjuna: 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಸಾವು; ಒಂಟಿ ಸಲಗ ದಾಳಿಯಿಂದ ದುರ್ಘಟನೆ

ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಸಂತಾಪ

ದಸರಾ ಆನೆ ಅರ್ಜುನ ಸಾವಿಗೆ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರು ಸಂತಾಪ ಸೂಚಿಸಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಬಳಿ ಕಾಡಾನೆಗಳ ಸೆರೆಗೆ ನಡೆಸಿದ ಕಾರ್ಯಾಚರಣೆ ವೇಳೆ ಒಂಟಿ ಸಲಗದ ದಾಳಿಗೆ ತುತ್ತಾಗಿ ಸಾಕಾನೆ ಅರ್ಜುನ ವೀರಮರಣ ಹೊಂದಿದ ಘಟನೆ ತಿಳಿದು ಬಹಳ ನೋವುಂಟಾಯಿತು ಎಂದು ತಿಳಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ದಸರಾ ಅಂಬಾರಿಯನ್ನು ಹೊತ್ತು ಸಾಗಿದ್ದ ಅರ್ಜುನ ಇನ್ನು ನೆನಪಷ್ಟೇ. ಸ್ಥಳಾಂತರ ಕಾರ್ಯಾಚರಣೆ ವೇಳೆ ಸಾಕಾನೆಗಳು-ಕಾಡಾನೆಗಳ ನಡುವಿನ ಭೀಕರ ಕಾಳಗದ ವೇಳೆ ಇತರೆ ಸಾಕಾನೆಗಳು ಪಲಾಯನ ಮಾಡಿದರೆ, ಅರ್ಜುನ ಮಾತ್ರ ಒಂಟಿ ಸಲಗದ ಜತೆ ವಿರೋಚಿತವಾಗಿ ಸೆಣಸಾಡಿತ್ತು. ಇಂಥ ವಿರೋಚಿತ ಆನೆ ಸಾವನ್ನಪ್ಪಿರುವುದು ಅತ್ಯಂತ ದುಃಖದ ಸಂಗತಿ ಎಂದು ಹೇಳಿದ್ದಾರೆ.

ಅರ್ಜುನ ಮರಣದ ಸುದ್ದಿ ತೀವ್ರ ನೋವುಂಟು ಮಾಡಿದೆ: ಬೊಮ್ಮಾಯಿ

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿ, ಮೈಸೂರು ದಸರಾದಲ್ಲಿ ಎಂಟು ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಗಜರಾಜ ಅರ್ಜುನ, ಆನೆಗಳ ಕಾರ್ಯಾಚರಣೆ ವೇಳೆ ವೀರ ಮರಣರಾಗಿರುವ ಸುದ್ದಿ ತೀವ್ರ ನೋವುಂಟು ಮಾಡಿದೆ. ತಾಯಿ ಶ್ರೀ ಚಾಮುಂಡೇಶ್ವರಿಯು ಅರ್ಜುನನ ಆತ್ಮಕ್ಕೆ ಶಾಂತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿಃ

ಮರೆಯಲಾರದ ನೆನಪುಗಳನ್ನು ಬಿಟ್ಟುಹೋದ: ಡಿಕೆಶಿ

ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯಿಸಿ, ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಎಂಟು ಬಾರಿ ಅಂಬಾರಿ‌ ಹೊತ್ತಿದ್ದ ಅರ್ಜುನ ಆನೆ, ಸಕಲೇಶಪುರ ತಾಲೂಕಿನ ಯಸಳೂರು ವಲಯದ ಬಾಳೆಕೆರೆ ಫಾರೆಸ್ಟ್‌ನಲ್ಲಿ ನಡೆದ ಕಾಡಾನೆ ಕಾರ್ಯಾಚರಣೆಯಲ್ಲಿ ಸಾವಿಗೀಡಾದ ಸಂಗತಿ ತಿಳಿದು ದುಃಖವಾಗಿದೆ. ಒಂದು ಕಾಲದಲ್ಲಿ ಮೈಸೂರು ದಸರಾದ ಕೇಂದ್ರಬಿಂದುವಾಗಿದ್ದ ಅರ್ಜುನ ನಮ್ಮೆಲ್ಲರ ಹೃದಯದಲ್ಲಿ ಮರೆಯಲಾರದ ನೆನಪುಗಳನ್ನು ಬಿಟ್ಟುಹೋಗಿದ್ದಾನೆ ಎಂದು ತಿಳಿಸಿದ್ದಾರೆ.

ಅರ್ಜುನನ ಗಜಗಾಂಭೀರ್ಯಕ್ಕೆ ಅವನೇ ಸಾಟಿ ಎಂದ ದರ್ಶನ್

‌ನಟ ದರ್ಶನ್‌ ಪ್ರತಿಕ್ರಿಯಿಸಿ, 8 ಬಾರಿ ದಸರಾ ಅಂಬಾರಿ ಹೊತ್ತು ನಾಡಿನ ಜನಮನ ಗೆದ್ದಿದ್ದ 64 ವರ್ಷದ ‘ಅರ್ಜುನ’ ಇಂದು ಕಾಡಾನೆಗಳ ಕಾಳಗದಲ್ಲಿ ಸಾವನ್ನಪ್ಪಿರುವುದು ವಿಷಾದದ ಸಂಗತಿ. ಅರ್ಜುನನ ಗಜಗಾಂಭೀರ್ಯಕ್ಕೆ ಅವನೇ ಸಾಟಿ! ಓಂ ಶಾಂತಿ!

ಇದನ್ನೂ ಓದಿ | ಕಾರ್ಯಾಚರಣೆಗೆ ಅರ್ಜುನ ಬಳಕೆ ಕಾನೂನುಬಾಹಿರ; ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ದಿನೇಶ್‌ ಗೂಳಿಗೌಡ ಆಗ್ರಹ

ಜನರ ನೆನಪಲ್ಲಿ ಬಹುಕಾಲ ಉಳಿಯಲಿದ್ದಾನೆ: ಬಿ.ವೈ. ವಿಜಯೇಂದ್ರ

ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪಂದಿಸಿ, ವಿಶ್ವ ವಿಖ್ಯಾತ ನಾಡಹಬ್ಬ ದಸರೆಯ ಮುಖ್ಯ ಆಕರ್ಷಣೆ ಜಂಬೂಸವಾರಿಯಲ್ಲಿ ಸತತ ಎಂಟು ಬಾರಿ ನಾಡ ಅಧಿದೇವತೆ ಶ್ರೀ ಚಾಮುಂಡೇಶ್ವರಿ ತಾಯಿಯ ಮೂರ್ತಿಯನ್ನು ಚಿನ್ನದ ಅಂಬಾರಿಯಲ್ಲಿ ಹೊತ್ತು ಸಾಗುತ್ತಿದ್ದ ಗಜರಾಜ ಅರ್ಜುನ ಸಾವನ್ನಪ್ಪಿರುವ ಸಂಗತಿ ಬೇಸರ ತರಿಸಿದೆ.
ಅರ್ಜುನ ನಾಡಿನ ಜನರ ನೆನಪಲ್ಲಿ ಬಹುಕಾಲ ಉಳಿಯಲಿದ್ದಾನೆ ಎಂದು ತಿಳಿಸಿದ್ದಾರೆ.

ಅತ್ಯಂತ ದುರಾದೃಷ್ಟಕರ ಘಟನೆ: ಈಶ್ವರ್‌ ಖಂಡ್ರೆ

ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಪ್ರತಿಕ್ರಿಯಿಸಿ, ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಹಲವು ಬಾರಿ ಅಂಬಾರಿ ಹೊತ್ತಿದ್ದ 64 ವರ್ಷದ ಅರ್ಜುನ ಆನೆಯ ಸಾವಿನ ಸುದ್ದಿ ತಿಳಿದು ಬಹಳ ದುಃಖವಾಗಿದೆ. ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಪುಂಡಾನೆ ಸೆರೆ ಕಾರ್ಯಾಚರಣೆಯ ವೇಳೆ ದುರ್ಘಟನೆ ಸಂಭವಿಸಿದ್ದು, ಮದಗಜವೊಂದು, ಅರ್ಜುನನ ಮೇಲೆ ದಾಳಿ ಮಾಡಿ, ತನ್ನ ದಂತದಿಂದ ಚುಚ್ಚಿ ಘಾಸಿಗೊಳಿಸಿ, ಸಾವಿಗೆ ಕಾರಣವಾಗಿರುವುದು ಅತ್ಯಂತ ದುರಾದೃಷ್ಟಕರ. ಕಾರ್ಯಾಚರಣೆಯಲ್ಲಿ ಪುಂಡಾನೆ ರೌದ್ರಾವತಾರ ತಾಳಿ, ಅರ್ಜುನನ ಮೇಲೆ ದಾಳಿ ಮಾಡಿದೆ. ಸಿಬ್ಬಂದಿ ಗಾಳಿಯಲ್ಲಿ ಗುಂಡು ಹಾರಿಸಿದರೂ ಜಗ್ಗದೆ ದಾಳಿ ಮಾಡಿದೆ. ಮಾವುತ ಮತ್ತು ಪಶುವೈದ್ಯರು ಕೂದಲೆಳೆಯ ಅಂತರದಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಳಿದ ಮೂರು ಆನೆಗಳು ಹಿಮ್ಮೆಟ್ಟಿವೆ. ಆದರೆ ಅರ್ಜುನ ಪುಂಡಾನೆಯೊಂದಿಗೆ ಏಕಾಂಗಿಯಾಗಿ ಹೋರಾಡುವಾಗ ಈ ದುರಂತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅರ್ಜುನ ಆನೆ ಈ ಹಿಂದೆ ಹಲವು ಆನೆ ಸೆರೆ ಕಾರ್ಯಾಚರಣೆಯಲ್ಲಿ ಭಾಗಿಯಾದ ಅನುಭವ ಹೊಂದಿತ್ತು ಮತ್ತು ತರಬೇತಿ ಕೂಡಾ ಪಡೆದಿತ್ತು. ತಾಯಿ ಶ್ರೀ ಚಾಮುಂಡೇಶ್ವರಿಯು ಅರ್ಜುನನ ಆತ್ಮಕ್ಕೆ ಶಾಂತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version