Site icon Vistara News

Congress Politics : ಅಭಿವೃದ್ಧಿ ಬಗ್ಗೆ ಮಾಧ್ಯಮ ಚರ್ಚೆಗೆ ಬನ್ನಿ; ಎಚ್‌ಡಿಕೆಗೆ ಡಿಕೆಶಿ ಸವಾಲು

congress politics

ಬೆಂಗಳೂರು: ಮಾಜಿ ಸಿಎಂ, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ (Former CM HD Kumaraswamy) ವಿರುದ್ಧ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ ಶಿವಕುಮಾರ್ (DCM DK Shivakumar) ವೈಲೆಂಟ್ ಆಗಿದ್ದಾರೆ. ಕೆಲವು ವರ್ಷಗಳಿಂದ ಎಚ್‌ಡಿಕೆ ಬಗ್ಗೆ ಸಾಫ್ಟ್ ಕಾರ್ನರ್ ಹೊಂದಿದ್ದ ಡಿಕೆಶಿ ಈಗ ಸಿಡಿದಿದ್ದಾರೆ. ಹಳೇ ದೋಸ್ತಿ ಕುಮಾರಸ್ವಾಮಿ ವಿರುದ್ಧ ಬಹಿರಂಗವಾಗಿಯೇ ತೊಡೆ ತಟ್ಟಿದ್ದಾರೆ. ಅಲ್ಲದೆ, ತಮ್ಮ ತಮ್ಮ ಕಾಲದ ಅಭಿವೃದ್ಧಿಗಳ ಬಗ್ಗೆ ಚರ್ಚೆ ನಡೆಸಲು ಮಾಧ್ಯಮಗಳ ಮುಂದೆ ಬರುವಂತೆ ಎಚ್‌.ಡಿ. ಕುಮಾರಸ್ವಾಮಿಗೆ ಡಿ.ಕೆ. ಶಿವಕುಮಾರ ಅವರು ಬಹಿರಂಗ ಸವಾಲು ಹಾಕಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ವಿವಿಧ ಪಕ್ಷಗಳ ಮುಖಂಡರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನನಗೆ ಏಕೆ ಡಿಕೆ ಅಂತಾ ಹೆಸರಿಟ್ಡಿದ್ದಾರೆ? ಅವರದು ಯಾಕೆ ಎಚ್‌ಡಿಕೆ ಅಂತಾ ಇದೆ? ನನ್ನದು ಕನಕಪುರ, ಅವರದ್ದು ಹಾಸನ ಎಂದು ಹೇಳಿದರು. ಅಲ್ಲದೆ, ಅಭಿವೃದ್ಧಿ ಬಗ್ಗೆ ಮಾಧ್ಯಮಗಳಲ್ಲಿ ಬಹಿರಂಗ ಚರ್ಚೆ ಮಾಡಲು ಬರಲಿ ಎಂದು ಸವಾಲು ಹಾಕಿದ್ದಾರೆ.

ರಾಮನಗರ ಜಿಲ್ಲೆ ಹೆಸರಿನ ಬಗ್ಗೆ ನಾವು ಜನರ ಬಳಿ‌ ಕೇಳುತ್ತಿದ್ದೇವೆ. ಕುಮಾರಸ್ವಾಮಿ ಬಳಿ‌ ನಾವು ಕೇಳುತ್ತಿಲ್ಲ. ರಾಮನಗರಕ್ಕೆ ನನ್ನ ಕೊಡುಗೆ ಅಲ್ಲ, ಕುಮಾರಸ್ವಾಮಿ ಕೊಡುಗೆ ಏನು? ಅಧಿವೇಶನದಲ್ಲಿ ಮಾತನಾಡೋಣ. ಎರಡು‌ ಬಾರಿ ಸಿಎಂ ಆಗಿದ್ದವರು ಅವರು. ಎಷ್ಟು ಅಭಿವೃದ್ಧಿ ಮಾಡಿದ್ದಾರೆ? ಅವರನ್ನೇ ಕೇಳಿಕೊಳ್ಳಲಿ. ಐದು ತಾಲೂಕು ಸೇರಿ ಬೆಂಗಳೂರು ದಕ್ಷಿಣ ಜಿಲ್ಲೆ ಆಗುತ್ತಿದೆ. ಹಾರೋಹಳ್ಳಿ ಹೊಸ ತಾಲೂಕು ಆಗಿದೆ. ಅದನ್ನು ಕುಮಾರಸ್ವಾಮಿ ಮಾಡಿದ್ದಾರೆ. ಕನಕಪುರದಲ್ಲಿ ರಸ್ತೆ ಇರಲಿಲ್ಲ ಎಂಬ ವಿಚಾರವನ್ನು ಪ್ರಸ್ತಾಪ ಮಾಡಿದ್ದಾರೆ. ಒಮ್ಮೆ ಕನಕಪುರಕ್ಕೆ ಹೋಗಿ ನೋಡಲಿ. ನಾನು ಓಪನ್ ಡಿಬೇಟ್‌ಗೆ ರೆಡಿ‌ ಇದ್ದೇನೆ. ನನ್ನ ಇತಿಹಾಸ, ಕುಮಾರಸ್ವಾಮಿ ಇತಿಹಾಸ ಚರ್ಚೆ ಆಗಲಿ. ಐ ಆ್ಯಮ್ ರೆಡಿ ಎಂದು ಡಿ.ಕೆ. ಶಿವಕುಮಾರ್ ಪಂಥಾಹ್ವಾನ ನೀಡಿದರು.

ಜೆಡಿಎಸ್‌ ಕೇರಳಕ್ಕೆ ಒಂದು ಭಾಗ; ಕರ್ನಾಟಕಕ್ಕೆ ಒಂದು ಭಾಗ!

“ಕುಮಾರಣ್ಣ ಮೈತ್ರಿ ಕರ್ನಾಟಕಕ್ಕೆ ಮಾತ್ರ ಎನ್ನುತ್ತಿದ್ದಾರೆ. ಆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಕೇರಳಕ್ಕೆ ಒಂದು ಭಾಗ, ಕರ್ನಾಟಕಕ್ಕೆ ಒಂದು ಭಾಗ ಎಂದು ಹೇಗೆ ಮಾಡುತ್ತಾರೋ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದರು.

ಜೆಡಿಎಸ್ ಎನ್‌ಡಿಎಗೆ ಸೇರಿದ ಕಾರಣ, ಕೇರಳ ಸೇರಿದಂತೆ ಇತರೇ ರಾಜ್ಯಗಳ ಜೆಡಿಎಸ್ ಪಕ್ಷದ ನೂರಾರು ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಅದರಲ್ಲೂ ‘ಇಂಡಿಯಾ’ಕ್ಕೆ ಸೇರುತ್ತಿದ್ದಾರೆ. ನಾನು ಕೇವಲ ಪಕ್ಷಕ್ಕೆ ಆಹ್ವಾನ ನೀಡಲು ಬಂದಿಲ್ಲ. ಒಬ್ಬೊಬ್ಬ ನಾಯಕರು, ಕಾರ್ಯಕರ್ತರು ಕನಿಷ್ಠ 10 ಜನರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಗುರಿ ನೀಡಲು ಬಂದಿದ್ದೇನೆ. ಕಾಂಗ್ರೆಸ್ ಪಕ್ಷವೇ ಈ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ಈ ದೇಶದ ಇತಿಹಾಸ, ಎಲ್ಲರೂ ಸೇರಿ ಮತ್ತಷ್ಟು ಪಕ್ಷವನ್ನು ಬಲಪಡಿಸೋಣ. ಇತರರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಕೆಲಸವನ್ನು ಬೆಂಗಳೂರಿಗೆ ಬಂದು ಮಾಡಬೇಕಾಗಿಲ್ಲ, ನೀವು ಇರುವ ಸ್ಥಳಗಳಲ್ಲೇ ಈ ಕೆಲಸ ಮಾಡಬೇಕು ಎಂದು ಡಿ.ಕೆ. ಶಿವಕುಮಾರ್‌ ಕರೆ ನೀಡಿದರು.

ಕಳೆದ ವರ್ಷ ಇದೇ ಹೊತ್ತಿನಲ್ಲಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅವರ ಜತೆ ಭಾರತ್ ಜೋಡೋ ಯಾತ್ರೆಯಲ್ಲಿ ಹೆಜ್ಜೆ ಹಾಕುತ್ತಿದ್ದೆವು‌. ಆದರೆ, ಇಂದು ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಿ ಅಂಬಾರಿ ಜತೆ ಹೆಜ್ಜೆ ಹಾಕುತ್ತಿದ್ದೇವೆ. ಅಂಬಾರಿ ಮೆರವಣಿಗೆಯಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಟ್ಯಾಬ್ಲೋ ಮೆರವಣಿಗೆ ಮಾಡಲಾಯಿತು. ಇಡೀ ದೇಶವೇ ‘ಕರ್ನಾಟಕ ಮಾದರಿ’ ಅನುಕರಣೆ ಮಾಡಲು ಕಾಯುತ್ತಿದೆ. ಈ ದೇಶದ ಪ್ರಧಾನಿ ಮೋದಿಯವರು ಗ್ಯಾರಂಟಿ ಯೋಜನೆಯಿಂದ ರಾಜ್ಯ ದಿವಾಳಿಯಾಗುತ್ತದೆ ಎಂದೆಲ್ಲ ಹೇಳಿದರು. ಆದರೆ ಈಗ ಐದು ಗ್ಯಾರಂಟಿಗಳ ಬಗ್ಗೆ ಎಲ್ಲರೂ ವ್ಯಾಖ್ಯಾನ ಮಾಡುತ್ತಿದ್ದಾರೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ಬರಗಾಲದಲ್ಲೂ ಜನ ಸಂತೋಷದಿಂದ ಇರುವುದನ್ನು ನೋಡಿದೆ

ಬಿ.ಎಸ್.‌ ಯಡಿಯೂರಪ್ಪ ಅವರು ಒಂದು ಕಾಳು ಅಕ್ಕಿ ಕಡಿಮೆಯಾದರೂ ಹೋರಾಟ ಮಾಡುತ್ತೇನೆ ಎಂದು ಹೇಳುತ್ತಿದ್ದರು. ಗೃಹಲಕ್ಷ್ಮಿ ಯೋಜನೆಯಿಂದ ಅತ್ತೆ- ಸೊಸೆಗೂ ಜಗಳ ತಂದು ಹಾಕುತ್ತಿದೆ ಈ ಸರ್ಕಾರ ಎಂದು ಪ್ರತಿಪಕ್ಷದವರು ಹೇಳಿದರು. ಆದರೆ ಎಲ್ಲರ ಮಾತುಗಳು ಸುಳ್ಳಾಗಿವೆ, ಮೈಸೂರು ದಸರಾಗೆ ಲಕ್ಷಾಂತರ ತಾಯಂದಿರು, ಅಕ್ಕ- ತಂಗಿಯರು ತಮ್ಮ ಮಕ್ಕಳನ್ನು ಕರೆದುಕೊಂಡು ಬಂದರು. ಇಡೀ ಮೈಸೂರಿನ ತುಂಬಾ ಮಹಿಳೆಯರೇ ಇದ್ದರು. ನನ್ನ ಮನೆಯವರನ್ನು ದಸರಾ ನೋಡಲು ಕರೆದುಕೊಂಡು ಹೋಗಿದ್ದೆ, ಇಂತಹ ಬರಗಾಲದಲ್ಲೂ ಜನ ಸಂತೋಷದಿಂದ ಇರುವುದನ್ನು ನೋಡಿದೆ. ವಾಹನ ದಟ್ಟಣೆ ಹೆಚ್ಚಿದ್ದ ಕಾರಣ ಒಂದು ಗಂಟೆ ತಡವಾಯಿತು. ಆದರೂ ಜನರನ್ನು ಕಂಡು ಸಂತೋಷವಾಯಿತು ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ನಾವು ಕೇವಲ ಬಸ್ ಪ್ರಯಾಣ ಮಾತ್ರ ಉಚಿತ ನೀಡಿದ್ದೇವೆ. ಹೋಟೆಲ್, ದೇವಸ್ಥಾನ, ಶಾಪಿಂಗ್ ಸೇರಿದಂತೆ ಅನೇಕ ಕಡೆಗಳಲ್ಲಿ ಜನರು ಖರ್ಚು ಮಾಡಿರುತ್ತಾರೆ. ಇದಕ್ಕೆ ನಾವು ಹಣ ಕೊಟ್ಟಿದ್ದೇವೆಯೇ? ಇಲ್ಲವಲ್ಲವೇ? ಆದರೆ, ಗ್ಯಾರಂಟಿ ಯೋಜನೆಗಳಿಂದ ಹಣದ ವಹಿವಾಟು ಹೆಚ್ಚಾಗಿದೆ. ಹೋಟೆಲ್, ವಸತಿ ಸೇರಿದಂತೆ ಅನೇಕ ಕಡೆ ಬಿಲ್ ಕಟ್ಟುತ್ತಾರೆ. ಇದರಿಂದ ತೆರಿಗೆ ಸಂಗ್ರಹ ಪರೋಕ್ಷವಾಗಿ ಹೆಚ್ಚಳವಾಗುತ್ತಿದೆ ಎಂದು ಡಿ.ಕೆ. ಶಿವಕುಮಾರ್‌ ತಿಳಿಸಿದರು.

ಗೃಹಲಕ್ಷ್ಮಿಯರು ಶಕ್ತಿ ತುಂಬಿದರು, ಗೃಹಲಕ್ಷ್ಮಿಯರು ಮನೆ ಬೆಳಗುತ್ತಿದ್ದಾರೆ, ತಮ್ಮ ಪಾಲಿಗೆ ಬಂದ ಹಣವನ್ನು ಸಂಸಾರಕ್ಕೆ ವಿತರಣೆ ಮಾಡುತ್ತಿದ್ದಾರೆ. ಇದು ಜನರಿಗೆ ನಮ್ಮ ಪಕ್ಷ ನೀಡಿರುವ ಶಕ್ತಿ. ನವರಾತ್ರಿಯಲ್ಲಿ ವಿಜಯದಶಮಿಯಾಗಿ ಮೊದಲನೇ ದಿನ. ಈ ನಾಡಿಗೆ ಆವರಿಸಿರುವ ಬರಗಾಲ ಮುಕ್ತಿಯಾಗಲಿ, ಜನರಿಗೆ ನೆಮ್ಮದಿ ಸಿಗಲಿ, ನಾಡಿನಲ್ಲಿ ಶಾಂತಿ ನೆಲೆಸಬೇಕು ಎಂದು ಪ್ರಾರ್ಥನೆ ಮಾಡಿದ್ದೇವೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ಶ್ರೀಕಾಂತ್ ಸಂಘಟನಾ ಚತುರ

ಜೆಡಿಎಸ್ ಪಕ್ಷದ ಸಾವಿರಾರು ಕಾರ್ಯಕರ್ತರನ್ನು ಪಕ್ಷಕ್ಕೆ ಬರ ಮಾಡಿಕೊಳ್ಳಲು ಮೈಸೂರಿನಿಂದ ಓಡೋಡಿ ಬಂದೆ. ಮುಖ್ಯಮಂತ್ರಿಗಳು ಸಹ ಈ ಕಾರ್ಯಕ್ರಮಕ್ಕೆ ಬರಬೇಕಾಗಿತ್ತು, ಕೊನೆ ಕ್ಷಣದಲ್ಲಿ ಬೇರೆ ಕಾರ್ಯಕ್ರಮ ನಿಗದಿಯಾದ ಕಾರಣ ಬರಲಾಗಲಿಲ್ಲ. ಶ್ರೀಕಾಂತ್ ಅವರು ಹಳೆಯ ಗೆಳೆಯ, ಒಳ್ಳೆಯ ಸಂಘಟನಾ ಚತುರ. ಬಹಳ ಕಾಲದಿಂದ ಗಾಳ ಹಾಕುತ್ತಲೇ ಇದ್ದೆ, ಬಲೆಗೆ ಬಿದ್ದಿರಲಿಲ್ಲ. ಈತನಿಗೆ ಸಾಕಷ್ಟು ಆಶ್ವಾಸನೆ ನೀಡಿದ್ದೆವು, ಬಹಿರಂಗವಾಗಿ ಹೇಳಲು ಆಗುವುದಿಲ್ಲ ಎಂದು ಡಿ.ಕೆ. ಶಿವಕುಮಾರ್‌ ತಿಳಿಸಿದರು.

ಬದುಕಿನಲ್ಲಿ ಏನಾದರೂ ಸಾಧನೆ ಮಾಡಬೇಕು ಎಂದು ಶಿವಮೊಗ್ಗ, ಬೆಂಗಳೂರಿನಲ್ಲಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದರು. ಶ್ರೀಕಾಂತ್ ಅವರಿಗೆ ನಾಯಕರನ್ನು ಸೃಷ್ಟಿ‌ಮಾಡುವ ದೊಡ್ಡ ಶಕ್ತಿಯಿದೆ. ಇದಕ್ಕೆ ಸಾಕ್ಷಿಯಾಗಿ, ಯಶವಂತಪುರ, ಶಿವಮೊಗ್ಗದ ಎಲ್ಲ ಪಕ್ಷಗಳ ನಾಯಕರು ಬಂದಿದ್ದಾರೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ಮಹಮದ್ ಷಫಿ ಅವರು ಸಹ ಪಕ್ಷದ ಆಸ್ತಿಯಾಗಿದ್ದವರು. ಏಕೆ ದುಡುಕಿನ ನಿರ್ಧಾರ ತೆಗೆದುಕೊಂಡರೋ ಗೊತ್ತಿಲ್ಲ, ಮತ್ತೆ ಅವರನ್ನು ಭವ್ಯವಾಗಿ ಆಹ್ವಾನ ಮಾಡುತ್ತಿದ್ದೇವೆ. ಖುದ್ದಾಗಿ ಪರಮೇಶ್ವರ್ ಅವರೇ ಬರುತ್ತೇನೆ ಎಂದು ಹೇಳಿದ್ದರು. ದಸರಾಗೆ ದುಡಿದ ಪೊಲೀಸರಿಗೆ ಅಭಿನಂದನಾ ಸಮಾರಂಭ ಇದ್ದ ಕಾರಣ ಬರಲಾಗಲಿಲ್ಲ ಎಂದು ಡಿ.ಕೆ. ಶಿವಕುಮಾರ್‌ ತಿಳಿಸಿದರು.

ಈ ನಾಡಿನ ಜನತೆಯೇ ನಮ್ಮ ದೇವರುಗಳು. ಕಾಲನ ಓಟದಲ್ಲಿ ಯಾವುದೂ ಶಾಶ್ವತವಲ್ಲ, ಬಿಜೆಪಿ- ಜೆಡಿಎಸ್ ಗೆಳೆಯರಿಗೆ ಈ ಮಾತನ್ನು ಹೇಳುತ್ತಿದ್ದೇನೆ. ಜನರ ಸೇವೆಯೇ ಜನಾರ್ದನ ಸೇವೆ ಎಂದು ನಾವೆಲ್ಲ ಕೆಲಸ ಮಾಡಬೇಕಿದೆ. ಪಕ್ಕಕ್ಕೆ ಸೇರುವವರೆಲ್ಲ ಹಳೆಯದನ್ನೆಲ್ಲ ಮರೆತು ಪಕ್ಷಕ್ಕೆ ದುಡಿಯಬೇಕು ಎಂದು ಡಿ.ಕೆ. ಶಿವಕುಮಾರ್‌ ಕರೆ ನೀಡಿದರು.

ಇದನ್ನೂ ಓದಿ: Karnataka Politics : ಸಿದ್ದರಾಮಯ್ಯ ನೋವಿನಲ್ಲಿದ್ದಾರೆ; ನಿಮ್ಮ ತಪ್ಪಿಂದ ಸರ್ಕಾರ ಬಿದ್ದರೆ ನಮ್ಮನ್ನು ದೂಷಿಸಬೇಡಿ: ಸಿಪಿವೈ

ಇದೇ ವೇಳೆ ಮಾಜಿ ಮೇಯರ್ ನಾಗರಾಜ್, ಮಾಜಿ ಉಪ ಮೇಯರ್ ಪಾಲಾಕ್ಷ, ರಾಜಣ್ಣ, ಮಾಜಿ ನಗರ ಸಭಾ ಸದಸ್ಯರಾದ ಉಮಾನ ಅವರು ಸೇರಿದಂತೆ ಸಾವಿರಾರು ಕಾರ್ಯಕರ್ತರು ಜೆಡಿಎಸ್ ಮತ್ತು ಬಿಜೆಪಿ ಪಕ್ಷ ತೊರೆದು ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು.

Exit mobile version