ಕರ್ನಾಟಕ
Karnataka Election: ಮಂಡ್ಯದಲ್ಲಿ ಅಪೂರ್ಣ ಕಾಮಗಾರಿ ಉದ್ಘಾಟನೆಗೆ ಬೇಡ ಅವಕಾಶ: ಕಾಂಗ್ರೆಸ್ ನಿಯೋಗದಿಂದ ಡಿಸಿಗೆ ಮೊರೆ
ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಮತದಾರರ ಓಲೈಕೆ ಮಾಡಲು ಕೆಲವು ಜನಪ್ರತಿನಿಧಿಗಳು ಕಾಮಗಾರಿ ಪೂರ್ಣಗೊಳ್ಳದಿದ್ದರೂ ಉದ್ಘಾಟನೆ ಮಾಡುತ್ತಿದ್ದಾರೆ. ಅಲ್ಲದೆ, ಟೆಂಡರ್ ಆಗದ ಯೋಜನೆಗಳಿಗೂ ಶಿಲಾನ್ಯಾಸ ನೆರವೇರಿಸುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಬೇಕು ಎಂದು ಮಂಡ್ಯ ಜಿಲ್ಲಾಧಿಕಾರಿಗೆ ಮಾಜಿ ಸಚಿವ ಪಿ.ಎಂ. ನರೇಂದ್ರಸ್ವಾಮಿ (PM Narendraswamy), ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ (Dinesh Gooligowda), ಮಧು ಜಿ. ಮಾದೇಗೌಡ (Madhu Madegowda) ನಿಯೋಗವು ಮನವಿ ಸಲ್ಲಿಸಿದೆ.
ಮಂಡ್ಯ: ವಿಧಾನಸಭಾ ಚುನಾವಣೆ (Karnataka Election) ಸಮೀಪಿಸುತ್ತಿದೆ. ಅಲ್ಲದೆ, ನೀತಿ ಸಂಹಿತೆ ಘೋಷಣೆಯಾಗಲು ಇನ್ನು ಕೆಲವೇ ದಿನಗಳು ಬಾಕಿ ಇದೆ. ಈ ಮಧ್ಯೆ ರಾಜಕೀಯ ನಾಯಕರು ಕಾಮಗಾರಿ ಪೂರ್ಣಗೊಳ್ಳದೆ ಕಟ್ಟಡಗಳನ್ನು ಉದ್ಘಾಟನೆ ಮಾಡುತ್ತಿದ್ದಾರೆ. ಕಾಮಗಾರಿಗಳಿಗೆ ಟೆಂಡರ್ ಆಗದೆ ಶಿಲಾನ್ಯಾಸ ನೇರವೇರಿಸುತ್ತಿದ್ದಾರೆ. ಈ ಬಗ್ಗೆ ಚುನಾವಣೆ ಆಯೋಗ ಸೂಕ್ತ ಕ್ರಮ ಕೈಗೊಳ್ಳುವುದಲ್ಲದೆ, ತಡೆಯೊಡ್ಡಬೇಕು ಎಂದು ಮಂಡ್ಯ ಜಿಲ್ಲಾಧಿಕಾರಿಗೆ ಮಾಜಿ ಸಚಿವ ಪಿ.ಎಂ. ನರೇಂದ್ರಸ್ವಾಮಿ (PM Narendraswamy), ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ (Dinesh Gooligowda), ಮಧು ಜಿ. ಮಾದೇಗೌಡ (Madhu Madegowda) ಮನವಿ ಸಲ್ಲಿಸಿದರು.
ಮಳವಳ್ಳಿ ಸೇರಿದಂತೆ ಮಂಡ್ಯ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಅಪೂರ್ಣಗೊಂಡಿರುವ ಕಾಮಗಾರಿಗಳ ಉದ್ಘಾಟನೆ ಮಾಡುತ್ತಿರುವುದು ಕಂಡುಬಂದಿದೆ. ಅಲ್ಲದೆ ಟೆಂಡರ್ ಆಗುವುದಕ್ಕೂ ಮುನ್ನ ಶಂಕುಸ್ಥಾಪನೆ ನೆರವೇರಿಸುತ್ತಿರುವುದು ಸಹ ಗಮನಕ್ಕೆ ಬಂದಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಾಗಲು ಇನ್ನೂ ಒಂದು ವಾರ ಅಷ್ಟೇ ಬಾಕಿ ಇದೆ. ಹೀಗಾಗಿ ಇವುಗಳಿಗೆ ಅವಕಾಶ ಮಾಡಿಕೊಡಬಾರದು ಎಂದು ಕಾಂಗ್ರೆಸ್ ನಾಯಕರ ನಿಯೋಗವು ಜಿಲ್ಲಾಧಿಕಾರಿ ಗೋಪಾಲಕೃಷ್ಣ ಅವರಿಗೆ ಮನವಿ ಸಲ್ಲಿಸಿತು.
ಇದನ್ನೂ ಓದಿ: Karnataka Rain: ಸರಾಗವಾಗಿ ಹರಿಯದ ಮಳೆ ನೀರು, ಕೈಕೊಟ್ಟ ವಾಹನ; ಬೆಂಗಳೂರು-ಮೈಸೂರು ದಶಪಥದಲ್ಲಿ ದಿಕ್ಕೆಟ್ಟ ಪ್ರಯಾಣಿಕರು!
ಈ ವೇಳೆ ಜಿಲ್ಲಾಧಿಕಾರಿ ಗೋಪಾಲಕೃಷ್ಣ ಅವರು ಪ್ರತಿಕ್ರಿಯೆ ನೀಡಿ, ಈಗಾಗಲೇ ಜಿಲ್ಲಾದ್ಯಂತ ಕ್ರಮವಹಿಸಲಾಗಿದೆ. ಎಲ್ಲ ತಾಲೂಕುಗಳಿಗೂ ಸೂಚನೆ ನೀಡಲಾಗಿದ್ದು, ಅಪೂರ್ಣ ಕಾಮಗಾರಿಗಳನ್ನು ಉದ್ಘಾಟನೆ ಮಾಡಬಾರದು ಹಾಗೂ ಟೆಂಡರ್ ಆಗದ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಬಾರದು ಎಂದು ಸೂಚಿಸಲಾಗಿದೆ ಎಂದು ನಿಯೋಗಕ್ಕೆ ತಿಳಿಸಿದರು. ಈ ವೇಳೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಾಂತ ಹುರುಮನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಇದ್ದರು.
ಮನವಿ ಪತ್ರದಲ್ಲೇನಿದೆ?
ರಾಜ್ಯ ವಿಧಾನಸಭೆ ಚುನಾವಣೆ ದಿನಾಂಕ ಶೀಘ್ರದಲ್ಲೇ ಘೋಷಣೆಯಾಗಲಿದ್ದು, ಈ ಬಗ್ಗೆ ಚುನಾವಣಾ ಆಯೋಗ ತಯಾರಿ ನಡೆಸಿದೆ. ಈ ಹಿನ್ನೆಲೆಯಲ್ಲಿ ಈಚೆಗೆ ರಾಜ್ಯಕ್ಕೆ ಭೇಟಿ ನೀಡಿದ್ದ ಕೇಂದ್ರ ಚುನಾವಣಾ ಆಯೋಗದ ತಂಡಗಳು ಚುನಾವಣೆಯ ತಯಾರಿಯ ಬಗ್ಗೆ ಪರಿಶೀಲನೆ ನಡೆಸಿದ್ದವು. ರಾಜ್ಯದ ಉನ್ನತ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳ ಸಭೆ ನಡೆಸಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು “ಮತದಾರರಿಗೆ ಆಮಿಷವೊಡ್ಡುವುದನ್ನು ತಡೆಯಲು ನೀತಿ ಸಂಹಿತೆ ಜಾರಿಯಾಗುವವರೆಗೂ ಕಾಯದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಅದರಂತೆ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಮನೋಜ ಕುಮಾರ ಮೀನಾ ಅವರು ಸಹ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಮಾ.8 ರಂದು ಪತ್ರ ಬರೆದು, “ಸರ್ಕಾರಿ ಅಧಿಕಾರಿಗಳ ವರ್ಗಾವಣೆ ಮಾಡಬೇಕಾದಲ್ಲಿ ಆಯೋಗದ ಅನುಮತಿ ಪಡೆಯಬೇಕು” ಎಂದು ಸೂಚನೆ ನೀಡಿದ್ದಾರೆ. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೂ ಚುನಾವಣಾ ಆಯೋಗದ ಆದೇಶ ಮೀರಿ ವರ್ಗಾವಣೆ ಪ್ರಕ್ರಿಯೆ ನಡೆಯುತ್ತಿದೆ.
ಮಂಡ್ಯ ಜಿಲ್ಲೆಯಲ್ಲಿ ಚುನಾವಣಾ ಆಯೋಗದ ಸೂಚನೆಗಳನ್ನು ಧಿಕ್ಕರಿಸಿ ಮತದಾರರಿಗೆ ಆಮಿಷವೊಡ್ಡುವ ಕಾರ್ಯಗಳು ನಿರಂತರವಾಗಿ ನಡೆಯುತ್ತಿದ್ದು, ಮತದಾರರನ್ನು ಮರುಳು ಮಾಡುವ ಸಲುವಾಗಿ ನಿರ್ಮಾಣ ಹಂತದಲ್ಲಿರುವ ಅಪೂರ್ಣ ಸರ್ಕಾರಿ ಕಟ್ಟಡಗಳನ್ನು ಹಾಗೂ ಕಾಮಗಾರಿಗಳನ್ನು ಉದ್ಘಾಟಿಸಲಾಗುತ್ತಿದೆ.
ಜಿಲ್ಲೆಯಲ್ಲಿ ಇನ್ನೂ ಪೂರ್ಣವಾಗದೇ ಇರುವ ಕಾಮಗಾರಿಗಳನ್ನು ಉದ್ಘಾಟನೆ ಮಾಡುವ ಮೂಲಕ ಮತದಾರರ ಮೇಲೆ ಪ್ರಭಾವ ಬೀರಿ ಚುನಾವಣಾ ದೃಷ್ಟಿಯಿಂದ ಅನುಕೂಲ ಪಡೆದುಕೊಳ್ಳಲು ಪ್ರಯತ್ನಿಸುತ್ತಿರುವ ಪ್ರಕರಣಗಳು ನಡೆಯುತ್ತಿದೆ. ಚುನಾವಣಾ ಆಯೋಗದ ನಿರ್ದೇಶನವನ್ನು ಧಿಕ್ಕರಿಸಿ ನಡೆಯುತ್ತಿವೆ.
ಇದನ್ನೂ ಓದಿ: Karnataka Rain: ಆಲಿಕಲ್ಲು ಮಳೆಗೆ ನೆಲಕಚ್ಚಿದ ಬೆಳೆ; ರೈತರು ಕಂಗಾಲು, ಗೋಳು ಕೇಳುವವರ್ಯಾರು?
ಅದೇ ರೀತಿ ಟೆಂಡರ್ ಕರೆಯುವ ಮೊದಲೇ ಭೂಮಿ ಪೂಜೆ ಮಾಡಲಾಗುತ್ತಿದೆ. ಇದು ಬಹುತೇಕ ಎಲ್ಲ ಇಲಾಖೆಗಳಲ್ಲಿಯೂ ನಡೆಯುತ್ತಿದೆ ಎಂಬ ದೂರುಗಳು ಈಗಾಗಲೇ ಕೇಳಿ ಬರುತ್ತಿವೆ. ಇದು ಚುನಾವಣಾ ಆಯೋಗದ ಸೂಚನೆಯ ಸ್ಪಷ್ಟ ಉಲ್ಲಂಘನೆಯಾಗಿದೆ. ಆದ್ದರಿಂದ ಜಿಲ್ಲಾ ಚುನಾವಣಾಧಿಕಾರಿಯಾಗಿರುವ ತಾವು ಇಂಥ ಕಾರ್ಯಗಳನ್ನು ತಡೆಯಲು ಕ್ರಮ ವಹಿಸಬೇಕು. ಮತದಾರರ ಮೇಲೆ ಪ್ರಭಾವ ಬೀರುವ ಯಾವುದೇ ಕಾರ್ಯಗಳೂ ನಡೆಯದಂತೆ ನೋಡಿಕೊಳ್ಳುವ ಮೂಲಕ ನಿಷ್ಪಕ್ಷಪಾತ ಚುನಾವಣೆ ನಡೆಸಲು ಹಾಗೂ ಚುನಾವಣಾ ಆಯೋಗದ ನಿರ್ದೇಶನವನ್ನು ಪಾಲಿಸುವಂತೆ ಈ ಮೂಲಕ ಒತ್ತಾಯಿಸುವುದಾಗಿ ಮನವಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಕರ್ನಾಟಕ
Road Accident: ನೆಲಮಂಗಲದ ಬಳಿ ಲಾರಿ ಹರಿದು ಯುವತಿ ಸ್ಥಳದಲ್ಲೇ ಸಾವು
Road Accident: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಲಕ್ಕೂರು ಬಳಿ ಅಪಘಾತ ನಡೆದಿದೆ. ಲಾರಿಯು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ.
ನೆಲಮಂಗಲ: ಟಿಪ್ಪರ್ ಹರಿದು ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ (Road Accident) ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಲಕ್ಕೂರು ಬಳಿ ನಡೆದಿದೆ. ನರಸೀಪುರ ಗ್ರಾಮದ ಹೇಮಾವತಿ (27) ಮೃತ ಯುವತಿ. ಈಕೆ ದ್ವಿಚಕ್ರ ವಾಹನದಲ್ಲಿ ತರಕಾರಿ ತೆಗೆದುಕೊಂದು ಮನೆಗೆ ತೆರಳುವಾಗ ಲಾರಿ ಡಿಕ್ಕಿ ಹೊಡೆದಿದ್ದು, ಈ ವೇಳೆ ಕೆಳಗೆ ಬಿದ್ದಾಗ ಲಾರಿ ಹರಿದಿದೆ. ಇದರಿಂದ ಗಂಭೀರ ಗಾಯಗಳಾಗಿ ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಚಾಲಕನನ್ನು ಡಾಬಸ್ಪೇಟೆ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನೇಣು ಬಿಗಿದುಕೊಂಡು ಇಬ್ಬರು ಪ್ರೇಮಿಗಳು ಆತ್ಮಹತ್ಯೆಗೆ ಶರಣು
ಧಾರವಾಡ: ನೇಣುಬಿಗಿದುಕೊಂಡು ಇಬ್ಬರು ಪ್ರೇಮಿಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ. ಹೆಬ್ಬಳ್ಳಿ ಗ್ರಾಮದ ಮೈಲಾರಿ ಕಾಲಾಳದ (22), 16 ವರ್ಷದ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ ಕೆಲ ವರ್ಷಗಳಿಂದ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಮನೆಯಲ್ಲಿ ಇಬ್ಬರ ಪ್ರಿತಿಗೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಹೀಗಾಗಿ ಇಬ್ಬರು ಕಳೆದ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದರು. ಮಗಳು ನಾಪತ್ತೆ ಆಗಿರುವ ಬಗ್ಗೆ ಬಾಲಕಿ ಮನೆಯವರು ಧಾರವಾಡ ಗ್ರಾಮೀಣ ಠಾಣೆಗೆ ದೂರು ನೀಡಿದ್ದರು. ಆದರೆ, ಮಂಗಳವಾರ ನಿರ್ಮಾಣ ಹಂತದಲ್ಲಿರುವ ಯುವಕನ ಮನೆಯಲ್ಲಿ ಇಬ್ಬರು ಪ್ರೇಮಿಗಳು ನೇಣಿಗೆ ಶರಣಾಗಿದ್ದಾರೆ.
ಪರವಾನಗಿ ಇಲ್ಲದೇ ಜಾನುವಾರು ಸಾಗಾಟ; ಮೂವರ ಬಂಧನ, 11 ಜಾನುವಾರು ರಕ್ಷಣೆ
ಕಾರವಾರ: ಪರವಾನಗಿ ಇಲ್ಲದೇ ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿ 11 ಜಾನುವಾರುಗಳನ್ನು ವಶಕ್ಕೆ ಪಡೆದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಹಳದೀಪುರ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ | 10 ಅಡಿ ಸುರಂಗ ಕೊರೆದು ಮಳಿಗೆಯಲ್ಲಿ ಆಭರಣ ಕದ್ದರು, ಬಳಿಕ ಕ್ಷಮಾಪಣೆ ಪತ್ರ ಬರೆದಿಟ್ಟು ಹೋದರು
ಧಾರವಾಡ ಮೂಲದ ಚಾಲಕ ಸಂತೋಷ ಮಂಟೂರು, ಕ್ಲೀನರ್ ಮಣಿಕಂಠ ದೇಸಾಯಿ, ಬೈಂದೂರು ಮೂಲದ ನಾಗರಾಜ ಮೊಗೇರ್ ಬಂಧಿತ ಆರೋಪಿಗಳು. 4 ಹಸು, 7 ಕರು ಸೇರಿ 11 ಜಾನುವಾರುಗಳ ರಕ್ಷಣೆ ಮಾಡಲಾಗಿದೆ. ಲಾರಿಯಲ್ಲಿ ಹಿಂಸಾತ್ಮಕವಾಗಿ ಜಾನುವಾರುಗಳನ್ನು ತುಂಬಿ ಬೈಂದೂರಿನಿಂದ ಪುಣೆಗೆ ಸಾಗಿಸಲಾಗುತ್ತಿತ್ತು. ಕಸಾಯಿಖಾನೆಯಲ್ಲಿ ವಧೆ ಮಾಡುವ ಉದ್ದೇಶದಿಂದ ಜಾನುವಾರುಗಳ ಸಾಗಾಟ ಯತ್ನ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಕರ್ನಾಟಕ
Highway robbery : ಯುವಕ-ಯುವತಿಯನ್ನು ಅಡ್ಡಗಟ್ಟಿ ಬೈಕ್, ಐಫೋನ್ ಕಿತ್ತುಕೊಂಡು ಹೋದ ಮೂವರು ಸುಲಿಗೆಕೋರರು ಅರೆಸ್ಟ್
ಹೆದ್ದಾರಿಯಲ್ಲಿ ಸಾಗುತ್ತಿದ್ದ ಜೋಡಿಯನ್ನು ಅಡ್ಡಗಟ್ಟಿ(Highway robbery) ಬೈಕ್ ಮತ್ತು ಐಫೋನ್ ಕಿತ್ತುಕೊಂಡಿದ್ದ ಮೂವರು ಕ್ರಿಮಿನಲ್ಗಳು ಸೆರೆ ಸಿಕ್ಕಿದ್ದಾರೆ. ಉಳ್ಳಾಲ ಪೊಲಿಸರ ಕಾರ್ಯಾಚರಣೆಯನ್ನು ಸಾರ್ವಜನಿಕರು ಶ್ಲಾಘಿಸಿದ್ದಾರೆ.
ಉಳ್ಳಾಲ(ಮಂಗಳೂರು): ಬೈಕ್ನಲ್ಲಿ ತೆರಳುತ್ತಿದ್ದ ಜೋಡಿಯನ್ನು ಅಡ್ಡಗಟ್ಟಿ, ಐ-ಪೋನ್ ಮತ್ತು ಬೈಕನ್ನ ದೋಚಿದ್ದ ಮೂವರು ಖದೀಮರನ್ನು ಉಳ್ಳಾಲ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ (Highway robbery) ನಡೆಸಿ ಬಂಧಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲ ಬಳಿ ಈ ಘಟನೆ ನಡೆದಿತ್ತು.
ಸೋಮವಾರ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಯುವಕ ಮತ್ತು ಯುವತಿ ಬೈಕಲ್ಲಿ ಜತೆಯಾಗಿ ತೆರಳುತ್ತಿದ್ದರು. ಈ ವೇಳೆ ಎರಡು ಸ್ಕೂಟರಲ್ಲಿ ಬಂದ ಮೂವರು ಖದೀಮರು ಉಚ್ಚಿಲದ ಜಿಯೋ ಪೆಟ್ರೋಲ್ ಪಂಪ್ ಬಳಿ ಅವರನ್ನು ಅಡ್ಡಗಟ್ಟಿದರು.
ಯುವಕ ಮತ್ತು ಯುವತಿಯನ್ನು ಬೆದರಿಸಿದ ಸುಲಿಗೆಕೋರರು ಯುವತಿ ಕೈಯಲ್ಲಿದ್ದ ಬೆಲೆ ಬಾಳುವ ಐ-ಫೋನ್ ಕಿತ್ತುಕೊಂಡಿದ್ದರು. ಮೋಟಾರು ಬೈಕನ್ನೂ ಕೂಡಾ ಕಸಿದುಕೊಂಡು ಪರಾರಿಯಾಗಿದ್ದರು.
ಈ ಬಗ್ಗೆ ಬೈಕ್ ಸವಾರ ಅಬ್ದುಲ್ಲ ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿದ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ.
ಉಳ್ಳಾಲ ಬಸ್ತಿಪಡ್ಪು ನಿವಾಸಿ ಝಾಕೀರ್ ಹುಸೇನ್ ಅಲಿಯಾಸ್ ಶಾಕೀರ್-ಜಾಹೀರ್(27), ಸೋಮೇಶ್ವರ ಗ್ರಾಮದ ಪಿಲಾರು ನಿವಾಸಿ ಮಹಮ್ಮದ್ ಉಬೈದುಲ್ಲಾ ಅಲಿಯಾಸ್ ಉಬ್ಬಿ (33), ಉಳ್ಳಾಲ ಮೇಲಂಗಡಿ ನಿವಾಸಿ ಇಬ್ರಾಹಿಮ್ ಖಲೀಲ್ ಅಲಿಯಾಸ್ ಖಲೀಲ್(22) ಬಂಧಿತ ಆರೋಪಿಗಳು.
ಬಂಧಿತ ಆರೋಪಿಗಳಿಂದ ಕೃತ್ಯಕ್ಕೆ ಬಳಸಲಾಗಿದ್ದ 2 ಸ್ಕೂಟರ್ ಗಳು, ಸುಲಿಗೆ ನಡೆಸಿದ್ದ ಐಫೋನ್ ಮತ್ತು ಯಮಹಾ ಮೋಟಾರು ಬೈಕನ್ನು ಸ್ವಾಧೀನಪಡಿಸಿಕೊಳ್ಳಲಾಗಿದ್ದು ಆರೋಪಿಗಳನ್ನು ನಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಕುಲದೀಪ್ ಜೈನ್ ಮಾರ್ಗದರ್ಶನದ ಮೇರೆಗೆ ಉಳ್ಳಾಲ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಸಂದೀಪ್ ಜಿ.ಎಸ್ ಮತ್ತು ಉಪನಿರೀಕ್ಷಕರಾದ ಕೃಷ್ಣ ಕೆ.ಎಚ್ ,ಸಂತೋಷ್ ಮತ್ತು ಪಿಸಿಗಳಾದ ಪ್ರವೀಣ ಶೆಟ್ಟಿ, ಅಶೋಕ್, ವಾಸುದೇವ ಸಿಬ್ಬಂದಿಗಳ ತಂಡ ಪ್ರಕರಣವನ್ನು ಶೀಘ್ರದಲ್ಲಿ ಭೇದಿಸುವಲ್ಲಿ ಯಶಸ್ವಿಯಾಗಿದೆ.
ಈ ಭಾಗದಲ್ಲಿ ಇತ್ತೀಚೆಗೆ ವಾಹನಗಳ ಕಳ್ಳತನ ಹೆಚ್ಚಾಗಿದ್ದು, ಅದಕ್ಕೆ ಹೆದ್ದಾರಿ ದರೋಡೆಯೂ ಸೇರಿಕೊಂಡಂತಾಗಿದೆ. ಪೊಲೀಸರು ಈ ದರೋಡೆ ಪ್ರಕರಣವನ್ನು ತ್ವರಿತವಾಗಿ ಪತ್ತೆ ಹಚ್ಚಿದ್ದನ್ನು ಸಾರ್ವಜನಿಕರು ಶ್ಲಾಘಿಸಿದ್ದಾರೆ. ಈ ಭಾಗದಲ್ಲಿ ಹೈವೇ ಪ್ಯಾಟ್ರೋಲಿಂಗ್ ಹೆಚ್ಚಿಸುವಂತೆ, ಬೈಕ್ ಕಳವು ಪ್ರಕರಣಗಳನ್ನು ಕೂಡಾ ಪತ್ತೆ ಹಚ್ಚುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ : Bike theft : ಉಳ್ಳಾಲದಲ್ಲಿ ಸರಣಿ ಬೈಕ್ ಕಳ್ಳತನ, ಸಿಸಿಟಿವಿಯಲ್ಲಿ ಸೆರೆಯಾದ ಕಳ್ಳರಿಗಾಗಿ ಪೊಲೀಸರ ಹುಡುಕಾಟ!
ಕರ್ನಾಟಕ
Vinay kulkarni: ಧಾರವಾಡಕ್ಕೆ ಪ್ರವೇಶ ನಿರ್ಬಂಧ; ವಿನಾಯಿತಿ ಕೋರಿ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಜಾ
Vinay kulkarni: ಬಿಜೆಪಿ ಜಿಪಂ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಜೈಲಿಗೆ ಹೋಗಿ ಬಂದ ನಂತರ ಧಾರವಾಡ ಜಿಲ್ಲೆ ಪ್ರವೇಶಕ್ಕೆ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಕೋರ್ಟ್ ನಿರ್ಬಂಧವಿತ್ತು. ಇದಕ್ಕೆ ವಿನಾಯಿತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ.
ಧಾರವಾಡ: ಚುನಾವಣೆ ಹೊಸ್ತಿಲಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಶಾಕ್ ನೀಡಿದೆ. ಧಾರವಾಡ ಜಿಲ್ಲೆ ಪ್ರವೇಶ ನಿರ್ಬಂಧಕ್ಕೆ ವಿನಾಯಿತಿ ಕೋರಿ ವಿನಯ್ ಕುಲಕರ್ಣಿ (Vinay kulkarni) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿರುವುದರಿಂದ ತೀವ್ರ ಹಿನ್ನಡೆಯಾಗಿದೆ.
ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧನವಾಗಿದ್ದರು. 9 ತಿಂಗಳು ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದು, ಬಿಡುಗಡೆಯಾದ ಬಳಿಕ ಅವರಿಗೆ ಧಾರವಾಡ ಜಿಲ್ಲೆ ಪ್ರವೇಶಕ್ಕೆ ಕೋರ್ಟ್ ನಿರ್ಬಂಧ ವಿಧಿಸಿತ್ತು. ಹೀಗಾಗಿ ಧಾರವಾಡ ಜಿಲ್ಲೆ ಪ್ರವೇಶಕ್ಕಿರುವ ನಿರ್ಬಂಧ ತೆರವುಗೊಳಿಸಲು ಕೋರಿ 2 ತಿಂಗಳ ಹಿಂದೆ ಮಾಜಿ ಸಚಿವ ಅರ್ಜಿ ಸಲ್ಲಿಸಿದ್ದರು. ಆದರೆ ಈ ಅರ್ಜಿಯನ್ನು ಸರ್ವೋಚ್ಚ ನ್ಯಾಯಾಲಯ ತಿರಸ್ಕರಿಸಿದೆ.
ಇದನ್ನೂ ಓದಿ | Karnataka Election 2023: ಕಾಂಗ್ರೆಸ್ ತೊರೆದ ಎಂ.ಎಂ. ಹಿರೇಮಠಗೆ ಶಾಕ್; ಎಸ್ಸಿ ಜಾತಿ ಪ್ರಮಾಣಪತ್ರ ರದ್ದು
ಇನ್ನು ಟ್ರಯಲ್ ಕೋರ್ಟ್ (ವಿಚಾರಣಾ ನ್ಯಾಯಾಲಯದಲ್ಲಿ) ನ್ಯಾಯಾಲಯದಲ್ಲಿ ಮತ್ತೊಮ್ಮೆ ಅರ್ಜಿ ಸಲ್ಲಿಸಿ ಇತ್ಯರ್ಥ ಮಾಡಿಕೊಳ್ಳುವಂತೆ ಸುಪ್ರೀಂ ಕೋರ್ಟ್ ವಿನಯ್ ಕುಲಕರ್ಣಿಗೆ ಸೂಚನೆ ನೀಡಿದ್ದು, ಯಾವ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದಿದೆಯೋ ಅದೇ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿ ಇತ್ಯರ್ಥ ಮಾಡಿಕೊಳ್ಳುವಂತೆ ನಿರ್ದೇಶನ ನೀಡಿದೆ.
2016 ಜೂನ್ 15 ರಂದು ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಸದಸ್ಯ, ಬಿಜೆಪಿ ಮುಖಂಡ ಯೋಗೀಶಗೌಡ ಅವರ ಕೊಲೆಯಾಗಿತ್ತು. ನಂತರ ಆರೋಪಿಗಳು ತಾವೇ ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡು ಪೊಲೀಸರುಗೆ ಶರಣಾಗಿದ್ದರು. ಆದರೆ ಯೋಗೇಶಗೌಡ ಗೌಡರ ಕುಟುಂಬಸ್ಥರು ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಪಟ್ಟುಹಿಡಿದಿದ್ದರು. ನಂತರ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ಪ್ರಕರಣವನ್ನು ಸಿಬಿಐಗೆ ವಹಿಸಿತು. ತನಿಖೆಯಲ್ಲಿ ಯೋಗಶ್ಗೌಡ ಹತ್ಯೆ ಸಂಚಿನಲ್ಲಿ ಕಾಂಗ್ರೆಸ್ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಕೈವಾಡವಿದೆ ಇದೆ ಎಂದು ವಿನಯ್ ಕುಲಕರ್ಣಿಯನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದರು.
ಪ್ರಕರಣದಲ್ಲಿ ಬಂಧನವಾಗಿ 9 ತಿಂಗಳು ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಕಾಲ ಕಳೆದಿದ್ದ ಮಾಜಿ ಸಚಿವ, ಷರತ್ತು ಬದ್ಧ ಜಾಮೀನಿನ ಮೇಲೆ ಹೊರ ಬಂದಿದ್ದರು. ಆದರೆ ವಿನಯ್ ಕುಲಕರ್ಣಿಗೆ ಧಾರವಾಡ ಜಿಲ್ಲೆ ಪ್ರವೇಶಕ್ಕೆ ಕೋರ್ಟ್ ನಿರ್ಬಂಧ ವಿಧಿಸಿತ್ತು. ಇದೀಗ ನಿರ್ಬಂಧ ವಿನಾಯಿತಿಗೆ ಸಲ್ಲಿಸಿದ್ದ ಅರ್ಜಿಯನ್ನೂ ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
ಇದನ್ನೂ ಓದಿ | Karnataka Election: ಎಎಪಿಯಿಂದ 300 ಯೂನಿಟ್ ವಿದ್ಯುತ್ ಉಚಿತ, 3000 ರೂ. ನಿರುದ್ಯೋಗ ಭತ್ಯೆ, ಒಪಿಎಸ್ ಜಾರಿ ಗ್ಯಾರಂಟಿ
ಶಿಗ್ಗಾಂವಿಯಿಂದ ವಿನಯ್ ಕುಲಕರ್ಣಿ ಸ್ಪರ್ಧೆ?
ಧಾರವಾಡ ಗ್ರಾಮೀಣ ಕ್ಷೇತ್ರದ ಮಾಜಿ ಶಾಸಕರೂ ಆಗಿರುವ ವಿನಯ್ ಕುಲಕರ್ಣಿಗೆ ಜಿಲ್ಲೆಯ ಪ್ರವೇಶಕ್ಕೆ ನಿರ್ಬಂಧ ಇರುವುದರಿಂದ ಕ್ಷೇತ್ರದ ರಾಜಕೀಯದಲ್ಲಿ ಸಕ್ರಿಯವಾಗಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಅವರು ಹಾವೇರಿ ಜಿಲ್ಲೆಯ ಸಿಎಂ ಬಸವರಾಜ ಬೊಮ್ಮಾಯಿ ಅವರ ಕ್ಷೇತ್ರ ಶಿಗ್ಗಾಂವಿಯಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಕಾಂಗ್ರೆಸ್ನ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಶಿಗ್ಗಾಂವಿ ಕ್ಷೇತ್ರಕ್ಕೆ 2ನೇ ಪಟ್ಟಿಯಲ್ಲಿ ಅಭ್ಯರ್ಥಿ ಘೋಷಣೆಯಾಗಲಿದ್ದು, ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಟಿಕೆಟ್ ಸಿಗುವುದೋ, ಇಲ್ಲವೋ ಎಂಬ ಬಗ್ಗೆ ಕುತೂಹಲ ಮೂಡಿದೆ.
ಕರ್ನಾಟಕ
Karnataka Election: ಎಎಪಿಯಿಂದ 300 ಯೂನಿಟ್ ವಿದ್ಯುತ್ ಉಚಿತ, 3000 ರೂ. ನಿರುದ್ಯೋಗ ಭತ್ಯೆ, ಒಪಿಎಸ್ ಜಾರಿ ಗ್ಯಾರಂಟಿ
Aam Aadmi Party: ಪ್ರತಿ ಮನೆಗೆ ತಿಂಗಳಿಗೆ 300 ಯೂನಿಟ್ ಉಚಿತ ವಿದ್ಯುತ್, 3,000 ರೂಪಾಯಿ ನಿರುದ್ಯೋಗ ಭತ್ಯೆ, ಹಳೆ ಪಿಂಚಣಿ ಯೋಜನೆ (ಒಪಿಎಸ್) ಜಾರಿ ಸೇರಿ ಪ್ರಮುಖ 10 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವುದಾಗಿ ರಾಜ್ಯ ಆಮ್ ಆದ್ಮಿ ಪಕ್ಷ ಭರವಸೆ ನೀಡಿದೆ.
ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ 4 ಗ್ಯಾರಂಟಿ ಯೋಜನೆ ಘೋಷಣೆ ಮಾಡಿದ ಬೆನ್ನಲ್ಲೇ ಆಮ್ ಆದ್ಮಿ ಪಾರ್ಟಿ (ಎಎಪಿ) ಕೂಡ ವಿವಿಧ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದೆ. ಪ್ರತಿ ಮನೆಗೆ ತಿಂಗಳಿಗೆ 300 ಯೂನಿಟ್ ಉಚಿತ ವಿದ್ಯುತ್, ನಿರುದ್ಯೋಗಿ ಯುವಜನತೆಗೆ ತಿಂಗಳಿಗೆ 3,000 ರೂಪಾಯಿ ನಿರುದ್ಯೋಗ ಭತ್ಯೆ, ಗುಣಮಟ್ಟದ ಆರೋಗ್ಯ ಸೇವೆಗಾಗಿ ಕ್ಲಿನಿಕ್ಗಳು, ಸರ್ಕಾರಿ ಶಾಲೆಗಳ ಅಭಿವೃದ್ಧಿ, ಹಳೆ ಪಿಂಚಣಿ ಯೋಜನೆ ಜಾರಿ ಮುಂತಾದ ಒಟ್ಟು 10 ವಲಯಗಳಿಗೆ ಸಂಬಂಧಿಸಿದ ಪ್ರಮುಖ ಗ್ಯಾರಂಟಿಗಳನ್ನು ಜಾರಿ ಮಾಡಲಾಗುವುದು ಎಂದು ಆಮ್ ಆದ್ಮಿ ಪಾರ್ಟಿ ತಿಳಿಸಿದೆ.
ಆಮ್ ಆದ್ಮಿ ಪಾರ್ಟಿಯಿಂದ 10 ಗ್ಯಾರಂಟಿಗಳ ಪಟ್ಟಿ ಬಿಡುಗಡೆ
ಆಮ್ ಆದ್ಮಿ ಪಾರ್ಟಿಯ ರಾಷ್ಟ್ರೀಯ ವಕ್ತಾರ ಹಾಗೂ ರಾಜ್ಯಸಭಾ ಸದಸ್ಯರಾದ ಸಂಜಯ್ ಸಿಂಗ್ ಅವರು ಕರ್ನಾಟಕ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಾರ್ಟಿ ಗ್ಯಾರಂಟಿಗಳ ಪಟ್ಟಿಯನ್ನು ಬುಧವಾರ ಬೆಂಗಳೂರಿನಲ್ಲಿ ಬಿಡುಗಡೆ ಮಾಡಿದರು.
ಪಕ್ಷದ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಜಯ್ ಸಿಂಗ್, “ಆಮ್ ಆದ್ಮಿ ಪಾರ್ಟಿಯು ಸುಳ್ಳು ಆಶ್ವಾಸನೆಗಳನ್ನು ನೀಡುವ ಪಕ್ಷವಲ್ಲ. ನಾವು ಆಶ್ವಾಸನೆಗಳ ಬದಲು ಗ್ಯಾರಂಟಿ ಕಾರ್ಡ್ ನೀಡುತ್ತೇವೆ. ಇದೊಂದು ಕರಾರುಪತ್ರವಾಗಿದ್ದು, ಇವೆಲ್ಲವನ್ನೂ ಶೇ. 100ರಷ್ಟು ಈಡೇರಿಸುತ್ತೇವೆ. ಪ್ರಣಾಳಿಕೆಯಲ್ಲಿದ್ದ ಎಲ್ಲ ಗ್ಯಾರಂಟಿಗಳನ್ನು ದೆಹಲಿಯಲ್ಲಿ ಈಡೇರಿಸಿದ್ದೇವೆ. ಪಂಜಾಬ್ನಲ್ಲಿ ಕೂಡ ಒಂದೊಂದಾಗಿ ಜಾರಿಗೆ ಬರುತ್ತಿದೆ ಎಂದು ಹೇಳಿದರು.
ಇದನ್ನೂ ಓದಿ | Karnataka Election: ಮೇ 10ರಂದು ಕರ್ನಾಟಕ ಚುನಾವಣೆ; ಮೇ 13ಕ್ಕೆ ಫಲಿತಾಂಶ ಎಂದು ಘೋಷಿಸಿದ ಚುನಾವಣಾ ಆಯೋಗ
ಕರ್ನಾಟಕದಲ್ಲಿ ಪ್ರತಿ ಮನೆಗೆ ತಿಂಗಳಿಗೆ 300 ಯೂನಿಟ್ ಉಚಿತ ವಿದ್ಯುತ್, ನಿರುದ್ಯೋಗಿ ಯುವಜನತೆಗೆ ತಿಂಗಳಿಗೆ 3,000 ರೂಪಾಯಿ ನಿರುದ್ಯೋಗ ಭತ್ಯೆ, ಗುಣಮಟ್ಟದ ಆರೋಗ್ಯ ಸೇವೆಗಾಗಿ ಕ್ಲಿನಿಕ್ಗಳು, ಸರ್ಕಾರಿ ಶಾಲೆಗಳ ಅಭಿವೃದ್ಧಿ, ಹಳೆ ಪಿಂಚಣಿ ಯೋಜನೆ ಜಾರಿ ಮುಂತಾದ ಒಟ್ಟು 10 ವಲಯಗಳಿಗೆ ಸಂಬಂಧಿಸಿದ ಪ್ರಮುಖ ಗ್ಯಾರಂಟಿಗಳನ್ನು ಇಂದು ಘೋಷಿಸಲಾಗುತ್ತಿದೆ. ಜತೆಗೆ, ಬೆಂಗಳೂರು ಹಾಗೂ ರಾಜ್ಯದ ಪ್ರಾದೇಶಿಕ ಅಭಿವೃದ್ಧಿಗಾಗಿ ಪ್ರತ್ಯೇಕವಾದ ಗ್ಯಾರಂಟಿಗಳನ್ನು ಘೋಷಿಸುತ್ತಿದ್ದೇವೆ” ಎಂದು ಹೇಳಿದರು.
“ಆಮ್ ಆದ್ಮಿ ಪಾರ್ಟಿಯು ದೆಹಲಿಯಲ್ಲಿ 3ನೇ ಬಾರಿ ಹಾಗೂ ಪಂಜಾಬ್ನಲ್ಲಿ ಮೊದಲ ಬಾರಿ ಅಧಿಕಾರಕ್ಕೆ ಬಂದಿದೆ. ಗೋವಾ ಚುನಾವಣೆಯಲ್ಲಿ ಶೇ. 6ಕ್ಕಿಂತಲೂ ಹೆಚ್ಚು ಮತ ಪಡೆದಿದ್ದೇವೆ. ಗುಜರಾತ್ನಲ್ಲಿ ಶೇ. 14ರಷ್ಟು ಮತ ಪಡೆದಿದ್ದು, ಐವರು ಶಾಸಕರು ಆಯ್ಕೆಯಾಗಿದ್ದಾರೆ. ಈ ಮೂಲಕ ಆಮ್ ಆದ್ಮಿ ಪಾರ್ಟಿಯು ರಾಷ್ಟ್ರೀಯ ಪಕ್ಷದ ಸ್ಥಾನಮಾನಕ್ಕೆ ಕಾನೂನಿನ ಪ್ರಕಾರ ಅರ್ಹವಾಗಿದ್ದರೂ ಚುನಾವಣಾ ಆಯೋಗವು ಇನ್ನೂ ಇದನ್ನು ಅಧಿಕೃತವಾಗಿ ಘೋಷಿಸಿಲ್ಲ. ಸ್ಥಾನಮಾನ ಕೋರಿ ನಾವು ಸಲ್ಲಿಸಿದ್ದ ಅರ್ಜಿಯನ್ನು ಹಲವು ತಿಂಗಳುಗಳಿಂದ ಬಾಕಿ ಉಳಿಸಿಕೊಂಡಿದೆ” ಎಂದು ಸಂಜಯ್ ಸಿಂಗ್ ಬೇಸರ ವ್ಯಕ್ತಪಡಿಸಿದರು.
ಆಮ್ ಆದ್ಮಿ ಪಾರ್ಟಿಯ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಮಾತನಾಡಿ, “ಕಳೆದ ಒಂದು ತಿಂಗಳಿನಿಂದ ಪ್ರಣಾಳಿಕೆ ರಚಿಸುವ ಪ್ರಕ್ರಿಯೆಯನ್ನು ನಡೆಸುತ್ತಿದ್ದೇವೆ. ರಾಜ್ಯದ ಮೂಲೆಮೂಲೆಗಳಿಂದ ಈಗಾಗಲೇ ಸಾವಿರಾರು ಸಲಹೆಗಳು ಬಂದಿವೆ. ಬೇರೆಬೇರೆ ವರ್ಗಗಳ ಜನಸಾಮಾನ್ಯರು, ಯುವಜನತೆ, ಮಹಿಳೆಯರು, ತಜ್ಞರು ಸಲಹೆಗಳನ್ನು ನೀಡುತ್ತಿದ್ದಾರೆ. ಜನರಿಂದ ಜನರಿಗಾಗಿ ಪ್ರಣಾಳಿಕೆ ಸಿದ್ಧಪಡಿಸಲಾಗುತ್ತಿದ್ದು, ಯಾವ್ಯಾವುದನ್ನು ನಮ್ಮಿಂದ ಮಾಡಲು ಸಾಧ್ಯವೋ ಅವುಗಳನ್ನು ಸೇರಿಸುತ್ತಿದ್ದೇವೆ ಎಂದು ತಿಳಿಸಿದರು.
ಆಮ್ ಆದ್ಮಿ ಪಾರ್ಟಿಯ ಗ್ಯಾರಂಟಿಗಳಿಂದಾಗಿ ರಾಜ್ಯದ ಪ್ರತಿ ಕುಟುಂಬಕ್ಕೆ ಪ್ರತಿ ತಿಂಗಳು ಕನಿಷ್ಠ 8 ರಿಂದ 10 ಸಾವಿರ ರೂಪಾಯಿ ಉಳಿತಾಯವಾಗಲಿದೆ. ನಾವು ಇವುಗಳನ್ನು ಗ್ಯಾರಂಟಿ ಕಾರ್ಡ್ ರೂಪದಲ್ಲಿ ನೀಡುತ್ತಿದ್ದು, ಅಧಿಕಾರಕ್ಕೆ ಬಂದು ನಾವು ಇವುಗಳನ್ನು ಜಾರಿಗೆ ತರದಿದ್ದರೆ ನ್ಯಾಯಾಲಯದ ಮೊರೆ ಹೋಗಲು ಜನರಿಗೆ ಅವಕಾಶವಿರುತ್ತದೆ. ರಾಜ್ಯದ ಪ್ರತಿಯೊಂದು ವರ್ಗದ ಜನರ ಸಮಸ್ಯೆಗಳಿಗೆ ಪ್ರಣಾಳಿಕೆಯಲ್ಲಿ ಪರಿಹಾರ ಇರಲಿದೆ” ಎಂದು ಹೇಳಿದರು.
ಇದನ್ನೂ ಓದಿ | Karnataka Elections 2023: ಚುನಾವಣೆ ಪೂರ್ವ ಸಮೀಕ್ಷೆ: ಎಬಿಪಿ ಪ್ರಕಾರ ಕಾಂಗ್ರೆಸ್, ಜೀ ನ್ಯೂಸ್ ಪ್ರಕಾರ ಬಿಜೆಪಿ ಮುನ್ನಡೆ
ಆಮ್ ಆದ್ಮಿ ಪಾರ್ಟಿಯ ರಾಜ್ಯ ಸಂವಹನಾ ಉಸ್ತುವಾರಿ ಬ್ರಿಜೇಶ್ ಕಾಳಪ್ಪ, ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ. ಅಶ್ವಿನ್ ಮಹೇಶ್, ರಾಜ್ಯ ಕಾರ್ಯಾಧ್ಯಕ್ಷ ಮೋಹನ್ ದಾಸರಿ ಮತ್ತಿತರರು ಭಾಗವಹಿಸಿದ್ದರು.
-
ಕರ್ನಾಟಕ13 hours ago
Karnataka Election: ಮೇ 10ರಂದು ಕರ್ನಾಟಕ ಚುನಾವಣೆ; ಮೇ 13ಕ್ಕೆ ಫಲಿತಾಂಶ ಎಂದು ಘೋಷಿಸಿದ ಚುನಾವಣಾ ಆಯೋಗ
-
ಕರ್ನಾಟಕ14 hours ago
Karnataka Election 2023 LIVE: ಕರ್ನಾಟಕದಲ್ಲಿ ಮೇ 10ಕ್ಕೆ ಮತದಾನ, 13ಕ್ಕೆ ರಿಸಲ್ಟ್, ಒಂದೇ ಹಂತದ ಎಲೆಕ್ಷನ್
-
ಕರ್ನಾಟಕ17 hours ago
Karnataka Election: ಕರ್ನಾಟಕ ಚುನಾವಣೆ ದಿನಾಂಕ ಇಂದು ಘೋಷಣೆ, ಇಂದಿನಿಂದಲೇ ನೀತಿ ಸಂಹಿತೆ ಜಾರಿ
-
ಕರ್ನಾಟಕ12 hours ago
Karnataka Election: ನೀತಿ ಸಂಹಿತೆಗೆ ಮೊದಲೇ ತುಂಬಿತು ಅಕ್ರಮದ ಪಾತ್ರೆ: 2018ರ ಹಣದ ಹೊಳೆಯನ್ನು ಈಗಲೇ ಮೀರಿಸಿದ ಕರ್ನಾಟಕ !
-
ಪ್ರಮುಖ ಸುದ್ದಿ8 hours ago
UPI transactions : ಯುಪಿಐ ಬಳಕೆ ಗ್ರಾಹಕರಿಗೆ ಸಂಪೂರ್ಣ ಉಚಿತ ಎಂದ ಎನ್ಪಿಸಿಐ, ಹಾಗಾದರೆ 1.1% ಶುಲ್ಕ ಯಾರಿಗೆ?
-
ಗ್ಯಾಜೆಟ್ಸ್9 hours ago
Google: ಗೂಗಲ್ಗೆ 1337 ಕೋಟಿ ರೂ. ದಂಡ, 30 ದಿನದಲ್ಲಿ ಪಾವತಿಸಲು ನ್ಯಾಯಮಂಡಳಿ ಆದೇಶ!
-
ಕರ್ನಾಟಕ11 hours ago
Karnataka Elections 2023 : ವಲಸಿಗ ಸಚಿವರ ಮೇಲೆ ಬೊಮ್ಮಾಯಿ ನಿಗಾ; ಹೆಬ್ಬಾರ್, ಮುನಿರತ್ನ ಕರೆಸಿಕೊಂಡು ಚರ್ಚೆ
-
ಕರ್ನಾಟಕ15 hours ago
Karnataka Elections 2023 : 8 ಸಚಿವರ ಸಹಿತ 35 ಶಾಸಕರಿಗೆ ಸೋಲಿನ ಭೀತಿ, ಈ ಬಾರಿ ಬಿಜೆಪಿಯಲ್ಲಿ 50 ಹೊಸ ಮುಖ?