Site icon Vistara News

Drought Relief: ಮುಂದಿನ ವಾರದೊಳಗೆ ರೈತರಿಗೆ ಬರ ಪರಿಹಾರ ವಿತರಿಸಿ: ಸಿಎಂ ಸೂಚನೆ

Siddaramaiah

ಬೆಳಗಾವಿ: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಕಾರಣಕ್ಕೆ ಬೆಳೆ ನಾಶದಿಂದ ಸಂಕಷ್ಟಕ್ಕೆ ಒಳಗಾಗಿರುವ ರೈತರಿಗೆ ಈಗಾಗಲೇ ಸರ್ಕಾರ ಘೋಷಿಸಿರುವ ಎರಡು ಸಾವಿರ ರೂ. ವರೆಗಿನ ಮೊದಲ ಹಂತದ ಪರಿಹಾರವನ್ನು (Drought Relief) ಮುಂದಿನ ವಾರದೊಳಗೆ ವಿತರಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಸೂಚಿಸಿದರು.

ನಗರದ ಸುವರ್ಣ ವಿಧಾನಸೌಧದಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಸಭೆ ನಡೆಸಿ ಎಲ್ಲರ ಕಾರ್ಯಕ್ಷಮತೆಯನ್ನು ಮೌಲ್ಯಮಾಪನ ಮಾಡಿ ಅಗತ್ಯ ಸಲಹೆ ಮತ್ತು ಸೂಚನೆಗಳನ್ನು ನೀಡಿದ ಅವರು, ರಾಜ್ಯದಲ್ಲಿ ತಲೆದೋರಿರುವ ತೀವ್ರ ಬರಪರಿಸ್ಥಿತಿಯ ಹಿನ್ನೆಲೆಯಲ್ಲಿ ಅಧಿಕಾರಿಗಳು ಮತ್ತಷ್ಟು ಯುದ್ಧೋಪಾದಿಯಲ್ಲಿ ಕೆಲಸ ಮುಂದುವರೆಬೇಕು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಜಿಲ್ಲೆಗಳಿಗೆ ಭೇಟಿ ನೀಡಿರುವ, ಪರಿಶೀಲನೆ ನಡೆಸಿರುವ ಕುರಿತಾದ ಸಮಗ್ರ ಮಾಹಿತಿಯನ್ನು ಜಿಲ್ಲಾ ಉಸ್ತುವಾರಿ ಸಚಿವರಿಗೆ ಅಂಕಿ-ಅಂಶಗಳ ಸಹಿತ ಒದಗಿಸಬೇಕು ಎಂದು ಸೂಚನೆ ನೀಡಿದರು.

ರೈತರಿಗೆ ಮೊದಲ ಹಂತದಲ್ಲಿ 2,000 ರೂ. ವರೆಗೆ ಪರಿಹಾರ ಘೋಷಿಸಲಾಗಿದ್ದು, ಈ ಪರಿಹಾರವನ್ನು ತ್ವರಿತವಾಗಿ ವಿತರಿಸಲು ಮಾರ್ಗಸೂಚಿಗಳನ್ನು ರೂಪಿಸಿ, ಡಿ.ಬಿ.ಟಿ. ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು. ಸರ್ಕಾರ ಸಮರ್ಪಕವಾಗಿ ನಡೆಯಲು ನಿಮ್ಮ ಪಾತ್ರ ಬಹುಮುಖ್ಯ. ನೀವು ಸರ್ಕಾರದ ಕಣ್ಣು, ಕಿವಿ ಇದ್ದಹಾಗೆ ಎಂದು ತಿಳಿಸಿದ ಮುಖ್ಯಮಂತ್ರಿಗಳು, ರಾಜಕಾರಣಿಗಳು, ಅಧಿಕಾರಿಗಳು- ನಾವೆಲ್ಲರೂ ಜನರಿಗೋಸ್ಕರ ಇರುವುದು. ಜನರ ಕೆಲಸವನ್ನು ವೇಗವಾಗಿ ಮಾಡಬೇಕು ಎಂದು ಕಿವಿಮಾತು ಹೇಳಿದರು.

ಇದನ್ನೂ ಓದಿ | Health Card: ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್‌ಗೆ ಹೊಸ ರೂಪ; ಸಿಎಂ ಚಾಲನೆ

ಆಯವ್ಯಯ ಭಾಷಣದಲ್ಲಿ 143 ಘೋಷಣೆಗಳನ್ನು ಮಾಡಲಾಗಿದ್ದು, ಇದರಲ್ಲಿ ಈಗಾಗಲೇ 83 ಘೋಷಣೆಗಳಿಗೆ ಸರ್ಕಾರಿ ಆದೇಶ ಹೊರಡಿಸಿ, ಕಾರ್ಯಗತಗೊಳಿಸಲಾಗಿದೆ. ಉಳಿದ ಘೋಷಣೆಗಳನ್ನೂ ಶೀಘ್ರವೇ ಅನುಷ್ಠಾನಕ್ಕೆ ತರಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಗ್ಯಾರಂಟಿ ಯೋಜನೆಗಳಲ್ಲಿ ನೋಂದಾಯಿಸಿಕೊಂಡು ಇನ್ನೂ ಸೌಲಭ್ಯ ದೊರಕದ ಅರ್ಹ ಕೆಲವು ಫಲಾನುಭವಿಗಳಿಗೆ ಸೌಲಭ್ಯ ದೊರಕಲು ಇರುವ ತಾಂತ್ರಿಕ ಅಡಚಣೆಗಳನ್ನು ಶೀರ್ಘವೇ ನಿವಾರಿಸಬೇಕು. ಅಧಿವೇಶನ ನಡೆಯುವ ಸಂದರ್ಭದಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿದ್ದು, ಸಚಿವರಿಗೆ ಸೂಕ್ತ ಸಲಹೆ ನೀಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಇಲಾಖೆಗಳಲ್ಲಿ ಕಡತಗಳ ವಿಲೇವಾರಿ ಸಮರ್ಪಕವಾಗಿ ನಡೆಯಬೇಕು. ಸಚಿವ ಸಂಪುಟ ಸಭೆಯಲ್ಲಿಯೂ ಬಾಕಿ ಕಡತಗಳ ಕುರಿತು ಪ್ರಗತಿ ಪರಿಶೀಲನೆ ನಡೆಸಲಾಗುವುದು. ವಿವಿಧ ಇಲಾಖೆಗಳಲ್ಲಿ ನ್ಯಾಯಾಲಯ ಉಲ್ಲಂಘನೆಯ ಪ್ರಕರಣಗಳನ್ನು ಅಡ್ವೊಕೇಟ್‌ ಜನರಲ್‌ ಜೊತೆ ಚರ್ಚಿಸಿ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಬೇಕು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಜಿಲ್ಲಾಧಿಕಾರಿಗಳು ಜನ ಸಂಪರ್ಕ ಸಭೆ ನಡೆಸುತ್ತಿದ್ದಾರೆಯೇ ಎಂಬುದನ್ನು ಪರಿಶೀಲಿಸಬೇಕು. ನಿಮ್ಮ ಕಾರ್ಯವೈಖರಿಗೆ ಅನುಗುಣವಾಗಿ ಸರ್ಕಾರಕ್ಕೆ ಹೆಸರು ಬರುತ್ತದೆ ಎಂದು ತಿಳಿಸಿದರು.

ಅನಿವಾರ್ಯ ಸಂದರ್ಭಗಳನ್ನು ಹೊರತುಪಡಿಸಿ, ಕಡತಗಳಲ್ಲಿ ಕನ್ನಡದಲ್ಲಿಯೇ ಟಿಪ್ಪಣಿ ಬರೆಯಬೇಕು. ಕನ್ನಡ ನಮ್ಮ ರಾಜ್ಯ ಭಾಷೆ, ಸಾರ್ವಭೌಮ ಭಾಷೆ ಎಂದ ಅವರು, ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕುವ ಕುರಿತು ಆದ್ಯತೆ ನೀಡಲು ಸಲಹೆ ನೀಡುತ್ತಾ, ಟೆಂಡರ್‌ ಅಂದಾಜು ಸಿದ್ಧಪಡಿಸುವಾಗಲೇ ಎಲ್ಲ ಅಂಶಗಳನ್ನೂ ಒಳಗೊಂಡಂತೆ ಸಮಗ್ರವಾಗಿ ಅಂದಾಜನ್ನು ಸಿದ್ಧಪಡಿಸಬೇಕು. ಪರಿಷ್ಕೃತ ಅಂದಾಜುಗಳನ್ನು ಸಲ್ಲಿಸುವುದರಿಂದ ಯೋಜನೆಯ ವೆಚ್ಚ ಗಣನೀಯವಾಗಿ ಹೆಚ್ಚುತ್ತಿರುವುದಲ್ಲದೆ ಅನುಷ್ಠಾನವೂ ವಿಳಂಬವಾಗುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದಕ್ಕೆ ಸಂಬಂಧಿಸಿದಂತೆ ಆರ್ಥಿಕ ಇಲಾಖೆಯು ಹಿರಿಯ ಅಧಿಕಾರಿಗಳ ಸಮಿತಿ ರಚಿಸಿದ್ದು, ಈ ಸಮಿತಿಯು ಮಾರ್ಗಸೂಚಿಗಳನ್ನು ರೂಪಿಸುತ್ತಿದೆ. ಇದು ಅಂತಿಮ ಹಂತದಲ್ಲಿದ್ದು, ಶೀಘ್ರವೇ ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗುವುದು ಎಂದು ಆರ್ಥಿಕ ಇಲಾಖೆ ಹಾಗೂ ಮುಖ್ಯಮಂತ್ರಿಯವರ ಅಪರ ಕಾರ್ಯದರ್ಶಿ ಎಲ್.ಕೆ. ಅತೀಕ್‌ ತಿಳಿಸಿದರು.

ತೆರಿಗೆ ಸಂಗ್ರಹ ಇಲಾಖೆಗಳು ಇನ್ನಷ್ಟು ಚುರುಕಾಗಿ ಕಾರ್ಯನಿರ್ವಹಿಸಬೇಕು. ಜೊತೆಗೆ ತೆರಿಗೆಯೇತರ ರಾಜಸ್ವ ಸಂಗ್ರಹ ಹೆಚ್ಚಳ ಮಾಡುವ ಬಗ್ಗೆ ಆಡಳಿತ ಸುಧಾರಣಾ ಆಯೋಗ-2 ಮಾಡಿರುವ ಶಿಫಾರಸುಗಳನ್ನು ಎಲ್ಲ ಕಾರ್ಯದರ್ಶಿಗಳು ಅಧ್ಯಯನ ಮಾಡುವಂತೆ ಸೂಚಿಸಿದರು.

ಇದನ್ನೂ ಓದಿ | Belagavi Winter Session: ಕೊಬ್ಬರಿಗೆ 1500 ರೂ. ಪ್ರೋತ್ಸಾಹ ಧನ: ಸಚಿವ ಶಿವಾನಂದ ಪಾಟೀಲ್ ಘೋಷಣೆ

ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಕೆ.ಗೋವಿಂದರಾಜು ಹಾಗೂ ನಸೀರ್‌ ಅಹ್ಮದ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯೆಲ್‌, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಡಾ. ಶಾಲಿನಿ ರಜನೀಶ್‌ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version