Site icon Vistara News

ED Raid: ಇಡಿಯಿಂದ ಪಾರಾಗಲು ಎಸ್‌ಐಟಿ ವಿಚಾರಣೆಗೆ ಹಾಜರಾದ ಶಾಸಕ ದದ್ದಲ್‌!

ED Raid valmiki corporation scam

ಬೆಂಗಳೂರು: ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧಿಸಿ ಮಾಜಿ ಸಚಿವ ಬಿ.ನಾಗೇಂದ್ರರನ್ನು ಇಡಿ ವಶಕ್ಕೆ ಪಡೆದ ಬೆನ್ನಲ್ಲೇ ವಾಲ್ಮೀಕಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್‌ಗಾಗಿ ಹುಡುಕಾಟ ನಡೆಸುತ್ತಿತ್ತು. ಆದರೆ, ಎಲ್ಲೂ ಕಾಣಿಸಿಕೊಂಡಿರದಿದ್ದ ಬಸನಗೌಡ ದದ್ದಲ್ ಇದೀಗ ಎಸ್ಐಟಿ ಕಚೇರಿ ಬಳಿ ಪ್ರತ್ಯಕ್ಷವಾಗಿದ್ದಾರೆ. ಇಡಿ ವಶಕ್ಕೆ ಪಡೆದರೆ ಸಂಕಷ್ಟ ಎದುರಾಗಬಹುದು ಎಂದು ಎಸ್‌ಐಟಿ ವಿಚಾರಣೆಗೆ ಹಾಜರಾಗಿದ್ದಾರೆ.

ವಾಲ್ಮೀಕಿ ನಿಗಮ ಅಕ್ರಮ (Valmiki Corporation Scam) ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ನೊಟೀಸ್ ನೀಡಿದ ಹಿನ್ನೆಲೆಯಲ್ಲಿ ದದ್ದಲ್ ಹಾಜರಾಗಿದ್ದಾರೆ. ಇದಕ್ಕೂ ಮೊದಲು ಯಲಹಂಕ ಬಳಿ ಇರುವ ಬಸನಗೌಡ ದದ್ದಲ್ ಮನೆಗೆ ಇಡಿ ಅಧಿಕಾರಿಗಳು ತೆರಳಿದ್ದರು. ಅವರು ಮನೆಯಲ್ಲಿರದ ಕಾರಣ ಇಡಿ ಅಧಿಕಾರಿಗಳು ವಾಪಸ್‌ ಆಗಿದ್ದರು. ನಂತರ ವಿಧಾನಸೌಧ ಹಾಗೂ ಶಾಸಕರ ಭವನದಲ್ಲಿ ಕೂಡ ಅವರಿಗಾಗಿ ಇಡಿ ಅಧಿಕಾರಿಗಳು ಹುಡುಕಾಟ ನಡೆಸಿದ್ದರು. ಈ ವೇಳೆ ಎಲ್ಲೂ ಕಾಣಿಸಿಕೊಳ್ಳದಿದ್ದ ದದ್ದಲ್ ಅವರು ನೇರವಾಗಿ ಎಸ್‌ಐಟಿ ಕಚೇರಿಗೆ ತೆರಳಿದ್ದಾರೆ.

ಇಡಿ ಬಂಧನದಿಂದ ತಪ್ಪಿಸಿಕೊಳ್ಳಲು ಪ್ಲ್ಯಾನ್ ಮಾಡಿದ್ರಾ ದದ್ದಲ್?

ಇಡಿ ಬಂಧನದಿಂದ ತಪ್ಪಿಸಿಕೊಳ್ಳಲು ಬಸನಗೌಡ ದದ್ದಲ್ ಮೆಗಾ ಪ್ಲ್ಯಾನ್ ಮಾಡಿದ್ದಾರೆ ಎನ್ನಲಾಗಿದೆ. ಸೋಮವಾರದವರೆಗೂ ಇಡಿಯಿಂದ ತಪ್ಪಿಸಿಕೊಂಡರೆ ನಂತರ ಅರೆಸ್ಟ್ ಸುಲಭವಿಲ್ಲ. ಸೋಮವಾರದಿಂದ ಹದಿನೈದು ದಿನಗಳ ಕಾಲ ಅಧಿವೇಶನ ನಡೆಯಲಿದೆ. ಅಧಿವೇಶನ ನಡೆಯುವಾಗ ಸ್ಪೀಕರ್ ಅನುಮತಿ ಇಲ್ಲದೇ ಅರೆಸ್ಟ್ ಮಾಡಲು ಸಾಧ್ಯವಿಲ್ಲ. ಹೀಗಾಗಿ ದದ್ದಲ್‌ ಇಂದು ಎಸ್‌ಐಟಿ ವಿಚಾರಣೆಗೆ ಹಾಜರಾಗಿದ್ದಾರೆ ಎನ್ನಲಾಗಿದೆ.

ಬಂದನ ಮಾಡಬೇಕಾದರೆ ಸ್ಪೀಕರ್ ಅನುಮತಿ ಪಡೆದು ಪ್ರಕರಣದಲ್ಲಿ ಆರೋಪಿ ಬಂಧನ ಮೇಲ್ನೋಟಕ್ಕೆ ಅಗತ್ಯವಿದೆ ಎಂದು ಮನವರಿಕೆ ಮಾಡಬೇಕು. ಇಡಿ ಅಧಿಕಾರಿಗಳ ಮನವಿಯನ್ನು ಸ್ಪೀಕರ್ ಒಪ್ಪಬಹುದು ಅಥವಾ ತಿರಸ್ಕರಿಸಬಹುದು. ಒಪ್ಪಿದ್ರೆ ಬಂಧಿಸಬಹುದು, ತಿರಸ್ಕರಿಸಿದರೆ ಬಂಧನ ಅಷ್ಟು ಸಲುಭವಲ್ಲ. ಹೀಗಾಗಿ ಇಂದು ಎಸ್ಐಟಿ ಮುಂದೆ ಇಡೀ ದಿನ ದದ್ದಲ್ ವಿಚಾರಣೆ ಎದುರಿಸಲಿದ್ದಾರೆ.

ಹೇಳಿಕೆ ಸಮಯದಲ್ಲಿ ಎಸ್ಐಟಿಗೆ ಅರೆಸ್ಟ್ ಮಾಡುವ ಅವಶ್ಯಕತೆ ಇದ್ದರೆ ವಶಕ್ಕೆ ಪಡೆಯಬಹುದು. ವಶಕ್ಕೆ ಪಡೆದ ಬಳಿಕ ಸ್ಪೀಕರ್‌ಗೆ ಎಸ್ಐಟಿ ಮಾಹಿತಿ ಕೊಡಬೇಕು. ಸೋಮವಾರದವರೆಗೂ ದದ್ದಲ್ ಬಂಧನವಾಗದಿದ್ದರೆ, ಬಳಿಕ ಬಂಧಿಸಲು ಸ್ಪೀಕರ್ ಅನುಮತಿ ಕಡ್ಡಾಯವಾಗಿ ಬೇಕು. ಹೀಗಾಗಿ ಇಡಿ ಬಂಧನದಿಂದ ತಪ್ಪಿಸಿಕೊಳ್ಳಲು ದದ್ದಲ್ ಇಂದು ಎಸ್ಐಟಿ ನೆರವು ಪಡೆದಿದ್ದಾರೆ ಎನ್ನಲಾಗಿದೆ.

40 ಗಂಟೆಗಳ ತಪಾಸಣೆ ಬಳಿಕ ಕೊನೆಗೂ ಮಾಜಿ ಸಚಿವ ನಾಗೇಂದ್ರ ಇಡಿ ವಶಕ್ಕೆ

Valmiki Corporation Scam

ಬೆಂಗಳೂರು: ನಿರಂತರ 40 ಗಂಟೆಗಳ ತಪಾಸಣೆ ಹಾಗೂ ತನಿಖೆಯ ಬಳಿಕ, ವಾಲ್ಮೀಕಿ ನಿಗಮ ಹಗರಣ (Valmiki Corporation Scam) ಕುರಿತು ಹೆಚ್ಚಿನ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯ (Enforcement Directorate) ಅಧಿಕಾರಿಗಳು ಮಾಜಿ ಸಚಿವ ಬಿ. ನಾಗೇಂದ್ರ (Ex minister B Nagendra) ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮೊನ್ನೆ ಮುಂಜಾನೆಯಿಂದ ನಾಗೇಂದ್ರ ಮನೆ ಹಾಗೂ ಕಚೇರಿ ಮುಂತಾದೆಡೆ ಇಡಿ ದಾಳಿ (ED Raid) ನಡೆದಿತ್ತು.

40 ಗಂಟೆಗಳ ಕಾಲ ನಾಗೇಂದ್ರ ಹಾಗೂ ಕುಟುಂಬದವರನ್ನು ಮನೆಯಿಂದ ಹೊರಬಿಡದ ಇಡಿ ಅಧಿಕಾರಿಗಳು ನಿರಂತರವಾಗಿ ಪ್ರಶ್ನೆ ಮಾಡಿದ್ದರು. ವಾಲ್ಮೀಕಿ ನಿಗಮದಲ್ಲಿ ನಡೆದ 185 ಕೋಟಿ ರೂಪಾಯಿಗಳ ಹಗರಣದ ಬಗ್ಗೆ ಯಾವುದೇ ಸುಳಿವು ತಮಗಿಲ್ಲ ಎಂದೇ ನಾಗೇಂದ್ರ ಹೇಳಿದ್ದರು. ಆದರೆ ನಾಗೇಂದ್ರ ಅವರ ಆಪ್ತ ಸಹಾಯಕ ಹರೀಶ್‌ ಹೇಳಿಕೆಯಿಂದಾಗಿ ನಾಗೇಂದ್ರ ಹೇಳಿಕೆಯ ಬಗ್ಗೆ ಅನುಮಾನ ಮೂಡಿದ್ದು, ಹೆಚ್ಚಿನ ತನಿಖೆಗಾಗಿ ಅವರನ್ನು ಕರೆದೊಯ್ಯಲಾಗಿದೆ.

ಇಂದು ಬೆಂಗಳೂರಿನ ಇಡಿ ಕಚೇರಿಯಲ್ಲಿ ಅಧಿಕಾರಿಗಳು ಅವರನ್ನು ಪ್ರಶ್ನಿಸಲಿದ್ದಾರೆ. ನಾಗೇಂದ್ರ ಸಿಎ ಹರೀಶ್‌ ಕೂಡ ನಿನ್ನೆಯಿಂದ ಇಡಿ ವಶದಲ್ಲಿದ್ದಾರೆ. ಯೂನಿಯನ್‌ ಬ್ಯಾಂಕ್‌ನಲ್ಲಿ ಸುಳ್ಳು ದಾಖಲೆ ನೀಡಿ ಅಕ್ರಮ ಖಾತೆ ತೆರೆದು ಕೋಟ್ಯಂತರ ರೂಪಾಯಿ ನಿಗಮದ ಹಣವನ್ನು ಅಲ್ಲಿಗೆ ವರ್ಗಾಯಿಸಿದ ಕುರಿತು ಹರೀಶ್‌ ಹೇಳಿಕೆಯಲ್ಲಿ ಕೆಲವು ಸಾಕ್ಷಿಗಳು ದೊರೆತಿವೆ. ಬ್ಯಾಂಕ್‌ ಸಿಸಿಟಿವಿ ರೆಕಾರ್ಡ್‌ಗಳನ್ನು ಚೆಕ್‌ ಮಾಡಿದಾಗಲೂ, ನಾಗೇಂದ್ರ ಸಿಎ ಹಾಗೂ ಶಾಸಕ ದದ್ದಲ್‌ ಸಿಎ ಅಲ್ಲಿಗೆ ಬಂದು ಹೋದ ಕುರಿತು ದಾಖಲೆ ಲಭ್ಯವಾಗಿದೆ. 50 ಲಕ್ಷ ಡೀಲ್‌ ನಡೆಸಲಾಗಿರುವ ಕುರಿತು ಬಂಧಿತರಾಗಿರುವ ಬ್ಯಾಂಕ್‌ ಅಧಿಕಾರಿಗಳು ಬಾಯಿ ಬಿಟ್ಟಿದ್ದಾರೆ. ಹೀಗಾಗಿ ಈಗ ಹೆಚ್ಚಿನ ತನಿಖೆಯ ಉರುಳು ನಾಗೇಂದ್ರ ಕೊರಳಿಗೆ ಸುತ್ತಿಕೊಂಡಿದೆ.

ಬಿ. ನಾಗೇಂದ್ರ ಹಾಗೂ ಬಸವನಗೌಡ ದದ್ದಲ್ ನಿವಾಸಗಳ ಜತೆಗೆ ಮೂವರು ಯೂನಿಯನ್ ಬ್ಯಾಂಕ್ ಸಿಬ್ಬಂದಿ ಮನೆಯ ಮೇಲೂ ಇಡಿ ದಾಳಿ ನಡೆಸಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರವಾದ್ದರಿಂದ ವಸಂತನಗರದಲ್ಲಿರುವ ವಾಲ್ಮೀಕಿ ನಿಗಮದ ಕಚೇರಿಗೂ ಇಡಿ ರೇಡ್‌ ಮಾಡಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದ ಹಿನ್ನೆಲೆಯಲ್ಲಿ ಇಡಿ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದೆ.

ಆರೋಪಿ ಸತ್ಯನಾರಾಯಣ್‌ನಿಂದ ವಾಲ್ಮೀಕಿ ನಿಗಮದ ಎಂ.ಡಿ. ಪದ್ಮನಾಭ್ ಹಣ ತಂದಿದ್ದರು ಎನ್ನಲಾಗಿದೆ. ಆ ಹಣದಲ್ಲಿ ನಾಗೇಂದ್ರ ಪಿಎ ಹರೀಶ್‌ 25 ಲಕ್ಷ ಹಣ ಪಡೆದಿದ್ದ. ದದ್ದಲ್ ಪಿಎ ಪಂಪಣ್ಣ ಕೂಡ 55 ಲಕ್ಷ ಹಣ ಪಡೆದಿದ್ದ. ಈ ಬಗ್ಗೆ ಪರಿಶೀಲನೆ ವೇಳೆ ಹರೀಶ್ ಬಾಯ್ಬಿಟ್ಟ ಹಿನ್ನೆಲೆಯಲ್ಲಿ ಆತನನ್ನು ಇಡಿ ವಶಕ್ಕೆ ಪಡೆದಿದೆ. ಪ್ರಕರಣದಲ್ಲಿ ಸಚಿವ ನಾಗೇಂದ್ರ ಪರ 50ರಿಂದ 60 ಕೋಟಿ ವ್ಯವಹಾರ ನಡೆದಿರುವ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಹೆಚ್ಚಿನ ವಿಚಾರಣೆ ನಡೆದಿದೆ.

ನಾಗೇಂದ್ರ ಅವರಿಗೆ ಸೇರಿದ ಡಾಲರ್ಸ್ ಕಾಲೋನಿಯ ಮನೆ ಮೇಲೆ ದಾಳಿ ಮಾಡಲಾಗಿದೆ. ಅವರ ಆಸ್ತಿಗಳಿರುವ ಬಿಇಎಲ್ ರೋಡ್, ಮತ್ತಿಕೆರೆ ಹಾಗೂ ಮಲ್ಲೇಶ್ವರಂ ಸೇರಿದಂತೆ ಬೆಂಗಳೂರಿನಲ್ಲಿ ನಾಲ್ಕು ಕಡೆ ದಾಳಿಗಳು ನಡೆದಿವೆ. ಬಳ್ಳಾರಿಯ ಅವರ ಮನೆಯ ಮೇಲೂ ದಾಳಿ ನಡೆಸಲಾಗಿದೆ. ಬೆಂಗಳೂರು ಹೊರತುಪಡಿಸಿ ರಾಯಚೂರು ಸೇರಿದಂತೆ ಬೇರೆ ಬೇರೆ ಜಿಲ್ಲೆಗಳಲ್ಲಿಯೂ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಪ್ರಕರಣದಲ್ಲಿ ಸಿಬಿಐ ಮಧ್ಯೆ ಪ್ರವೇಶಿಸಬಹುದು ಎಂಬ ಮಾಹಿತಿ ದೊರೆತಿತ್ತು.

ಇದನ್ನೂ ಓದಿ | ED Raid: ʼಕನ್ನಡದ ಕೋಟ್ಯಾಧಿಪತಿʼ ಶೋನಲ್ಲಿ ಪ್ರಶ್ನೆಗೆ ಉತ್ತರಿಸಿ 50 ಲಕ್ಷ ಗೆದ್ದಿದ್ದ ಪಂಪಣ್ಣ ಈಗ ಇಡಿ ಪ್ರಶ್ನೆಗೆ ವಿಲವಿಲ!

ವಾಲ್ಮೀಕಿ ನಿಗಮದ ಹಗರಣದಲ್ಲಿ 185 ಕೋಟಿ ರೂ. ಅವ್ಯವಹಾರ ನಡೆದಿತ್ತು. ಇದರ ವ್ಯಾಪ್ತಿ ಕೆಳಹಂತದ ಅಧಿಕಾರಿಗಳಿಂದ ಹಿಡಿದು ಮೇಲಿನವರೆಗೂ ವ್ಯಾಪಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿ ಆತ್ಮಹತ್ಯೆ ಮಾಡಿಕೊಂಡ ಚಂದ್ರಶೇಖರ್‌ ಡೆತ್‌ನೋಟ್‌ನಲ್ಲಿಯೂ ಸಚಿವರ ಬಗ್ಗೆ ಉಲ್ಲೇಖ ಇದೆ.

Exit mobile version