Site icon Vistara News

KPTCL ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ: ವರದಿ ಸಲ್ಲಿಕೆಗೆ ಸಮಿತಿ ರಚನೆ

KPTCL

ಬೆಂಗಳೂರು: ಕೆಪಿಟಿಸಿಎಲ್‌ (KPTCL) ಮತ್ತು ಎಸ್ಕಾಂಗಳ ಹೊರಗುತ್ತಿಗೆ ನೌಕರರಿಗೆ ಇಂಧನ ಇಲಾಖೆ ಸಿಹಿ ಸುದ್ದಿ ನೀಡಿದೆ. 15-20 ವರ್ಷಗಳಿಂದ ಕೆಲಸ ಮಾಡುತ್ತಿರುವ ಹೊರಗುತ್ತಿಗೆ ನೌಕರರನ್ನು ಒಳಗುತ್ತಿಗೆ ಆಧಾರದಲ್ಲಿ ನೇಮಿಸಿಕೊಂಡು ಸೇವಾ ಭದ್ರತೆ ಒದಗಿಸಲು ಇಂಧನ ಇಲಾಖೆ ಚಿಂತನೆ ನಡೆಸಿದೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಇಂಧನ ಸಚಿವ ಇಂಧನ ಸಚಿವ ಕೆ.ಕೆ. ಜಾರ್ಜ್‌ ಅವರು, ಕೆಪಿಟಿಸಿಎಲ್‌ ಮತ್ತು ಎಸ್ಕಾಂಗಳಲ್ಲಿ ತಾಂತ್ರಿಕ ವಿಭಾಗದಲ್ಲಿ 15-20 ವರ್ಷಗಳಿಂದ ಕೆಲಸ ಮಾಡುತ್ತಿರುವ ಹೊರಗುತ್ತಿಗೆ ನೌಕರರನ್ನು ಒಳಗುತ್ತಿಗೆ ಆಧಾರದಲ್ಲಿ ನೇಮಿಸಿಕೊಂಡು ಸೇವಾ ಭದ್ರತೆ ಒದಗಿಸುವ ವಿಷಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ನಿಟ್ಟಿನಲ್ಲಿ ಕಾನೂನಿನ ಅವಕಾಶಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಕೆಪಿಟಿಸಿಎಲ್ ಮತ್ತು ಎಸ್ಕಾಂಗಳಲ್ಲಿ ಸ್ಟೇಷನ್ ಆಪರೇಟರ್‌ಗಳು, ಸ್ಟೇಷನ್ ಸಹಾಯಕರು, ಗ್ಯಾಂಗ್ ಮೆನ್ ಮತ್ತು ಮೀಟರ್ ರೀಡರ್ ಹುದ್ದೆಗಳಲ್ಲಿ ಸಾಕಷ್ಟು ಮಂದಿ 15-20 ವರ್ಷಗಳಿಗಿಂತ ಹೆಚ್ಚು ವರ್ಷಗಳಿಂದ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಸೇವಾ ಭದ್ರತೆ ಒದಗಿಸಿ, ಒಳಗುತ್ತಿಗೆ ವ್ಯಾಪ್ತಿಗೆ ತರಲು ಸರ್ಕಾರ ಯೋಚಿಸಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Toilet Cleaning: ಮಕ್ಕಳಿಂದ ಶೌಚಾಲಯ ಸ್ವಚ್ಛತೆ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸೂಚನೆ

ಈ ಪ್ರಕ್ರಿಯೆಯ ಸಾಧಕ-ಬಾಧಕಗಳ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸಲು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದ್ದು, ಸಮಿತಿಯು ಈಗಾಗಲೇ ಒಂದು ಸುತ್ತಿನ ಸಮಾಲೋಚನೆ ನಡೆಸಿದೆ. ವಿವಿಧ ಹುದ್ದೆಗಳಲ್ಲಿ ದಶಕಕ್ಕೂ ಹೆಚ್ಚು ಕಾಲ ಕೆಲಸ ಮಾಡುತ್ತಿರುವವರನ್ನು ಒಳಗುತ್ತಿಗೆಗೆ ಒಳಪಡಿಸುವ ಕುರಿತು ನಿಯಮಗಳಲ್ಲಿ ಅವಕಾಶಗಳಿರುವ ಬಗ್ಗೆ ಪರಿಶೀಲಿಸಿ ಇದೇ ಡಿಸೆಂಬರ್ 29ರೊಳಗೆ ವರದಿ ಸಲ್ಲಿಸಲು ಸೂಚಿಸಲಾಗಿದೆ. ಈ ವರದಿ ಆಧರಿಸಿ ಸರ್ಕಾರ ಮುಂದಿನ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.

Exit mobile version