Site icon Vistara News

Hassan News: ಮಾಜಿ ಸಚಿವ ಎಚ್‌.ಡಿ. ರೇವಣ್ಣ ಆಪ್ತನ ಮೇಲೆ ದುಷ್ಕರ್ಮಿಗಳ ದಾಳಿ; ಸ್ವಲ್ಪದರಲ್ಲೇ ಪಾರು!

Ashwath

ಹಾಸನ: ಮಾಜಿ ಸಚಿವ ಎಚ್‌.ಡಿ. ರೇವಣ್ಣ ಆಪ್ತ ಹಾಗೂ ಗುತ್ತಿಗೆದಾರನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿರುವ ಘಟನೆ ಜಿಲ್ಲೆಯ (Hassan News) ಹೊಳೆನರಸೀಪುರ ತಾಲೂಕಿನ ಸೂರನಹಳ್ಳಿ ಗ್ರಾಮದ ಬಳಿ ನಡೆದಿದೆ. ಈ ವೇಳೆ ಅದೃಷ್ಟವಶಾತ್ ಕೂದಲೆಳೆ ಅಂತರದಲ್ಲಿ ಪ್ರಥಮ ದರ್ಜೆ ಗುತ್ತಿಗೆದಾರ‌ ಪ್ರಾಣ ಉಳಿಸಿಕೊಂಡಿದ್ದಾರೆ.

ಗುತ್ತಿಗೆದಾರ ಅಶ್ವತ್ಥ್‌ ದಾಳಿಗೊಳಗಾದವರು. ಇವರು ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಆಪ್ತರಾಗಿದ್ದಾರೆ. ಕೆಲಕಾಲ ಎಚ್.ಡಿ.ರೇವಣ್ಣ ಅವರ ನಿವಾಸದಲ್ಲಿದ್ದು ಚನ್ನರಾಯಪಟ್ಟಣದ ತಮ್ಮ ನಿವಾಸಕ್ಕೆ ಫಾರ್ಚುನರ್ ಕಾರಿನಲ್ಲಿ ಹೋಗುತ್ತಿದ್ದಾಗ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.

ಅಶ್ವತ್ಥ್‌ ಅವರು ಮನೆಗೆ ಹೊರಟಿದ್ದ ಬಗ್ಗೆ ಮಾಹಿತಿ ಪಡೆದ ಐದಾರು ದುರುಳರು, ಸೂರನಹಳ್ಳಿ ಹಂಪ್ಸ್ ಬಳಿ ಕಾರಿನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ, ಕಲ್ಲು ತೂರಾಟ ಮಾಡಿದ್ದಾರೆ. ಕಾರಿನ ಗ್ಲಾಸ್ ಮೇಲೆ ಕಲ್ಲು ಎತ್ತಿಹಾಕಿ ಮಾರಕಾಸ್ತ್ರಗಳಿಂದ ಕೊಲೆ ಮಾಡಲು ಮುಂದಾಗಿದ್ದಾರೆ. ಕೂಡಲೇ ಕಾರು ರಿವರ್ಸ್ ತೆಗೆದು ಗುತ್ತಿಗೆ ದಾರ ಎಸ್ಕೇಪ್‌ ಆಗಿದ್ದಾರೆ. ಈ ವೇಳೆ ಮೂಡಲಹಿಪ್ಪೆ ಗ್ರಾಮದವರೆಗೂ ಕಾರನ್ನು ಹಿಂಬಾಲಿಸಿದ್ದಾರೆ. ನಂತರ ಗುತ್ತಿಗೆದಾರ ಅದೃಷ್ಟವಶಾತ್‌ ಪ್ರಾಣಾಪಾಯದಿಂದ ಬಚಾವ್‌ ಆಗಿದ್ದಾರೆ.

ಇದನ್ನೂ ಓದಿ | Chaitra Fraud Case : ಚೈತ್ರಾ ವಂಚನೆ ಪ್ರಕರಣ; ವಜ್ರದೇಹಿ ಸ್ವಾಮೀಜಿಗೆ ಸಿಸಿಬಿ ನೋಟಿಸ್‌

ಚನ್ನರಾಯಪಟ್ಟಣ ಪೊಲೀಸ್ ಠಾಣೆಗೆ ಅಶ್ವತ್ಥ್ ದೂರು ನೀಡಿದ್ದು, ಸ್ಥಳಕ್ಕೆ ಮಾಜಿ ಸಚಿವ ಎಚ್.ಡಿ.ರೇವಣ್ಣ‌ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನಾ ಸ್ಥಳಕ್ಕೆ ಹಾಸನ ಎಸ್‌ಪಿ ಮೊಹಮ್ಮದ್ ಸುಜೀತಾ ಭೇಟಿ ನೀಡಿ ಘಟನೆ ಬಗ್ಗೆ ಮಾಹಿತಿ ಪಡೆದರು. ನಂತರ ವಿಶೇಷ ತಂಡಗಳನ್ನು ರಚನೆ ಮಾಡಿ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು, ಘಟನಾ ಸ್ಥಳದ ಸುತ್ತಮುತ್ತ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

ನಿಂತಿದ್ದ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು

ಬೆಳಗಾವಿ: ನಿಂತಿದ್ದ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಗೋಕಾಕ್‌ ತಾಲೂಕಿನ ತಪಸಿಕ್ರಾಸ್-ಕಪರಟ್ಟಿ ಕ್ರಾಸ್ ಬಳಿ ನಡೆದಿದೆ.

ತಳಕಟನಾಳ ಗ್ರಾಮದ ಬಸವರಾಜ್ ಬಡಿಗೇರ(31) ಮೃತರು. ಗೋಕಾಕದಿಂದ ತಳಕಟನಾಳ ಗ್ರಾಮಕ್ಕೆ ಬರುವಾಗ ತಪಸಿಕ್ರಾಸ್-ಕಪರಟ್ಟಿ ಕ್ರಾಸ್‌ ಬಳಿ ರಸ್ತೆ ಪಕ್ಕದಲ್ಲಿ ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದಿದ್ದರಿಂದ ತಲೆಗೆ ಗಂಭೀರ ಗಾಯವಾಗಿ ಯುವಕ ಮೃತಪಟ್ಟಿದ್ದಾನೆ.

Exit mobile version