Site icon Vistara News

Prajval revanna | ಏನ್ರೀ ಅಮ್ಮನ ಹತ್ರ ಕೇಳಿ ಹೇಳ್ತೀನಿ ಅಂತ ಮಕ್ಕಳ ಥರ ಹೇಳ್ತೀರಲ್ಲಾ: ಪ್ರಜ್ವಲ್‌ ರೇವಣ್ಣಗೆ ಹೈಕೋರ್ಟ್‌ ತರಾಟೆ

prajwal revanna 1

ಬೆಂಗಳೂರು: ಏನ್ರೀ ನೀವು ಎಲ್ಲದಕ್ಕೂ ಅಮ್ಮನ ಹತ್ರ ಕೇಳಿ ಹೇಳ್ತೀನಿ ಅಂತ ಮಗುವಿನ ರೀತಿಯಲ್ಲಿ ಹೇಳುತ್ತಿದ್ದೀರಲ್ಲಾ. ಇದು ಪರೀಕ್ಷೆ ಇದ್ದಂತೆ. ಸರಿಯಾಗಿ ಉತ್ತರ ನೀವೇ ನೀಡಬೇಕು: ಹೀಗೆಂದು ಹಾಸನ ಲೋಕಸಭಾ ಸದಸ್ಯ ಪ್ರಜ್ವಲ್‌ ರೇವಣ್ಣ ಅವರನ್ನು ತರಾಟೆಗೆ ತೆಗೆದುಕೊಂಡಿದೆ ರಾಜ್ಯ ಹೈಕೋರ್ಟ್‌.

ಹಾಸನ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಲು ಕೋರಿದ ಅರ್ಜಿ ಕುರಿತ ಪಾಟೀ ಸವಾಲಿನ ವೇಳೆ ಸಂಸದ ಪ್ರಜ್ವಲ್‌ ರೇವಣ್ಣ ಪ್ರತಿಯೊಂದು ಪ್ರಶ್ನೆಗೂ ವಿವರಣಾತ್ಮಕ ಉತ್ತರ ನೀಡಲು ಮುಂದಾದಾಗ ಮತ್ತು ಅಮ್ಮನ ಬಳಿ ಕೇಳಿ ಹೇಳುತ್ತೇನೆ ಎಂದಾಗ ಪೀಠ ಗರಂ ಆಯಿತು.

ಅಕ್ರಮ ಎಸಗಿ ಆಯ್ಕೆಯಾಗಿರುವ ಪ್ರಜ್ವಲ್ ರೇವಣ್ಣ ಅವರ ಲೋಕಸಭೆ ಸದಸ್ಯತ್ವವನ್ನು ಅಸಿಂಧುಗೊಳಿಸಬೇಕು ಎಂದು ಕೋರಿ ದೇವರಾಜೇಗೌಡ ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿಯ ವಿಚಾರಣೆ ನ್ಯಾಯಮೂರ್ತಿ ಕೆ. ನಟರಾಜನ್ ಅವರ ನೇತೃತ್ವದ ಏಕಸದಸ್ಯ ಪೀಠದಲ್ಲಿ ನಡೆಯಿತು.

ಪಾಟೀಸವಾಲು
2019ರ ಏಪ್ರಿಲ್‌ 17ರಂದು ಹೊಳೆನರಸೀಪುರದ ಚನ್ನಾಂಬಿಕಾ ಥಿಯೇಟರ್ ಒಳಗೆ ನಿಂತಿದ್ದ ಕೆಎ 01ಎಂಎಚ್ 4477 ಇನ್ನೋವಾ ಕಾರಿನಲ್ಲಿದ್ದ 1.20 ಲಕ್ಷ ರೂಪಾಯಿ ಮೊತ್ತವನ್ನು ಚುನಾವಣಾ ಅಧಿಕಾರಿಗಳ ತಂಡ ವಶಪಡಿಸಿಕೊಂಡಿದ್ದು, ಹೌದಲ್ಲವೇ ಎಂದು ಅರ್ಜಿದಾರರ ಪರ ವಕೀಲರು ಪ್ರಜ್ವಲ್ ರೇವಣ್ಣ ಅವರನ್ನು ಪ್ರಶ್ನಿಸಿದರು.

ಅದಕ್ಕೆ ಉತ್ತರಿಸಿದ ಪ್ರಜ್ವಲ್ ಅವರು ‘ಇಲ್ಲ, ಅದು ನನ್ನ ತಂದೆಯ ಎಸ್ಕಾರ್ಟ್‌ನವರಿಗೆ ಸೇರಿದ ಸರ್ಕಾರಿ ಕಾರು ಆಗಿತ್ತು. ಆಗ ತಂದೆ ಲೋಕೋಪಯೋಗಿ ಸಚಿವರಾಗಿದ್ದರು. ಕಾರು ಥಿಯೇಟರ್ ಒಳಗೆ ನಿಂತಿರಲಿಲ್ಲ. ಕಾಂಪೌಂಡ್ ಒಳಗೆ ನಿಂತಿತ್ತು. ಅವತ್ತು ಆ ಹಣವನ್ನು ಐಟಿ (ಆದಾಯ ತೆರಿಗೆ) ಅಧಿಕಾರಿಗಳೇ ತಂದು ಕಾರಿನಲ್ಲಿ ದುರುದ್ದೇಶದಿಂದ ಇರಿಸಿ ದೂರು ದಾಖಲಿಸಿದ್ದರು” ಎಂದರು.

ನಂತರ ಅದಕ್ಕೆ ತದ್ವಿರುದ್ಧವಾಗಿ ಅಷ್ಟಕ್ಕೂ ಆ ಹಣವನ್ನು ನನ್ನ ತಾಯಿ ನಮ್ಮ ಮನೆಯ ಸೇವಕನಿಗೆ ಹಸುಗಳಿಗೆ ಬೂಸಾ ತರಲು ನೀಡಿದ್ದರು. ಈಗಾಗಲೇ ಈ ದೂರಿನ ತನಿಖೆ ನಡೆದಿದ್ದು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಕೆಯಾಗಿದೆ ಎಂದರು. ಆಗ ಪೀಠವು “ರೀ, ನಿಮ್ಮ ಕಥೆ-ಚಿತ್ರಕಥೆ-ಸಂಭಾಷಣೆ ಎಲ್ಲಾ ನಮಗೆ ಬೇಡ. ವಕೀಲರು ಕೇಳಿದ ಪ್ರಶ್ನೆಗಷ್ಟೇ ಹೌದು ಅಥವಾ ಇಲ್ಲ ಎಂದು ಉತ್ತರಿಸಿ. ನೀವು ನೀಡಿದ ಉತ್ತರವನ್ನು ದಾಖಲು ಮಾಡಿಕೊಳ್ಳುತ್ತೇನೆ” ಎಂದಿತು.

ʻʻʻಚುನಾವಣೆ ಘೋಷಣೆಯಾದ ನಂತರ ನಿಮ್ಮ ಖಾತೆಯಲ್ಲಿ 27 ಲಕ್ಷ ರೂಪಾಯಿ ಇತ್ತು. ಆ ಬಗ್ಗೆ ಸೂಕ್ತ ವಿವರಣೆ ಅಫಿಡವಿಟ್‌ನಲ್ಲಿ ಇಲ್ಲವಲ್ಲʼʼ ಎಂಬ ಪ್ರಶ್ನೆಗೆ ಉತ್ತರಿಸಿದ ಪ್ರಜ್ವಲ್ ಅವರು, ʻʻಕರ್ನಾಟಕ ಬ್ಯಾಂಕ್ ಖಾತೆಗೆ ತಂದೆ ಎಚ್ ಡಿ ರೇವಣ್ಣ, ತಾಯಿ ಭವಾನಿ ರೇವಣ್ಣ ಸೇರಿದಂತೆ ಒಟ್ಟು 16 ಜನರಿಂದ ಸಾಲ ರೂಪದಲ್ಲಿ ಹಣ ಸಂದಾಯವಾಗಿತ್ತುʼʼ ಎಂದರು. ಆ ಪ್ರಶ್ನೆಯನ್ನು ಪುನಾ ತಿರುವಿ ಕೇಳಿದಾಗ, ʻʻನನಗೆ ಹಾಲು ಮಾರಾಟದಿಂದ ಮತ್ತು ಕೃಷಿಯಿಂದ ಬಂದ ಆದಾಯವಿದೆ” ಎಂದರು.

ಮುಂದುವರಿದು, ‘ಇದು ನನಗೆ ಗೊತ್ತಿಲ್ಲ. ನನ್ನ ಲೆಕ್ಕಪರಿಶೋಧಕರು ಹಾಗೂ ಬ್ಯಾಂಕ್ ಅಧಿಕಾರಿಗಳಿಂದ ವಿವರಣೆ ಪಡೆದುಕೊಂಡು ಬಂದು ಉತ್ತರಿಸುತ್ತೇನೆ’ ಎಂದು ತಿಳಿಸಿದರು.

ಇದರಿಂದ ಆಗ ಪೀಠವು ‘ರೀ, ನೀವು ಮನೆಗೆ ಹೋಗಿ ಅಮ್ಮನ ಬಳಿ ಉತ್ತರ ಪಡೆದು ಬಂದು ತಿಳಿಸುತ್ತೇನೆ ಎಂದು ಮಗುವಿನ ರೀತಿಯಲ್ಲಿ ಹೇಳುತ್ತಿದ್ದೀರಲ್ಲಾ. ಇದು ಪರೀಕ್ಷೆ ಇದ್ದಂತೆ. ಸರಿಯಾಗಿ ಉತ್ತರ ನೀಡಬೇಕು” ಎಂದರು. ವಿಚಾರಣೆಯನ್ನು ನವೆಂಬರ್‌ ೨೫ಕ್ಕೆ ಮುಂದೂಡಲಾಯಿತು.

Exit mobile version