Site icon Vistara News

ಎಸಿಬಿ ರದ್ದುಗೊಳಿಸಿ ಹೈಕೋರ್ಟ್‌ ಮಹತ್ವದ ತೀರ್ಪು; ಎಲ್ಲ ಕೇಸ್‌ ಲೋಕಾಯುಕ್ತಕ್ಕೆ ಶಿಫ್ಟ್‌

acb office

ಬೆಂಗಳೂರು: ಲೋಕಾಯುಕ್ತಕ್ಕೆ ಪರ್ಯಾಯವಾಗಿ ರಚಿಸಲಾಗಿದ್ದ ಎಸಿಬಿ ವ್ಯವಸ್ಥೆಯನ್ನು ಹೈಕೋರ್ಟ್‌ ರದ್ದುಗೊಳಿಸಿ ಮಹತ್ವದ ಆದೇಶವನ್ನು ನೀಡಿದ್ದು, ಹಾಲಿ ಇರುವ ಎಲ್ಲ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾವಣೆಗೊಳಿಸುವಂತೆ ಸೂಚನೆ ನೀಡಿದೆ.

ನ್ಯಾಯಮೂರ್ತಿಗಳಾದ ಬಿ.ವೀರಪ್ಪ ಮತ್ತು ನ್ಯಾಯಮೂರ್ತಿ ಕೆ.ಎಸ್.ಹೇಮಲೇಖ ಅವರಿದ್ದ ವಿಭಾಗೀಯ ಪೀಠ ಈ ಮಹತ್ವದ ಆದೇಶವನ್ನು ನೀಡಿದೆ. ಈ ಮೂಲಕ ಎಸಿಬಿ ಪೊಲೀಸ್ ಠಾಣೆಗಳೂ ಸಹ ಅಸ್ತಿತ್ವವನ್ನು ಕಳೆದುಕೊಂಡಿದ್ದು, ಲೋಕಾಯುಕ್ತಕ್ಕೆ ಮರುಜೀವ ಬರಲಿದೆ. ಅಲ್ಲದೆ, ಇದುವರೆಗೆ ಎಸಿಬಿ ನಡೆಸುತ್ತಿರುವ ಎಲ್ಲ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾವಣೆಗೊಳಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.

ಎಸಿಬಿ ರದ್ದುಪಡಿಸುವಂತೆ ಕೋರಿ ಚಿದಾನಂದ ಅರಸ್‌ ಮತ್ತಿತರರು ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಪೀಠವು ಗುರುವಾರ ಈ ಮಹತ್ವದ ತೀರ್ಪನ್ನು ನೀಡಿದೆ. ಲೋಕಾಯುಕ್ತ ಕಾಯ್ದೆಗೆ ತಿದ್ದುಪಡಿ ಅಗತ್ಯವಿದೆ ಎಂದು ಸಹ ಪೀಠ ಅಭಿಪ್ರಾಯಪಟ್ಟಿದೆ.

ಎಸಿಬಿ ರಚಿಸಿದ್ದ ಸಿದ್ದರಾಮಯ್ಯ ಸರ್ಕಾರ

ಕಾಂಗ್ರೆಸ್‌ನ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು 2016ರ ಮಾರ್ಚ್‌ 14ರಂದು ಎಸಿಬಿ ರಚಿಸಿ ಆದೇಶ ಹೊರಡಿಸಿತ್ತು. ಆದರೆ, ಇದರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಕೋರ್ಟ್‌ಗೆ ಸಲ್ಲಿಕೆಯಾಗಿದ್ದವು. ಅಲ್ಲದೆ, ಲೋಕಾಯುಕ್ತ ಸಂಸ್ಥೆಯನ್ನು ದುರ್ಬಲಗೊಳಿಸುವ ಸಲುವಾಗಿಯೇ ಎಸಿಬಿಯನ್ನು ರಚನೆ ಮಾಡಲಾಗಿತ್ತು ಎಂಬ ಆರೋಪ ಬಲವಾಗಿ ಕೇಳಿಬಂದಿತ್ತು. ಸ್ವತಂತ್ರವಾಗಿ ಕಾರ್ಯನಿರ್ವಹಿಸುವ ಲೋಕಾಯುಕ್ತ ಸಂಸ್ಥೆಗೆ ಬದಲಾಗಿ, ಗೃಹ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿಯ ಅಧೀನದಲ್ಲಿ ಎಸಿಬಿಯನ್ನು ರಚಿಸಲಾಗಿತ್ತು.

ಇದಲ್ಲದೆ, ಲೋಕಾಯುಕ್ತದಲ್ಲಿ ಹೊಸ ದೂರುಗಳ ದಾಖಲು ಮಾಡಿಕೊಳ್ಳದಂತೆ ಆದೇಶವನ್ನೂ ಹೊರಡಿಸಲಾಗಿತ್ತು. ಈ ಮೂಲಕ ಲೋಕಾಯುಕ್ತದ ಸಂಪೂರ್ಣ ಅಧಿಕಾರವನ್ನು ಕಿತ್ತುಕೊಳ್ಳಲಾಗಿತ್ತು. ಇದೇ ವಿಚಾರವನ್ನು ಕಳೆದ ಚುನಾವಣೆಯಲ್ಲಿ ಪ್ರಚಾರದ ಸರಕಾಗಿ ಬಳಸಿಕೊಂಡಿದ್ದ ಬಿಜೆಪಿ, ತಾನು ಅಧಿಕಾರಕ್ಕೆ ಬಂದರೆ ಎಸಿಬಿಯನ್ನು ರದ್ದುಪಡಿಸಿ, ಲೋಕಾಯುಕ್ತಕ್ಕೆ ಬಲ ಕೊಡುವುದಾಗಿ ಹೇಳಿತ್ತು. ಆದರೆ, ಬಿಜೆಪಿ ಸಹ ಯಾವುದೇ ಕ್ರಮ ಕೈಗೊಳ್ಳದೆ ಮೌನವಹಿಸಿತ್ತು. ಈಗ ನ್ಯಾಯಾಲಯವೇ ಎಸಿಬಿಯನ್ನು ರದ್ದುಗೊಳಿಸುವ ಮೂಲಕ ಸ್ವತಂತ್ರ ಸಂಸ್ಥೆಗೆ ಬಲತುಂಬವ ಮಹತ್ವದ ಆದೇಶವನ್ನು ನೀಡಿದೆ.

ತೀರ್ಪಿನಲ್ಲೇನು ಉಲ್ಲೇಖ?

ಎಸಿಬಿ ರಚನೆಯನ್ನು ರದ್ದುಪಡಿಸಿ ಆದೇಶ ಹೊರಡಿಸಿರುವ ನ್ಯಾಯಪೀಠವು ತನ್ನ ತೀರ್ಪಿನಲ್ಲಿ ಹಲವು ಅಂಶಗಳನ್ನು ಉಲ್ಲೇಖಿಸಿದೆ. ಭ್ರಷ್ಟಾಚಾರ ಆರೋಪ ಹೊತ್ತವರು ಪಾರಾಗಬಾರದು. ಈ ನಿಟ್ಟಿನಲ್ಲಿ ಲೋಕಾಯುಕ್ತ ಪೊಲೀಸರೇ ಎಸಿಬಿಯಲ್ಲಿರುವ ಎಲ್ಲ ಪ್ರಕರಣಗಳ ತನಿಖೆಯನ್ನು ಮುಂದುವರಿಸಬೇಕು. ಜತೆಗೆ ಲೋಕಾಯುಕ್ತ, ಉಪಲೋಕಾಯುಕ್ತರ ನೇಮಕ ವೇಳೆ ಅರ್ಹತೆಯನ್ನು ಪರಿಗಣಿಸಬೇಕು. ಜಾತಿ ಆಧರದ ಮೇಲೆ‌ ನಿರ್ಧಾರ ಆಗಬಾರದು ಎಂದು ಆದೇಶದಲ್ಲಿ ಹೇಳಲಾಗಿದೆ.

೩ ವರ್ಷ ಅವಧಿಗೆ ಅಧಿಕಾರಿಗಳ ನೇಮಕಕ್ಕೆ ಸೂಚನೆ

ಲೋಕಾಯುಕ್ತ ಸಂಸ್ಥೆಗೆ ನೇಮಕ ಮಾಡುವಾಗ ಕೆಲವು ಮಹತ್ವದ ಅಂಶಗಳನ್ನು ಪರಿಗಣಿಸಬೇಕು. ಮೂರು ವರ್ಷದ ಅವಧಿಗೆ ಅಧಿಕಾರಿಗಳ ನೇಮಕವಾಗಬೇಕು. ಅಲ್ಲದೆ, ಕರ್ನಾಟಕ ಲೋಕಾಯುಕ್ತ ಕಾಯ್ದೆಗೆ ತಿದ್ದುಪಡಿ ತರುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಪೀಠ, ಎಸಿಬಿಗೆ ಪೊಲೀಸ್ ಠಾಣೆ ಸ್ಥಾನಮಾನವನ್ನು ರದ್ದುಪಡಿಸಿ ಆದೇಶಿಸಿದೆ.

Exit mobile version