Site icon Vistara News

BJP-JDS Alliance : ಆವತ್ತು ನಾನು ಜೆಡಿಎಸ್‌ ಬಿಜೆಪಿಯ ಬಿಟೀಂ ಅಂದಾಗ ಸಿಟ್ಟಾಗಿದ್ರಲ್ಲಾ? ಈಗ ಏನು ಹೇಳ್ತಾರೆ; ಸಿದ್ದರಾಮಯ್ಯ ಪ್ರಶ್ನೆ

siddaramaiah Devegowda

ಹುಬ್ಬಳ್ಳಿ: ಆವತ್ತು ನಾನು ಜೆಡಿಎಸ್‌ ಬಿಜೆಪಿ ಬಿ ಟೀಮ್‌ (JDS is B team of BJP) ಎಂದು ಹೇಳಿದಾಗ ನನ್ನ ಮೇಲೆ ಸಿಟ್ಟು ಮಾಡಿಕೊಂಡಿದ್ದರು. ಈಗ ಏನು ಹೇಳುತ್ತಾರೆ?: ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿಯ (BJP-JDS Alliance) ಬಗ್ಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಕೇಳಿದ ಪ್ರಶ್ನೆ ಇದು. ಶುಕ್ರವಾರ ಮೈತ್ರಿ ಘೋಷಣೆಯಾದಾಗ ʻನಮಗೆ ಅದರಿಂದ ಏನೂ ಪರಿಣಾಮ ಇಲ್ಲʼ ಎಂದು ಚುಟುಕು ಉತ್ತರ ನೀಡಿದ್ದ ಸಿದ್ದರಾಮಯ್ಯ ಅವರು ಶನಿವಾರ ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿ ವಿಸ್ತೃತ ಪ್ರತಿಕ್ರಿಯೆ ನೀಡಿದರು.

ʻʻಜನತಾ ದಳ ಜಾತ್ಯತೀತ ಎಂದು ಹೆಸರಿಟ್ಟುಕೊಂಡಿರುವ ಪಕ್ಷ ಕೋಮುವಾದಿಗಳ ಜೊತೆ ಒಂದಾಗಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರು (HD Devegowda) ಯಾವ ಕಾರಣಕ್ಕೂ ಬೇರೆ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಹೇಳುತ್ತಿದ್ದರು. ಆದರೆ ಪಕ್ಷದ ಉಳಿವಿಗಾಗಿ ಬಿಜೆಪಿ ಜೊತೆ ಸೇರಿಕೊಳ್ಳುತ್ತಿರುವುದಾಗಿ ಶಾಸಕ ಜಿ.ಟಿ.ದೇವೇಗೌಡರು ಹೇಳುತ್ತಿದ್ದಾರೆʼʼ ಎಂದು ಸಿದ್ದರಾಮಯ್ಯ ಹೇಳಿದರು.

ʻʻಈ ಹೇಳಿಕೆಗಳು ಜೆಡಿಎಸ್ ಪಕ್ಷಕ್ಕೆ ಯಾವುದೇ ಸಿದ್ಧಾಂತ ಇಲ್ಲ ಎಂದು ತೋರಿಸುತ್ತದೆ. ಅಧಿಕಾರಕ್ಕಾಗಿ ಯಾವುದೇ ಕ್ರಮಕ್ಕೆ ಸಿದ್ಧ ಎಂಬುದನ್ನು ಅವರು ತೋರಿಸಿದ್ದಾರೆʼʼ ಎಂದರು ಸಿದ್ದರಾಮಯ್ಯ.

ಸರ್ವ ಪಕ್ಷದ ನಿಯೋಗ ಭೇಟಿಗೆ ಕೇಂದ್ರದಿಂದ ಉತ್ತರ ಬಂದಿಲ್ಲ

ಮಹದಾಯಿ, ಕೃಷ್ಣಾ ಮೇಲ್ದಂಡೆ, ಕಾವೇರಿ ವಿವಾದ ಸೇರಿದಂತೆ ಎಲ್ಲ ಯೋಜನೆಯ ಬಗ್ಗೆ ಕೇಂದ್ರಕ್ಕೆ ಒತ್ತಾಯಿಸಲು ಸರ್ವ ಪಕ್ಷದ ನಿಯೋಗದೊಂದಿಗೆ ತೆರಳಲು ಪ್ರಧಾನಮಂತ್ರಿಗಳ ಸಮಯ ಕೋರಿ ಪತ್ರ ಬರೆಯಲಾಗಿದ್ದು, ಕೇಂದ್ರದಿಂದ ಯಾವುದೇ ಉತ್ತರ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮಹದಾಯಿ ಯೋಜನೆಗೆ ಚಾಲನೆ ನೀಡಲು ರಾಜ್ಯ ಸರ್ಕಾರ ತಯಾರಿದ್ದರೂ, ಕೇಂದ್ರ ಸರ್ಕಾರದಿಂದ ಅರಣ್ಯ ಮತ್ತು ಪರಿಸರ ಕ್ಲಿಯರೆನ್ಸ್ ದೊರೆತಿಲ್ಲ. ಇದಕ್ಕೆ ಸಂಬಂಧಿಸಿದ ಎಲ್ಲ ವರದಿಗಳನ್ನು ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದರು.

ಜಿ20 ಸಭೆಗೆ ವಿರೋಧಪಕ್ಷದ ನಾಯಕರನ್ನು ಆಹ್ವಾನಿಸದಿರುವುದು ತಪ್ಪು

ನವದೆಹಲಿಯಲ್ಲಿ ನಡೆಯುತ್ತಿರುವ ಜಿ20 ಸಭೆಗೆ ಕಾಂಗ್ರೆಸ್ ನ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಹ್ವಾನಿಸದಿರುವ ಬಗ್ಗೆ ಮಾತನಾಡಿ, ಮಲ್ಲಿಕಾರ್ಜುನ ಖರ್ಗೆಯವರು ಅಧಿಕೃತವಾಗಿ ರಾಜ್ಯಸಭೆಯ ವಿರೋಧಪಕ್ಷದ ನಾಯಕರಾಗಿದ್ದು, ಅವರನ್ನು ಜಿ20 ಸಭೆ ಆಹ್ವಾನಿಸದಿರುವುದು ತಪ್ಪು ಎಂದು ತಿಳಿಸಿದರು.

ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿಯಿಲ್ಲ ಎಂದ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿಗಳಾಗಬೇಕೆಂದು ಪಕ್ಷದ ಅಭಿಮಾನಿಗಳು ಆಶಿಸುತ್ತಿರುವುದಕ್ಕೆ ಪ್ರತಿಕ್ರಿಯೆ ನೀಡಿ, ಪ್ರಜಾಪ್ರಭುತ್ವದಲ್ಲಿ ಯಾರು ಬೇಕಾದರೂ ಪ್ರಧಾನಿಗಳಾಗಬಹುದು. ಅವರ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ . ಮೋದಿಯವರು ಗುಜರಾತಿನ ಮುಖ್ಯಮಂತ್ರಿಯಿಂದ ನೇರವಾಗಿ ಪ್ರಧಾನಮಂತ್ರಿಗಳಾದರು. ನನಗೆ ರಾಷ್ಟ್ರ ರಾಜಕಾರಣದಲ್ಲಿ ಯಾವುದೇ ಆಸಕ್ತಿಯಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದರು.

ರೈತರ ತೊಂದರೆಯನ್ನು ನೀಗಿಸಲು ವಿದ್ಯುತ್ ಸರಬರಾಜಿಗೆ ಕ್ರಮ

ರೈತರು ವಿದ್ಯುತ್ ಸರಬರಾಜಿನ ವ್ಯತ್ಯಯಕ್ಕಾಗಿ ಹೋರಾಟ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಆಗಸ್ಟ್ ತಿಂಗಳಲ್ಲಿ ಸರಿಯಾಗಿ ಮಳೆಯಾಗಿಲ್ಲ, ಬೇಸಿಗೆಯಲ್ಲಿ ಪಂಪಸೆಟ್ ಗಳನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸಬೇಕು. ಇದರಿಂದ ವಿದ್ಯುತ್ ನ ಹೆಚ್ಚಿನ ಪ್ರಮಾಣದಲ್ಲಿ ಬಳಕೆಯಾಗಿದೆ. ರೈತರ ತೊಂದರೆಯನ್ನು ನೀಗಿಸಲು, ವಿದ್ಯುತ್ ನ್ನು ಹೊರಗಿನಿಂದ ಖರೀದಿಸಿ ವಿದ್ಯುತ್ ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಪರಿಹಾರ ಮಾರ್ಗಸೂಚಿ ಪರಿಷ್ಕರಣೆಗಾಗಿ ಕೇಂದ್ರ ಸರ್ಕಾರಕ್ಕೆ ಮನವಿ

ಬರಗಾಲ ಘೋಷಿತ ಪ್ರದೇಶಗಳಿಗೆ ಪರಿಹಾರ ಒದಗಿಸಲು ಇರುವ ಮಾರ್ಗಸೂಚಿಗಳನ್ನು ಪರಿಷ್ಕರಿಸಲು ಕೋರಿ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದ್ದು, ಇದುವರೆಗೆ ಯಾವುದೇ ಉತ್ತರ ಬಂದಿರುವುದಿಲ್ಲ. ಬರಗಾಲ ಘೋಷಿತ ಪ್ರದೇಶಗಳಲ್ಲಿ ರಾಜ್ಯ ಸರ್ಕಾರದ ವತಿಯಿಂದ ಕುಡಿಯುವ ನೀರು, ಬಿತ್ತನೆಗೆ ನೆರವು ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳುತ್ತದೆ. ಆದರೆ ಕೇಂದ್ರ ಸರ್ಕಾರದಿಂದಲೂ ಸಕಾಲದಲ್ಲಿ ನೆರವು ಬರಬೇಕಿದೆ ಎಂದು ಸಿದ್ದರಾಮಯ್ಯ ನುಡಿದರು.

ಇದನ್ನೂ ಓದಿ: CM Siddaramaiah : ನೀವೊಬ್ಬರೇ ಸಿಎಂ ಆಗ್ಬೇಕಾ? ಬೇರೆಯವರೆಲ್ಲ ಸಾಯ್ಬೇಕಾ?; ಸಿದ್ದರಾಮಯ್ಯ ಮೇಲೆ ಪ್ರಣವಾನಂದ ಶ್ರೀ ವಾಗ್ದಾಳಿ

ಕಳಪೆ ಸಮವಸ್ತ್ರ ನೀಡಿದ ವಿರುದ್ಧ ಕ್ರಮ ಕೈಗೊಳ್ಳಲು ತೀರ್ಮಾನ

ಚುನಾವಣೇ ಸಂದರ್ಭದಲ್ಲಿ ಹಿಜಾಬ್, ಹಲಾಲ್ ಪ್ರಕರಣಗಳು, ಹಿಂದುತ್ವ, ಸನಾತನ ಧರ್ಮದ ಕುರಿತು ಚರ್ಚೆ ಎದ್ದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಹಿಜಾಬ್ ಹಲಾಲ್ ಪ್ರಕರಣಗಳು ನ್ಯಾಯಾಲಯದಲ್ಲಿದೆ., ವಿದ್ಯಾವಿಕಾಸ ಯೋಜನೆಯಡಿ ಕರ್ನಾಟಕ ಕೈಮಗ್ಗ ಸಂಸ್ಥೆಯಿಂದ ಮಕ್ಕಳಿಗೆ ನೀಡಲಾಗಿದ್ದ ಸಮವಸ್ತ್ರ ಕಳಪೆಯಾಗಿರುವ ಬಗ್ಗೆ ತನಿಖೆ ನಡೆಸಲು ಸಚಿವ ಸಂಪುಟದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕಳಪೆ ಬಟ್ಟೆ ನೀಡಿರುವುದಕ್ಕೆ ಪಾವತಿಯೂ ಆಗಿರುವುದರಿಂದ, ಸಂಬಂಧಪಟ್ಟವರನ್ನು ಇದಕ್ಕೆ ಜವಾಬ್ದಾರರನ್ನಾಗಿಸಬೇಕೆಂದು ತೀರ್ಮಾನಿಸಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದ್ದು, ಸಂಬಂಧಪಟ್ಟವರಿಂದ ಪಾವತಿಸಲಾಗದ ಮೊತ್ತವನ್ನು ಮರುಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದರು.

Exit mobile version