Site icon Vistara News

Tungabhadra Dam: ಜಲಾಶಯ ನಿರ್ವಹಣೆ ಕುರಿತ ಕೇಂದ್ರ ಸಮಿತಿ ಸಲಹೆಯನ್ನು ರಾಜ್ಯ ಸರ್ಕಾರ ಧಿಕ್ಕರಿಸಿದೆ; ಪ್ರಲ್ಹಾದ್‌ ಜೋಶಿ ಆರೋಪ

Tungabhadra Dam

ಹುಬ್ಬಳ್ಳಿ: ಜಲಾಶಯಗಳ (Tungabhadra Dam) ಸಮರ್ಪಕ ನಿರ್ವಹಣೆಗೆ ಕೇಂದ್ರ ಸಮಿತಿ ನೀಡಿದ ಸಲಹೆಗಳನ್ನು ರಾಜ್ಯ ಸರ್ಕಾರ ಧಿಕ್ಕರಿಸಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಆರೋಪಿಸಿದ್ದಾರೆ.

ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬಿರುಕು ಬಿಟ್ಟು ಆತಂಕ ಸೃಷ್ಟಿಸಿರುವ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವರು, ಜಲಾಶಯಗಳ ನಿರ್ವಹಣೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದ್ದಾರೆ. ಬೇಸಿಗೆಯಲ್ಲಿ ಜಲಾಶಯ ಖಾಲಿ ಇದ್ದಾಗಲೆ ನಿರ್ವಹಣೆ ಕಾರ್ಯ ಕೈಗೊಳ್ಳಬೇಕಿತ್ತು. ಆದರೆ, ರಾಜ್ಯ ಸರ್ಕಾರ ಉದಾಸೀನ ತೋರಿದೆ. ಈಗದರ ಪರಿಣಾಮ ಎದುರಿಸುವಂತಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Indian Bank Recruitment 2024: 300 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಇಂಡಿಯನ್‌ ಬ್ಯಾಂಕ್‌; ಕರ್ನಾಟಕದಲ್ಲಿಯೂ ಇದೆ ನೇಮಕಾತಿ

ಕಳೆದ ಆರು ತಿಂಗಳ ಕಾಲ ಜಲಾಶಯ ಖಾಲಿ ಆಗಿತ್ತು. ರಾಜ್ಯ ಸರ್ಕಾರ ಆಗಲೇ ಸಮರ್ಪಕ ನಿರ್ವಹಣೆ ಕೈಗೊಳ್ಳಬೇಕಿತ್ತು. ಆದರೆ ಅದನ್ನು ಮಾಡಲಿಲ್ಲ. ಕೇಂದ್ರ ಸರ್ಕಾರದ ಸಲಹೆಗಳನ್ನೂ ಪಾಲಿಸದೇ ಧಿಕ್ಕರಿಸಿತು. ಸರ್ಕಾರ ಮತ್ತು ನಿರ್ವಹಣೆ ಹೊಣೆ ಹೊತ್ತವರ ತೀವ್ರ ನಿರ್ಲಕ್ಷ ತೋರಿದ್ದರಿಂದಲೇ ಈ ಅವಘಡ ಸಂಭವಿಸಿದೆ ಎಂದು ಜೋಶಿ ಆರೋಪಿಸಿದ್ದಾರೆ.

ರಸ್ತೆ ರಿಪೇರಿಗೂ ಹಣವಿಲ್ಲ

ರಾಜ್ಯ ಸರ್ಕಾರದ ಬಳಿ ರಸ್ತೆ ರಿಪೇರಿಗೂ ಹಣವಿಲ್ಲ. ಇನ್ನು ಸಮಾನಾಂತರ ಜಲಾಶಯ ಹೇಗೆ ನಿರ್ಮಾಣ ಮಾಡುತ್ತಾರೆ ಎಂದು ಪ್ರಶ್ನಿಸಿದ ಸಚಿವ ಪ್ರಲ್ಹಾದ್‌ ಜೋಶಿ, ಬೇಕಾಬಿಟ್ಟಿ ಆಡಳಿತ, ಭ್ರಷ್ಟಾಚಾರದ ಫಲವಾಗಿ ರಾಜ್ಯ ಸರ್ಕಾರ ದಿವಾಳಿಯಾಗಿದೆ. ಹಾಗಾಗಿ ಜಲಾಶಯಗಳ ವ್ಯವಸ್ಥಿತ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದೆ ಎಂದು ಆರೋಪಿಸಿದ್ದಾರೆ.

ಹತ್ತು ಸಾವಿರ ಕೋಟಿ ರೂ. ಎಲ್ಲಿ?

ಹಿಂದೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿದ್ದಾಗ ಜಲಾಶಯಗಳ ನಿರ್ವಹಣೆಗೆ ಪ್ರತಿ ವರ್ಷ 10000 ಕೋಟಿ ರೂ. ವೆಚ್ಚ ಮಾಡುವುದಾಗಿ ಹೇಳಿದ್ದರು. ಆದರೆ, ಪ್ರತಿ ವರ್ಷವಲ್ಲ ಆಡಳಿತದ 5 ವರ್ಷವೂ ಹತ್ತು ಸಾವಿರ ಕೋಟಿ ಖರ್ಚು ಮಾಡಲಿಲ್ಲ. ರಾಜ್ಯ ಸರ್ಕಾರ ಇನ್ನಾದರೂ ತುಂಗಭದ್ರಾ ಡ್ಯಾಂ ಸೇರಿದಂತೆ ರಾಜ್ಯದ ಎಲ್ಲಾ ಜಲಾಶಯಗಳ ನಿರ್ವಹಣೆಗೆ ಗಮನ ಹರಿಸಬೇಕು ಎಂದು ಸಚಿವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: Kannada New Movie: ಸಮರ್ಜಿತ್ ಲಂಕೇಶ್ ಅಭಿನಯದ ʼಗೌರಿʼ ಚಿತ್ರಕ್ಕೆ ನಟ ಉಪೇಂದ್ರ ಸಾಥ್‌; ಆ.15ಕ್ಕೆ ಸಿನಿಮಾ ರಿಲೀಸ್‌

ರೈತರಿಗೆ ಅನುಕೂಲ ಕಲ್ಪಿಸಲಿ

ರಾಜ್ಯ ಸರ್ಕಾರ ಕೂಡಲೇ ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಸರಿಪಡಿಸಲು ಮುಂದಾಗಬೇಕು. ಈ ಮೂಲಕ ರೈತರಿಗೆ ಬೆಳೆ ಬೆಳೆಯಲು ಅನುಕೂಲ ಮಾಡಿಕೊಡಬೇಕು ಎಂದು ಸಚಿವ ಪ್ರಲ್ಹಾದ್‌ ಜೋಶಿ ಆಗ್ರಹಿಸಿದ್ದಾರೆ.

Exit mobile version