ದೊಡ್ಡಬಳ್ಳಾಪುರ: ಇಲ್ಲಿನ ಐಬಿ ವೃತ್ತದಲ್ಲಿ ಅಕ್ರಮವಾಗಿ 15 ಟನ್ ಗೋಮಾಂಸ (Beef Smuggling) ತುಂಬಿಕೊಂಡು ಬರುತ್ತಿದ್ದ ಗೂಡ್ಸ್ ವಾಹನವನ್ನು ಶ್ರೀರಾಮಸೇನೆ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿ ತಡೆದಿದ್ದಾರೆ.
ಗಾಡಿಗಳನ್ನು ತಡೆದ ವೇಳೆ ಶ್ರೀರಾಮಸೇನೆ ಕಾರ್ಯಕರ್ತರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಹೀಗಾಗಿ ಸಿಟ್ಟಿಗೆದ್ದ ಕಾರ್ಯಕರ್ತರು ಗೋಮಾಂಸ ಸಾಗಾಟ ಮಾಡುತ್ತಿದ್ದವರ ಕಾರಿಗೆ ಬೆಂಕಿ ಹಚ್ಚಿ ಆಕ್ರೋಶವನ್ನು ಹೊರಹಾಕಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಹಿಂದೂಪುರ ಯಲಹಂಕ ರಾಜ್ಯ ಹೆದ್ದಾರಿ ಮಾರ್ಗವಾಗಿ ದೊಡ್ಡಬಳ್ಳಾಪುರ ಮೂಲಕ ಬೆಂಗಳೂರಿಗೆ ಗೋಮಾಂಸ ಬರುತ್ತಿತ್ತು. ಸ್ಥಳಕ್ಕೆ ದೊಡ್ಡಬಳ್ಳಾಪುರ ನಗರ ಮತ್ತು ಗ್ರಾಮಾಂತರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಶ್ರೀರಾಮಸೇನೆ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು
ಗೋಮಾಂಸ ಸಾಗಿಸುತ್ತಿದ್ದ ವಾಹನ ತಡೆದು ಬೆಂಕಿ ಹಚ್ಚಿದ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ಪೊಲೀಸರು ಶ್ರೀರಾಮಸೇನೆ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. 20 ಕ್ಕೂ ಅಧಿಕ ಕಾರ್ಯಕರ್ತರ ವಿಚಾರಣೆ ನಡೆಸುತ್ತಿದ್ದಾರೆ.
ಮುಂಜಾಗ್ರತಾ ಕ್ರಮವಾಗಿ ದೊಡ್ಡಬಳ್ಳಾಪುರ ನಗರದೆಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ನೀಡಲಾಗಿದೆ. ಸ್ಥಳದಲ್ಲೆ ಎಸ್ಪಿ, ಎಎಸ್ಪಿ, ಡಿವೈಎಸ್ಪಿ ಹಾಗೂ ಇನ್ಸ್ಪೆಕ್ಟರ್ಗಳು ಮೊಕ್ಕಾಂ ಹೂಡಿದ್ದಾರೆ. ಜತೆಗೆ ದೊಡ್ಡಬಳ್ಳಾಪುರ ನಗರದ ಐಬಿ ವೃತ್ತ ಹಾಗೂ ಗುಂಜೂರು ಟೋಲ್ಗಳಲ್ಲಿ ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಯ ಬಗ್ಗೆ ಇಂಚಿಂಚಾಗಿ ಪರಿಶೀಲನೆ ನಡೆಸುತ್ತಿದ್ದಾರೆ. ಇತ್ತ ಶ್ರೀರಾಮಸೇನೆ ಕಾರ್ಯಕರ್ತರನ್ನು ವಶಕ್ಕೆ ಪಡೆದಿದಕ್ಕೆ ಮುಖಂಡರ ಆಕ್ರೋಶ ಹೊರಹಾಕಿದ್ದಾರೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ