Site icon Vistara News

Chavundaraya Award: ಜೈನ ಧರ್ಮದ ಶಾಂತಿಯ ಸಂದೇಶ ಸರ್ವಕಾಲಕ್ಕೂ ಪ್ರಸ್ತುತ: ಡಾ. ಜಿ. ಪರಮೇಶ್ವರ

Chavundaraya Award to Pro KE Radhakrishna

#image_title

ಬೆಂಗಳೂರು: ನಮ್ಮ ದೇಶ ನಾಲ್ಕು ಧರ್ಮಗಳ ಹುಟ್ಟನ್ನು ಕಂಡಿದೆ. ಹಿಂದು, ಬೌದ್ಧ, ಜೈನ ಹಾಗೂ ಸಿಖ್ ಧರ್ಮಗಳು ಹುಟ್ಟಿದ್ದು ನಮ್ಮ ದೇಶದಲ್ಲಿಯೇ. ವಿಶ್ವಕ್ಕೆ ಈ ನಾಲ್ಕೂ ಧರ್ಮಗಳು ವಿಶೇಷ ಸಂದೇಶ ನೀಡುತ್ತಿವೆ. ಜೈನ ಧರ್ಮ (Chavundaraya Award) ನೀಡಿರುವ ಶಾಂತಿಯ ಸಂದೇಶ ಸರ್ವಕಾಲಕ್ಕೂ ಪ್ರಸ್ತುತ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಅಭಿಪ್ರಾಯ ವ್ಯಕ್ತಪಡಿಸಿದರು.

ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್‌ನ ಶ್ರೀ ಕೃಷ್ಣರಾಜ ಪರಿಷತ್‌ ಮಂದಿರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ʻಚಾವುಂಡರಾಯ ಪ್ರಶಸ್ತಿʼ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.

ಧರ್ಮದ ಕುರಿತ ಅಧ್ಯಯನ ನಮ್ಮಲ್ಲಿ ಕೇವಲ ಅಕಾಡೆಮಿಕ್ ನೆಲೆಯಲ್ಲಿ ನಡೆಯುತ್ತಿದೆಯೇ ಹೊರತು ಅದರ ಅಂತ:ಸತ್ವ ಹಿಡಿಯುವ ಕೆಲಸವಾಗುತ್ತಿಲ್ಲ, ಪ್ರೊ.ಕೆ.ಇ.ರಾಧಾಕೃಷ್ಣ ಅವರು ಇಂತಹ ಮಹತ್ವದ ಕೆಲಸವನ್ನು ಮಾಡಿದ್ದಾರೆ ಎಂದು ಮೆಚ್ಚಿಗೆ ಸೂಚಿಸಿದ ಅವರು, ಜೈನ ಧರ್ಮ ನಮ್ಮ ದೇಶದಲ್ಲಿ ಹುಟ್ಟಿಕೊಂಡು ಪ್ರಪಂಚಕ್ಕೆ ಶಾಂತಿಯ ಸಂದೇಶವನ್ನು ನೀಡುತ್ತ ಬಂದಿದೆ. ಇಂತಹ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಮಾಡುವುದರ ಜತೆಗೆ ಯೋಗ್ಯರನ್ನು ಹುಡುಕಿ ಅವರನ್ನು ಗೌರವಿಸುವ ಕಾರ್ಯವನ್ನು ಕಸಾಪ ಮಾಡುತ್ತಾ ಬಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇದನ್ನೂ ಓದಿ | ವಿಸ್ತಾರ ಯುಗಾದಿ ಕಥಾಸ್ಪರ್ಧೆ: ಟಾಪ್‌ 25ರ ಗೌರವ ಪಡೆದ ಕಥೆ: ಮೈ ಲೈಫ್ ಮೈ ಪ್ರಾಬ್ಲಮ್

ಬಹುಶ್ರುತ ವಿದ್ವಾಂಸ ಪ್ರೊ.ಕೆ.ಇ.ರಾಧಾಕೃಷ್ಣ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತು ನೀಡುವ 2022ನೇ ಸಾಲಿನ ಚಾವುಂಡರಾಯ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಕಸಾಪ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಅವರು, ಚಾವುಂಡರಾಯ 10ನೇ ಶತಮಾನಕ್ಕೆ ಸೇರಿದ ಜೈನ ಕವಿ ಹಾಗೂ ಮಹಾಯೋಧನಾಗಿದ್ದ. ಕನ್ನಡ ಜೈನ ಸಾಹಿತ್ಯ ರಚನೆಕಾರನಾಗಿ, ಅನೇಕ ಕವಿಗಳಿಗೆ ಪೋಷಕನಾಗಿ, ದಾನ-ಧರ್ಮಗಳಿಗೆ ಹೆಸರುವಾಸಿಯಾಗಿ ಮೆರೆದವನು. ಆತ ‘ಚಾವುಂಡರಾಯ ಪುರಾಣ’ ಎಂದು ವಾಡಿಕೆಯಾಗಿ ಹೇಳುವ ‘ತ್ರಿಷಷ್ಟಿ ಲಕ್ಷಣ ಮಹಾ ಪುರಾಣ’ ಎಂಬ ಮಹಾಪುರಾಣವನ್ನು ರಚಿಸಿದ್ದ ಎಂದು ತಿಳಿಸಿದರು.

ಕನ್ನಡ ನಾಡಿನ ಪ್ರಸಿದ್ಧ ಜೈನಕ್ಷೇತ್ರ ಶ್ರವಣಬೆಳಗೊಳದಲ್ಲಿ ಭಕ್ತಿ, ಜ್ಞಾನ, ವೈರಾಗ್ಯಮೂರ್ತಿ ‘ಗೊಮ್ಮಟೇಶ್ವರ’ ಎಂದು ಕರೆಯುವ ಬಾಹುಬಲಿ ಸ್ವಾಮಿಯ ಮಹೋನ್ನತ ಶಿಲಾಮೂರ್ತಿಯನ್ನು ಪ್ರತಿಷ್ಠಾಪಿಸಿದ ಧೀಮಂತ ವ್ಯಕ್ತಿ ಚಾವುಂಡರಾಯ. ಚಾವುಂಡರಾಯ ಸ್ವತಃ ಕವಿಯಾಗಿದ್ದುದಲ್ಲದೆ ಕವಿಜನ ಪೋಷಕನೂ ಆಗಿದ್ದ. ಆತ ರನ್ನ ಮಹಾಕವಿಯು ಅವರ ಆಶ್ರಯದಲ್ಲಿ ಇದ್ದು, ಅಜಿತಸೇನಾಚಾರ್ಯರ ಬಳಿ ವಿದ್ಯಾಭ್ಯಾಸ ಮಾಡಿದ್ದ. ಅದರ ಪರಿಣಾಮವೇ ರನ್ನ ತನ್ನ ‘ಅಜಿತ ಪುರಾಣ’ದಲ್ಲಿ ಚಾವುಂಡರಾಯನ ಶೌರ್ಯ, ಔದಾರ್ಯಗಳನ್ನು ವರ್ಣಿಸಿದ್ದಾನೆ ಎಂದು ನಾಡೋಜ ಡಾ. ಮಹೇಶ ಜೋಶಿ ನೆನಪಿಸಿಕೊಂಡರು.

ಮುಖ್ಯ ಅತಿಥಿ ಹೈಕೋರ್ಟ್‌ ನ್ಯಾಯಮೂರ್ತಿ ಎಂ.ಐ. ಅರುಣ್ ಅವರು ಮಾತನಾಡಿ, ಕನ್ನಡ ಸಾಹಿತ್ಯಕ್ಕೆ ಜೈನರ ಕೊಡುಗೆ ಅರ್ಥಪೂರ್ಣವಾಗಿದೆ. ಪಂಪ ರನ್ನನ ಕಾಲವನ್ನು ನಮ್ಮ ನಾಡಿನ ಸಾಹಿತ್ಯದ ಸುವರ್ಣಯುಗ ಎಂದು ಕರೆಯುತ್ತಿದ್ದರು. ಪ್ರಪಂಚಕ್ಕೆ ಜೈನ ಮತವು ಏಕ ರೂಪತೆಯ ನಡತೆಯನ್ನು ತೋರಿಸಿಕೊಟ್ಟಿದೆ. ಆದರೆ ನಮ್ಮ ಪಠ್ಯದಲ್ಲಿ ಮಕ್ಕಳಿಗೆ ಇಂತಹ ಮಹತ್ವದ ಸಂಗತಿಗಳು ಇಲ್ಲದಿರುವುದು ವಿಷಾದನೀಯ ಎಂದು ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಅವರು ಮಾತನಾಡಿ, ಬೆಂಗಳೂರಿನಲ್ಲಿ ಇಂದು ಶೇ. 60ರಷ್ಟು ಜನರು ಕನ್ನಡ ಬಾರದವರಿದ್ದಾರೆ. ಹೀಗಾಗಿ ನಾವು ಕನ್ನಡ ನಾಡಿನಲ್ಲಿ ಭಾಷೆ ಸಂಸ್ಕೃತಿ, ಕಲೆ, ಸಾಹಿತ್ಯ ಬೆಳೆಸುವ ಕೆಲಸ ಮಾಡಬೇಕಿದೆ. ಸರ್ಕಾರ ನನಗೆ ಕನ್ನಡ ನಾಡಿನ ನೆಲ ಮೂಲವನ್ನು ಉಳಿಸಿ ಬೆಳೆಸು ಜವಾಬ್ದಾರಿಯನ್ನು ನೀಡಿದೆ. ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂಬ ಭರವಸೆಯನ್ನು ನೀಡುವ ಜತೆಗೆ ಕಸಾಪ ಚಟುವಟಿಕೆಗಳಿಗೆ ಸರ್ಕಾರದಿಂದ ಎಲ್ಲಾ ರೀತಿಯಲ್ಲಿಯೂ ಸಹಕಾರ ನೀಡುವುದಾಗಿ ತಿಳಿಸಿದರು.

ಇದನ್ನೂ ಓದಿ | ವಿಸ್ತಾರ ಯುಗಾದಿ ಕಥಾಸ್ಪರ್ಧೆ: ಟಾಪ್‌ 25ರ ಗೌರವ ಪಡೆದ ಕಥೆ: ಶ್ರಾವಣಾ

ಚಾವುಂಡರಾಯ ಪ್ರಶಸ್ತಿ ಪಡೆದ ಬಹುಶ್ರುತ ವಿದ್ವಾಂಸ ಪ್ರೊ.ಕೆ.ಇ. ರಾಧಾಕೃಷ್ಣ ಅವರು ಮಾತನಾಡಿ, ಭಾಷೆಗೊಂದು ಮನೋಧರ್ಮವಿರುತ್ತದೆ. ಆ ಮನೋಧರ್ಮದ ಮೂಲಕವೇ ಜ್ಞಾನದ ಬೆಳವಣಿಗೆಯಾಗುವುದು, ಜ್ಞಾನಕ್ಕೂ ಜೀವನಕ್ಕೂ ಅವಿನಾಭಾವ ಪವಿತ್ರ ಸಂಬಂಧವಿದೆ. ಈ ಮಧ್ಯದಲ್ಲಿ ನಮ್ಮ ಮೂಲ ಭಾಷೆ ಸಂಸ್ಕೃತದಲ್ಲಿ ಇದೆಲ್ಲವೂ ಇದೆ. ಆದರೆ ಸಾಮಾನ್ಯರಿಂದ ಸಂಸ್ಕೃತವನ್ನು ದೂರ ಮಾಡಿರುವುದು ನಮ್ಮತನವನ್ನು ಅರಿಯಲು ಸಾಧ್ಯವಾಗದೇ ಇರುವದಕ್ಕೆ ಮೂಲ ಕಾರಣ. ಶಂಕರ ಭಗವತ್ಪಾದರು ಆತ್ಮ ಎನ್ನುವ ಶಬ್ದಕ್ಕೆ ಅವರ ರೀತಿಯಲ್ಲಿ ಅದ್ಭುತವಾಗಿ ವಾಖ್ಯಾನ ಮಾಡಿದ್ದರು. ಆದರೆ, ಅದರ ತತ್ವಾರ್ಥವನ್ನು ಅರಿತುಕೊಳ್ಳಲು ಜೈನ ಗ್ರಂಥಗಳು ಸಹಾಯ ಮಾಡುತ್ತವೆ ಎಂದು ಅಭಿಪ್ರಾಯಪಟ್ಟರು.

ಕರ್ನಾಟಕ ಜೈನ್ ಅಸೋಸಿಯೇಶನ್ ಮಾಜಿ ಅಧ್ಯಕ್ಷ ಎಸ್. ಜಿತೇಂದ್ರ ಕುಮಾರ, ಕಸಾಪ ಗೌರವ ಕಾರ್ಯದರ್ಶಿ ನೇ.ಭ. ರಾಮಲಿಂಗ ಶೆಟ್ಟಿ, ಗೌರವ ಕೋಶಾಧ್ಯಕ್ಷರಾದ ಡಾ. ಬಿ.ಎಮ್.ಪಟೇಲ್ ಪಾಂಡು, ಗೌರವ ಕಾರ್ಯದರ್ಶಿ ಡಾ. ಪದ್ಮಿನಿ ನಾಗರಾಜು ಮತ್ತಿತರರು ಇದ್ದರು.

Exit mobile version