Site icon Vistara News

JDS Karnataka: ಜೆಡಿಎಸ್ ವಕ್ತಾರರಾಗಿ ಟಿ.ಎ.ಶರವಣ, ಕೆ.ಟಿ.ಶ್ರೀಕಂಠೇಗೌಡ ಸೇರಿ 20 ಮಂದಿ ನೇಮಕ

JDS Karnataka

ಬೆಂಗಳೂರು: ಜೆಡಿಎಸ್ ಪಕ್ಷದ ವಿಧಾನ ಪರಿಷತ್ ಸದಸ್ಯರಾದ ಟಿ.ಎ.ಶರವಣ, ಕೆ.ಟಿ.ಶ್ರೀಕಂಠೇಗೌಡ ಸೇರಿ 20 ಮಂದಿಯನ್ನು ಬೆಂಗಳೂರು ನಗರ ಜೆಡಿಎಸ್ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ. ಈ ಬಗ್ಗೆ ನಗರ ಘಟಕದ ಅಧ್ಯಕ್ಷ ಎಚ್.ಎಂ.ರಮೇಶ್ ಗೌಡ ಅವರು ಪ್ರಕಟಣೆ ಹೊರಡಿಸಿದ್ದಾರೆ.

ವಿಧಾನ ಪರಿಷತ್ ಸದಸ್ಯರಾದ ಟಿ.ಎ.ಶರವಣ, ಕೆ.ಟಿ.ಶ್ರೀಕಂಠೇಗೌಡ, ಆರ್.ಪ್ರಕಾಶ್, ಗಂಗಾಧರ ಮೂರ್ತಿ, ಹೆಚ್.ಎನ್.ದೇವರಾಜು, ಶೀಲಾ ನಾಯಕ್, ಪ್ರಶಾಂತಿ ಗಾವಂಕರ್, ತಾರಾ ಲೋಕೇಶ್, ಶ್ವೇತಾ ಯಾದವ್, ಛಾಯಾ, ಜಿ. ಟಿ.ರೇವಣ್ಣ, ಪ್ರವೀಣ್ ಕುಮಾರ್ ಎ.ಎಂ., ಪ್ರದೀಪ್ ಕುಮಾರ್, ಎ.ನಾಗೇಂದ್ರ ಪ್ರಸಾದ್ ಬಾಬು, ಎಸ್.ಜಿ.ವೀರಣ್ಣ, ಪಿ.ವಿ.ಎಸ್.ಪ್ರಸಾದ್, ಎನ್. ಚಂದ್ರಶೇಖರ್, ಶೈಲಾ ರಾವ್, ನರಸಿಂಹ ಮೂರ್ತಿ, ಎಂ.ಗೋಪಾಲ ಅವರನ್ನು ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ.

ಮಾಜಿ ಸಿಎಂ ಎಸ್.ಎಂ.ಕೃಷ್ಣ ಭೇಟಿಯಾಗಿ ಆಶೀರ್ವಾದ ಪಡೆದ ಎಚ್‌ಡಿಕೆ

ಬೆಂಗಳೂರು: ಮಂಡ್ಯ ಲೋಕಸಭೆ ಕ್ಷೇತ್ರದ (Lok Sabha Election 2024) ಜೆಡಿಎಸ್, ಬಿಜೆಪಿ ಮೈತ್ರಿಕೂಟ (ಎನ್‌ಡಿಎ) ಅಭ್ಯರ್ಥಿಯಾದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು, ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ಸಚಿವ, ಬಿಜೆಪಿ ಹಿರಿಯ ನಾಯಕರೂ ಆಗಿರುವ ಎಸ್.ಎಂ.ಕೃಷ್ಣ ಅವರನ್ನು ಸೌಹಾರ್ದ ಭೇಟಿ ಮಾಡಿ ಮಾತುಕತೆ ನಡೆಸಿದರು.

ಸೋಮವಾರ ಸಂಜೆ ಸದಾಶಿವನಗರದಲ್ಲಿರುವ ಎಸ್.ಎಂ.ಕೃಷ್ಣ ಅವರ ನಿವಾಸಕ್ಕೆ ಭೇಟಿ ನೀಡಿದ ಕುಮಾರಸ್ವಾಮಿ ಅವರೊಂದಿಗೆ ಪ್ರತಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ಮಾಜಿ ಸಚಿವರಾದ ಪುಟ್ಟರಾಜು, ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ, ಬಿಜೆಪಿ ನಾಯಕರಾದ ಇಂಡುವಾಳು ಸಚ್ಚಿದಾನಂದ, ಉಮೇಶ್ ಅವರು ಇದ್ದರು.

ಲೋಕಸಭೆ ಚುನಾವಣೆ ಹಾಗೂ ರಾಜ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ನಾಯಕರು ಮಾತುಕತೆ ನಡೆಸಿದರು.

ಇದನ್ನೂ ಓದಿ | Lok Sabha Election 2024: ಏಪ್ರಿಲ್‌ 14ರಂದು ಮಂಗಳೂರಿಗೆ ಮೋದಿ; ದಾಖಲೆ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗಿ!

ನಂತರ ಮಾಧ್ಯಮಗಳ ಜತೆ ಮಾತನಾಡಿದ ಎಚ್‌.ಡಿ. ಕುಮಾರಸ್ವಾಮಿ ಅವರು, ಹಿರಿಯರಾದ ರಾಜ್ಯದ ಮುಖ್ಯಮಂತ್ರಿಗಳಾಗಿ, ಕೇಂದ್ರ ಸಚಿವರಾಗಿ ಕೃಷ್ಣ ಅವರು ನಾಡಿಗೆ ಉತ್ತಮ ಸೇವೆ ಸಲ್ಲಿಸಿದ್ದಾರೆ. ಅವರು ನಮ್ಮ ತಂದೆಯವರ ಸಮಕಾಲೀನರು. ತಂದೆಯವರಿಗಿಂತ ಆರು ತಿಂಗಳು ದೊಡ್ಡವರು. ನಾನು ನಾಮಪತ್ರ ಸಲ್ಲಿಸುವ ಮುನ್ನವೇ ಅವರ ಆಶೀರ್ವಾದ ಪಡೆಯಬೇಕಿತ್ತು. ಇವತ್ತು ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದೇನೆ ಎಂದರು.

ನಾನು ಪ್ರಥಮವಾಗಿ ರಾಜಕೀಯಕ್ಕೆ ಸ್ಪರ್ಧೆ ಮಾಡಿದಾಗ ಕೃಷ್ಣ ಅವರು ಆಶೀರ್ವಾದ ಮಾಡಿದ್ದರು. ಆ ಸಂಗತಿಯನ್ನು ಮಾತುಕತೆಯ ವೇಳೆ ಹಿರಿಯರಾದ ಕೃಷ್ಣ ಅವರೇ ನೆನೆಸಿಕೊಂಡರು. ನನ್ನನ್ನು ಆಶೀರ್ವಾದ ಮಾಡಿ ನಾಡಿನ ಅಭಿವೃದ್ಧಿಗಾಗಿ ಕೆಲಸ ಮಾಡಿ ಎಂದು ಹೇಳಿರುವುದಾಗಿ ತಿಳಿಸಿದರು.

ಕೃಷ್ಣ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದದ್ದು ನನಗೆ ಬಹಳ ಸಂತೋಷ ಉಂಟು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಅವರು ತಿಳಿಸಿದರು.

Exit mobile version