Site icon Vistara News

HD Kumaraswamy : ಲೋಡ್​ ಶೆಡ್ಡಿಂಗ್​, ಕಾವೇರಿ ವಿಚಾರದಲ್ಲಿ ಹೋರಾಟ ಸಂಘಟಿಸಲು ಜೆಡಿಎಸ್​ ಸಜ್ಜು

Hd Kumaraswamy

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು ಪಕ್ಷದ ಪ್ರಮುಖರ ಸಭೆ ನಡೆಸಿದರಲ್ಲದೆ, ರಾಜ್ಯದ ಜನರು ಎದುರಿಸುತ್ತಿರುವ ಸಮಸ್ಯೆಗಳು, ಸಂಘಟನೆ ಹಾಗೂ ಮುಂಬರುವ ಲೋಕಸಭೆ ಚುನಾವಣೆ ಬಗ್ಗೆ ಮಹತ್ವದ ಸಮಾಲೋಚನೆ ನಡೆಸಿದರು. ಅನಾರೋಗ್ಯದಿಂದ ಚೇತರಿಸಿಕೊಂಡ ನಂತರ ಪಕ್ಷದ ಮೊದಲ ಸಭೆಯಲ್ಲಿ ಪಾಲ್ಗೊಂಡರು ಮಾಜಿ ಮುಖ್ಯಮಂತ್ರಿಗಳು. ಹಾಗೆಯೇ, ಈ ಸಭೆಯಲ್ಲಿ ಪಾಲ್ಗೊಳ್ಳಲು ಮಾಜಿ ಪ್ರಧಾನಿಗಳವರು ಕುಮಾರಸ್ವಾಮಿ ಅವರ ಜೆಪಿ ನಗರ ನಿವಾಸಕ್ಕೆ ಆಗಮಿಸಿದರು.

ಪಕ್ಷದ ಸುದೀರ್ಘ ಸಭೆಯಲ್ಲಿ ಪಾಲ್ಗೊಂಡ ಕುಮಾರಸ್ವಾಮಿ ಅವರು, ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಮಾತನಾಡಿ, ಮುಖಂಡರಿಗೆ ಅಗತ್ಯ ಸಲಹೆ, ಸೂಚನೆಗಳನ್ನು ನೀಡಿದರು. ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡರು, ಮಾಜಿ ಸಚಿವರಾದ ಎಚ್.ಡಿ. ರೇವಣ್ಣ, ಸಿ.ಎಸ್.ಪುಟ್ಟರಾಜು, ಸಾ.ರಾ. ಮಹೇಶ್, ಬಂಡೆಪ್ಪ ಕಾಶೆಂಪೂರ, ಮಾಜಿ ಸಂಸದ ಕುಪೆಂದ್ರ ರೆಡ್ಡಿ, ಎಚ್.ಕೆ. ಕುಮಾರಸ್ವಾಮಿ ಸೇರಿದಂತೆ ಪಕ್ಷದ ಎಲ್ಲಾ ಹಾಲಿ ಶಾಸಕರು, ಮಾಜಿ ಶಾಸಕರು, ಹಿರಿಯ ಮುಖಂಡರು ಹಾಗೂ ಜಿಲ್ಲಾ ಅಧ್ಯಕ್ಷರು ಹಾಜರಿದ್ದ ಈ ಸಭೆಯಲ್ಲಿ ಉಭಯ ನಾಯಕರು ಸಭೆಯಲ್ಲಿ ಕೆಲವಾರು ಗಂಭೀರ ವಿಷಯಗಳನ್ನು ಹಂಚಿಕೊಂಡರು.

ಕಾವೇರಿ ಜಲ ಸಂಕಷ್ಟ, ಬರಗಾಲ ಹಾಗೂ ಅಘೋಷಿತ ಲೋಡ್ ಶೆಡ್ಡಿಂಗ್ ಬಗ್ಗೆಯೂ ಕೂಡ ಸುದೀರ್ಘ ಚರ್ಚೆ ನಡೆಯಿತು. ಜನಪರ ವಿಷಯಗಳನ್ನು ಇಟ್ಟುಕೊಂಡು ಸರಕಾರದ ವಿರುದ್ಧ ಹೋರಾಟ ರೂಪಿಸಬೇಕು ಎಂದು ಮುಖಂಡರು ದಿಕ್ಸೂಚಿ ನಿಗದಿ ಮಾಡಿದರು.

ಪಕ್ಷ ಬಲಿಷ್ಠವಾಗಿದೆ. ಅದನ್ನು ದುರ್ಬಲಗೊಳಿಸುವ ಪ್ರಯತ್ನಕ್ಕೆ ಅವಕಾಶ ನೀಡುವುದಿಲ್ಲ. ನಾನು ಪಕ್ಷ ಅಧಿಕಾರಕ್ಕೆ ಬರುವುದನ್ನು ನೋಡಿಯೇ ನೋಡುತ್ತೇನೆ. ಈ ಪ್ರಾದೇಶಿಕ ಪಕ್ಷವನ್ನು ಉಳಿಸಿಕೊಳ್ಳಲು ಅವಿರತವಾಗಿ ಹೋರಾಟ ಮಾಡುತ್ತೇನೆ ಎಂದು ಮಾಜಿ ಪ್ರಧಾನಿ ಎಚ್ ಡಿ. ದೇವೇಗೌಡ ಅವರು ಶಪಥ ಮಾಡಿದರು.

ಸೆ.10ರಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶ

ಮುಂಬರುವ ಲೋಕಸಭೆ, ಬಿಬಿಎಂಪಿ, ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಿಗೆ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಇದೇ ತಿಂಗಳು 10ರಂದು ನಗರದ ಅರಮನೆ ಮೈದಾನದಲ್ಲಿ ಜೆಡಿಎಸ್ ಪಕ್ಷದ ಬೃಹತ್ ಸಂಘಟನಾ ಸಮಾವೇಶ ನಡೆಯಲಿದೆ. ಈ ಸಮಾವೇಶದ ಕುರಿತೂ ಮಾಜಿ ಪ್ರಧಾನಿ ಚರ್ಚೆ ನಡೆಸಿದರು. ಸೋತೆವು ಎಂದು ಸುಮ್ಮನಿದ್ದರೆ ಆಗುವುದಿಲ್ಲ. ಛಲದಿಂದ ಕೆಲಸ ಮಾಡಿದರೆ ಜನರು ಮೆಚ್ಚಿಕೊಳ್ಳುತ್ತಾರೆ. ಎಲ್ಲರೂ ಸೇರಿ ಪಕ್ಷವನ್ನು ಕಟ್ಟೋಣ ಎಂದು ಮುಖಂಡರಿಗೆ ಹುರಿದುಂಬಿಸಿದರು.

ಈ ವಯಸ್ಸಿನಲ್ಲಿಯೂ ನಾನು ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡಲು ತಯಾರಿದ್ದೇನೆ. ಎಲ್ಲಿಗೆ ಬೇಕಾದರೂ ಬರಲು ಸಿದ್ಧನಿದ್ದೇನೆ. ಜನರ ಪರವಾಗಿ ಹೋರಾಟ ಮಾಡೋಣ ಎಂದು ದೇವೇಗೌಡರು ಹೇಳಿದರು.

ಕಾವೇರಿ ಹೋರಾಟಕ್ಕೆ ಶಕ್ತಿ

ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಇಬ್ರಾಹಿಂ, ಜಿಟಿ ದೇವೇಗೌಡ ಹಾಗೂ ಬಂಡೆಪ್ಪ ಕಾಶೆಂಪುರ ಮತ್ತು ಟಿ.ಎ.ಶರವಣ ಅವರು, ಸಭೆಯಲ್ಲಿ ಕಾವೇರಿ ವಿಚಾರ ಕೂಡ ಚರ್ಚೆಯಾಯಿತು. ಜಿ.ಟಿ. ದೇವೇಗೌಡರ ನೇತೃತ್ವದಲ್ಲಿ ಈಗಾಗಲೇ ಹೋರಾಟ ನಡೆಸಲಾಗಿದೆ. ಮಂಡ್ಯ ಜಿಲ್ಲೆಯ ನಮ್ಮೆಲ್ಲಾ ಮುಖಂಡರು, ಕಾರ್ಯಕರ್ತರು ಹೋರಾಟದಲ್ಲಿ ಭಾಗಿಯಾಗಿದ್ದಾರೆ. ರಾಜ್ಯ ಮಟ್ಟಕ್ಕೆ ಈ ಹೋರಾಟವನ್ನು ವಿಸ್ತರಣೆ ಮಾಡಲಾಗುವುದು. ಈ ಸರಕಾರದಿಂದ ರಾಜ್ಯದ ಕಾವೇರಿ ಹಿತ ಕಾಯಲು ಸಾಧ್ಯವಿಲ್ಲ ಎಂದರು.

ಇದನ್ನೂ ಓದಿ : JDS Meeting: ಕುಮಾರಸ್ವಾಮಿ ಮತ್ತೆ Active; ದೇವೇಗೌಡರ ಸಮ್ಮುಖದಲ್ಲಿ ಚುನಾವಣೆ ಪ್ಲ್ಯಾನ್‌, ಸೆ. 10ರಂದು ಬೃಹತ್‌ ಸಮಾವೇಶ

ದೇವೇಗೌಡರು, ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಎಲ್ಲಾ ಶಾಸಕರು, ಜಿಲ್ಲಾ ಮುಖಂಡರು ಸಭೆ ಸೇರಿದ್ದೆವು. ಪಕ್ಷ ಸಂಘಟನೆ ಮಾಡಿ ರಾಜ್ಯದಲ್ಲಿ ಬಲಿಷ್ಠ ಪ್ರಾದೇಶಿಕ ಪಕ್ಷ ಕಟ್ಟಲು ನಿರ್ಧಾರ ಮಾಡಲಾಯಿತು. ಸೆಪ್ಟೆಂಬರ್ 10ರಂದು ಪ್ರಮುಖ ಕಾರ್ಯಕರ್ತರ ಸಭೆ ಕರೆಯಲಾಗಿದೆ. ಸಭೆ ಯಶಸ್ವಿ ಮಾಡುವ ಬಗ್ಗೆ ಹಿರಿಯ ನಾಯಕರು ಸೂಚನೆಗಳನ್ನು ನೀಡಿದರು. ನಂತರ ಜಿಟಿಡಿ ನೇತೃತ್ವದಲ್ಲಿ ಮಾಡಿರೋ ಕೋರ್ ಕಮಿಟಿ ರಾಜ್ಯ ಪ್ರವಾಸ ಮಾಡಬೇಕು. ಎಲ್ಲಾ 28 ಲೋಕಸಭಾ ಕ್ಷೇತ್ರಗಳಿಗೆ ತೆರಳಿ ಪ್ರಮುಖರ ಅಭಿಪ್ರಾಯ ಪಡೆಯಲಾಗುವುದು. ಕುಮಾರಸ್ವಾಮಿ ಅವರ ಆರೋಗ್ಯ ಸುಧಾರಿಸಿದೆ. ಮುಂದಿನ ತಿಂಗಳು ಅವರೂ ಪ್ರವಾಸದಲ್ಲಿ ಭಾಗಿಯಾಗಲಿದ್ದಾರೆ ಎಂದರು.

ಅಲ್ಲದೆ, ರಾಜ್ಯದಲ್ಲಿನ ರಾಜಕೀಯ ಬೆಳವಣಿಗಗಳ ಬಗ್ಗೆಯೂ ಚರ್ಚೆ ನಡೆಸಲಾಯಿತು. ಎಲ್ಲ ಅಭಿಪ್ರಾಯಗಳನ್ನು ಮುಕ್ತವಾಗಿ ಹಂಚಿಕೊಳ್ಳಲಾಯಿತು. ಜಿಲ್ಲಾವಾರು ಮುಖಂಡರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು ಎಂದರು ನಾಯಕರು ಮಾಹಿತಿ ನೀಡಿದರು.

Exit mobile version