Site icon Vistara News

Karnataka Budget 2023 : ಮೀನುಗಾರರು, ಆಳ ಸಮುದ್ರ ದೋಣಿಗಳಿಗೆ ಭದ್ರತೆ, ವರ್ಷಕ್ಕೆ 10 ಸಾವಿರ ಮನೆ

Fishing

#image_title

ಬೆಂಗಳೂರು: ಮೀನುಗಾರಿಕೆ ಕ್ಷೇತ್ರಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಹಲವು ಯೋಜನೆಗಳನ್ನು ರಾಜ್ಯ ಬಜೆಟ್‌ನಲ್ಲಿ (Karnataka Budget 2023) ಪ್ರಕಟಿಸಿದ್ದಾರೆ. ಮೀನುಗಾರರ ದೋಣಿಗಳ ಸುರಕ್ಷತೆ, ಆಳ ಸಮುದ್ರ ಮೀನುಗಾರಿಕೆಗೆ ಭದ್ರತೆ, ಹೊಸ ಸಿಗಡಿ ಕ್ಲಸ್ಟರ್‌ ಸ್ಥಾಪನೆಯನ್ನು ಪ್ರಕಟಿಸಲಾಗಿದೆ.

23ನೇ ಸಾಲಿನಲ್ಲಿ ನಮ್ಮ ಕರ್ನಾಟಕ ರಾಜ್ಯವನ್ನು ಅತ್ಯುತ್ತಮ ಕರಾವಳಿ ರಾಜ್ಯವೆಂದು ಗುರುತಿಸಿ ಕೇಂದ್ರ ಸರ್ಕಾರವು ಘೋಷಿಸಿರುವುದು ತುಂಬಾ ಹೆಮ್ಮೆಯ ಸಂಗತಿಯಾಗಿದೆ. ಕಳೆದ ಸಾಲಿನಲ್ಲಿ 10.73 ಲಕ್ಷ ಮೆಟ್ರಿಕ್ ಟನ್ ಮೀನು ಉತ್ಪಾದನೆಯನ್ನು ಮಾಡಿ ದೇಶದಲ್ಲಿ ರಾಜ್ಯವು 3ನೇ ಸ್ಥಾನದಲ್ಲಿದೆ. ಮೀನುಗಾರರಿಗೆ ನೆರವಾಗಲು 62 FFPO ಗಳ ಸ್ಥಾಪನೆ ಹಾಗೂ 12,175 ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣೆಗೆ ಕ್ರಮ ವಹಿಸಲಾಗಿದೆ ಎಂದು ಬೊಮ್ಮಾಯಿ ಹೆಮ್ಮೆಯಿಂದ ಹೇಳಿದರು.

ಆಳ ಸಮುದ್ರ ಮೀನುಗಾರಿಕೆಗೆ ರಕ್ಷಣೆ ನೀಡಲಾಗಿದೆ.

ಮತ್ಸ್ಯ ಸಂಪದ ಯೋಜನೆಯಡಿ ಕೃತಕ ಬಂಡೆ ಸಾಲು ಸ್ಥಾಪನೆ
-ಸಾಂಪ್ರದಾಯಿಕ ಮೀನುಗಾರರ ಜೀವನೋಪಾಯವನ್ನು ಉತ್ತಮಪಡಿಸಲು ಕರಾವಳಿ ಜಿಲ್ಲೆಗಳ ವಿವಿಧ ಸ್ಥಳಗಳಲ್ಲಿ ಪ್ರಧಾನ ಮಂತ್ರಿ ಮತ್ತ್ವ ಸಂಪದ ಯೋಜನೆಯಡಿ ಕೃತಕ ಬಂಡೆ ಸಾಲುಗಳನ್ನು (Artificial Reef) ಸ್ಥಾಪಿಸಲಾಗುವುದು.
– ಉತ್ತಮ ತಳಿಯ ಬಲಿತ ಬಿತ್ತನೆ ಮೀನು ಮರಿಗಳ ದಾಸ್ತಾನು (Ranching) ಪ್ರೋತ್ಸಾಹಿಸಲು 20 ಕೋಟಿ ರೂ. ಅನುದಾನವನ್ನು ಒದಗಿಸಲಾಗುವುದು.

ಹಾವೇರಿ ಜಿಲ್ಲೆಯಲ್ಲಿ ಮೀನುಮರಿ ಉತ್ಪಾದನೆ ಮತ್ತು ಪಾಲನಾ ಕೇಂದ್ರ
ಉತ್ತರ ಕರ್ನಾಟಕ ಭಾಗದಲ್ಲಿ ಮೀನು ಕೃಷಿಯನ್ನು ಉತ್ತೇಜಿಸಲು ಹಾವೇರಿ ಜಿಲ್ಲೆಯಲ್ಲಿ ಹೊಸದಾಗಿ ಮೀನುಮರಿ ಉತ್ಪಾದನಾ ಮತ್ತು ಪಾಲನಾ ಕೇಂದ್ರವನ್ನು ಸ್ಥಾಪಿಸಲಾಗುವುದು.

ಮೀನು ಮಾರಾಟಕ್ಕೆ ಪರಿಸರಸ್ನೇಹಿ ತ್ರಿಚಕ್ರ ಮೀನು ಮಾರಾಟ ವಾಹನ
ಸಾರ್ವಜನಿಕರಿಗೆ ಗುಣಮಟ್ಟದ ಮೀನು ಉತ್ಪನ್ನಗಳನ್ನು ಪೂರೈಸಲು ಪರಿಸರಸ್ನೇಹಿ ತ್ರಿಚಕ್ರ ಮೀನು ಮಾರಾಟ ವಾಹನಗಳನ್ನು ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಒದಗಿಸಲಾಗುವುದು.

ಮೀನುಗಾರರ ದೋಣಿಗಳ ಸುರಕ್ಷತೆಗೆ ಜಿಪಿಎಸ್‌
ಮೀನುಗಾರರ ಹಾಗೂ ಅವರ ದೋಣಿಗಳ ಸುರಕ್ಷತೆಗಾಗಿ 17 ಕೋಟಿ ರೂ. ಗಳ ಅನುದಾನದಲ್ಲಿ ISRO ಅಭಿವೃದ್ಧಿಪಡಿಸಿರುವ GPS ಸಂವಹನ ವ್ಯವಸ್ಥೆಯನ್ನು ಎಲ್ಲಾ ಯಾಂತ್ರೀಕೃತ ಮೀನುಗಾರಿಕೆ ದೋಣಿಗಳಲ್ಲಿ ಅಳವಡಿಸಲಾಗುವುದು. ಇದರಿಂದ ಆಳ ಸಮುದ್ರದಲ್ಲಿ ಸಂಕಷ್ಟಕ್ಕೆ ಸಿಲುಕಿದ ದೋಣಿಗಳನ್ನು ಪತ್ತೆ ಹಚ್ಚಲು ಅನುಕೂಲವಾಗಲಿದೆ.

ವಸತಿರಹಿತ ಮೀನುಗಾರರಿಗೆ ೧೦,೦೦೦ ಮನೆ
ಮೀನುಗಾರರಿಗೆ ವಸತಿ ಸೌಕರ್ಯ ಕಲ್ಪಿಸಲು ಆದ್ಯತೆ ನೀಡಿರುವ ನಮ್ಮ ಸರ್ಕಾರ ಕಳೆದ ವರ್ಷ ವಸತಿ ರಹಿತ ಮೀನುಗಾರರಿಗೆ 5,000 ಮನೆಗಳನ್ನು ನಿರ್ಮಿಸಲು ಕ್ರಮ ಕೈಗೊಂಡಿದೆ. ಪ್ರಸಕ್ತ ಸಾಲಿನಲ್ಲಿ ಈ ಯೋಜನೆಯನ್ನು 10,000 ವಸತಿರಹಿತ ಮೀನುಗಾರರಿಗೆ ವಿಸ್ತರಿಸಲಾಗುವುದು.

ಸೀಮೆ ಎಣ್ಣೆ ಆಧರಿತ ದೋಣಿಗಳಿಗೆ ೫೦,೦೦೦ ರೂ. ಸಹಾಯಧನ
ಸೀಮೆಎಣ್ಣೆ ಬಳಕೆಯಿಂದ ಉಂಟಾಗುವ ಪರಿಸರ ಮಾಲಿನ್ಯ ಮತ್ತು ಅದರ ಬೆಲೆಯ ಏರಿಳಿತದಿಂದ ದೋಣಿಗಾರರಿಗೆ ಉಂಟಾಗುವ ಆರ್ಥಿಕ ಸಂಕಷ್ಟವನ್ನು ತಪ್ಪಿಸಲು ಮುಂದಿನ 2 ವರ್ಷಗಳಲ್ಲಿ ಎಲ್ಲಾ ಸೀಮೆಎಣ್ಣೆ ಆಧಾರಿತ ದೋಣಿಗಳಲ್ಲಿ ಪೆಟ್ರೋಲ್/ಡೀಸೆಲ್ ಆಧಾರಿತ ಮೋಟಾರ್ ಇಂಜಿನ್ ಅನ್ನು ಅಳವಡಿಸಲು ತಲಾ 50 ಸಾವಿರ ರೂ. ನಂತೆ ಸಹಾಯಧನ ನೀಡಲಾಗುವುದು. ಇದಕ್ಕಾಗಿ ಪ್ರಸಕ್ತ ವರ್ಷದಲ್ಲಿ 40 ಕೋಟಿ ರೂ. ಗಳನ್ನು ಮೀಸಲಿಡಲಾಗುವುದು. ಈ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಮುಂದಿನ 2 ವರ್ಷಗಳ ಅವಧಿಗೆ ಸೀಮೆಎಣ್ಣೆ ಸಹಾಯಧನ ಮುಂದುವರೆಸಲಾಗುವುದು.

ರಿಯಾಯಿತಿ ದರ ಡೀಸೆಲ್‌ ಮಿತಿ ವಿಸ್ತರಣೆ
ಮೀನುಗಾರರ ದೋಣಿಗಳಿಗಾಗಿ ರಿಯಾಯಿತಿ ದರದಲ್ಲಿ ನೀಡುತ್ತಿರುವ ಡೀಸೆಲ್‌ನ ಮಿತಿಯನ್ನು ಸದ್ಯದ 1.5 ಲಕ್ಷ ಕಿಲೋ ಲೀಟರ್‌ಗಳಿಂದ 2 ಲಕ್ಷ ಕಿಲೋ ಲೀಟರ್‌ಗಳಿಗೆ ಹೆಚ್ಚಿಸಲಾಗುವುದು. ಇದರಿಂದ ಕಿಲೋ ಲೀಟರ್‌ಗಳವರೆಗೆ ಮೀನುಗಾರರಿಗೆ ರಾಜ್ಯ ಸರ್ಕಾರದಿಂದ 250 ಕೋಟಿ ರೂ.ಗಳ ನೆರವಾಗಲಿದೆ. ಮೀನುಗಾರರಿಗೆ ನೀಡುತ್ತಿರುವ ಸೀಮೆಎಣ್ಣೆ ಸಹಾಯಧನದ ಪ್ರಕ್ರಿಯೆಯನ್ನು ಸರಳೀಕರಿಸಿ ಪ್ರಸಕ್ತ ಸಾಲಿನಿಂದ ಡಿಬಿಟಿ ಮುಖಾಂತರ ನೇರವಾಗಿ ಮೀನುಗಾರರ ಖಾತೆಗೆ ಜಮೆ ಮಾಡಲಾಗುವುದು.

ಆಳ ಸಮುದ್ರ ಮೀನುಗಾರಿಕೆಗೆ ಪ್ರೋತ್ಸಾಹ: ಮತ್ಸ್ಯ ಯೋಜನೆಯಡಿ ದೋಣಿ ನಿರ್ಮಾಣ
ಆಳಸಮುದ್ರ ಮೀನುಗಾರಿಕೆಯನ್ನು ಇನ್ನಷ್ಟು ಉತ್ತೇಜಿಸಲು 100 ಆಳ ಸಮುದ್ರ ಮೀನುಗಾರಿಕಾ ದೋಣಿಗಳಿಗೆ (Deep sea fishing boats) ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯೊಂದಿಗೆ ಸಂಯೋಜಿಸಿ ಮತ್ಸ್ಯ ಎಂಬ ವಿಶೇಷ ಯೋಜನೆಯನ್ನು ರಾಜ್ಯದಲ್ಲಿ ಮೊಟ್ಟಮೊದಲ ಬಾರಿಗೆ ರೂಪಿಸಲಾಗಿದೆ. ಆಯ್ಕೆಯಾದ ಎಲ್ಲಾ ಫಲಾನುಭವಿಗಳಿಗೆ ಕಾರ್ಯಾದೇಶ ನೀಡಲಾಗಿದ್ದು, ದೋಣಿ ನಿರ್ಮಾಣ ಕಾರ್ಯಕ್ಕೆ ಚಾಲನೆ ದೊರೆತಿದೆ.

ಕಲ್ಯಾಣ ಕರ್ನಾಟಕದಲ್ಲಿ ಸಿಗಡಿ ಕೃಷಿ ಕ್ಲಸ್ಟರ್‌
ಸಿಗಡಿ ಉತ್ಪನ್ನಗಳ ರಫ್ತು ಪ್ರೋತ್ಸಾಹಿಸಲು ಕೇಂದ್ರ ಆಯವ್ಯಯದಲ್ಲಿ ರಫ್ತು ಸುಂಕವನ್ನು ಕಡಿಮೆ ಮಾಡಲಾಗಿದೆ. ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಕಲ್ಯಾಣ ಕರ್ನಾಟಕ ಭಾಗದ ಯಾದಗಿರಿ, ರಾಯಚೂರು ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಸಿಗಡಿ ಕೃಷಿ ಕ್ಲಸ್ಟರ್ ಗಳನ್ನು ಸ್ಥಾಪಿಸಲಾಗುವುದು.

ಸೀ ಫುಡ್‌ ಪಾರ್ಕ್‌ಸ್ಥಾಪನೆ ಘೋಷಣೆ

ಎಂಟು ಬಂದರುಗಳಲ್ಲಿ ಹೂಳೆತ್ತುವ ಕಾಮಗಾರಿ
ರಾಜ್ಯದ 8 ಮೀನುಗಾರಿಕೆ ಬಂದರುಗಳ ನ್ಯಾವಿಗೇಷನ್ ಚಾನೆಲ್ ಗಳಲ್ಲಿ ಹೂಳೆತ್ತುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಟೆಂಡರ್ ಕರೆಯಲಾಗಿದೆ. ಇದರಿಂದ ಮೀನುಗಾರಿಕೆ ದೋಣಿಗಳ ಸುಗಮ ಮತ್ತು ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗಲಿದೆ.

ಕಂಬದ ಕೋಣೆಯಲ್ಲಿ ಸೀ ಫುಡ್‌ ಪಾರ್ಕ್‌
ರಾಜ್ಯದಲ್ಲಿ ಮೀನಿನ ರಫ್ತು ಮತ್ತು ಮೌಲ್ಯವರ್ಧನೆಗಾಗಿ ಬೈಂದೂರು ತಾಲ್ಲೂಕಿನ ಕಂಬದಕೋಣೆಯಲ್ಲಿ Seafood Park ಅನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗುವುದು.

ಇದನ್ನೂ ಓದಿ : Karnataka Budget 2023: ಟೈರ್‌-2 ನಗರಗಳಲ್ಲಿ ಮಿನಿ ಥಿಯೇಟರ್‌ ಸ್ಥಾಪನೆಗೆ ಪ್ರೋತ್ಸಾಹ; ಟ್ಯಾಕ್ಸಿ, ಆಟೋ ನಿಲ್ದಾಣಗಳಿಗೆ ಶಂಕರ್‌ ನಾಗ್‌ ಹೆಸರು

Exit mobile version