Site icon Vistara News

Karnataka Budget 2024: ರಾಜ್ಯಕ್ಕೆ ಕೇಂದ್ರದಿಂದ 62,098 ಕೋಟಿ ರೂ. ತೆರಿಗೆ ಪರಿಹಾರ ನಷ್ಟ: ಸಿಎಂ ಸಿದ್ದರಾಮಯ್ಯ

siddaramaiah modi

ಬೆಂಗಳೂರು: ಕರ್ನಾಟಕ ರಾಜ್ಯವು ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ 2ನೇ ರಾಜ್ಯವಾಗಿದ್ದರೂ, ಕೇಂದ್ರ ಸರ್ಕಾರದಿಂದ ಅನ್ಯಾಯ ಅನುಭವಿಸಿದೆ. ಕೇಂದ್ರದಿಂದ ರಾಜ್ಯಗಳಿಗೆ ಹಂಚಿಕೆಯಾಗುವ ಒಟ್ಟು ತೆರಿಗೆ ಹಂಚಿಕೆಯಲ್ಲಿ, ರಾಜ್ಯಕ್ಕೆ 62,098 ಕೋಟಿ ರೂ.ಗಳಷ್ಟು ನಷ್ಟವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‌ನಲ್ಲಿ (Karnataka Budget 2024) ಆರೋಪಿಸಿದ್ದಾರೆ.

ಅವರು ಕೇಂದ್ರ ಸರ್ಕಾರದ ಮೇಲೆ ಮಾಡಿದ ಟೀಕೆಗಳು ಹೀಗಿವೆ:

1) ಕರ್ನಾಟಕ ರಾಜ್ಯವು ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ 2ನೇ ರಾಜ್ಯವಾಗಿದ್ದು, 2022-23ಕ್ಕೆ ಹೋಲಿಸಿದರೆ ಪ್ರಸಕ್ತ ವರ್ಷದಲ್ಲಿ ಜಿ.ಎಸ್.ಟಿ ತೆರಿಗೆ ಸಂಗ್ರಹಣೆಯು ಶೇ.18ರಷ್ಟು ಹೆಚ್ಚಳ ಕಂಡಿದೆ. ಸ್ವಂತ ತೆರಿಗೆ ರಾಜಸ್ವವು ಹಿಂದಿನ ವರ್ಷಕ್ಕೆ ಹೋಲಿಸಿದರೆ 2023-24ರಲ್ಲಿ ಶೇ.12ರಷ್ಟು ಬೆಳವಣಿಗೆಯನ್ನು ಸಾಧಿಸಲಿದೆ. ಗ್ಯಾರಂಟಿ ಯೋಜನೆಗಳಿಂದ ಜನರ ಆದಾಯ ಪ್ರಮಾಣ ಹೆಚ್ಚಾಗಿ, ರಾಜ್ಯದ ಆರ್ಥಿಕತೆಯನ್ನು ಉತ್ತೇಜಿಸುವಲ್ಲಿ ಸಹಕಾರಿಯಾಗಿರುವುದನ್ನು ಇದು ತೋರಿಸುತ್ತದೆ. ಕೇಂದ್ರ ಹಾಗೂ ರಾಜ್ಯಗಳ ಸಂಬಂಧ ನೌಕರ ಹಾಗೂ ಯಜಮಾನರ ಸಂಬಂಧಗಳಾಗದೆ ಸಂವಿಧಾನದತ್ತ ಅಧಿಕಾರ ವ್ಯಾಪ್ತಿಯೊಳಗೆ ಸ್ವಾಯತ್ತ ಘಟಕಗಳಾಗಿರಬೇಕು. ರಾಜ್ಯಗಳ ಜೊತೆ ಸಮಾನತೆಯ ಆಧಾರದಲ್ಲಿ ವ್ಯವಹರಿಸಬೇಕು.

2) ಸರಕು ಮತ್ತು ಸೇವಾ ತೆರಿಗೆಯನ್ನು ಪರಿಚಯಿಸುವ ಮೂಲಕ ರಾಜ್ಯಗಳ ತೆರಿಗೆ ಸಂಗ್ರಹಣೆಯು ಶೇ.14ರಷ್ಟು ಬೆಳವಣಿಗೆ ಹೊಂದಲಿದ್ದು, ಒಂದು ವೇಳೆ ಅಂದಾಜಿಗಿಂತ ಕಡಿಮೆ ಸಂಗ್ರಹವಾದಲ್ಲಿ, ಕೇಂದ್ರ ಸರ್ಕಾರದಿಂದ ಪರಿಹಾರ ನೀಡುವುದಾಗಿ ರಾಜ್ಯ ಸರ್ಕಾರಗಳಿಗೆ ಭರವಸೆ ನೀಡಲಾಗಿತ್ತು. ಶೇ.14ರಷ್ಟು ಬೆಳವಣಿಗೆ ದರದಂತೆ 2017 ರಿಂದ 2023-24ರವರೆಗೆ ರಾಜ್ಯದಲ್ಲಿ ಒಟ್ಟು 4,92,296 ಕೋಟಿ ರೂ.ಗಳ ಜಿ.ಎಸ್.ಟಿ ತೆರಿಗೆ ಸಂಗ್ರಹಣೆಯಾಗುತ್ತದೆ ಎಂದು ಅಂದಾಜಿಸಲಾಗಿತ್ತು. ಆದರೆ ವಾಸ್ತವಿಕವಾಗಿ ರಾಜ್ಯದಲ್ಲಿ 3,26,764 ಕೋಟಿ ರೂ.ಗಳ ಜಿ.ಎಸ್‌.ಟಿ ತೆರಿಗೆ ಸ್ವೀಕೃತವಾಗಿದೆ. ಜಿ.ಎಸ್.ಟಿ ತೆರಿಗೆ ಸಂಗ್ರಹಣೆಯಲ್ಲಿನ ಕೊರತೆ 1,65,532 ಕೋಟಿ ರೂ.ಗಳಿಗೆ ಎದುರಾಗಿ, ಕೇಂದ್ರ ಸರ್ಕಾರವು ರಾಜ್ಯಕ್ಕೆ ಕೇವಲ 1,06,258 ಕೋಟಿ ರೂ. ಪರಿಹಾರವನ್ನು ಮಾತ್ರ ಬಿಡುಗಡೆ ಮಾಡಿದೆ. ಜಿ.ಎಸ್.ಟಿ. ತೆರಿಗೆಯ ಈ ಅವೈಜ್ಞಾನಿಕ ಅನುಷ್ಠಾನದಿಂದ ರಾಜ್ಯಕ್ಕೆ ಕಳೆದ ಏಳು ವರ್ಷಗಳ ಅವಧಿಯಲ್ಲಿ ಒಟ್ಟು 59,274 ಕೋಟಿ ರೂ.ಗಳ ನಷ್ಟವಾಗಿರುತ್ತದೆ.

3) 15ನೇ ಹಣಕಾಸು ಆಯೋಗವು 2020-21ಕ್ಕೆ ಅನ್ವಯವಾಗುವಂತೆ ನೀಡಿದ್ದ ಮಧ್ಯಂತರ ವರದಿಯ ಶಿಫಾರಸ್ಸಿನಿಂದ ರಾಜ್ಯಕ್ಕಾದ ಅನ್ಯಾಯವನ್ನು ಸರಿಪಡಿಸುವಲ್ಲಿ ಹಿಂದಿನ ಸರ್ಕಾರವು ವಿಫಲವಾಯಿತು. ಹಿಂದಿನ ಸರ್ಕಾರ ಕೈಚೆಲ್ಲಿ ಕೂತಿದ್ದರ ಪರಿಣಾಮವಾಗಿ ಅಂತಿಮ ವರದಿಯ ಶಿಫಾರಸ್ಸಿನಲ್ಲಿಯೂ ಸಹ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಅತಿ ಹೆಚ್ಚು ನಷ್ಟ ಅನುಭವಿಸಬೇಕಾಯಿತು. ರಾಜ್ಯದ ಜಿ.ಎಸ್.ಡಿ.ಪಿ ಲೆಕ್ಕಾಚಾರ ಮಾಡುವ ವಿಧಾನದಲ್ಲಿ ಬದಲಾವಣೆ ಹಾಗೂ 1971ರ ಬದಲು 2011ರ ಜನಗಣತಿ ವರದಿಯ ಬಳಕೆಯಿಂದಾಗಿ ಅಭಿವೃದ್ಧಿಶೀಲ ರಾಜ್ಯಗಳಿಗೆ ಭಾರೀ ನಷ್ಟವುಂಟಾಗಿದೆ. 14ನೇ ಹಣಕಾಸು ಆಯೋಗ ಶಿಫಾರಸ್ಸು ನೀಡಿದ್ದ ಹಂಚಿಕೆಯ ಸೂತ್ರವನ್ನು ಪಾಲಿಸಿದ್ದರೆ ಕರ್ನಾಟಕ ರಾಜ್ಯಕ್ಕೆ 2,77,350 ಕೋಟಿ ರೂ.ಗಳ ತೆರಿಗೆ ಪಾಲು ಸ್ವೀಕೃತವಾಗುತ್ತಿತ್ತು. ಆದರೆ 15ನೇ ಹಣಕಾಸು ಆಯೋಗದ ಶಿಫಾರಸ್ಸಿನಿಂದ ರಾಜ್ಯಕ್ಕೆ 2,15,253 ಕೋಟಿ ರೂ.ಗಳು ಮಾತ್ರ ಹಂಚಿಕೆಯಾಗಲಿದೆ ಎಂದು ಅಂದಾಜಿಸಲಾಗಿದೆ. 15ನೇ ಹಣಕಾಸು ಆಯೋಗದ ಆರು ವರ್ಷದ ಅವಧಿಯಲ್ಲಿ ಕೇಂದ್ರದಿಂದ ರಾಜ್ಯಗಳಿಗೆ ಹಂಚಿಕೆಯಾಗುವ ಒಟ್ಟು ತೆರಿಗೆ ಹಂಚಿಕೆಯಲ್ಲಿ, ರಾಜ್ಯಕ್ಕೆ 62,098 ಕೋಟಿ ರೂ.ಗಳಷ್ಟು ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

4) ಇದಲ್ಲದೆ, 15ನೇ ಹಣಕಾಸು ಆಯೋಗವು ಮೊದಲನೆಯ ವರದಿಯಲ್ಲಿ 2020-21ನೇ ವರ್ಷಕ್ಕೆ 5,495 ಕೋಟಿ ರೂ. ವಿಶೇಷ ಅನುದಾನ ಒದಗಿಸುವಂತೆ ಹಾಗೂ ಅಂತಿಮ ವರದಿಯಲ್ಲಿ ಬೆಂಗಳೂರಿನ ಅಭಿವೃದ್ಧಿಗೆ 6,000 ಕೋಟಿ ರೂ. ರಾಜ್ಯ ಕೇಂದ್ರಿತ ಅನುದಾನವನ್ನು ಶಿಫಾರಸ್ಸು ಮಾಡಿತ್ತು. ಆದರೆ ಈ ಶಿಫಾರಸ್ಸುಗಳನ್ನು ಕೇಂದ್ರ ಸರ್ಕಾರವು ತಿರಸ್ಕರಿಸಿರುತ್ತದೆ. ರಾಜ್ಯದಲ್ಲಿ ಡಬಲ್‌ ಇಂಜಿನ್‌ ಎಂದು ಹೇಳಿಕೊಳ್ಳುವ ಸರ್ಕಾರ ಇದ್ದರೂ ಸಹ ಕೇಂದ್ರದಿಂದ ಒಟ್ಟು 11,495 ಕೋಟಿ ರೂ.ಗಳ ವಿಶೇಷ ಅನುದಾನ ಪಡೆಯುವಲ್ಲಿ ಹಿಂದಿನ ಸರ್ಕಾರವು ಅಸಮರ್ಥವಾಗಿರುತ್ತದೆ.

5) 15ನೇ ಹಣಕಾಸು ಆಯೋಗಕ್ಕೆ ಸರಿಯಾದ ವಿಶ್ಲೇಷಣೆಯೊಂದಿಗೆ ಜ್ಞಾಪನಾ ಪತ್ರದ (Memorandum) ಮೂಲಕ ಹಕ್ಕೊತ್ತಾಯ ಮಂಡಿಸಿದ್ದರೂ, ರಾಜ್ಯಕ್ಕೆ ನ್ಯಾಯ ಸಿಕ್ಕಿರುವುದಿಲ್ಲ. ಈ ಅನ್ಯಾಯವು ಮರುಕಳಿಸದಂತೆ ಮುನ್ನೆಚ್ಚರಿಕೆಯ ಕ್ರಮವಾಗಿ ಸಚಿವ ಸಂಪುಟದ ಮಾರ್ಗದರ್ಶನದೊಂದಿಗೆ ವಿಷಯ ತಜ್ಞರನ್ನು ಒಳಗೊಂಡ ತಾಂತ್ರಿಕಕೋಶವನ್ನು ರಚಿಸಿ ರಾಜ್ಯಕ್ಕೆ ಹೆಚ್ಚು ತೆರಿಗೆ ಪಾಲು ಮತ್ತು ಅನುದಾನಗಳನ್ನು ಪಡೆಯಲು ಒಂದು ಜ್ಞಾಪನಾ ಪತ್ರವನ್ನು (Memorandum) ಸಿದ್ಧಪಡಿಸಿ ಸಮರ್ಥವಾದ ಮತ್ತು ವೈಜ್ಞಾನಿಕವಾಗಿ ವಿಶ್ಲೇಷಿಸಿದ ಅಂಕಿಅಂಶಗಳೊಂದಿಗೆ 16ನೇ ಹಣಕಾಸು ಆಯೋಗಕ್ಕೆ ಸಲ್ಲಿಸಲು ನಿರ್ಧರಿಸಲಾಗಿದೆ.

6) ಕೇಂದ್ರ ಸರ್ಕಾರವು ಸೆಸ್‌ ಮತ್ತು ಸರ್‌ಚಾರ್ಜ್‌ಗಳನ್ನು ಹೆಚ್ಚಿಸುತ್ತಿದ್ದು, ಅವುಗಳನ್ನು ರಾಜ್ಯಗಳೊಂದಿಗೆ ಹಂಚಿಕೆ ಮಾಡುವುದಿಲ್ಲ. 2017-18 ರಿಂದ 2023-24ರ ಅವಧಿಯಲ್ಲಿ ಶೇ.153ರಷ್ಟು ಹೆಚ್ಚಾಗಿರುತ್ತದೆ. ಸೆಸ್‌ ಮತ್ತು ಸರ್‌ಚಾರ್ಜ್‌ಗಳನ್ನು ರಾಜ್ಯಗಳೊಂದಿಗೆ ಹಂಚಿಕೆ ಮಾಡಿದ್ದರೆ, ರಾಜ್ಯಗಳಿಗೆ ಒಟ್ಟು 11,34,301 ಕೋಟಿ ರೂ.ಗಳು ಹಂಚಿಕೆಯಾಗುತ್ತಿತ್ತು. ಇದರಿಂದ ಕರ್ನಾಟಕ ರಾಜ್ಯಕ್ಕೆ ಮಾತ್ರ ಕಳೆದ ಏಳು ವರ್ಷಗಳ ಅವಧಿಯಲ್ಲಿ ಒಟ್ಟು 45,322 ಕೋಟಿ ರೂ.ಗಳ ನಷ್ಟ ಉಂಟಾಗಿದೆ.

ಇದನ್ನೂ ಓದಿ: Karnataka Budget 2024: 3.71 ಲಕ್ಷ ಕೋಟಿಗೆ ಹಿಗ್ಗಿದ ಬಜೆಟ್‌ ಗಾತ್ರ, ಯಾವ್ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ?

7) ಜಿ.ಎಸ್.ಟಿ.ಯ ಅವೈಜ್ಞಾನಿಕ ಅನುಷ್ಠಾನ, ಸೆಸ್‌ ಮತ್ತು ಸರ್‌ಚಾರ್ಜ್‌ಗಳ ಹೆಚ್ಚಳ ಮತ್ತು ತೆರಿಗೆ ಹಂಚಿಕೆಯ ಸೂತ್ರ ಬದಲಾವಣೆ – ಕೇಂದ್ರ ಸರ್ಕಾರದ ಈ ಮೂರು ಬಗೆಯ ಅನ್ಯಾಯಗಳಿಂದ ಹಾಗೂ ನ್ಯಾಯಯುತವಾಗಿ ರಾಜ್ಯಗಳಿಗೆ ಹಣ ಬಿಡುಗಡೆ ಮಾಡದ ಕಾರಣದಿಂದಾಗಿ ದೇಶದ ಎಲ್ಲಾ ರಾಜ್ಯಗಳ ಹಣಕಾಸು ಸಾಮರ್ಥ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗಿದೆ. ಕೇಂದ್ರದಲ್ಲಿ ಆಡಳಿತದಲ್ಲಿರುವ ಪಕ್ಷವೇ, ದೇಶದ ಹಲವು ರಾಜ್ಯಗಳಲ್ಲಿ ಆಡಳಿತದಲ್ಲಿರುವ ಕಾರಣ ಅವರಿಗೆ ಈ ಅನ್ಯಾಯಗಳ ವಿರುದ್ಧ ದನಿಯೆತ್ತಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ರಾಜ್ಯಗಳಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ದನಿಯೆತ್ತಿ, ರಾಜ್ಯಗಳ ಹಕ್ಕಿನ ರಕ್ಷಣೆ ಮಾಡುವ ಹೊಣೆಗಾರಿಕೆ ನಮ್ಮದಾಗಿದೆ.

8) ಬೆಲೆ ಏರಿಕೆ, ನಿರುದ್ಯೋಗ ಮತ್ತು ಆದಾಯದ ಅಸಮಾನತೆಗಳಿಂದ ರಾಷ್ಟ್ರದ ಜನತೆ ತತ್ತರಿಸಿದ್ದು, ಬಡವರಿಗೆ ನೇರವಾಗಿ ಪ್ರಯೋಜನವಾಗುವ ಕಲ್ಯಾಣ ಯೋಜನೆಗಳಿಗೆ ಆಯವ್ಯಯ ಹಂಚಿಕೆಯನ್ನು ಹೆಚ್ಚಿಸುವುದು ರಾಜ್ಯದ ಕರ್ತವ್ಯವಾಗಿದೆ. ರಾಜಸ್ವ ಕೊರತೆಯಲ್ಲಿ ಹೆಚ್ಚಳವಾದರೂ ಸಹ, ಅಭಿವೃದ್ಧಿಯ ಫಲಗಳು ಬಡಜನತೆಗೆ ತಲುಪುವುದನ್ನು ಖಚಿತಪಡಿಸಿಕೊಳ್ಳಲು ಅಂತಹ ಕಲ್ಯಾಣ ವೆಚ್ಚಗಳು ಅವಶ್ಯಕ. ಸಂಕಷ್ಟದ ಸಮಯದಲ್ಲಿ ಬಡವರು ಮತ್ತು ನಿರ್ಗತಿಕರ ನೆರವಿಗೆ ರಾಜ್ಯ ಸರ್ಕಾರ ಬರದಿದ್ದರೆ ರಾಜಸ್ವ ಹೆಚ್ಚುವರಿ ಸಾಧನೆಯು ಅರ್ಥಹೀನವಾಗಿರುತ್ತದೆ.

9) ಈ ಹಿನ್ನಲೆಯಲ್ಲಿ, ನಾವು ರಾಜಸ್ವ ಕೊರತೆಯ ಆಯವ್ಯಯವನ್ನು ಮಂಡಿಸಿದ್ದರೂ ಸಹ, 2024-25ರ ಆಯವ್ಯಯದಲ್ಲಿ ಕಲ್ಯಾಣ ಕಾರ್ಯಕ್ರಮಗಳಿಗೆ 1,20,373 ಕೋಟಿ ರೂ.ಗಳ ಅನುದಾನವನ್ನು ಹಂಚಿಕೆ ಮಾಡಿರುತ್ತೇವೆ. ಅಲ್ಲದೆ ಬಂಡವಾಳ ವೆಚ್ಚಕ್ಕೆ ಅನುದಾನದ ಕೊರತೆ ಉಂಟಾಗದಂತೆ, ನಾವು ವಿತ್ತೀಯ ಕೊರತೆಯನ್ನು ಜಿ.ಎಸ್.ಡಿ.ಪಿ.ಯ ಶೇ.3ರೊಳಗೆ ಮತ್ತು ಒಟ್ಟು ಬಾಕಿಯಿರುವ ಹೊಣೆಗಾರಿಕೆಗಳನ್ನು ಜಿ.ಎಸ್.ಡಿ.ಪಿ.ಯ ಶೇ.25ರೊಳಗೆ ಕಾಯ್ದುಕೊಳ್ಳುವ ಮೂಲಕ ವಿತ್ತೀಯ ಹೊಣೆಗಾರಿಕೆಯನ್ನು ಪಾಲಿಸಿರುತ್ತೇವೆ.

ಇದನ್ನೂ ಓದಿ: Karnataka Budget 2024 : ಬಜೆಟ್​ನಲ್ಲಿ ಬ್ರಾಂಡ್ ಬೆಂಗಳೂರಿಗೆ ಸಿಕ್ಕಿದ್ದೇನು? ಇಲ್ಲಿದೆ ಎಲ್ಲ ವಿವರ

Exit mobile version