Site icon Vistara News

Karnataka Budget 2024: ಸಾಲ ಶೂಲದ ಹರಿಕಾರ ಸಾಲರಾಮಯ್ಯ; ರಾಜ್ಯ ಬಜೆಟ್‌ ಬಗ್ಗೆ ಬಿಜೆಪಿ ಟೀಕೆ

Karnataka Budget 2024 new 1

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್‌ ಬಗ್ಗೆ ಸಾರ್ವಜನಿಕರು ಮತ್ತು ರಾಜಕೀಯ ನಾಯಕರಿಂದ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ಇನ್ನು ಬಜೆಟ್‌ ಬಗ್ಗೆ ರಾಜ್ಯ ಬಿಜೆಪಿ ಪ್ರತಿಕ್ರಿಯಿಸಿ, ಸಾಲ ಶೂಲದ ಹರಿಕಾರ ಸಾಲರಾಮಯ್ಯ, ಸಾಲವೇ ಎಲ್ಲದಕ್ಕೂ ವಾಮಮಾರ್ಗ ಎಂದುಕೊಂಡಿರುವ ಈ ಶತಮಾನದ ನಕಲಿ ಅರ್ಥ ಶಾಸ್ತ್ರಜ್ಞ ಸಿದ್ದರಾಮಯ್ಯ ಅವರು ಕರ್ನಾಟಕವನ್ನು ಸಾಲ ರಾಜ್ಯವನ್ನಾಗಿ ಪರಿವರ್ತಿಸಿದ್ದಾರೆ ಎಂದು ಆಕ್ರೋಶ ಹೊರಹಾಕಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ರಾಜ್ಯ ಬಿಜೆಪಿ, ಅಧಿಕಾರಕ್ಕೆ ಬಂದು ಕೇವಲ 9 ತಿಂಗಳಲ್ಲಿ 1,93,246 ಕೋಟಿ ರೂ. ಸಾಲ‌ ಮಾಡಿದ್ದಾರೆ. ಅಂದರೆ ಪ್ರತಿಯೊಬ್ಬ ಕನ್ನಡಿಗನ ತಲೆ ಮೇಲೆ 28 ಸಾವಿರ ರೂ. ಸಾಲ ಹೇರಿದ್ದಾರೆ. ಸಾಲರಾಮಯ್ಯನವರು ಒಂದು ಸಮುದಾಯದ ತುಷ್ಟೀಕರಣಕ್ಕಾಗಿ ಲಕ್ಷಾಂತರ ಕೋಟಿ ಸಾಲ ಮಾಡಿ ಕನ್ನಡಿಗರನ್ನು ಸಂಪೂರ್ಣವಾಗಿ ಮುಳುಗಿಸಿದ್ದಾರೆ. ಸಾಲದ ಸುಳಿಗೆ ಕರುನಾಡು ಸಿಲುಕಿದೆ. ಕರ್ನಾಟಕ ಅಭಿವೃದ್ಧಿಯಲ್ಲಿ 20 ವರ್ಷ ಹಿಂದಕ್ಕೆ ಬಿದ್ದಿದೆ. ಆರ್ಥಿಕತೆ ಹಳ್ಳ ಹಿಡಿದಿದೆ ಎಂದು ಕಿಡಿಕಾರಿದೆ.

ಇದನ್ನೂ ಓದಿ | Karnataka Budget Session 2024: ಬಿಜೆಪಿಯವರ ತಲೆಯಲ್ಲಿ ಏನೂ ಇಲ್ಲ; ಬಡವರ ಕೊಳ್ಳುವ ಶಕ್ತಿ ಹೆಚ್ಚಿಸುವ ಬಜೆಟ್‌ ಎಂದ ಸಿದ್ದರಾಮಯ್ಯ

ನಯಾಪೈಸೆ ಪ್ರಯೋಜನ ಇಲ್ಲದ ಬಜೆಟ್‌, ಉತ್ತರಕ್ಕೆ ಒಂದು ರೂ. ಕೂಡಾ ಇಲ್ಲ; ಬಿ.ವೈ ವಿಜಯೇಂದ್ರ

ಬೆಂಗಳೂರು: ಮುಖ್ಯಮಂತ್ರಿಗಳು ಮತ್ತು ರಾಜ್ಯದ ಹಣಕಾಸು ಸಚಿವರಾದ ಸಿದ್ದರಾಮಯ್ಯನವರು (CM Siddaramaiah) ಇಂದು ಮಂಡಿಸಿದ ರಾಜ್ಯ ಬಜೆಟ್‌ (Karnataka Budget 2024) ಬಜೆಟ್ ರೈತವಿರೋಧಿ, ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಶೂನ್ಯ ಪ್ರಗತಿಯ ಬಜೆಟ್ ಇದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (BY Vijayendra) ಅವರು ವಿಶ್ಲೇಷಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ರಾಜ್ಯವನ್ನು 20 ವರ್ಷಗಳಷ್ಟು ಹಿಂದಕ್ಕೆ ತೆಗೆದುಕೊಂಡು ಹೋಗುವ ಬಜೆಟ್ ಇದು ಎಂದು ಟೀಕಿಸಿದರು.

ಯುವಕರಿಗೆ ಯಾವುದೇ ಒಂದು ಕಾರ್ಯಕ್ರಮಗಳನ್ನು, ಯೋಜನೆಗಳನ್ನು ಘೋಷಣೆ ಮಾಡಿಲ್ಲ. ತಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಮತ್ತು ತಮ್ಮ ವೈಫಲ್ಯಗಳನ್ನು ಮುಚ್ಚಿ ಹಾಕಿಕೊಳ್ಳಲು ಇವತ್ತು ಸನ್ಮಾನ್ಯ ಸಿದ್ದರಾಮಯ್ಯನವರು ತಮ್ಮ ಸಮಯ ವ್ಯರ್ಥ ಮಾಡಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: Karnataka Budget 2024 : ಸಿದ್ದು ಬಜೆಟ್‌ನ ಘೋಷಣೆಗಳ ಸಂಪೂರ್ಣ ಪಟ್ಟಿ; ಇದನ್ನು ಓದಿದ್ರೆ ಸಾಕು!

ಈ ಬಜೆಟ್‍ನ ಪಾವಿತ್ರ್ಯತೆಯನ್ನು ಹಾಳು ಮಾಡಿದ್ದಾರೆ ಎಂದು ಆಕ್ಷೇಪಿಸಿದ ಅವರು, ಮೊನ್ನೆ ದೆಹಲಿ ಚಲೋ ಮಾಡಿದ್ದರು. ದೆಹಲಿಯಲ್ಲಿ ರಾಜ್ಯ ಸರಕಾರದ ಗೌರವವನ್ನು ಹರಾಜು ಹಾಕುವ ಕೆಲಸ ಆಗಿತ್ತು. ಇವತ್ತು ಕೂಡ ಮುಖ್ಯಮಂತ್ರಿಗಳು ತಮ್ಮ ಬಜೆಟ್‍ನಲ್ಲಿ ಕೇಂದ್ರ ಸರಕಾರವನ್ನು ದೂರುವ ಕೆಲಸ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಒಂದು ರೂಪಾಯಿ ಇಲ್ಲ..

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಒಂದು ರೂಪಾಯಿಯನ್ನೂ ಕೊಡದ ಬಜೆಟ್ ಇದಾಗಿದೆ. ಸಂಕಷ್ಟದಲ್ಲಿರುವ ರೈತರು ಬಜೆಟ್ ಮೂಲಕ ಪರಿಹಾರದ ನಿರೀಕ್ಷೆಯಲ್ಲಿದ್ದರು. ಇದರಡಿ ಮಹಿಳೆಯರಿಗೂ ಅನುಕೂಲ ಆಗುವುದಿಲ್ಲ. ಇವರು ತಮ್ಮ ಪ್ರಣಾಳಿಕೆಯಲ್ಲಿ ನೇಕಾರರ ಬಗ್ಗೆ ಮಾತನಾಡಿದ್ದರು. ನೇಕಾರರ ಪರವಾಗಿ ಯಾವುದೇ ಒಂದು ಯೋಜನೆಯನ್ನು ಘೋಷಣೆ ಮಾಡಿಲ್ಲ. ಯೋಜನೆ ಘೋಷಿಸುವುದು ಇರಲಿ; ಆ ನೇಕಾರರ ಹೆಸರನ್ನೂ ಉಲ್ಲೇಖಿಸಿಲ್ಲ ಎಂದು ವಿಜಯೇಂದ್ರ ಅವರು ಟೀಕಿಸಿದರು.

ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳವಿಲ್ಲ!

ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳದ ಭರವಸೆ ನೀಡಿದ್ದರು. ಅದರ ಬಗ್ಗೆಯೂ ಉಲ್ಲೇಖ ಮಾಡಿಲ್ಲ. ‘ನುಡಿದಂತೆ ನಡೆದ ಸರಕಾರ’ ಎಂದು ಕೊಚ್ಚಿಕೊಳ್ಳುತ್ತಾರೆ. ‘ನುಡಿದಂತೆ ನಡೆದ ಸರಕಾರ’ ಎಂದು ತಮ್ಮ ಬೆನ್ನನ್ನು ತಾವೇ ತಟ್ಟಿಕೊಳ್ಳುತ್ತಿದ್ದು, ರಾಜ್ಯದ ರೈತರು, ಬಡವರು, ದೀನದಲಿತರು, ನೇಕಾರರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸೇರಿ ಎಲ್ಲ ವರ್ಗಕ್ಕೂ ನಿರಾಸೆ ಮೂಡಿಸಿದ ಬಜೆಟ್ ಇದು ಎಂದು ತಿಳಿಸಿದರು.

ಕೃಷಿ ಬೆಳೆ ಸಾಲ ಮನ್ನಾದ ಉಲ್ಲೇಖವೇ ಇಲ್ಲ

ಬರಗಾಲದ ಸಂದರ್ಭದಲ್ಲೂ ಕೃಷಿ ಮತ್ತು ಬೆಳೆ ಸಾಲದ ಮನ್ನಾ ಕುರಿತು ಉಲ್ಲೇಖ ಮಾಡಿಲ್ಲ. ಸರಕಾರಿ ನೌಕರರ ಮೂಗಿಗೆ ತುಪ್ಪ ಹಚ್ಚುವ ಕೆಲಸವನ್ನು ಇವರು ಮಾಡಿದ್ದಾರೆ. ಬರಗಾಲದ ಸಂದರ್ಭದಲ್ಲಿ ಯಾವುದೇ ರೀತಿಯ ಅನುಕೂಲ ಆಗದ ಬಜೆಟ್, ನಿಶ್ಚಿತವಾಗಿ ಇದು ಕರಾಳ ದಿನ ಎಂದರೂ ತಪ್ಪಾಗಲಾರದು ಎಂದು ನುಡಿದರು.

ಇದನ್ನೂ ಓದಿ | Karnataka Budget 2024: ರಾಜ್ಯ ಬಜೆಟ್‌ನಲ್ಲಿ ಯಾವ ಜಿಲ್ಲೆಗೆ ಏನು ಸಿಕ್ಕಿದೆ?; ಇಲ್ಲಿದೆ ಮಾಹಿತಿ

ಸಿದ್ದರಾಮಯ್ಯ ಅವರಿಂದ ಇಂಥ ಬಜೆಟ್‌ ನಿರೀಕ್ಷೆ ಮಾಡಿರಲಿಲ್ಲ

15ನೇ ಬಜೆಟ್ ಮಂಡಿಸುತ್ತಿರುವ ಒಬ್ಬ ಅನುಭವಿ ಮುಖ್ಯಮಂತ್ರಿ ಈ ರೀತಿ ಬಜೆಟ್ ಮಂಡಿಸಬಹುದೆಂದು ಯಾರೂ ನಿರೀಕ್ಷೆ ಮಾಡಿರಲಿಲ್ಲ. ನಿಜವಾಗಲೂ ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಒಂದು ದುರಂತವೇ ಸರಿ ಎಂದ ಅವರು, ರೈತರನ್ನೂ ಕಡೆಗಣಿಸಿದ್ದಾರೆ; ಮಹಿಳೆಯರನ್ನೂ ಕಡೆಗಣಿಸಿದ್ದಾರೆ; ನೇಕಾರರನ್ನೂ ಕಡೆಗಣಿಸಿದ್ದಾರೆ, ಯುವಕರನ್ನೂ ಕಡೆಗಣಿಸಿದ್ದಾರೆ; ಉತ್ತರ ಕರ್ನಾಟಕದ ಅಭಿವೃದ್ಧಿಯನ್ನೂ ಕಡೆಗಣಿಸಿದ ಸರಕಾರ ಬಹುಶಃ ರಾಜ್ಯದ ಜನರ ಪಾಲಿಗೆ ಬದುಕಿದ್ದೂ ಸತ್ತಂತೆ ಎಂದು ಹೇಳಿದರು.

Exit mobile version