Site icon Vistara News

karnataka Election | ಕಾಂಗ್ರೆಸ್‌ ಬಸ್‌ ಯಾತ್ರೆಗೆ ಪ್ರತಿಯಾಗಿ ಬಿಜೆಪಿಯಿಂದ ರಥಯಾತ್ರೆ, ಬಜೆಟ್‌ ಅಧಿವೇಶನದ ಬಳಿಕ ಶುರು!

Basavaraj Bommai

Basavaraj Bommai

ನವ ದೆಹಲಿ: ರಾಜ್ಯದಲ್ಲಿ ಕಾಂಗ್ರೆಸ್‌ ಪ್ರಜಾಧ್ವನಿ ಹೆಸರಿನಲ್ಲಿ ಬಸ್‌ ಯಾತ್ರೆ (karnataka Election) ನಡೆಸುತ್ತಿರುವ ಬೆನ್ನಿಗೇ ಇದಕ್ಕೆ ಕೌಂಟರ್‌ ಆಗಿ ಬಿಜೆಪಿ ರಥಯಾತ್ರೆ ನಡೆಸಲು ಮುಂದಾಗಿದೆ. ಬಜೆಟ್ ಅಧಿವೇಶನದ ನಂತರ ರಾಜ್ಯದ ನಾಲ್ಕು ಕಡೆ ರಥಯಾತ್ರೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.‌ ಬಜೆಟ್‌ ಅಧಿವೇಶನ ಫೆಬ್ರವರಿ ೧೭ರಿಂದ ಆರಂಭವಾಗುವ ಸಾಧ್ಯತೆಗಳಿವೆ.

ದೆಹಲಿಯಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಪಾಲ್ಗೊಂಡು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾರ್ಯಕಾರಿಣಿಯಲ್ಲಿ ಹಲವಾರು ರಾಜಕೀಯ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ. ಚುನಾವಣೆ ನಡೆಯುವ ರಾಜ್ಯಗಳ ಬಗ್ಗೆ ವರದಿ ಮಂಡಿಸಲಾಯಿತು. ಬೂತ್ ಮಟ್ಟದ ಕಾರ್ಯಕ್ರಮಗಳಿಂದ ಹಿಡಿದು, ಸಂಘಟನೆ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ಹೇಳಿದರು.

ʻʻರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಇಲ್ಲದೆ ಚುನಾವಣೆ ಎದುರಿಸುತ್ತಿದ್ದೇನೆ. ನಕಾರಾತ್ಮಕ ಪ್ರಚಾರದ ಪ್ರಯತ್ನಗಳು ನಡೆದರು ಅವರು ಪರಿಣಾಮ ಬಿರಿಲ್ಲ. ರಾಜ್ಯದಲ್ಲಿ ಬಿಜೆಪಿ ನಡೆಸಿದ ಜನ ಸಂಕಲ್ಪ ಯಾತ್ರೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಜೆಟ್ ಅಧಿವೇಶನದ ಬಳಿಕ ನಾಲ್ಕು ಕಡೆಯಿಂದ ರಥಯಾತ್ರೆ ನಡೆಸಲು ನಿರ್ಧಾರ ಮಾಡಲಾಗಿದೆ.
ಹೇಗೆ ಮಾಡಬೇಕು ಎಂದು ನಿರ್ಧಾರ ಆಗಿಲ್ಲ. ಆದರೆ ನಾಲ್ಕು ದಿಕ್ಕಿನಿಂದ ರಥಯಾತ್ರೆ ಮಾಡಬೇಕು ಎಂಬ ನಿರ್ಧಾರವಾಗಿದೆʼʼ ಎಂದು ಹೇಳಿದರು.

ʻʻಕಾಂಗ್ರೆಸ್‌ನವರು ಹತಾಶರಾಗಿ ಯೋಜನೆಗಳನ್ನು ಘೋಷಣೆ ಮಾಡುತ್ತಿದ್ದಾರೆ. ನಾನು ಮಹಿಳೆಯರಿಗೆ ವಿಶೇಷ ಯೋಜನೆ ಜಾರಿಗೆ ತರುತ್ತೇನೆ ಎಂದು ಘೋಷಣೆ ಮಾಡಿದ್ದೆ, ಅದೇ ರೀತಿ ಅವರು ಹತಾಶ ಭಾವನೆಯಿಂದ ಯೋಜನೆ ಘೋಷಣೆ ಮಾಡಿದ್ದಾರೆ. ರಾಜ್ಯದ ಜನರು ಅದನ್ನು ಒಪ್ಪುವುದಿಲ್ಲʼʼ ಎಂದು ಹೇಳಿದರು ಬೊಮ್ಮಾಯಿ.

ಇದೇ ವೇಳೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆಗಳ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಈ ಬಗ್ಗೆ ಪಕ್ಷದ ವರಿಷ್ಠರ ಗಮನಕ್ಕೆ ತಂದಿದ್ದೇವೆ . ಕಾರ್ಯಕಾರಿಣಿ ಮುಗಿದ ಬಳಿಕ ಈ ಬಗ್ಗೆ ಚರ್ಚಿಸಲಾಗುವುದು ಎಂದು ಹೇಳಿದರು.

ಇದನ್ನೂ ಓದಿ | Congress Guarantee | ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೆ ಉಚಿತ ವಿದ್ಯುತ್‌: ಪ್ರಜಾಧ್ವನಿ ಯಾತ್ರೆಯಲ್ಲಿ ಮೊದಲನೆ ಘೋಷಣೆ

Exit mobile version