Site icon Vistara News

ಪ್ರವರ್ಗ 2ಎಗೆ ಪಂಚಮಸಾಲಿ ಸೇರ್ಪಡೆ; ಸಿಎಂ ಭೇಟಿಯಾದ ಶ್ರೀ ವಚನಾನಂದ ಸ್ವಾಮೀಜಿ

vachanananda swamiji

ಬೆಂಗಳೂರು: ಪ್ರವರ್ಗ 2ಎಗೆ ಪಂಚಮಸಾಲಿ ಸೇರ್ಪಡೆ ಕುರಿತಂತೆ ಕರ್ನಾಟಕ ರಾಜ್ಯ ಹಿಂದುಳಿದ ಆಯೋಗದ ವರದಿಗೆ ಸಂಬಂಧಿಸಿದಂತೆ ಶೀಘ್ರ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಭರವಸೆ ನೀಡಿದ್ದಾರೆ ಎಂದು ಹರಿಹರ ವೀರಶೈವ ಪಂಚಮಸಾಲಿ ಜಗದ್ಗುರು ಪೀಠಾಧ್ಯಕ್ಷ ಶ್ರೀ ವಚನಾನಂದ ಮಹಾಸ್ವಾಮೀಜಿ ತಿಳಿಸಿದ್ದಾರೆ.

ಮಂಗಳವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಈ ಕುರಿತು ಶ್ರೀಗಳು ಸುಧೀರ್ಘ ಚರ್ಚೆ ನಡೆಸಿದ್ದಾರೆ. ನಂತರ ಮಾತನಾಡಿದ ಅವರು, ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2ಎ ಗೆ ಸೇರ್ಪಡೆಗೊಳಿಸಬೇಕು ಎಂಬ ನಮ್ಮ ಬೇಡಿಕೆ ಈಡೇರಿಕೆಗೆ ಸರ್ಕಾರ ಈಗಾಗಲೇ ಹಲವು ಕ್ರಮ ತೆಗೆದುಕೊಂಡಿದೆ. ಆದರೆ, ಈ ಪ್ರಕ್ರಿಯೆ ನಿಧಾನವಾಗುತ್ತಿದ್ದು ನಮ್ಮ ಸಮುದಾಯದ ಜನರು ಸಾಮಾಜಿಕ ಹಾಗೂ ಶೈಕ್ಷಣಿಕ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ಈ ವಿಷಯನ್ನು ಮುಖ್ಯಮಂತ್ರಿಗಳಿಗೆ ಮನದಟ್ಟು ಮಾಡಿಸಲಾಗಿದೆ ಎಂದು ವಿವರಿಸಿದರು.

ಹಿಂದುಳಿದ ಆಯೋಗದ ಅಧ್ಯಕ್ಷರನ್ನೂ ಭೇಟಿಯಾಗಿ ಈ ಸಂಬಂಧ ಮನವಿ ಸಲ್ಲಿಸಲಾಗಿದೆ. ನಂತರ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಸುಧೀರ್ಘವಾಗಿ ಸಮುದಾಯ ಎದುರಿಸುತ್ತಿರುವ ಸವಾಲುಗಳ ಬಗ್ಗೆ ಚರ್ಚೆ ನಡೆಸಲಾಯಿತು. ಈ ವೇಳೆ ಮುಖ್ಯಮಂತ್ರಿಗಳು, ಆಯೋಗ ಹಾಗೂ ಸಮಿತಿಯನ್ನು ಸರ್ಕಾರ ರಚಿಸಿದ್ದು, ಅವು ವರದಿ ನೀಡಿದ ನಂತರವಷ್ಟೇ ಕಾನೂನಾತ್ಮಕವಾಗಿ ಕ್ರಮಗಳನ್ನು ಕೈಗೊಳ್ಳಲು ಸಾಧ್ಯ ಎಂಬ ಅನಿವಾರ್ಯತೆಯನ್ನು ತಮ್ಮ ಗಮನಕ್ಕೆ ತಂದರು ಎಂದು ಶ್ರೀ ವಚನಾನಂದ ಮಹಾಸ್ವಾಮೀಜಿ ಹೇಳಿದರು.

ಈ ಸಂಧರ್ಭದಲ್ಲಿ ಶ್ರೀಗಳೊಂದಿಗೆ ಸಚಿವರಾದ ಸಿ ಸಿ ಪಾಟೀಲ್‌, ಪಂಚಮಸಾಲಿ ಸಂಘದ ನಿಕಟಪೂರ್ವ ರಾಜ್ಯಾಧ್ಯಕ್ಷ ಡಾ.ಬಸವರಾಜ್ ದಿಂಡೂರು, ಶ್ರೀಪೀಠದ ಪ್ರಧಾನ ಧರ್ಮದರ್ಶಿ ಬಿ.ಸಿ.ಉಮಾಪತಿ, ಧರ್ಮದರ್ಶಿ ಚಂದ್ರಶೇಖರ ಪೂಜಾರ, ವಕೀಲರಾದ ಬಿ.ಎಸ್.ಪಾಟೀಲರು ಇದ್ದರು.

ಇದನ್ನೂ ಓದಿ| ಬೇಡಿಕೆ ಈಡೇರಿಸಿದರೆ CMಗೆ ಶೇಂಗಾ ಹೋಳಿಗೆ ಊಟ, ಕಲ್ಲುಸಕ್ಕರೆ ತುಲಾಭಾರ!

Exit mobile version