Site icon Vistara News

Karnataka Politics : ಮುಂದಿನ 5 ವರ್ಷವೂ ನಾನೇ ಸಿಎಂ ಎಂದ ಸಿದ್ದರಾಮಯ್ಯ!

CM Siddaramaiah in hospete

ವಿಜಯನಗರ (ಹೊಸಪೇಟೆ): ರಾಜ್ಯ ರಾಜಕೀಯದಲ್ಲಿ (Karnataka Politics) ಸಾಕಷ್ಟು ಬದಲಾವಣೆ ಆಗುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಬದಲಾಗುತ್ತಾರೆ. ಈಗ ಡಿಸಿಎಂ ಆಗಿರುವ ಡಿ.ಕೆ. ಶಿವಕುಮಾರ್‌ (DCM DK Shivakumar) ಸಿಎಂ ಆಗಲಿದ್ದಾರೆ ಎಂಬ ಚರ್ಚೆ ಹುಟ್ಟಿಕೊಂಡಿತ್ತು. ಆದರೆ, ಈಗ ಆ ಎಲ್ಲ ಗೊಂದಲಕ್ಕೆ ಸ್ವತಃ ಸಿಎಂ ಸಿದ್ದರಾಮಯ್ಯ ತೆರೆ ಎಳೆದಿದ್ದಾರೆ. ಮುಂದಿನ ಐದು ವರ್ಷವೂ ನಾನೇ ಸಿಎಂ ಎಂದು ಹೇಳಿದ್ದಾರೆ.

ಹೊಸಪೇಟೆಯಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಐದು ವರ್ಷ ನಮ್ಮದೇ ಸರ್ಕಾರ ಇರುತ್ತದೆ. ನಾನು ಈಗ ಮುಖ್ಯಮಂತ್ರಿಯಾಗಿದ್ದೇನೆ ಎಂದು ಉತ್ತರಿಸಿದರು.

ಆಗ ಮಾಧ್ಯಮದವರು, ಐದು ವರ್ಷ ನೀವೇ ಸಿಎಂ ಆಗಿರುತ್ತೀರಾ ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಹೌದು, ನಾನೇ ಐದು ವರ್ಷ ಸಿಎಂ ಆಗಿರುತ್ತೇನೆ ಎಂದು ಗಟ್ಟಿ ಧ್ವನಿಯಲ್ಲಿ ಹೇಳಿದರು.

ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ವಿಚಾರ ತೀರ್ಮಾನ ಮಾಡೋದು ಹೈಕಮಾಂಡ್‌ ಆಗಿದೆ. ನಮ್ಮದು ನ್ಯಾಷನಲ್ ಪಾರ್ಟಿ. ಏನೇ ತೀರ್ಮಾನ ಆದರೂ ಹೈಕಮಾಂಡ್ ಜತೆ ಚರ್ಚೆ ಮಾಡಿಯೇ ಆಗುತ್ತದೆ ಎಂದು ತಿಳಿಸಿದರು.

ರಾಜ್ಯ ಸರ್ಕಾರ ಪತನ ಆಗುತ್ತದೆ ಎಂದು ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ನೀಡಿರುವ ಹೇಳಿಕೆ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ಅವರು ಸೋತಿದ್ದಾರೆ, ಬೇರೆ ಕೆಲಸ ಬಾರದವರು ಬಾಯಿಗೆ ಬಂದಂಗೆ ಮಾತನಾಡುತ್ತಾರೆ. ರಾಜ್ಯದ ಜನ ನಮಗೆ 136 ಸೀಟು ಕೊಟ್ಟು ಗೆಲ್ಲಿಸಿದ್ದಾರೆ. ಐದು ವರ್ಷ ಸುಭದ್ರ ಸರ್ಕಾರವನ್ನು ಕೊಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬಿಜೆಪಿಗೆ ಭ್ರಮ ನಿರಸನವಾಗಿದೆ. ಆ ಪಕ್ಷದವರಿಗೆ ಅಧಿಕಾರ ಇಲ್ಲದೆ ಇರಲು ಆಗುವುದಿಲ್ಲ. ಮತ್ತೆ ಆಪರೇಷನ್ ಮಾಡಲು ಪ್ರಯತ್ನ ಮಾಡುತ್ತಾರೆ. ಈ ಹಿಂದೆ ಆಪರೇಷನ್ ಕಮಲ ಮಾಡಿ ಸಕ್ಸಸ್ ಆಗಿದ್ದಾರೆ. ಈಗ ಆಪರೇಷನ್ ಕಮಲ ಮಾಡಿದರೆ ಅದು ಸಾಧ್ಯವಾಗಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಹೈಕಮಾಂಡ್‌ ಅಭಯ ಸಿಕ್ಕಿತೇ?

ಸಿಎಂ ಸಿದ್ದರಾಮಯ್ಯ ಅವರು ಇನ್ನೂ ಐದು ವರ್ಷ ತಾವೇ ಮುಖ್ಯಮಂತ್ರಿಯಾಗಿ ಇರುವುದಾಗಿ ನೀಡಿರುವ ಹೇಳಿಕೆ ಬಗ್ಗೆ ಈಗ ಸಾಕಷ್ಟು ರಾಜಕೀಯ ಲೆಕ್ಕಾಚಾರಗಳು ಪ್ರಾರಂಭವಾಗಿವೆ. ಒಂದು ದಿನದ ಹಿಂದಷ್ಟೇ ರಾಜ್ಯಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್‌ ಹಾಗೂ ರಣದೀಪ್‌ ಸಿಂಗ್‌ ಸುರ್ಜೇವಾಲ ಭೇಟಿ ಕೊಟ್ಟಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ನಡುವೆ ಸಂದಾನ ಮಾತುಕತೆಯನ್ನೂ ನಡೆಸಿದ್ದಾರೆ. ಈ ಎಲ್ಲದರ ಜತೆಗೆ ತಮ್ಮ ತಮ್ಮ ಬಣದ ಸಚಿವರು, ಶಾಸಕರಿಗೆ ಅಧಿಕಾರ ಹಂಚಿಕೆ ಸೇರಿದಂತೆ ಮತ್ತಿತರ ವಿಷಯಗಳ ಬಗ್ಗೆ ಏನೂ ಮಾತನಾಡದಂತೆ ತಾಕೀತು ಮಾಡುವಂತೆ ಹೇಳಿದ್ದಲ್ಲದೆ, ಸುರ್ಜೇವಾಲ ಅವರು ನೇರವಾಗಿ ಖಡಕ್‌ ಎಚ್ಚರಿಕೆಯನ್ನೂ ನೀಡಿದ್ದರು. ಅಲ್ಲದೆ, ಇಂತಹ ವಿಚಾರಗಳ ಬಗ್ಗೆ ಹೇಳುವುದಿದ್ದರೆ ಅದು ಸಿಎಂ ಸಿದ್ದರಾಮಯ್ಯ ಅಥವಾ ಡಿ.ಕೆ. ಶಿವಕುಮಾರ್‌ ಮಾತ್ರವೇ ಆಗಿರಬೇಕು ಎಂದು ಸಹ ಹೇಳಿದ್ದರು. ಈ ಮಧ್ಯೆ ಈಗ ಸ್ವತಃ ಸಿಎಂ ಸಿದ್ದರಾಮಯ್ಯ ಅವರು ತಾವೇ ಪೂರ್ಣಾವಧಿ ಸಿಎಂ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಈ ಹೇಳಿಕೆ ಹಿಂದೆ ಇವರಿಗೆ ಹೈಕಮಾಂಡ್‌ ಅಭಯ ದೊರೆತಿದೆಯೇ ಎಂಬ ಅನುಮಾನವೂ ಮೂಡಿದೆ.

ಲೋಕಸಭಾ ಚುನಾವಣೆ ಸಮೀಪ ಬಂದಿದೆ. ಈ ಹೊತ್ತಿನಲ್ಲಿ ಸಿಎಂ ಬದಲಾವಣೆ ಚರ್ಚೆ ನಡೆದರೆ ಪಕ್ಷದ ವರ್ಚಸ್ಸಿಗೆ ಧಕ್ಕೆ ಆಗುತ್ತದೆ. ಹೀಗಾಗಿ ತಾವೇ ಪೂರ್ಣಾವಧಿ ಸಿಎಂ ಸಿದ್ದರಾಮಯ್ಯ ಹೇಳಿರಬಹುದು ಎಂದೂ ಅಂದಾಜಿಸಲಾಗುತ್ತಿದೆ.

ಇದನ್ನೂ ಓದಿ: CM Siddaramaiah : ನಮ್ಮನ್ನು ಬೈಯೋ ಮೊದಲು, ಬಿಜೆಪಿ ಸಂಸದರು ಕೇಂದ್ರದಿಂದ ಬರ ಪರಿಹಾರ ಕೊಡಿಸಲಿ: ಸಿದ್ದರಾಮಯ್ಯ

ಡಿ.ಕೆ. ಶಿವಕುಮಾರ್‌ ಕಥೆ ಏನು?

ಈಗ ಎಲ್ಲರ ಚಿತ್ತವು ಡಿ.ಕೆ. ಶಿವಕುಮಾರ್‌ ಅವರತ್ತ ನೆಟ್ಟಿದೆ. ಅವರು ಚುನಾವಣೆಗೆ ಮೊದಲೇ ಪ್ರಚಾರ ಕಾರ್ಯಕ್ರಮದಲ್ಲಿ ತಾವು ಮುಖ್ಯಮಂತ್ರಿಯಾಗಲು ಇದು ಒಳ್ಳೆಯ ಸಮಯ ಹೀಗಾಗಿ ತಮ್ಮ ಸಮುದಾಯದವರೆಲ್ಲರೂ ನನ್ನನ್ನು ಬೆಂಬಲಿಸಿ ಎಂದು ಕೋರಿದ್ದರು. ಈ ಮೂಲಕ ಸಿಎಂ ಹುದ್ದೆ ಏರಲು ಉತ್ಸುಕರಾಗಿದ್ದರು. ಅಲ್ಲದೆ, ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಮೊದಲು ಸಚಿವ ಎಂ.ಬಿ. ಪಾಟೀಲ್‌ ಸೇರಿ ಹಲವರು ಪೂರ್ಣಾವಧಿ ಸಿಎಂ ಬಗ್ಗೆ ಪ್ರಸ್ತಾಪ ಮಾಡಿದಾಗ ಡಿಕೆ ಬ್ರದರ್ಸ್‌ ಕಿಡಿಕಾರಿದ್ದರು. ಆದರೆ, ಎರಡು ದಿನಗಳ ಹಿಂದೆ ಕೆಪಿಸಿಸಿ ಕಚೇರಿಯಲ್ಲಿ ಕೆಲವರ ಪಕ್ಷ ಸೇರ್ಪಡೆ ಮಾಡಿಕೊಳ್ಳುವಾಗ ಮಾತನಾಡಿದ್ದ ಡಿ.ಕೆ. ಶಿವಕುಮಾರ್‌, ನನಗೆ ಅಧಿಕಾರ ಸಿಗುತ್ತದೆಯೋ? ಸಿಗುವುದಿಲ್ಲವೋ? ಅದರ ಬಗ್ಗೆ ಕಾರ್ಯಕರ್ತರು ತೆಲೆ ಕೆಡಿಸಿಕೊಳ್ಳುವುದು ಬೇಡ. ಎಲ್ಲರೂ ಒಟ್ಟಾಗಿ ಪಕ್ಷಕ್ಕಾಗಿ ದುಡಿಯೋಣ ಎಂದು ಹೇಳಿಕೆ ನೀಡಿದ್ದರು. ಆದರೆ, ಈಗ ಸಿಎಂ ಸಿದ್ದರಾಮಯ್ಯ ಅವರ ಈ ಹೇಳಿಕೆಯನ್ನು ಡಿ.ಕೆ. ಶಿವಕುಮಾರ್‌ ಮತ್ತು ಬಣದವರು ಯಾವ ರೀತಿ ತೆಗೆದುಕೊಳ್ಳುತ್ತಾರೆ ಎಂಬುದು ಮುಂದಿನ ರಾಜಕೀಯ ಬೆಳವಣಿಗೆಯನ್ನು ನಿರ್ಧರಿಸುತ್ತದೆ.

Exit mobile version