Site icon Vistara News

Koppala News: ಅವ್ಯವಹಾರ ನಡೆಸಿ ಕಿಮ್ಸ್ ಹೆಸರಿಗೆ ಮಸಿ ಬಳಿದರೆ ಮುಲಾಜಿಲ್ಲದೆ ಕ್ರಮ; ಶರಣಪ್ರಕಾಶ ಪಾಟೀಲ

Koppala News

ಕೊಪ್ಪಳ: ವೈದ್ಯಾಧಿಕಾರಿಗಳ ಮತ್ತು ಸಿಬ್ಬಂದಿ ನೇಮಕಾತಿ ಹಾಗೂ ಸಾಮಗ್ರಿ ಖರೀದಿ ಸೇರಿದಂತೆ ಯಾವುದೇ ವಿಷಯದಲ್ಲಿ ಅವ್ಯವಹಾರಕ್ಕೆ ಅವಕಾಶವಿಲ್ಲದ ಹಾಗೆ ಆಡಳಿತ ನಡೆಸುವ ಮೂಲಕ ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯು ಮಾದರಿಯಾಗಬೇಕು ಎಂದು ವೈದ್ಯಕೀಯ ಶಿಕ್ಷಣ‌ ಸಚಿವ ಡಾ. ಶರಣಪ್ರಕಾಶ ಪಾಟೀಲ (Koppala News) ಹೇಳಿದರು.

ಕೊಪ್ಪಳ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಭಾಂಗಣದಲ್ಲಿ ಶುಕ್ರವಾರ ಸಂಸ್ಥೆಯ‌ ನಿರ್ದೇಶಕರು, ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.

ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು ಚಾಲ್ತಿಯಲ್ಲಿರುವ ಕಾಮಗಾರಿಗಳು ಗುಣಮಟ್ಟದ ರೀತಿಯಲ್ಲಿ ನಡೆಯಬೇಕು. ಗುಣಮಟ್ಟದ ವಿಷಯದಲ್ಲಿ ಯಾವುದೇ ರಾಜಿ ಇಲ್ಲ. ಕಳಪೆ ಕಾಮಗಾರಿಯಾಗಿದ್ದರೆ ಗುತ್ತಿಗೆದಾರರಿಗೆ ನೊಟೀಸ್ ಜಾರಿ ಮಾಡಿ. ಸಂಸ್ಥೆಯ ಸುಪರ್ದಿಗೆ ಪಡೆಯುವ ಮೊದಲು ಕಟ್ಟಡದ ಕಾಮಗಾರಿಯ ಗುಣಮಟ್ಟದ ಬಗ್ಗೆ ಪರಿಶೀಲಿಸಿ ಎಂದು ಸಚಿವರು ತಿಳಿಸಿದರು.

ಇದನ್ನೂ ಓದಿ: Teachers Transfer: ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಗುಡ್‌ ನ್ಯೂಸ್‌; ನಾಳೆಯಿಂದ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಪ್ರಕ್ರಿಯೆ

ಕೊಪ್ಪಳ ಜಿಲ್ಲೆಯು ಬಯಲು ಸೀಮೆಯ ನೆಲವಾಗಿದೆ. ಇಲ್ಲಿನ ಜನರ ಸಾಮಾಜಿಕ, ಆರ್ಥಿಕ ಪರಿಸ್ಥಿತಿ ಇನ್ನು ಸುಧಾರಿಸಬೇಕಿದೆ. ಮುಖ್ಯವಾಗಿ ಇಲ್ಲಿನ ಜನತೆಗೆ ಉತ್ತಮವಾದ ಆರೋಗ್ಯ ಸೌಕರ್ಯ ದೊರೆಯಬೇಕಿದೆ. ಕೊಪ್ಪಳ ವೈದ್ಯಕೀಯ ಶಿಕ್ಷಣ ಸಂಸ್ಥೆಯ ಬಗ್ಗೆ ಸಾಕಷ್ಟು ಭರವಸೆ ಇದೆ. ಇದನ್ನು ಅರ್ಥೈಸಿಕೊಳ್ಳಬೇಕು. ಅವ್ಯವಹಾರ ನಡೆಸಿ ಯಾರಾದರು ಸಂಸ್ಥೆಯ ಹೆಸರಿಗೆ ಮಸಿ ಬಳಿದರೆ ಯಾರೇ ಇರಲಿ ಅಂತವರ ವಿರುದ್ಧ ಮುಲಾಜಿಲ್ಲದೇ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದರು.

ಸಂಸ್ಥೆಯಲ್ಲಿ ಈಗಾಗಲೇ ರಚನೆಯಾಗಿರುವ ಎಲ್ಲ ಸಮಿತಿಗಳು ಸರಿಯಾಗಿ ಕಾರ್ಯನಿರ್ವಹಿಸಬೇಕು. ಕಾಲೇಜುಗಳಲ್ಲಿ ಪಿಡುಗಾಗಿ ಪರಿಣಮಿಸಿದ ರ‍್ಯಾಗಿಂಗ್‌ಗೆ ಅವಕಾಶ ನೀಡದೆ ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ಒತ್ತಡಮುಕ್ತ ವಾತಾವರಣ ಇರುವ ಹಾಗೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಬದಲಾದ ಕಾಲಘಟ್ಟದಲ್ಲಿ ವೈದ್ಯಕೀಯ ಶಿಕ್ಷಣಕ್ಕೆ ಸಾಕಷ್ಟು ಮಹತ್ವ ಬರುತ್ತಿದೆ. ಬಹಳಷ್ಟು ನಿರೀಕ್ಷೆಯೊಂದಿಗೆ ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ತೆಗೆದುಕೊಳ್ಳುವ ವಿದ್ಯಾರ್ಥಿಗಳ ಮನೋಭಾವನೆ ಅರಿತು ಅವರಿಗೆ ಗುಣಮಟ್ಟದ ರೀತಿಯ ಬೋಧನಾ ವ್ಯವಸ್ಥೆ ಕಲ್ಪಿಸಬೇಕು ಎಂದು ಸಚಿವರು ಎಲ್ಲ ವಿಭಾಗಗಳ ಮುಖ್ಯಸ್ಥರು ಮತ್ತು ಪ್ರಾಧ್ಯಾಪಕರು, ಸಹಾಯಕ ಪ್ರಾಧ್ಯಾಪಕರಿಗೆ ಸಲಹೆ ಮಾಡಿದರು.

ಸಂಸ್ಥೆಯ ಕಟ್ಟಡ ನಿರ್ಮಾಣ, ಸದ್ಯದ ಪರಿಸ್ಥಿತಿ, ಈ ಹಿಂದೆ ಕರೆದ ಟೆಂಡರ್‌ಗಳ ಸ್ಥಿತಿಗತಿ ಸೇರಿದಂತೆ ನಾನಾ ವಿಷಯಗಳ ಬಗ್ಗೆ ಸಚಿವರು ಚರ್ಚಿಸಿದರು.

ಕೊಪ್ಪಳ ವೈದ್ಯಕೀಯ ಶಿಕ್ಷಣ ಸಂಸ್ಥೆಗೆ ಒಟ್ಟು 81 ಹುದ್ದೆಗಳು ಮಂಜೂರಾಗಿವೆ. ಈ ಪೈಕಿ ಈಗಾಗಲೇ 49 ಹುದ್ದೆಗಳು ಭರ್ತಿಯಾಗಿವೆ. 32 ಹುದ್ದೆಗಳು ಖಾಲಿ ಇವೆ ಎಂದು ಸಂಸ್ಥೆಯ ನಿರ್ದೇಶಕ ವಿಜಯನಾಥ ಇಟಗಿ ಮಾಹಿತಿ ನೀಡಿದರು.

ಇದನ್ನೂ ಓದಿ: Visa Free Countries: ಪ್ರವಾಸಿ ತಾಣಗಳಿಗೆ ಹೆಸರಾದ ಈ 10 ದೇಶಗಳಿಗೆ ಹೋಗಲು ವೀಸಾ ಬೇಕಿಲ್ಲ!

ಸಭೆಯಲ್ಲಿ ಸಂಸದ ರಾಜಶೇಖರ ಹಿಟ್ನಾಳ, ಶಾಸಕ ಕೆ. ರಾಘವೇಂದ್ರ ಹಿಟ್ನಾಳ, ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ, ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕಿ ಸುಜಾತಾ ರಾಠೋಡ, ಜಿಲ್ಲಾಧಿಕಾರಿ ನಲಿನ್ ಅತುಲ್ ಉಪಸ್ಥಿತರಿದ್ದರು.

Exit mobile version