Site icon Vistara News

ಕನ್ನಡ ರಾಜ್ಯೋತ್ಸವ | ಎಲ್ಲರ ಮನೆಯ ಮೇಲೆ ಕನ್ನಡಧ್ವಜ ಹಾರಿಸೋಣ; ನಾಡೋಜ ಡಾ.ಮಹೇಶ ಜೋಶಿ ಕರೆ

ಬೆಂಗಳೂರು: ಕನ್ನಡಿಗರ ಸ್ವಾಭಿಮಾನದ ಪ್ರತೀಕವಾದ ಕನ್ನಡದ ಧ್ವಜವನ್ನು ಕನ್ನಡ ರಾಜ್ಯೋತ್ಸವ ದಿನದಂದು ಎಲ್ಲ ಕನ್ನಡಿಗರು ತಮ್ಮ ಮನೆಯ ಮೇಲೆ ಹಾರಿಸಲು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಕರೆ ನೀಡಿದ್ದಾರೆ. ಆ ಮೂಲಕ ಕನ್ನಡದ ಕಣ್ವ ಎಂದೇ ಖ್ಯಾತರಾದ ಬಿ.ಎಮ್. ಶ್ರೀಕಂಠಯ್ಯನವರು ರಚಿಸಿದ “ಏರಿಸಿ ಹಾರಿಸಿ ಕನ್ನಡದ ಬಾವುಟ, ಹಾರಿಸಿ ತೋರಿಸಿ ಕೆಚ್ಚೆದೆಯ ಬಾವುಟ” ಎನ್ನುವಂತೆ ಅರ್ಥಪೂರ್ಣವಾಗಿ ಕನ್ನಡ ಪ್ರೇಮವನ್ನು ಮೆರೆಯೋಣ ಎಂದರು.

ನವೆಂಬರ್ ೧ ರಂದು ರಾಜ್ಯೋತ್ಸವವನ್ನು ಪ್ರತಿಯೊಬ್ಬ ಕನ್ನಡಿಗರು ಸಂಭ್ರಮದಿಂದ ಆಚರಿಸುತ್ತಾರೆ. ಅದರೊಂದಿಗೆ ಈ ಬಾರಿ ಪ್ರತಿಯೊಬ್ಬ ಕನ್ನಡಿಗನೂ ನಮ್ಮ ಭಾಷೆ, ಸಂಸ್ಕೃತಿ, ಪರಂಪರೆಯ ಧ್ಯೋತಕವಾದ ಕನ್ನಡದ ಧ್ವಜವನ್ನು ಸ್ವ-ಇಚ್ಛೆಯಿಂದ ಹೆಮ್ಮೆಯಿಂದ ಪ್ರತಿಯೊಬ್ಬರ ಮನೆಯ ಮೇಲೆ ಹಾರಿಸುವ ಮೂಲಕ ಕನ್ನಡದ ಹಬ್ಬವನ್ನು ಆಚರಿಸೋಣ ಎಂದರು. ನಾಡಿನಾದ್ಯಂತ ಎಲ್ಲೆಡೆಯೂ ಹಳದಿ ಕೆಂಪು ಬಣ್ಣವು ರಾರಾಜಿಸಲಿ, ಸ್ಫೂರ್ತಿಯ ಸೆಲೆ ಎಲ್ಲೆಡೆಯೂ ಪಸರಿಸಲಿ, ಎಲ್ಲರ ಮನ-ಮನೆಯಲ್ಲೂ ಕನ್ನಡತನ ಮೆರೆಯಲಿ ಎಂದು ಆಶಯ ವ್ಯಕ್ತಪಡಿಸಿದರು.

ಕನ್ನಡ ಸಾಹಿತ್ಯ ಪರಿಷತ್ತು ಕನ್ನಡ-ಕನ್ನಡಿಗ-ಕರ್ನಾಟಕ ಎನ್ನುವ ಧ್ಯೇಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು ರಾಜ್ಯೋತ್ಸವ ಸಂದರ್ಭದಲ್ಲಿ ಕನ್ನಡಿಗರೆಲ್ಲರೂ ಉತ್ಸಾಹದಿಂದ ಕನ್ನಡ ಹಬ್ಬದಲ್ಲಿ ಪಾಲ್ಗೊಂಡು ನಾಡು ನುಡಿಯ ಸಮೃದ್ಧಿ ಶ್ರೀಮಂತಿಕೆ, ಉನ್ನತಿಯನ್ನು ಮೆರೆಯೋಣ ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ | ಕನ್ನಡ ರಾಜ್ಯೋತ್ಸವ | ಚಾಮರಾಜಪೇಟೆ ಮೈದಾನದಲ್ಲಿ ಹಾರುತ್ತಾ ಕನ್ನಡ ಬಾವುಟ? ಸರ್ಕಾರಕ್ಕೆ ಮತ್ತೊಂದು ಟೆನ್ಷನ್‌

Exit mobile version