Site icon Vistara News

Modi In Karnataka: ರಾಜ್ಯದಲ್ಲಿ ನಾಳೆ ಮೋದಿ ಹವಾ; ಮಂಗಳೂರು ರೋಡ್‌ ಶೋ ಸಮಯ ಬದಲು!

Narendra Modi

Lok Sabha Election 2024: PM Narendra Modi Visit To Karnataka, Here Is Campaign Schedule

ಬೆಂಗಳೂರು: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕಳೆದ ತಿಂಗಳು ಕಲಬುರಗಿ ಹಾಗೂ ಶಿವಮೊಗ್ಗದಲ್ಲಿ ಅಬ್ಬರದ ಪ್ರಚಾರ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಭಾನುವಾರ (ಏಪ್ರಿಲ್‌ 14) ಕರ್ನಾಟಕಕ್ಕೆ (Modi In Karnataka) ಭೇಟಿ ನೀಡಲಿದ್ದಾರೆ. ಮೈಸೂರಿನಲ್ಲಿ ನಡೆಯುವ ಬೃಹತ್‌ ಸಮಾವೇಶದಲ್ಲಿ ಪಾಲ್ಗೊಳ್ಳುವ ಮೋದಿ, ಸಂಜೆ ಮಂಗಳೂರಿನಲ್ಲಿ ರೋಡ್‌ ಶೋ ಮೂಲಕ ಭರ್ಜರಿಯಾಗಿ ಪ್ರಚಾರ ನಡೆಸಲಿದ್ದಾರೆ. ಇದರ ಬೆನ್ನಲ್ಲೇ, ನರೇಂದ್ರ ಮೋದಿ ಅವರು ಮಂಗಳೂರಿನಲ್ಲಿ ಕೈಗೊಳ್ಳುವ ರೋಡ್‌ ಶೋ ಸಮಯ ಬದಲಾಗಿದೆ. ಸಂಜೆ 7 ಗಂಟೆಯ ಬದಲಿಗೆ, 7.45 ರೋಡ್‌ ಶೋ ನಡೆಯಲಿದೆ ಎಂದು ತಿಳಿದುಬಂದಿದೆ.

ಮೈಸೂರಿನಲ್ಲಿ ಸಿದ್ದರಾಮಯ್ಯಗೆ ಟಕ್ಕರ್‌

ಮೈಸೂರು ಹಾಗೂ ಚಾಮರಾಜ ನಗರ ಲೋಕಸಭೆ ಕ್ಷೇತ್ರಗಳನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನರೇಂದ್ರ ಮೋದಿ ಅವರು ಮೈಸೂರಿನಲ್ಲಿ ಟಕ್ಕರ್‌ ಕೊಡಲಿದ್ದಾರೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನರೇಂದ್ರ ಮೋದಿ ಅವರು ಭಾನುವಾರ ಸಂಜೆ 4.20ಕ್ಕೆ ನಡೆಯುವ ಬೃಹತ್‌ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಮೈಸೂರು, ಚಾಮರಾಜನಗರ, ಮಂಡ್ಯ ಹಾಗೂ ಹಾಸನ ಲೋಕಸಭೆ ಕ್ಷೇತ್ರಗಳನ್ನು ಗಮನದಲ್ಲಿರಿಸಿಕೊಂಡು ಸಮಾವೇಶ ಆಯೋಜಿಸಲಿದ್ದು, ಲಕ್ಷಾಂತರ ಜನ ಸೇರುವ ನಿರೀಕ್ಷೆ ಇದೆ.

ನಾಲ್ಕೂ ಕ್ಷೇತ್ರಗಳ ಅಭ್ಯರ್ಥಿಗಳ ಪರವಾಗಿ ಪ್ರಧಾನಿ ಅವರು ಮತಯಾಚನೆ ಮಾಡಲಿದ್ದು, ಬಿಜೆಪಿ ಹಾಗೂ ಜೆಡಿಎಸ್‌ ಕಾರ್ಯಕರ್ತರನ್ನು ಉದ್ದೇಶಿಸಿ ಭಾಷಣ ಮಾಡುವ ಮೂಲಕ ಅವರನ್ನು ಹುರಿದುಂಬಿಸಲಿದ್ದಾರೆ. ಒಂದು ಲಕ್ಷಕ್ಕೂ ಅಧಿಕ ಜನರನ್ನು ಕರೆಸುವ ದಿಸೆಯಲ್ಲಿ ದೋಸ್ತಿಗಳು (ಬಿಜೆಪಿ ಹಾಗೂ ಜೆಡಿಎಸ್)‌ ಪ್ಲಾನ್‌ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಸಮಾವೇಶದಲ್ಲಿ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ, ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ, ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿ ಹಲವು ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಮಂಗಳೂರಿನಲ್ಲಿ ರೋಡ್‌ ಶೋ

ಕರಾವಳಿಯಲ್ಲೂ ಭಾನುವಾರ ಮೋದಿ ಅವರು ಪ್ರಚಾರ ನಡೆಸಲಿದ್ದಾರೆ. ಮಂಗಳೂರಿನಲ್ಲಿ ಸಂಜೆ 7.45ಕ್ಕೆ ಸುಮಾರು ಒಂದೂವರೆ ಕಿಲೋಮೀಟರ್‌ ರೋಡ್‌ ಶೋ ನಡೆಸಲಿದ್ದಾರೆ. ಸಂಜೆ 7.30ಕ್ಕೆ ಮೋದಿ ಅವರು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ಅವರು ನಾರಾಯಣ ಗುರು ಸರ್ಕಲ್‌ಗೆ ಆಗಮಿಸಲಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಗಳ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ನಾರಾಯಣ ಗುರು ಸರ್ಕಲ್‌ನಿಂದ ನವಭಾರತ್‌ ಸರ್ಕಲ್‌ವರೆಗೆ ಮೋದಿ ಅವರು ರೋಡ್‌ ಶೋ ಕೈಗೊಳ್ಳಲಿದ್ದಾರೆ. ಇಲ್ಲೂ ಲಕ್ಷಾಂತರ ಜನ ಪ್ರಧಾನಿಯನ್ನು ಸ್ವಾಗತಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಕರಾವಳಿಯಲ್ಲಿ ಈಗಾಗಲೇ ಬಿಜೆಪಿ ಪರ ಅಲೆ ಇದ್ದು, ಇದನ್ನು ಇಮ್ಮಡಿಗೊಳಿಸುವುದು ಮೋದಿ ಅವರ ರೋಡ್‌ ಶೋ ಉದ್ದೇಶವಾಗಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಸಿದ್ದರಾಮಯ್ಯ ಭೇಟಿ ಬೆನ್ನಲ್ಲೇ ಮೋದಿ ಕಾರ್ಯಕ್ರಮಕ್ಕೆ ಹೋಗಲ್ಲ ಎಂದ ಶ್ರೀನಿವಾಸ ಪ್ರಸಾದ್!‌ ಏನಿದರ ಮರ್ಮ?

Exit mobile version