Site icon Vistara News

Hanuman Flag: ಮುಂದುವರಿದ ಕೆರಗೋಡು ಧ್ವಜ ಉದ್ವಿಗ್ನತೆ, ಇಂದು ಬಿಜೆಪಿ- ಜೆಡಿಎಸ್‌ ಜಂಟಿ ಪಾದಯಾತ್ರೆ

BJP protest

ಮಂಡ್ಯ: ಜಿಲ್ಲೆಯ ಮಂಡ್ಯ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ (Hanuman Flag) ತೆರವು ಮಾಡಿದ ಪ್ರಕರಣದಲ್ಲಿ ಸ್ಥಳದಲ್ಲಿ ತಲೆದೋರಿದ ಉದ್ವಿಗ್ನ ಪರಿಸ್ಥಿತಿ ಇಂದೂ ಮುಂದುವರಿದಿದೆ. ನೂರಾರು ಹಿಂದೂ ಕಾರ್ಯಕರ್ತರು ಸ್ಥಳದಲ್ಲಿ ಬೀಡುಬಿಟ್ಟಿದ್ದು, ಇಂದು ಬಿಜೆಪಿ ಹಾಗೂ ಜೆಡಿಎಸ್‌ ʼಪೊಲೀಸ್‌ ದೌರ್ಜನ್ಯʼ ವಿರೋಧಿಸಿ ಜಂಟಿ ಪಾದಯಾತ್ರೆ ನಡೆಸಲಿವೆ.

ಅಧಿಕಾರಿಗಳು ಧ್ವಜ ತೆರವುಗೊಳಿಸಿದ ಹಿನ್ನೆಲೆಯಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೆರವು ವಿರೋಧಿಸಿ ಇಂದು ಬಿಜೆಪಿ, ಜೆಡಿಎಸ್ ಹಾಗು ಹಿಂದು ಪರ ಸಂಘಟನೆ ಕಾರ್ಯಕರ್ತರು ಒಟ್ಟಾಗಿ ಪಾದಯಾತ್ರೆ‌ ನಡೆಸಲಿದ್ದಾರೆ. ದೇವಾಲಯದಿಂದ ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪಾದಯಾತ್ರೆ ನಡೆಯಲಿದೆ.

ಪಾದಯಾತ್ರೆಯಲ್ಲಿ ಬಿಜೆಪಿ ಮುಖಂಡರಾದ ಸಿ.ಟಿ ರವಿ, ಆರ್.ಅಶೋಕ್, ಅಶ್ವಥ್ ನಾರಾಯಣ್ ಮುಂತಾದವರ ಜೊತೆಗೆ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಕೂಡ ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ. ಜೆಡಿಎಸ್, ಬಿಜೆಪಿ ನಾಯಕರ ಆಗಮನದಿಂದ ಹೋರಾಟ ಮತ್ತಷ್ಟು ತೀವ್ರವಾಗಲಿದೆ ಎನ್ನಲಾಗಿದೆ. ಹನುಮಧ್ವಜ ಪ್ರಕರಣವನ್ನು ಸಂಪೂರ್ಣವಾಗಿ ರಾಜಕೀಯವಾಗಿ ಬಳಸಿಕೊಳ್ಳಲು ದೋಸ್ತಿ ಪಕ್ಷಗಳು ಪ್ಲಾನ್ ಮಾಡಿವೆ.

ಬೆಳಗ್ಗೆ‌ ಕೋದಂಡರಾಮ ದೇವಾಲಯದಲ್ಲಿ ಪೂಜೆ ನಂತರ ಪಾದಯಾತ್ರೆ ಆರಂಭವಾಗಲಿದ್ದು, ಸುಮಾರು 15 ಕಿಲೋಮೀಟರ್ ಪಾದಯಾತ್ರೆ ಸಾಗಿ ನಂತರ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಲಾಗುತ್ತದೆ. ಜಿಲ್ಲಾ ಬಿಜೆಪಿ ಮುಖಂಡರು, ಜೆಡಿಎಸ್ ಪ್ರಮುಖರು, ಕೆಲ ಸ್ಥಳೀಯ ನಾಯಕರು ಸಾಥ್ ನೀಡಲಿದ್ದಾರೆ. ಹುಲಿವಾಲ, ಸಾತನೂರು, ಚಿಕ್ಕ ಮಂಡ್ಯ ಮುಖಾಂತರ ಜಿಲ್ಲಾಧಿಕಾರಿಗಳ ಕಚೇರಿಗೆ ಪಾದಯಾತ್ರೆ ತಲುಪಲಿದೆ.

ಹಿಂದೂಪರ ಸಂಘಟನೆ ಕಾರ್ಯಕರ್ತರು ಪಾದಯಾತ್ರೆ ನಡೆಸುವ ಹಿನ್ನೆಲೆಯಲ್ಲಿ ಮಂಡ್ಯ ಎಸ್ಪಿ ಯತೀಶ್ ಎನ್. ನೇತೃತ್ವದಲ್ಲಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಪಾದಯಾತ್ರೆಗೆ ಬ್ರೇಕ್ ಹಾಕಲು ಮಂಡ್ಯ ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದು, ಅಕ್ಕಪಕ್ಕದ ತಾಲೂಕುಗಳಿಂದ ಹೆಚ್ಚುವರಿ ಪೊಲೀಸ್ ತರಿಸಿ ನಿಯೋಜಿಸಲಾಗಿದೆ. ಸ್ಥಳದಲ್ಲಿ ಅಹಿತಕರ ಘಟನೆ ನಡೆಯದಂತೆ ಡಿಆರ್, ವಾಟರ್ ಜೆಟ್ ನಿಯೋಜನೆ ಮಾಡಲಾಗಿದ್ದು, ಪಾದಯಾತ್ರೆ ನಡೆಸುವವರನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ.

ಏನಿದು ಮಂಡ್ಯದ ಹನುಮಧ್ವಜ ಕೇಸ್?‌

ಮಂಡ್ಯ ಜಿಲ್ಲೆಯ ಕೆರಗೋಡಿನಲ್ಲಿ ಗ್ರಾಮಸ್ಥರು ಮತ್ತು ಹಿಂದೂ ಸಂಘಟನೆ ಕಾರ್ಯಕರ್ತರು ಗ್ರಾಮದ 108 ಅಡಿ ಧ್ವಜಸ್ತಂಭದಲ್ಲಿ ಹನುಮ ಧ್ವಜವನ್ನು ಹಾರಿಸಿದ್ದರು. ಜನವರಿ 22 ರಂದು ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಬಾಲರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನೆರವೇರಿತು. ಇದರ ನೆನೆಪಾಗಿ ಕೆರಗೋಡು ಗ್ರಾಮದಲ್ಲಿ 108 ಅಡಿ ಎತ್ತರ ಧ್ವಜಸ್ತಂಭದ ಮೇಲೆ ಹನುಮ ಧ್ವಜ ಹಾರಿಸಲು ಗ್ರಾಮಸ್ಥರು ನಿರ್ಧರಿಸಿದ್ದರು. ಧ್ವಜ ಹಾರಿಸಲು ನಿಶ್ಚಯಿಸಿದ ಜಾಗ ಗ್ರಾಮ ಪಂಚಾಯಿತಿಗೆ ಸೇರಿದ್ದರಿಂದ ಅನುಮತಿ ಕೋರಿ ಗ್ರಾಮ ಪಂಚಾಯಿತಿಗೆ ಮನವಿ ಮಾಡಿದ್ದರು. ಆದರೆ, ಗ್ರಾಮ ಪಂಚಾಯಿತಿ “ರಾಷ್ಟ್ರ ಧ್ವಜ ಮತ್ತು ನಾಡಧ್ವಜ” ಹೊರತುಪಡಿಸಿ ಯಾವುದೇ ಧಾರ್ಮಿಕ/ ರಾಜಕೀಯ ಧ್ವಜವನ್ನು ಹಾರಿಸುವಂತಿಲ್ಲವೆಂದು ಅನುಮತಿಯನ್ನು ನಿರಾಕರಣೆ ಮಾಡಿತ್ತು.

ಆದರೂ ಗ್ರಾಮಸ್ಥರು ಮತ್ತು ಹಿಂದು ಕಾರ್ಯಕರ್ತರು ಹನುಮ ಧ್ವಜ ಹಾರಿಸಿದ್ದರು. ಇದ್ದಕ್ಕೆ ಕೆಲವರು ವಿರೋಧ ವ್ಯಕ್ತಪಡಿಸಿದ್ದರು. ಕೊನೆಗೆ ಈ ವಿಚಾರ ಮತ್ತೆ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಚರ್ಚೆಗೆ ಬಂದಿದೆ. ಅಲ್ಲಿ 22 ಸದಸ್ಯ ಬಲದ ಗ್ರಾಮ ಪಂಚಾಯಿತಿಯಲ್ಲಿ ಹನುಮ ಧ್ವಜ ಹಾರಾಟಕ್ಕೆ 20 ಸದಸ್ಯರು ಬೆಂಬಲ ವ್ಯಕ್ತಪಡಿಸಿದರು. ಬಳಿಕ ಗ್ರಾಮ ಪಂಚಾಯತ್​ ಸದಸ್ಯರು ನಡಾವಳಿ ರಚಿಸಿ, ವಿವಾದವನ್ನು ಇತ್ಯರ್ಥ ಪಡಿಸಿದ್ದರು. ಆದರೆ, ಸರ್ಕಾರಿ ಜಾಗದಲ್ಲಿ ಹನುಮ ಧ್ವಜ ಹಾರಿಸಲಾಗಿದೆ ಇದನ್ನು ತೆರವುಗೊಳಿಸುವಂತೆ ಜಿಲ್ಲಾಡಳಿತ ಮೌಖಿಕ ಆದೇಶವನ್ನು ಹೊರಡಿಸಿತ್ತು. ಹೀಗಾಗಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೀಣಾ ಅವರು ತೆರವುಗೊಳಿಸಲು ಮುಂದಾದರು. ಇದಕ್ಕೆ ಗ್ರಾಮಸ್ಥರು ಅಡ್ಡಿ ಪಡಿಸಿ ಪ್ರತಿಭಟಿಸಿದ್ದರು. ಹೀಗಾಗಿ ಅಲ್ಲಿಂದ ನಿರ್ಗಮಿಸಿದ್ದ ಅಧಿಕಾರಿಗಳು ಶನಿವಾರ (ಜ.27) ರಾತ್ರಿ ಪುನಃ ಬಂದು ಹನುಮ ತೆರವಿಗೆ ಮುಂದಾದರು. ಮುಂಜಾನೆ 3 ಗಂಟೆ ಹೊತ್ತಿಗೆ ಮಂಡ್ಯ ಎಸಿ ಶಿವಮೂರ್ತಿ, ತಹಸೀಲ್ದಾರ್ ಶಿವಕುಮಾರ್ ಬಿರಾದರ್ ನೇತೃತ್ವದಲ್ಲಿ ತೆರವಿಗೆ ಮುಂದಾಗುತ್ತಿದ್ದಂತೆ ಗ್ರಾಮಸ್ಥರಿಗೆ ವಿಷಯ ತಿಳಿದು ಬಂದು ಗಲಾಟೆ ಮಾಡಿದ್ದಾರೆ. ಈ ವೇಳೆ ಪೊಲೀಸರು ಸಹ ಸ್ಥಳದಲ್ಲಿದ್ದರು. ಪ್ರತಿಭಟನೆಯನ್ನೂ ಮಾಡಲಾಯಿತು. ಹೀಗಾಗಿ ಪುನಃ ವಾಪಸ್‌ ತೆರಳಲಾಯಿತು.

ಭಾನುವಾರ ಎಷ್ಟೇ ವಿರೋಧ ಹಾಗೂ ಪ್ರತಿಭಟನೆ ಇದ್ದರೂ ಅದರ ನಡುವೆ ಹನುಮಾನ್‌ ಧ್ವಜವನ್ನು ಇಳಿಸಿ, ರಾಷ್ಟ್ರಧ್ವಜವನ್ನು ಹಾರಿಸಲಾಗಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದರಿಂದ 144 ಸೆಕ್ಷನ್​ ಜಾರಿ ಮಾಡಲಾಗಿದೆ. ಪ್ರತಿಭಟನಾಕಾರರನ್ನು ಚದುರಿಸಲು ಲಾಠಿ ಚಾರ್ಜ್​ ಅನ್ನು ಸಹ ಮಾಡಲಾಗಿದೆ.

ಇದನ್ನೂ ಓದಿ: Hanuman Flag: ಹನುಮ ಧ್ವಜ ತೆರವಿಗೆ ಆಕ್ರೋಶ; ನಾಳೆ ಎಲ್ಲಾ ಜಿಲ್ಲೆಗಳಲ್ಲಿ ಬಿಜೆಪಿ ಪ್ರತಿಭಟನೆ

Exit mobile version