Site icon Vistara News

ಪಂಚಮಸಾಲಿ ಮೀಸಲಾತಿಗೆ ಬಿ.ಎಸ್‌. ಯಡಿಯೂರಪ್ಪ ಅಡ್ಡ ಬಂದಿದ್ದಾರ?: ಈ ಕುರಿತು ಸಚಿವ ನಿರಾಣಿ ಸ್ಪಷ್ಟನೆ

Is Shivamogga BJP Ticket Announced: why did BS Yediyurappa ask his supporters

Is Shivamogga BJP Ticket Announced: why did BS Yediyurappa ask his supporters

ಬೆಂಗಳೂರು: ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರಿಸುವ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಡ್ಡಗಾಲು ಹಾಕಿದ್ದಾರೆ ಎಂಬ ಆರೋಪಗಳ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಡಾ.ಮುರುಗೇಶ ಆರ್‌. ನಿರಾಣಿ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಿರಾಣಿ, ಯಡಿಯೂರಪ್ಪನವರು ತಮ್ಮ ಸಮುದಾಯಕ್ಕೆ ಮೀಸಲಾತಿ ಕೊಡಲು ಅಡ್ಡಿಯಾಗಿದ್ದಾರೆ ಎಂದು ಪಂಚಮಸಾಲಿ ಸಮುದಾಯದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿಗಳು ಹೇಳಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೇಲೆ ಯಡಿಯೂರಪ್ಪ ಒತ್ತಡ ಹಾಕಿದ್ದಾರೆ, ಹೀಗಾಗಿ ಅವರ ವಿರುದ್ಧ ಕಪ್ಪು ಬಾವುಟ ಪ್ರದರ್ಶಿಸಿ ಎಂದು ಕರೆ ಕೊಟ್ಟಿರುವುದು ಸರಿಯಲ್ಲ ಎಂದಿದ್ದಾರೆ.

“ಪಂಚಮಸಾಲಿ ಸಮುದಾಯಕ್ಕೆ ನ್ಯಾಯ ಒದಗಿಸಲು ನಮ್ಮ ನಾಯಕರಾದ ಬಿ.ಎಸ್. ಯಡಿಯೂರಪ್ಪನವರು ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆಯೇ ಹೊರತು, ಅಡ್ಡಿಪಡಿಸುವ ಕೆಲಸವನ್ನು ಎಂದೂ ಮಾಡಿಲ್ಲ. ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಆರ್ಥಿಕವಾಗಿ ಹಿಂದುಳಿದಿರುವ ಪಂಚಮಸಾಲಿ ಸಮುದಾಯವನ್ನು ಅಭಿವೃದ್ಧಿಪಡಿಸುವ ಏಕೈಕ ಸದುದ್ದೇಶದಿಂದ ಪ್ರಾಧಿಕಾರ ರಚಿಸಿ 500 ಕೋಟಿ ರೂ. ಅನುದಾನವನ್ನು ಕೊಟ್ಟಿದ್ದರು. ಅದೇ ರೀತಿ 2ಎ ಮೀಸಲಾತಿ ಕೊಡುವ ಸಂಬಂಧ ಸಚಿವ ಸಂಪುಟ ಉಪಸಮಿತಿಯನ್ನು ಮಾಡಿದ್ದು ಸಹ ಯಡಿಯೂರಪ್ಪನವರು. ಅವರ ಬಗ್ಗೆ ಸುಳ್ಳು ಆರೋಪಗಳನ್ನು ಮಾಡಬಾರದು,” ಎಂದು ನಿರಾಣಿ ತಿರುಗೇಟು ನೀಡಿದರು.

ಇದನ್ನೂ ಓದಿ | ಪಂಚಮಸಾಲಿ ಮೀಸಲು ಹೋರಾಟ: ಸಿಎಂ ಬೊಮ್ಮಾಯಿ ಶಿಗ್ಗಾಂವ್‌ ನಿವಾಸದೆದುರು ಬೃಹತ್‌ ಪತಿಭಟನೆ, ಸಾವಿರಾರು ಮಂದಿ ಭಾಗಿ

ಸಿಎಂ ಭರವಸೆ
“ಮುಖ್ಯಮಂತ್ರಿ ಬೊಮ್ಮಾಯಿ ಅವರು ಪಂಚಮಸಾಲಿ ಸಮುದಾಯಕ್ಕೆ ನ್ಯಾಯ ಒದಗಿಸುವ ಭರವಸೆ ನೀಡಿದ್ದಾರೆ. ಮೀಸಲು ಕಲ್ಪಿಸುವ ಸಂಬಂಧ ಅಧ್ಯಯನ ನಡೆಸುತ್ತಿರುವ ಆಯೋಗ ವರದಿ ನೀಡಿದ ನಂತರ ಸರ್ಕಾರ ಸೂಕ್ತ ಕ್ರಮ ವಹಿಸಲಿದೆ. ಮೀಸಲು ಸಂಬಂಧ ನಮ್ಮ ಸರ್ಕಾರ ಈಗಾಗಲೇ ಹಿಂದುಳಿದ ವರ್ಗಗಳ ಶಾಶ್ವತ ಆಯೋಗಕ್ಕೆ ಶಿಫಾರಸು ಮಾಡಿದೆ. ಆಯೋಗವು ಕುಲಶಾಸ್ತ್ರ ಅಧ್ಯಯನ ನಡೆಸುತ್ತಿದೆ. ಇನ್ನು ಕೆಲವು ಜಿಲ್ಲೆಗಳಿಗೆ ಭೇಟಿ ಕೊಡಬೇಕಾಗಿದೆ. ಇವೆಲ್ಲದಕ್ಕೂ ಸಮಯ ಅವಕಾಶ ಬೇಕಾಗುತ್ತದೆ. ಅನಿವಾರ್ಯ ಕಾರಣಗಳಿಂದ ವಿಳಂಬವಾದಾಗ ಕಾರಣಕ್ಕೆ ಟೀಕೆ ಮಾಡುವುದು ಸರಿಯಲ್ಲ,”ಎಂದು ನಿರಾಣಿ ವಿವರಿಸಿದರು.

ಕಾಂಗ್ರೆಸ್‌ ವಿರುದ್ಧ ಕಿಡಿ
“ನಮ್ಮ ಸಿಎಂ ಎಂದರೆ ಕಾಮನ್‌ ಮ್ಯಾನ್‌ ಎನ್ನುವ ಮಟ್ಟಿಗೆ ಸರಳ ವ್ಯಕ್ತಿತ್ವ ಅವರದ್ದು. ಇಡೀ ಕರ್ನಾಟಕದ ಜನತೆಯ ನೆಚ್ಚಿನ ನಾಯಕರು ಅವರು. ಆದರೆ, ಕಾಂಗ್ರೆಸ್ ಪಕ್ಷದವರು ನಮ್ಮ ಮುಖ್ಯಮಂತ್ರಿ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ. ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಕಾಂಗ್ರೆಸ್‌ ತನ್ನ ಭ್ರಷ್ಟಾಚಾರ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ. ಬೊಮ್ಮಾಯಿ ಅವರ ವಿರುದ್ಧ ಮಾಡಿರುವ ಆರೋಪ ನಿರಾಧಾರ. ಪ್ರತಿಪಕ್ಷದವರು ಅವರ ತಟ್ಟೆಯಲ್ಲಿ ಬಿದ್ದಿರುವ ಹೆಗ್ಗಣದ ಬಗ್ಗೆ ಗಮನ ಹರಿಸಲಿ, ಬೇರೆಯವರ ತಟ್ಟೆ ನೋಡುವ ಅಗತ್ಯವಿಲ್ಲ,” ಎಂದು ಮುರುಗೇಶ್‌ ನಿರಾಣಿ ಹೇಳಿದರು.

ಇದನ್ನೂ ಓದಿ | ನವೆಂಬರ್‌ನೊಳಗೆ‌ ಪಂಚಮಸಾಲಿ 2ಎ ಮೀಸಲಾತಿ ಬಗ್ಗೆ ಸಿಎಂ ಅಂತಿಮ ನಿರ್ಧಾರ: ಶಾಸಕ ಯತ್ನಾಳ್

Exit mobile version