Site icon Vistara News

Anjanadri hill | ಅಂಜನಾದ್ರಿ ಬೆಟ್ಟದಲ್ಲಿ ಹನುಮ ಮಾಲಾಧಾರಿಗಳಿಗೆ ಸಕಲ ವ್ಯವಸ್ಥೆಗೆ ಸಚಿವೆ ಶಶಿಕಲಾ ಜೊಲ್ಲೆ ಸೂಚನೆ

Anjanadri hill

ಕೊಪ್ಪಳ: ಐತಿಹಾಸಿಕ ಅಂಜನಾದ್ರಿ ಬೆಟ್ಟದ (Anjanadri hill) ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಡಿಸೆಂಬರ್‌ 5ರಂದು 2 ಲಕ್ಷದಷ್ಟು ಹನುಮ ಮಾಲಾಧಾರಿಗಳು ಆಗಮಿಸುವ ನಿರೀಕ್ಷೆಯಿದ್ದು, ಭಕ್ತಾದಿಗಳಿಗೆ ಯಾವುದೇ ತೊಂದರೆ ಆಗದಂತೆ ಅಚ್ಚುಕಟ್ಟಿನ ವ್ಯವಸ್ಥೆಗಳನ್ನು ಜಿಲ್ಲಾಡಳಿತ ಮತ್ತು ಧಾರ್ಮಿಕ ದತ್ತಿ ಇಲಾಖೆ ಕಲ್ಪಿಸುವತ್ತ ಕ್ರಮ ವಹಿಸುವಂತೆ ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವರಾದ ಶಶಿಕಲಾ ಜೊಲ್ಲೆ ಸೂಚನೆ ನೀಡಿದರು.

ಕೊಪ್ಪಳದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ ಸಭೆಯಲ್ಲಿ ಜಿಲ್ಲೆಯ ಪ್ರಮುಖ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ವಿಸ್ತೃತ ಸಭೆ ನಡೆಸಿದರು. ನಂತರ ಮಾಲಾಧಾರಿಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಅಂಜನಾದ್ರಿ ಬೆಟ್ಟದ ಕೆಳಭಾಗದಲ್ಲಿ ಸ್ಥಳ ವೀಕ್ಷಣೆ ನಡೆಸಿ ಮಾತನಾಡಿದರು.

ಅಂಜನಾದ್ರಿ ಬೆಟ್ಟ ಪುರಾಣ ಪ್ರಸಿದ್ದ ಹನುಮನ ಜನ್ಮಸ್ಥಳ. ಅಯೋಧ್ಯೆ ರಾಮ ಭೂಮಿಗೆ ಇರುವಷ್ಟೇ ಪ್ರಾಮುಖ್ಯತೆ ಈ ಸ್ಥಳಕ್ಕಿದೆ. ಪ್ರತಿ ವರ್ಷ ಹನುಮ ಮಾಲಾಧಾರಿಗಳು ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿ ಮಾಲೆಯನ್ನು ವಿಸರ್ಜಿಸುತ್ತಾರೆ. ಸ್ಥಳದಲ್ಲಿ ಭಕ್ತರು ಅಗತ್ಯ ಸೌಕರ್ಯಗಳಿಲ್ಲದೆ ತೊಂದರೆಗೀಡಾಗುವುದನ್ನು ತಪ್ಪಿಸುವ ಉದ್ದೇಶದಿಂದ ಹಾಗೂ ದೇಶದಾದ್ಯಂತ ನಮ್ಮ ಸ್ಥಳದ ಮಹಿಮೆಯನ್ನು ಸಾರುವ ನಿಟ್ಟಿನಲ್ಲಿ ಎಲ್ಲಾ ಸೌಕರ್ಯಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಎಂದರು.

ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಹಾಲಪ್ಪ ಆಚಾರ್‌, ಸಂಸದರಾದ ಸಂಗಣ್ಣ ಕರಡಿ, ಶಾಸಕರಾದ ಪರಣ್ಣ ಮುನವಳ್ಳಿ, ಬಸವರಾಜ ಧಡೇಸೂಗೂರು, ವಿಧಾನ ಪರಿಷತ್‌ ಸದಸ್ಯೆ ಹೇಮಲತಾ ನಾಯಕ್ ಸೇರಿದಂತೆ ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು.

ಸಚಿವರು ನೀಡಿದ ಪ್ರಮುಖ ಸೂಚನೆಗಳು
-ಯಾವುದೇ ಲೋಪದೋಷಗಳು ಆಗದಂತೆ ಸಿದ್ಧತೆಗಳನ್ನು ನಡೆಸುವ ನಿಟ್ಟಿನಲ್ಲಿ ಸಮಿತಿಗಳನ್ನು ರಚಿಸಬೇಕು.
-ಭಕ್ತರಿಗೆ ಶುದ್ಧ ಕುಡಿಯುವ ನೀರು ಮತ್ತು ಉತ್ತಮ ಊಟದ ವ್ಯವಸ್ಥೆಯನ್ನು ಕಲ್ಪಿಸಬೇಕು.
– ಬೇರೆ ಬೇರೆ ಜಿಲ್ಲೆಗಳಿಂದ ಆಗಮಿಸುವ ಭಕ್ತರ ರಕ್ಷಣೆಗೆ ಸಿಸಿ ಟಿವಿಗಳನ್ನು ಮತ್ತು ಹೆಚ್ಚಿನ ಪೊಲೀಸ್‌ ಭದ್ರತೆಯನ್ನು ಒದಗಿಸಬೇಕು.
– ಭಕ್ತರು ರಾತ್ರಿ ಹೊತ್ತಿನಲ್ಲಿ ಸರಾಗವಾಗಿ ಚಲಿಸುವಂತೆ ಎಲ್ಲಾ ಪ್ರಮುಖ ಪ್ರದೇಶಗಳಲ್ಲೂ ಬೆಳಕಿನ ವ್ಯವಸ್ಥೆ ಮಾಡಬೇಕು.
– ಭಕ್ತರಿಗೆ ಸ್ನಾನದ ವ್ಯವಸ್ಥೆ ಹಾಗೂ ಅವರ ಆರೋಗ್ಯದ ಹಿತದೃಷ್ಟಿಯಿಂದ ಆರೋಗ್ಯ ಇಲಾಖೆಯ ವತಿಯಿಂದ ಕ್ಲಿನಿಕ್‌ ಮತ್ತು ಆಂಬ್ಯುಲೆನ್ಸ್‌ಗಳನ್ನು ಅಳವಡಿಸಬೇಕು. ಅದರಲ್ಲಿ ಸಾಕಷ್ಟು ಪ್ರಮಾಣದಲ್ಲಿ ವೈದ್ಯರು ಮತ್ತು ನರ್ಸಗಳನ್ನು ನಿಯೋಜಿಸಬೇಕು.

Exit mobile version