Site icon Vistara News

ಮುಖ್ಯಮಂತ್ರಿ ಕಾನೂನು ಸಲಹೆಗಾರರಾಗಿ ಎ ಎಸ್​ ಪೊನ್ನಣ್ಣ, ರಾಜಕೀಯ ಕಾರ್ಯದರ್ಶಿಯಾಗಿ ನಜೀರ್​ ಅಹ್ಮದ್​ ನೇಮಕ

AS Ponnanna and Nazir Ahmed

#image_title

ಕೊಡಗು ಜಿಲ್ಲೆ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್​.ಪೊನ್ನಣ್ಣ (MLA A.S.Ponnanna) ಅವರನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರನ್ನಾಗಿ (Legal Adviser to Chief Minister) ನೇಮಕ ಮಾಡಲಾಗಿದೆ. ಇವರಿಗೆ ಸಂಪುಟ ದರ್ಜೆಯ ಸಚಿವರ ಸ್ಥಾನಮಾನ ನೀಡಲಾಗಿದೆ. ಕೊಡವ ಸಮುದಾಯದ ಎ.ಎಸ್​.ಪೊನ್ನಣ್ಣನವರಿಗೆ ಸಚಿವ ಸ್ಥಾನ ನೀಡಲೇಬೇಕು ಎಂಬ ಒತ್ತಾಯವನ್ನು ಕೊಡಗು ಜಿಲ್ಲೆಯ ಜನರು ಮಾಡಿದ್ದರು. ಆದರೆ ಸಂಪುಟ ರಚನೆ ವೇಳೆ ಪೊನ್ನಣ್ಣನವರಿಗೆ ಮಂತ್ರಿಸ್ಥಾನ ಸಿಕ್ಕಿರಲಿಲ್ಲ.

ಬಿಜೆಪಿ ಪಾಲಿಗೆ ಭದ್ರಕೋಟೆಯಾಗಿದ್ದ ಕೊಡಗು ಜಿಲ್ಲೆಯಲ್ಲಿ ಈ ಸಲ ಕಾಂಗ್ರೆಸ್​ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರೂ, ಯಾರಿಗೂ ಸೂಕ್ತ ಸ್ಥಾನಮಾನ ಸಿಕ್ಕಿಲ್ಲ ಎಂಬ ಮಾತು ಕೇಳಿಬರುತ್ತಿತ್ತು. ಇದೀಗ ಎ.ಎಸ್​.ಪೊನ್ನಣ್ಣನವರಿಗೆ ಪ್ರಮುಖ ಹುದ್ದೆಯೊಂದನ್ನು ಕೊಡಲಾಗಿದೆ. ಹೈಕೋರ್ಟ್ ಹಿರಿಯ ವಕೀಲರಾಗಿ, ಕೆಪಿಸಿಸಿ ವಕ್ತಾರರಾಗಿ, ಕಾನೂನು ಘಟಕದ ರಾಜ್ಯಾಧ್ಯಕ್ಷರಾಗಿ, ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಹೆಚ್ಚುವರಿ ಅಡ್ವೋಕೇಟ್​ ಜನರಲ್ ಆಗಿ ಕಾರ್ಯನಿರ್ವಹಿಸಿರುವ ಅನುಭವವ ಇರುವ ಶಾಸಕ ಎ.ಎಸ್. ಪೊನ್ನಣ್ಣ, ಇದೀಗ ಮುಖ್ಯಮಂತ್ರಿಗೆ ಕಾನೂನು ಸಲಹೆಗಾರರಾಗಿದ್ದಾರೆ.

ನಜೀರ್ ಅಹ್ಮದ್ ಸಿಎಂ ರಾಜಕೀಯ ಕಾರ್ಯದರ್ಶಿ
ಇನ್ನು ಕೋಲಾರದ ಹಿರಿಯ ಮುಸ್ಲಿಂ ಮುಖಂಡ, ವಿಧಾನ ಪರಿಷತ್ ಸದಸ್ಯ ನಜೀರ್​ ಅಹ್ಮದ್​ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಕಳೆದ ಮೂರು ಅವಧಿಗೆ ಪರಿಷತ್ ಸದಸ್ಯರಾಗಿ ನೇಮಕಗೊಂಡಿರುವ ನಜೀರ್ ಅಹ್ಮದ್​ಗೆ ಹೊಸ ಜವಾಬ್ದಾರಿ ನೀಡಿ ಸರ್ಕಾರದ ಅಪರ ಕಾರ್ಯದರ್ಶಿ ವೀರಭದ್ರ ಹಂಚನಾಲ ಆದೇಶ ಹೊರಡಿಸಿದ್ದಾರೆ. ಇವರಿಗೆ ಸಂಪುಟ ದರ್ಜೆಯ ಸಚಿವರ ಸ್ಥಾನಮಾನ ಸಿಗಲಿದೆ.

Exit mobile version