Site icon Vistara News

ಮುರುಘಾಶ್ರೀ ಪ್ರಕರಣ | ಚಿತ್ರದುರ್ಗದ ಸಿಡಬ್ಲ್ಯೂಸಿಯಲ್ಲಿ ಇರಲೊಪ್ಪದ ಸಂತ್ರಸ್ತ ಬಾಲಕಿಯರು

chitradurga court 2

ಚಿತ್ರದುರ್ಗ: ಮುರುಘಾಮಠದ ಮುರುಘಾ ಶರಣರ ವಿರುದ್ಧ ದಾಖಲಾಗಿರುವ 2ನೇ ಪೋಕ್ಸೋ ಪ್ರಕರಣದ ಸಂತ್ರಸ್ತೆಯರು ಇಲ್ಲಿನ ಮಕ್ಕಳ ರಕ್ಷಣಾ ಸಮಿತಿಯ ಬಾಲಮಂದಿರದಲ್ಲಿ ಉಳಿಯಲು ನಿರಾಕರಿಸಿದ್ದು, ಮೈಸೂರಿನ ಒಡನಾಡಿ ಸಂಸ್ಥೆಗೆ ಹೋಗುವುದಾಗಿ ಪಟ್ಟುಹಿಡಿದಿದ್ದಾರೆ. ಈ ನಿಮಿತ್ತ ಇವರ ಮನವೊಲಿಕೆ ಕಾರ್ಯ ನಡೆದಿದೆ.

ಆಗಿಲ್ಲ ಸ್ಥಳ ಮಹಜರು
ಇದಕ್ಕೂ ಮೊದಲು ಮಂಗಳವಾರ (ಅ.೨೫) ಬೆಳಗ್ಗೆ ಪೊಲೀಸರು ಸಂತ್ರಸ್ತರನ್ನು ಜಿಲ್ಲಾ ನ್ಯಾಯಾಲಯದಲ್ಲಿ ಹಾಜರುಪಡಿಸಿದರು. ನ್ಯಾಯಾಧೀಶರ ಎದುರು 164ರ ಅಡಿ ಹೇಳಿಕೆ ದಾಖಲು ಪ್ರಕ್ರಿಯೆ ನಡೆದಿದ್ದು, ಸಂತ್ರಸ್ತ ಬಾಲಕಿಯರು ಮತ್ತು ತಾಯಿಯಿಂದ ಹೇಳಿಕೆ ದಾಖಲು ಮಾಡಿಕೊಳ್ಳಲಾಗಿದೆ. ಬಳಿಕ ಸಂತ್ರಸ್ತ ಬಾಲಕಿಯರನ್ನು ಮುರುಘಾಮಠಕ್ಕೆ ಕರೆತರಲಾಗಿದೆ.

ಪೊಲೀಸರು ವಾಪಸ್
ಮುರುಘಾ ಮಠದಲ್ಲಿ ಮುರುಘಾಶ್ರೀಗಳ ಕಚೇರಿ ಹಾಗೂ ಕೊಠಡಿಯಲ್ಲಿ ಸ್ಥಳ ಮಹಜರು ಮಾಡಬೇಕಿತ್ತು. ಆದರೆ, ಇವುಗಳಿಗೆ ಬೀಗ ಹಾಕಲಾಗಿತ್ತು. ಈ ಬೀಗದ ಕೈಗಳು ಎಸ್‌ಜೆಎಂ ವಿದ್ಯಾಪೀಠದ ಕಾರ್ಯದರ್ಶಿಯಾಗಿರುವ ನಿವೃತ್ತ ನ್ಯಾ. ಎಸ್.ಬಿ. ವಸ್ತ್ರದಮಠ ಅವರ ಸುಪರ್ದಿಯಲ್ಲಿದ್ದವು. ಆದರೆ, ಅವರು ಕಾರ್ಯನಿಮಿತ್ತ ಬೆಂಗಳೂರಿನಲ್ಲಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಬೇರೆ ದಾರಿ ಇಲ್ಲದೆ ಸಂತ್ರಸ್ತ ಬಾಲಕಿಯರ ಜತೆ ವಾಪಸಾಗಿದ್ದಾರೆ.

ಇದನ್ನೂ ಓದಿ | ಮುರುಘಾಶ್ರೀ ಪ್ರಕರಣ | ನೀಲಕಂಠೇಶ್ವರ ದೇಗುಲದಲ್ಲಿ ಕೊನೆಗೂ ಮುರುಘಾಶರಣರ ಫೋಟೊ ತೆರವು

ನಿವೃತ್ತ ನ್ಯಾ. ಎಸ್.ಬಿ. ವಸ್ತ್ರದಮಠ ಅವರು ಬುಧವಾರವೂ ಬೆಂಗಳೂರಿನಿಂದ ವಾಪಸಾಗದಿದ್ದರೆ ಅಂದೂ ಸಹ ಸ್ಥಳ ಮಹಜರು ನಡೆಯುವುದು ಅನುಮಾನ ಎನ್ನಲಾಗಿದೆ. ಈ ಕಾರಣಕ್ಕಾಗಿ ಸಂತ್ರಸ್ತ ಬಾಲಕಿಯರನ್ನು ಚಿತ್ರದುರ್ಗದ ಮಕ್ಕಳ ರಕ್ಷಣಾ ಸಮಿತಿಯ ಬಾಲಮಂದಿರದಲ್ಲಿ ಉಳಿಸಿಕೊಳ್ಳಲು ತೀರ್ಮಾನಿಸಲಾಗಿತ್ತು. ಆದರೆ, ಇದಕ್ಕೆ ಒಪ್ಪದ ಬಾಲಕಿಯರು ತಮ್ಮನ್ನು ಮೈಸೂರಿನ ಒಡನಾಡಿ ಸಂಸ್ಥೆಗೆ ಕಳುಹಿಸಿಕೊಡಿ ಎಂದು ಪಟ್ಟುಹಿಡಿದ್ದಾರೆ.

ನಡೆಯುತ್ತಿರುವ ಮನವೊಲಿಕೆ ಕಾರ್ಯ
ಮುರುಘಾ ಶ್ರೀಗಳ ಕಚೇರಿ ಮತ್ತು ಕೊಠಡಿಯ ಸ್ಥಳ ಮಹಜರು ಇನ್ನೂ ನಡೆಯದ ಕಾರಣ ಈ ಸಂತ್ರಸ್ತ ಬಾಲಕಿಯರನ್ನು ಚಿತ್ರದುರ್ಗದಲ್ಲಿಯೇ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮಕ್ಕಳ ರಕ್ಷಣಾ ಸಮಿತಿ ಅಧಿಕಾರಿಗಳು ಪ್ರಯತ್ನ ಪಡುತ್ತಿದ್ದಾರೆ. ಕಾರಣ, ಮೈಸೂರಿಗೆ ಕಳುಹಿಸಿದರೆ ಪುನಃ ಸ್ಥಳ ಮಹಜರಿಗೋಸ್ಕರ ಅವರನ್ನು ಕರೆತರಬೇಕಿದೆ.

ಮತ್ತೆ ಶ್ರೀಗಳು ಕಸ್ಟಡಿಗೆ?
ಈಗಾಗಲೇ ಒಂದು ಲೈಂಗಿಕ ಪ್ರಕರಣದಲ್ಲಿ ಮುರುಘಾಶ್ರೀಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಆದರೆ, ಅ. ೧೪ರಂದು ಮತ್ತೊಂದು ಪ್ರಕರಣ ದಾಖಲಾಗಿದ್ದರಿಂದ ಮಂಗಳವಾರ ಸಂತ್ರಸ್ತ ಬಾಲಕಿಯರ ಹೇಳಿಕೆಯನ್ನು ನ್ಯಾಯಾಲಯದಲ್ಲಿ ದಾಖಲು ಮಾಡಲಾಗಿದೆ. ಇನ್ನು ಸ್ಥಳ ಮಹಜರು ಮಾತ್ರ ಬಾಕಿ ಇದ್ದು, ಇದಾದ ಬಳಿಕ ಮುರುಘಾ ಶ್ರೀಯನ್ನು ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ.

ಇದನ್ನೂ ಓದಿ | ಮುರುಘಾಶ್ರೀ ಪ್ರಕರಣ | ಚಿತ್ರದುರ್ಗ ಜಿಲ್ಲಾ ಕೋರ್ಟ್‌ನಲ್ಲಿ ಸಂತ್ರಸ್ತ ಬಾಲಕಿಯರಿಬ್ಬರ ಹೇಳಿಕೆ ದಾಖಲು

ನ್ಯಾಯಾಂಗ ಬಂಧನ ವಿಸ್ತರಣೆ
ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾಶರಣರು ಜಾಮೀನು ಕೋರಿ ಚಿತ್ರದುರ್ಗ 2ನೇ ಅಪರ & ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಶುಕ್ರವಾರ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲವು ನವೆಂಬರ್ 3ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿತ್ತು. ಇನ್ನು ಈ ಪ್ರಕರಣದಲ್ಲಿ 2ನೇ ಆರೋಪಿಯಾಗಿರುವ ಮಹಿಳಾ ವಾರ್ಡನ್ ರಶ್ಮಿ ನ್ಯಾಯಾಂಗ ಬಂಧನವೂ ವಿಸ್ತರಣೆಯಾಗಿದೆ.

ಪ್ರಕರಣದ ಸಾರಾಂಶ
ಈಗಾಗಲೇ ಲೈಂಗಿಕ ದೌರ್ಜನ್ಯ ಪ್ರಕರಣವೊಂದರಲ್ಲಿ ಮುರುಘಾಶರಣರು ಜೈಲಿನಲ್ಲಿ ಇರುವ ಬೆನ್ನಲ್ಲೇ ಶುಕ್ರವಾರ (ಅ.೧೪) ಮೈಸೂರಲ್ಲಿ ಮಠದ ಅಡುಗೆ ಸಹಾಯಕಿಯೊಬ್ಬರು ತನ್ನಿಬ್ಬರು ಮಕ್ಕಳು ಸೇರಿದಂತೆ ಮತ್ತಿಬ್ಬರು ಮಕ್ಕಳ ಮೇಲೆ ಮುರುಘಾಶ್ರೀಗಳು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರು ದಾಖಲು ಮಾಡಿದ್ದರು. ಈ ವೇಳೆ ಪೊಲೀಸರು ಹಾಗೂ ಸಿಡಬ್ಲ್ಯೂಸಿ ಅಧಿಕಾರಿಗಳು ಆಕೆಯ ಹಾಗೂ ಒಬ್ಬಳು ಮಗಳ ಹೇಳಿಕೆಯನ್ನು ಪಡೆದುಕೊಂಡಿದ್ದರು. ನಾಲ್ಕು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಬಗ್ಗೆ ತಾಯಿ ಹೇಳಿದ್ದಾರೆ. “ಪತಿ ಇಲ್ಲದ ಕಾರಣ ತಾನು ಮಠದಲ್ಲಿ ಅಡುಗೆ ಕೆಲಸ ಮಾಡುತ್ತಿದ್ದೆ. ನನ್ನ ಮಕ್ಕಳು ಮಠದ ವಸತಿ ಶಾಲೆಯಲ್ಲಿ ಓದುತ್ತಿದ್ದರು. ನನ್ನ ಇಬ್ಬರು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ಮುರುಘಾ ಶರಣರು ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ಪ್ರಭಾವ ಹೊಂದಿರುವ ಕಾರಣ ತಡವಾಗಿ ದೂರು ನೀಡುತ್ತಿದ್ದೇನೆ” ಎಂದೂ ಸಹ ಸಂತ್ರಸ್ತ ಬಾಲಕಿಯರಿಬ್ಬರ ತಾಯಿ ದೂರಿನಲ್ಲಿ ಉಲ್ಲೇಖಿಸಿದ್ದರು.

ಈ ಸಂಬಂಧ ಮೈಸೂರಿ‌ನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಒಟ್ಟು 7 ಮಂದಿ ಮೇಲೆ ಕೇಸ್‌ ಹಾಕಲಾಗಿತ್ತು. ಸ್ವಾಮೀಜಿಯವರ ಸಹಾಯಕರಾದ ಮಹಾಲಿಂಗ, ಅಡುಗೆ ಸಹಾಯಕ ಕರಿಯಪ್ಪ ಎಂಬ ಇಬ್ಬರ ಮೇಲೆ ಹೊಸದಾಗಿ ಎಫ್‌ಐಆರ್ ದಾಖಲಾದಂತಾಗಿತ್ತು. ಶಿವಮೂರ್ತಿ ಮುರುಘಾ ಶರಣರು ಮೊದಲ ಆರೋಪಿಯಾಗಿದ್ದು, ಉಳಿದವರಾದ ಲೇಡಿ ಹಾಸ್ಟೆಲ್ ವಾರ್ಡನ್, ಮಠದ ಉತ್ತರಾಧಿಕಾರಿ, ಮಠದ ಕಾರ್ಯದರ್ಶಿ ಪರಮಶಿವಯ್ಯ, ವಕೀಲ ಗಂಗಾಧರಯ್ಯ, ಮುರುಘಾಶ್ರೀ ಸಹಾಯಕ ಮಹಾಲಿಂಗ, ಮುರುಘಾಶ್ರೀ ಅಡುಗೆಭಟ್ಟ ಕರಿಬಸಪ್ಪ ವಿರುದ್ಧ ಕ್ರಮವಾಗಿ ಕೇಸ್ ದಾಖಲಾಗಿದೆ.

ಏನಿದು ಮೊದಲ ಲೈಂಗಿಕ ಕಿರುಕುಳ ಪ್ರಕರಣ?
ಚಿತ್ರದುರ್ಗ ಜಿಲ್ಲೆಯ ಮುರುಘಾ ಮಠದ ಪ್ರೌಢಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಸ್ವಾಮೀಜಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂಬ ಆರೋಪ ಕೇಳಿಬಂದಿತ್ತು. ವಸತಿ ಶಾಲೆಯಲ್ಲಿದ್ದ ಈ ಈ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿದ್ದಾರೆಂದು ದೂರು ನೀಡಲಾಗಿತ್ತು. ಅಲ್ಲದೆ, ಇದಕ್ಕೆ ಅಲ್ಲಿನ ವಾರ್ಡನ್‌ ಸೇರಿ ಹಲವರು ಸಹಕಾರ ನೀಡುತ್ತಿದ್ದಾರೆ ಎಂದು ಆಗಸ್ಟ್‌ ೨೭ರಂದು ಇಬ್ಬರು ವಿದ್ಯಾರ್ಥಿನಿಯರು ಒಡನಾಡಿ ಸಂಸ್ಥೆಯ ಮೂಲಕ ಮೈಸೂರಿನ ನಜರ್‌ಬಾದ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಒಬ್ಬಳು ವಿದ್ಯಾರ್ಥಿನಿ ಮೇಲೆ ೩ ವರ್ಷದಿಂದ ಹಾಗೂ ಇನ್ನೊಬ್ಬ ವಿದ್ಯಾರ್ಥಿನಿಯ ಮೇಲೆ ಕಳೆದ ಒಂದೂವರೆ ವರ್ಷದಿಂದ ಲೈಂಗಿಕ ದೌರ್ಜನ್ಯವನ್ನು ನಡೆಸುತ್ತಾ ಬರಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ಯಾರೆಲ್ಲ ಭಾಗಿಗಳು?
ಡಾ. ಶಿವಮೂರ್ತಿ ಮುರುಘಾಶರಣರ ಮೇಲೆ ಅತ್ಯಾಚಾರ ಆರೋಪವನ್ನು ಹೊರಿಸಲಾಗಿದ್ದು, ಅವರಿಗೆ ಸಹಕಾರ ನೀಡಿದ ಆರೋಪದಡಿ ವಸತಿ ಶಾಲೆಯ ವಾರ್ಡನ್‌ ರಶ್ಮಿ, ಮಠದ ಮರಿಸ್ವಾಮಿ ಬಸವಾದಿತ್ಯ, ಕಾರ್ಯದರ್ಶಿ ಪರಮಶಿವಯ್ಯ, ವಕೀಲ ಗಂಗಾಧರ್‌ ಮೇಲೆ ದೂರು ದಾಖಲಾಗಿತ್ತು. ಈ ಇಬ್ಬರು ವಿದ್ಯಾರ್ಥಿನಿಯರನ್ನು ಒತ್ತಾಯಪೂರ್ವಕವಾಗಿ ಸ್ವಾಮೀಜಿ ಬಳಿ ಕಳುಹಿಸಲಾಗುತ್ತಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಲೈಂಗಿಕ ಕ್ರಿಯೆಗೆ ಒಪ್ಪದೇ ಇದ್ದರೆ ಹಣ್ಣು, ಸಿಹಿಯಲ್ಲಿ ಮತ್ತುಬರುವ ಔಷಧವನ್ನು ಬೆರೆಸಿ ಅತ್ಯಾಚಾರ ನಡೆಸಲಾಗುತ್ತದೆ ಎಂದೂ ಹೇಳಲಾಗಿದೆ.

ಬಂಧನದ ಬಳಿಕ
ಆಗಸ್ಟ್‌ ೨೭ರಂದು ದೂರು ದಾಖಲಾಗಿತ್ತಾದರೂ ಮುಂದಿನ ನಾಲ್ಕು ದಿನಗಳ ಕಾಲ ಕಾನೂನು ಪ್ರಕ್ರಿಯೆಯನ್ನು ತೆಗೆದುಕೊಂಡಿರಲಿಲ್ಲ. ಸೆಪ್ಟೆಂಬರ್‌ ೧ರಂದು ರಾತ್ರಿ ಸ್ವಾಮೀಜಿಯನ್ನು ಬಂಧನ ಮಾಡಲಾಯಿತು. ಎರಡನೇ ಆರೋಪಿ, ಹಾಸ್ಟೆಲ್‌ ವಾರ್ಡನ್‌ ರಶ್ಮಿಯನ್ನು ಸಹ ಬಳಿಕ ಬಂಧನ ಮಾಡಿ ಶಿವಮೊಗ್ಗದ ಜೈಲಿಗೆ ಕಳುಹಿಸಲಾಗಿದೆ. ಇದರ ಜತೆಗೆ ಉಳಿದ ಆರೋಪಿಗಳ ಪೈಕಿ ಬಸವಾದಿತ್ಯ ಮತ್ತು ಪರಮಶಿವಯ್ಯ ತಲೆಮರೆಸಿಕೊಂಡಿದ್ದು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸುತ್ತಿದ್ದಾರೆ. ಆದರೆ, ಕೋರ್ಟ್‌ ಅದನ್ನು ಪುರಸ್ಕರಿಸದೆ ವಿಚಾರಣೆಯನ್ನು ಮುಂದೂಡುತ್ತಲೇ ಬಂದಿದೆ. ಇದರ ನಡುವೆ, ವಕೀಲರಾಗಿರುವ ಗಂಗಾಧರಯ್ಯ ಅವರನ್ನು ಪೊಲೀಸರು ವಿಚಾರಣೆ ನಡೆಸಿ, ಕರೆದಾಗ ಬರುವ ಷರತ್ತಿನೊಂದಿಗೆ ಬಿಟ್ಟುಕಳುಹಿಸಲಾಗಿದೆ.

ಅಷ್ಟೂ ಹೆಣ್ಣು ಮಕ್ಕಳ ಆಪ್ತ ಸಮಾಲೋಚನೆಗೆ ಆದೇಶ
ಮುರುಘಾ ಶರಣರು ಮಠದ ಹಾಸ್ಟೆಲ್‌ನಲ್ಲಿದ್ದ ವಿದ್ಯಾರ್ಥಿನಿಯರಿಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದ ಬೆನ್ನಲ್ಲೇ ಮತ್ತೆ ನಾಲ್ಕು ಮಂದಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಎಸಗಿದ್ದಾರೆಂಬ ದೂರು ಬಂದಿದ್ದ ಹಿನ್ನೆಲೆಯಲ್ಲಿ ಶ್ರೀಮಠದ ಹಾಸ್ಟೆಲ್‌ನಲ್ಲಿ ಓದುತ್ತಿದ್ದ ಎಲ್ಲ ಹೆಣ್ಣುಮಕ್ಕಳಿಗೂ ಆಪ್ತ ಸಮಾಲೋಚನೆ ನಡೆಸುವಂತೆ ಮಕ್ಕಳ ರಕ್ಷಣಾ ನಿರ್ದೇಶನಾಲಯವು ಚಿತ್ರದುರ್ಗ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಿಗೆ ಸೂಚಿಸಿ ಈಚೆಗೆ ಆದೇಶ ಹೊರಡಿಸಿದೆ.

ನವೆಂಬರ್‌ ೩೦ರ ಗುಡುವು
ಮಠದಿಂದ ವಿವಿಧ ಸರ್ಕಾರಿ ಹಾಸ್ಟೆಲ್, ಬಾಲಮಂದಿರಕ್ಕೆ ಸ್ಥಳಾಂತರಗೊಂಡಿರುವ ಅಥವಾ ಮನೆಗೆ ಹೋಗಿರುವ ಎಲ್ಲ ಹೆಣ್ಣುಮಕ್ಕಳ ಜತೆ ನವೆಂಬರ್ 30ರೊಳಗೆ ಆಪ್ತ ಸಮಾಲೋಚನೆ ನಡೆಸುವಂತೆ ಸೂಚನೆಯಲ್ಲಿ ತಿಳಿಸಲಾಗಿದೆ. ಈ ವೇಳೆ ಲೈಂಗಿಕ ದೌರ್ಜನ್ಯ ನಡೆದಿರುವ ಮಾಹಿತಿ ಸಿಕ್ಕಲ್ಲಿ ಹೇಳಿಕೆ ದಾಖಲಿಸಿ, ನಿಯಮಾನುಸಾರ ಮುಂದಿನ ಕ್ರಮ ಕೈಗೊಂಡು ವರದಿ ನೀಡುವಂತೆ ಸೂಚನೆಯಲ್ಲಿ ಉಲ್ಲೇಖಿಸಲಾಗಿದೆ.

ನಿರ್ಲಕ್ಷ್ಯ ವಹಿಸದಂತೆ ಕ್ರಮಕ್ಕೆ ಸೂಚನೆ
ಆಪ್ತ ಸಮಾಲೋಚನೆ ವೇಳೆ ಯಾವುದೇ ರೀತಿಯಾದಂತಹ ನಿರ್ಲಕ್ಷ್ಯ ಆಗಕೂಡದು. ಆದ್ಯತೆ ಮೇರೆಗೆ ಕ್ರಮ ವಹಿಸಬೇಕು. ಆಪ್ತ ಸಮಾಲೋಚನೆ ನಡೆಸುವಾಗ ಉಪಸ್ಥಿತರಿರುವ ಸಂಖ್ಯೆ, ಮಕ್ಕಳಿಂದ ಯಾವ ಮಾದರಿಯಲ್ಲಿ ಮಾಹಿತಿ ಸಂಗ್ರಹಣೆ ಮಾಡಲಾಗಿದೆ ಎಂಬ ಮಾಹಿತಿಯನ್ನು ನಿರ್ದೇಶನಾಲಯಕ್ಕೆ ಸಲ್ಲಿಸಬೇಕು. ಜತೆಗೆ ಈಗ ಈ ಎಲ್ಲ ಮಕ್ಕಳಿಗೆ ಯಾವ ರೀತಿಯಾಗಿ ಪುನರ್ವಸತಿ ಕಲ್ಪಿಸಲಾಗಿದೆ? ಅವರಿಗೆ ವ್ಯವಸ್ಥೆ ಹೇಗಿದೆ ಎಂಬ ಬಗ್ಗೆಯೂ ವರದಿಯಲ್ಲಿ ಉಲ್ಲೇಖಿಸುವಂತೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ | ಮುರುಘಾಶ್ರೀ ಪ್ರಕರಣ | ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ; ನವೆಂಬರ್‌ 3ರವರೆಗೆ ಜೈಲೇ ಗತಿ

Exit mobile version