Site icon Vistara News

Mysore Dasara | ಮಕ್ಕಳ ದಸರೆಗೆ ಕಳೆತುಂಬಿದ ವಂಶಿಕಾ; ರಾರಾ ರಕ್ಕಮ್ಮ ಹಾಡಿಗೆ ಹೆಜ್ಜೆ ಹಾಕಿದಳು

Children dasara

ಮೈಸೂರು: ನಾಡಹಬ್ಬ ದಸರಾ ಮಹೋತ್ಸವ (Mysore Dasara) ಅಂಗವಾಗಿ ಇಂದು ಏರ್ಪಡಿಸಲಾಗಿರುವ ಮಕ್ಕಳ ದಸರಾ ಕಾರ್ಯಕ್ರಮವನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಸೂಪರ್‌ಸ್ಟಾರ್ ಹಾಗೂ ಗಿಚ್ಚಿ ಗಿಲಿಗಿಲಿ‌ ಖ್ಯಾತಿಯ ಬಾಲ ಪ್ರತಿಭೆ ವಂಶಿಕಾ ಅಂಜನಿ ಕಶ್ಯಪ್‌ ಕಾರ್ಯಕ್ರಮದ ಕೇಂದ್ರಬಿಂದುವಾಗಿದ್ದು, ಗಣ್ಯರ ಮಧ್ಯೆ ವೇದಿಕೆ ಹಂಚಿಕೊಂಡಿದ್ದು, ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌ ಅವರಿಗೆ ಸಿಹಿ ತಿನ್ನಿಸಿ ಗಮನ ಸೆಳೆದಳು.

ನಗರದ ಜಗನ್ಮೋಹನ ಅರಮನೆಯಲ್ಲಿ ಎರಡು ದಿನಗಳ ಕಾಲ ಆಯೋಜಿಸಲಾಗಿರುವ ಮಕ್ಕಳ ದಸರಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೋವಿಡ್ ನಂತರ ದಸರಾ ಹಬ್ಬವು ತನ್ನ ಹಳೆಯ ಮೆರುಗನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ಶ್ರಮಿಸುತ್ತಿದೆ. ಅದರಂತೆ ವಿದ್ಯಾರ್ಥಿಗಳಿಗೂ ತಮ್ಮಲ್ಲಿರುವ ಪ್ರತಿಭೆ ಅನಾವರಣಕ್ಕೆ ಇಂತಹ ವೇದಿಕೆ ಅಗತ್ಯವಿದ್ದು, ಎಲ್ಲ ಮಕ್ಕಳಿಗೂ ಸಮಾನ ಅವಕಾಶ ನೀಡಲು ಸರ್ಕಾರದಿಂದ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು.

ವಂಶಿಕಾ ಅಂಜನಿ ಕಶ್ಯಪ್‌ ಅತಿಥಿಯಾಗಿ‌ ಪಾಲ್ಗೊಂಡು ಕನ್ನಡ ಚಿತ್ರದ ರಾ..ರಾ.. ರಕ್ಕಮ್ಮ ಹಾಡಿಗೆ ನೃತ್ಯ ಮಾಡುವ ಮೂಲಕ ವಿದ್ಯಾರ್ಥಿಗಳನ್ನು ರಂಜಿಸಿದಳು. ಜತೆಗೆ ಗಿನ್ನೆಸ್ ಬುಕ್‌ ಆಫ್‌ ವರ್ಲ್ಡ್ ರೆಕಾರ್ಡ್ ದಾಖಲೆ ಮಾಡಿರುವ ಧವನಿ, 224 ವಿಧಾನಸಭಾ ಕ್ಷೇತ್ರದ ಹೆಸರನ್ನು ಒಂದು ನಿಮಿಷದಲ್ಲಿ ಹೇಳಿ ಎಲ್ಲರೂ ನಿಬ್ಬೆರಗಾಗುವಂತೆ ಮಾಡಿದಳು.

ವಿಜ್ಞಾನ-ಕರಕುಶಲ ವಸ್ತು ಪ್ರದರ್ಶನ ಉದ್ಘಾಟನೆ
ಮಕ್ಕಳ ದಸರಾ ಅಂಗವಾಗಿ ಜಗನ್ಮೋಹನ ಅರಮನೆ ಆವರಣದಲ್ಲಿ ಏರ್ಪಡಿಸಲಾಗಿರುವ ವಿಜ್ಞಾನ ಹಾಗೂ ಕರಕುಶಲ ವಸ್ತು ಪ್ರದರ್ಶನವನ್ನು ಜಿಲ್ಲಾ ಉಸ್ತುವಾರಿ ಮತ್ತು ಸಹಕಾರ‌ ಸಚಿವ ಎಸ್.ಟಿ.ಸೋಮಶೇಖರ್ ಉದ್ಘಾಟನೆ ಮಾಡಿದರು.

ಇದನ್ನೂ ಓದಿ | Shivamogga Dasara 2022 | ವಿಜೃಂಭಣೆಯಿಂದ ನಡೆಯುತ್ತಿರುವ ದಸರಾದಲ್ಲಿ ನಾಟಕೋತ್ಸವ, ಶ್ವಾನ ಪ್ರದರ್ಶನ

ವಸ್ತು ಪ್ರದರ್ಶನದಲ್ಲಿ ಜಿಲ್ಲೆಯ ಎಚ್.ಡಿ.ಕೋಟೆ ಸರ್ಕಾರಿ ಶಾಲಾ ಮಕ್ಕಳು ಶಿಕ್ಷಣದಲ್ಲಿ ಚಿತ್ರಕಲೆಯ ಉಪಯುಕ್ತತೆ, ಭೌಗೋಳಿಕ ಮತ್ತು ಪ್ರಾಕೃತಿಕ ವೈಪರೀತ್ಯ ಕಾರಣಗಳು-ಪರಿಣಾಮಗಳು, ಪಿರಿಯಾಪಟ್ಟಣ ಶಾಲಾ ಮಕ್ಕಳಿಂದ ಕನ್ನಡದ ಶ್ರೇಷ್ಠ ಕವಿ ಪರಂಪರೆ, ತಿ.ನರಸೀಪುರದಿಂದ ಶಿಕ್ಷಣ ಇಲಾಖೆಯ ಪ್ರೋತ್ಸಾಹದಾಯಕ ಯೋಜನೆಗಳು, ಕೆ.ಆರ್.ನಗರದ ಶಾಲಾ‌ ಮಕ್ಕಳಿಂದ ಕಲಿಕಾ ಚೇತರಿಕೆ ಕುರಿತು, ನಂಜನಗೂಡು ಶಾಲೆಯಿಂದ ಮೈಸೂರು ಜಿಲ್ಲೆಯ ಪ್ರವಾಸಿ ತಾಣಗಳ ಬಗ್ಗೆ, ಮೈಸೂರು ದಕ್ಷಿಣ, ಉತ್ತರ‌ ಹಾಗೂ ಗ್ರಾಮಾಂತರ ವಲಯದ ಸರ್ಕಾರಿ ಶಾಲಾ ಮಕ್ಕಳಿಂದ ಯೋಗ, ಸ್ವಾಸ್ಥ್ಯ ಹಾಗೂ ಕರೋನಾ ಮುನ್ನೆಚ್ಚರಿಕೆ ಮತ್ತು ಕಲಿಕಾ ಪ್ರಕ್ರಿಯೆಯಲ್ಲಿ ವಿಜ್ಣಾನ ಮತ್ತು ತಂತ್ರಜ್ಞಾನ ವಿಷಯಗಳ ಕುರಿತು ವಸ್ತು ಪ್ರದರ್ಶನವನ್ನು ಆಯೋಜಿಸಲಾಗಿದೆ.

ಈ‌ ಎರಡು ದಿನದ ಕಾರ್ಯಕ್ರಮದಲ್ಲಿ ವಿವಿಧ ವೇಷಭೂಷಣ ಸ್ಪರ್ಧೆ, ಪ್ರಬಂಧ, ಆಶುಭಾಷಣ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ನೃತ್ಯ ಪ್ರದರ್ಶನ ಸೇರಿದಂತೆ ದೇಸಿ ಆಟಗಳು ನಡೆಯಲಿದೆ.

ಕಾರ್ಯಕ್ರಮದಲ್ಲಿ ಶಾಸಕರಾದ ಎಲ್.ನಾಗೇಂದ್ರ, ಜಿಲ್ಲಾಧಿಕಾರಿಯವರಾದ ಡಾ.ಜಿ.ಬಗಾದಿ ಗೌತಮ್, ಮೇಯರ್ ಶಿವಕುಮಾರ್, ಉಪಮೇಯರ್ ಡಾ.ಜಿ.ರೂಪ, ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎಂ.ಶಿವಕುಮಾರ್ ಅವರು ಸೇರಿದಂತೆ ಮಹಿಳಾ ಮತ್ತು ಮಕ್ಕಳ ದಸರಾ ಉಪಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಇದನ್ನೂ ಓದಿ | Mysore Dasara | ಗ್ರಾಮೀಣ, ಯೋಗ ದಸರಾಕ್ಕೆ ಚಾಲನೆ; ಕಲಾತಂಡಗಳ ಮೆರುಗು

Exit mobile version